ಮೊದಲನೆಯ ವಾಚನ: ಆಮೋಸ 8:4-6, 9-12
ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ, "ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ ? ಕೊಳಗವನ್ನು ಕಿರಿದುಮಾಡೋಣ, ತೊಲವನ್ನು ಹಿರಿದುಮಾಡೋಣ, ಕಳ್ಳತಕ್ಕಡಿಯನ್ನು ಬೆಳೆಸೋಣ; ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ, " ಎಂದುಕೊಳ್ಳುತ್ತೀರಿ, ಅಲ್ಲವೇ? ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: "ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡು ಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು. ನಿಮ್ಮ ಕೊಂಡಾಟದಿನಗಳನ್ನು ಗೋಳಾಟದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು." ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ : "ದಿನಗಳು ಬರಲಿವೆ, ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ. ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.
ಕೀರ್ತನೆ: 119:2, 10, 20, 30, 40 ಮತ್ತಾಯ 4:4
ಶ್ಲೋಕ: ಮಾನವನು ಜೀವಿಸುವುದು ದೇವರಾಡುವ ಪ್ರತಿಯೊಂದು ನುಡಿಯಿಂದ.
ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು|
ಮನಃಪೂರ್ವಕವಾಗಿ ಆತನನ್ನು ಅರಸುವವರು ಧನ್ಯರು||
ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ||
ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ||
ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವೆ ಅನುದಿನ,|
ಈ ಕಾರಣ ಕರಗಿಹೋಗುತಿದೆ ಎನ್ನ ಚೇತನ||
ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು|
ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು||
ನಿನ್ನ ನಿಬಂಧನೆಗಳ ಅಭಿಮಾನಿಯು ನಾನು|
ನೀತಿಗನುಸಾರ ಚೇತನಗೊಳಿಸೆನ್ನ ನೀನು||
ಬಾಯ್ದೆರೆದು ಹಾತೊರೆಯುತ್ತಿರುವೆ|
ನಿನ್ನ ಆಜ್ಞೆಗಳನು ಅರಸುತಿರುವೆ||
ಶುಭಸಂದೇಶ: ಮತ್ತಾಯ 9:9-13
ಆ ಕಾಲದಲ್ಲಿ ಯೇಸು ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. " ನನ್ನನ್ನು ಹಿಂಬಾಲಿಸು, " ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ' ಸುಂಕದವರೂ ' ' ಪಾಪಿಷ್ಟರೂ ' ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನುದ್ದೇಶಿಸಿ, ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ ? " ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು, " ವೈದನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, ' ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ ' ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನಲ್ಲ, ಪಾಪಿಷ್ಠರನ್ನು " ಎಂದರು.
No comments:
Post a Comment