ಮೊದಲನೆಯ ವಾಚನ
ಪ್ರವಾದಿ ಯೆಶಾಯನ ಗ್ರಂಥ 49:1-6
"ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ, "ಇಂತೆಂದುಕೊಂಡೆ ನಾನಾಗ. ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ, ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ. ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು, ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು, ತನ್ನ ದಾಸನನ್ನಾಗಿ ನನ್ನ ರೂಪಿಸಿದನು. ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲ್ಲಿ; ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲ್ಲಿ. ಮತ್ತೆ ಆತ ಇಂತೆಂದನು ನನಗೆ:
"ಮಹಾತ್ಕಾರ್ಯವೇನೂ ಅಲ್ಲ. ನನ್ನ ದಾಸನಾದ ನಿನಗೆ ಕುಲಗಳನ್ನು ಉದ್ದರಿಸುವ ಮಾತ್ರಕೆ, ಇಸ್ರಯೇಲರಲ್ಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವ ಜನಾಂಗಗಳಿಗೆ, ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟ ಕಡೆಯವರೆಗೆ."
- ಪ್ರಭುವಿನ ವಾಕ್ಯ
ಕೀರ್ತನೆ: 139: 1-3,13-14,15
ಶ್ಲೋಕ: ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ, ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ.
1. ಪ್ರಭೂ, ಪರಿಶೋಧಿಸಿರುವೆ ನೀ ನನ್ನನು|
ನೀ ಅರಿತುಕೊಂಡಿರುವ ಅಂತರಂಗವನು||
ನಾ ಕೂರುವುದೂ ಏಳುವುದು ನಿನಗೆ ಗೊತ್ತಿದೆ|
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡೆತೆಯಲ್ಲವು ನಿನಗೆ ಸುಪರಿಚಿತ||
2. ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯಗರ್ಭದಲೇ ನನ್ನ ರೂಪಿಸಿದಾತ ನೀನು||
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
3. ನನ್ನ ಅಸ್ಥಿಪಂಜರವನು ರೂಪಿಸುವಾಗ|
ತಾಯಗರ್ಭದೊಳು ಅಚ್ಚರದಿ ರಚಿಸುವಾಗ||
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ|
ಮರೆಯಾಗಿರಲಿಲ್ಲ ನಾನು ನಿನಗಾಗ||
ಎರಡನೆಯ ವಾಚನ : ಪ್ರೇಷಿತರ ಕಾರ್ಯಕಲಾಪ 13:22-26
ಪ್ರಭುವಿನ ವಾಕ್ಯ
ಅಲ್ಲೆಲೂಯ, ಅಲ್ಲೆಲೂಯ!
"ಸುಕುಮಾರ, ನೀನೆನಿಸಿಕೊಳ್ಳುವೆ ಪರಾತ್ಪರನ ಪ್ರವಾದಿ | ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ ಮುಂದಾಗಿ ತೆರಳಿ ||
ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:57-66,80
ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿದ್ದರು. ಆದರೆ ಮಗುವಿನ ತಾಯಿ, "ಇಲ್ಲ, ಅದು ಕೂಡದು, ಅವನಿಗೆ 'ಯೊವಾನ್ನ' ಎಂಬ ಹೆಸರಿಡಬೇಕು, " ಎಂದಳು. ಅದಕ್ಕೆ ಅವರು, "ನಿನ್ನ ಬಂಧು ಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ, "ಎಂದು ಹೇಳಿ, "ಮಗುವಿಗೆ ಏನು. ಹೆಸರಿಡಬೇಕೆನ್ನುತ್ತೀರಿ? "ಎಂದು ಮಗುವಿನ ತಂದೆಗೆ ಸನ್ನೆ ಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, "ಇವನ ಹೆಸರು ಯೊವಾನ್ನ " ಎಂದು ಬರೆದನು. ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು. ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಈ ಮಗು ಮುಂದೆ ಎಂಥವನಾಗುವನೋ! " ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು. ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.
- ಪ್ರಭುಕ್ರಿಸ್ತರ ಶುಭಸಂದೇಶ
No comments:
Post a Comment