28.05.24 - ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,

ಮೊದಲನೆಯ ವಾಚನ:  1 ಪೇತ್ರ 1:10-16


ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು. ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು. ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷರಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ. ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ. ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ. ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.


ಕೀರ್ತನೆ: 98:1, 2, 3, 4, 5-6. 
ಶ್ಲೋಕ:  ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು. 

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು|
ಎಸಗಿಹನಾತನು ಪವಾಡಕಾರ್ಯಗಳನು|
ಗಳಿಸಿತಾತನ ಕೈ ಪೂತಭುಜ ಗೆಲುವನು||

ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ದಾರಕ ಶಕ್ತಿಯನು||
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು|
ಇಸ್ರಾಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||

ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ|
ನಮ್ಮ ದೇವಾ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ|
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ||

ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ|
ಭಜಿಸಿರಿ ಆತನನು ವಾದ್ಯಮೇಳಗಳೊಂದಿಗೆ||
ಊದಿರಿ ಕೊಂಬನು, ತುತೂರಿಯನು|
ಉದ್ಘೋಷಿಸಿರಿ ಪ್ರಭು ರಾಜನನು||

ಘೋಷಣೆ ಕೀರ್ತನೆ 27:11

ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 10: 28-31


ಆಗ ಪೇತ್ರನು ಮುಂದೆ ಬಂದು, “ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು. ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು, ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. “ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,” ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...