ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

13.07.24 - "ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು"

ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 6:1-8 

ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. 2ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು. ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು. ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿಕೊಂಡೆನು. ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು. ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು. ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.

ಕೀರ್ತನೆ: 93:1, 1-2, 5
ಶ್ಲೋಕ:  ವಹಿಸಿಹನು ಪ್ರಭು ರಾಜ್ಯಾಧಿಕಾರವನು

ಶುಭಸಂದೇಶ: ಮತ್ತಾಯ 10:24-33



ಯೇಸುಸ್ವಾಮಿ ಶಿಷ್ಯರಿಗೆ ಕೊಟ್ಟ ಆದೇಶ ಇದು: "ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?” “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ."

No comments:

Post a Comment