ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

31.07.24 - "ಪುನರುತ್ಥಾನವೂ ಜೀವವೂ ನಾನೇ"

ಮೊದಲನೇ ವಾಚನ: ಯೆರೆಮೀಯ15:10, 16-21 

ಯೆರೆಮೀಯನು ಈ ಪರಿ ತನ್ನ ಶೋಕವನ್ನು ನಿವೇದಿಸಿಕೊಂಡನು: “ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ. ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ? ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ. ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?” ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ. ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”

ಕೀರ್ತನೆ: 59:2-3, 4, 10-11, 17, 18
ಶ್ಲೋಕ: ದೇವಾ, ಸಂಕಟದಲ್ಲೆನಗಾದ ಆಶ್ರಯಗಿರಿ ನೀವು

ಶುಭಸಂದೇಶ: ಯೊವಾನ್ನ11:19-27


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು. ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು ಮಾರ್ತ ಯೇಸುವನ್ನು ಕಂಡು, ‘ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ. ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ,” ಎಂದಳು. ಯೇಸು, “ನಿನ್ನ ಸಹೋದರನು ಜೀವಂತವಾಗಿ ಏಳುವನು,” ಎಂದರು. “ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತವಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ. ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು. ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀನು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು, ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.

No comments:

Post a Comment