ಮೊದಲನೆಯ ವಾಚನ: 2 ಅರಸರು 22:8-13, 23:1-3
ಪ್ರಧಾನಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, " ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ " ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು. ಅನಂತರ ಅವನು ಅರಸನ ಬಳಿಗೆ ಹೋಗಿ, " ನಿಮ್ಮ ಸೇವಕರು ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೇಸ್ತ್ರಿಗಳಿಗೆ ಒಪ್ಪಿಸಿದರು; ಇದಲ್ಲದೆ ಯಾಜಕ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ, " ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು. ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ ದು:ಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು, ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವವರಿಗೆ, " ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥ ವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಗೊಳ್ಳದೆ ಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ, ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ, ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ, " ಎಂದು ಆಜ್ಞಾಪಿಸಿದನು. ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು. ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ. ಪೂರ್ಮಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.
ಕೀರ್ತನೆ: 119:33-34, 35, 36, 37, 40
ಶ್ಲೋಕ: ನಿನ್ನ ನಿಬಂಧನೆಯನು, ಪ್ರಭೂ, ಕಲಿಸೆನಗೆ.
ನಿನ್ನ ನಿಬಂಧನೆಯನು, ಪ್ರಭೂ, ಕಲಿಸೆನಗೆ|
ಅದರಂತೆಯೇ ನಡೆಯುವೆನು ಕಡೆಯವರೆಗೆ||
ನೀಡೆನಗೆ ನಿನ್ನ ಶಾಸ್ತ್ರದ ಅರಿವನು|
ಪೂರ್ಣ ಮನದಿಂದ ಆಚರಿಸುವೆನದನು||
ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ|
ಪಡೆಯುವೆ ಹರ್ಷಾನಂದವನು ಅದರಲಿ||
ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ|
ಲಾಭಲೋಭದತ್ತ ಅದು ಸರಿಯದಂತೆ ತಡೆ|
ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ|
ಚೇತನ ನೀಡು ನಿನ್ನ ಮಾರ್ಗದಲಿ ನನಗೆ||
ನಿನ್ನ ನಿಬಂಧನೆಗಳ ಅಭಿಮಾನಿಯು ನಾನು|
ನೀತಿಗನುಸಾರ ಚೇತನಗೊಳಿಸೆನ್ನ ನೀನು||
ಶುಭಸಂದೇಶ: ಮತ್ತಾಯ 7:15-20
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತು ತಿನ್ನುವ ತೋಳುಗಳು. ಅವರ ವರ್ತನೆಯಿಂದ ನೀವು ಅವರನ್ನು ಗುರುತುಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ? ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ. ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು. ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ."
No comments:
Post a Comment