02.07.24

ಮೊದಲನೆಯ ವಾಚನ: ಆಮೋಸ 3:1-8; 4:11-12

ಇಸ್ರಾಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆ ಮಾಡಿ ಕರೆತಂದ ಸರ್ವೇಶ್ವರ ನಿಮ್ಮ ವಿರುದ್ದವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ: "ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು. ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣ ಮಾಡುವುದುಂಟೆ ? ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೇ ಗುರುಗುಟ್ಟುವುದುಂಟೆ ? ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ ? ರಣಕಕಹಳೆ ಮೊಳಗಲು ಬೆದರದೆ ಇರುವುದುಂಟೆ ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ ? ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ. ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು ? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆ ಮಾಡದಿರುವವರು ಯಾರು? "ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣ ಪಾಳೆಯಗಳನ್ನು ಕೆಡವಿದೆನು. ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದಿರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ. ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರುಗೊಳ್ಳಲು ಸಿದ್ಧಮಾಡಿಕೊಳ್ಳಿ, " ಎನ್ನುತ್ತಾರೆ ಸರ್ವೇಶ್ವರ.

ಕೀರ್ತನೆ 5:4-5, 6, 7
ಶ್ಲೋಕ: ಪ್ರಭೂ, ಸತ್ಯಪಥದಲಿ ನಡೆಸೆನ್ನನು.

ದುಷ್ಟತನ ದೇವಾ, ನಿನಗಿಲ್ಲ ಒಲವು|
ಕೆಟ್ಟತನಕೆ ನಿನ್ನ ಬಳಿಯಿಲ್ಲ ನಿಲುವು||
ನಿಲ್ಲಲಾರರು ನಿನ್ನ ಮುಂದೆ ಗರ್ವಿಗಳು|
ನಿನಗೆ ವೈರಿಗಳಾಗುವರು ಅಧರ್ಮಿಗಳು||

ಹುಸಿನುಡಿದವರನು ಪ್ರಭೂ, ನೀ ನಾಶಮಾಡುವೆ|
ಹಿಂಸಕರನು, ವಂಚಕರನು ನೀ ಹೇಸಿಬಿಡುವೆ||
ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ|
ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ||

ಘೋಷಣೆ ಯೊವಾನ್ನ 15:15

ಅಲ್ಲೆಲೂಯ, ಅಲ್ಲೆಲೂಯ!
ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 8:23-27

ಆ ಮೇಲೆ ಯೇಸು ದೋಣಿಯನ್ನು ಹತ್ತಿದರು. ಶಿಷ್ಟರೂ ಹತ್ತಿ ಅವರ ಸಂಗಡ ಹೋದರು. ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತ್ತು. ದೋಣಿ ಅಲೆಗಳಿಂದ ಮುಳುಗಿ ಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು. ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, " ಪ್ರಭೂ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ, " ಎಂದರು. ಅದಕ್ಕೆ ಯೇಸು, " ಅಲ್ಪ ವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ? " ಎಂದರು. ಅನಂತರ ಎದ್ದುನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ವಾತವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. " ಗಾಳಿಯೂ ಸರೋವರವೂ ಇವರು ಹೇಳಿದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು ! " ಎಂದುಕೊಂಡರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...