ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

24.05.24 - ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ

ಮೊದಲನೆಯ ವಾಚನ: ಯಾಕೋಬ 5: 9-12


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ. ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ. ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ. ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.

ಕೀರ್ತನೆ 103: 1-2, 3-4, 8-10, 12-13
ಶ್ಲೋಕ: ಪ್ರಭು, ದಯಾಳು, ಕೃಪಾಪೂರ್ಣನು. 

ಶುಭಸಂದೇಶ: ಮಾರ್ಕ: 10: 1-2

ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪು ಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶ ಮಾಡಿದರು. ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು. ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು. ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದಾನೆ,” ಎಂದರು. ಆಗ ಯೇಸು, “ನಿಮ್ಮ ಹೃದಯ ಕಲ್ಲಾಗಿ ಇದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು. ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ. ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನ್ನುತ್ತದೆ ಪವಿತ್ರಗ್ರಂಥ. ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ. ಆದುದರಿಂದ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ,” ಎಂದರು. ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು. ಅದಕ್ಕೆ ಅವರು, “ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹ ಬಗೆದು ವ್ಯಭಿಚಾರಿಯಾಗುತ್ತಾನೆ. ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು.

No comments:

Post a Comment