ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.09.24

ಮೊದಲನೆಯ ವಾಚನ: ಧರ್ಮೋಪದೇಶಕಾಂಡ 4:1-2, 6-8

ಇಸ್ರಯೇಲರೇ, ಕೇಳಿ: ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು. ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು, ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ' ಈ ದೊಡ್ಡ ಜನಾಂಗ ಎಂಥಾ ಜ್ಞಾನ ವಿವೇಕವುಳ್ಳ ಜನಾಂಗ, ' ಎಂದು ಮಾತಾಡಿಕೊಳ್ಳುವರು. ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ ? ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು ?

ಕೀರ್ತನೆ 15:1-2, 3-4, 5
ಶ್ಲೋಕ: ಯೋಗ್ಯನಾರು ಪ್ರಭೂ, ನಿನ್ನ ಗುಡಾರದಲಿ ಬಿಡಾರಮಾಡಲು ?.

ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು?
ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ
ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ

ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ
ಗುರಿಮಾಡನವನು ನೆರೆಹೊರೆಯವರನು ನಿಂದೆಗೆ
ಭ್ರಷ್ಟರನು ಧಿಕ್ಕರಿಸುವನು, ಭಕ್ತರನ್ನು ಗೌರವಿಸುವನು

ನಷ್ಟವಾದರೂ ಕೊಟ್ಟಮಾತನು ತಪ್ಪನವನು
ಕೊಡುವನು ಕಡವನು, ಬಯಸನು ಬಡ್ಡಿಯನು
ಎಡವರ ಕೇಡಿಗೆ ಪಡೆಯನು ಲಂಚವನು
ಕದಲನೆಂದಿಗೂ ಈಪರಿ ನಡೆವವನು

ಎರಡನೆಯ ವಾಚನ: ಯಕೋಬ 1:17-18, 21-22, 27

ನನ್ನ ಪ್ರಿಯ ಸಹೋದರರೇ, ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬುಮುಸುಕಿದ ಛಾಯೆಯೂ ಇಲ್ಲ. ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು. ನಿಮ್ಮ ಹೃದಯದಲ್ಲಿ ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರ ಮಾಡಬಲ್ಲದು. ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ. ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು -- ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.

ಶುಭಸಂದೇಶ: ಮಾರ್ಕ 7:1-8, 15-16, 21-23

ಆ ಕಾಲದಲ್ಲಿ ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುವಿನ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ದ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ದವಾಗಿ ತೊಳೆಯದೆ ಊಟಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು, ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ದವಾಗಿ ತೊಳೆಯುವುದು, ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, " ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ದವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ ? " ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, " ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ' ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೇ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ ! ಎಂದರು ದೇವರು.' ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತೀರಿ. ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತದೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ದ ಮಾಡುತ್ತದೆ, " ಎಂದರು.

31.08.24

ಮೊದಲನೇ ವಾಚನ: 1 ಕೊರಿಂಥಿಯರಿಗೆ 1:26-31

ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ, ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ, ಜ್ಞಾನಿಗಳನ್ನು ನಾಚಿಕೆಗೀಡು ಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು. ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು. ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂದ,  ಪಾವನತೆ ಹಾಗು ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ. ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: "ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ."

ಕೀರ್ತನೆ: 33:12-13, 18-19, 20-21
 ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ

ಶುಭಸಂದೇಶ: ಮತ್ತಾಯ 25:14-30

 "ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ, ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನ ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು -- ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿ ಬಂದ. ಸೇವಕರಿಂದ ಲೆಕ್ಕಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, "ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ಸಂಪಾದಿಸಿದ್ದೇನೆ," ಎಂದ. ಅದಕ್ಕೆ ಅ ಧಣಿ, 'ಭಲಾ, ನೆಚ್ಚಿನ ಸೇವಕ, ನೀನು ಪ್ರಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು," ಎಂದ ಎರಡು ತಲೆಂತು ಪಡೆದವನು ಮುಂದೆ ಬಂದು, "ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು  ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ," ಎಂದ. ಧಣಿ ಅವನಿಗೂ, 'ಭಲಾ,  ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು," ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದು: "ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ, ನೀವು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದುದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ, ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸೇರಿದೆ,' ಎಂದ.  "ಆಗ ಧಣಿ ಅವನಿಗೆ, 'ಎಲವೋ ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿ ಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ? ಹಾಗಾದರೆ  ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ', ಎಂದ. ಆನಂತರ ಪರಿಚಾರಕರಿಗೆ, 'ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.' ಎಂದು ಹೇಳಿದ.

30.08.24 - "ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."

ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25

ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು. ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ. “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ? ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ? ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.  ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.  ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.  ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಕೀರ್ತನೆ: 33:1-2, 4-5, 10, 11

ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು

ಶುಭಸಂದೇಶ: ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.  ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.  ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.  ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.  ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."

29.08.24 - "ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು."

ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ


ಮೊದಲನೇ ವಾಚನ: ಯೆರೆಮಿಯ: 1: 17-19

ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ಕೀರ್ತನೆ: 96: 71: 1-2, 3-4,5-6, 15, 17
ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು.

ಶುಭಸಂದೇಶ: ಮಾರ್ಕ: 6: 17-29

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತಾ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮ ಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತಾ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗು ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಉಟ್ಟು ಹಬ್ಬದ ದಿನಾಚರಣೆಯಂದು, ಆಸ್ತಾನಿಕರಿಗೂ ಸೇನಾದಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣ ಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನು ಅವರ ಜೊತೆಯಲ್ಲಿ ಭೋಜನಕ್ಕೆ ಕುಳಿತ್ತಿದ್ದ, ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಹಾಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರು ಕೇಳು ಕೊಡುತ್ತೇನೆ," ಎಂದನು. "ನೀನು ಕೇಳಿಕೊಂಡರು ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ," ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಂದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ’ ಇದೇ ನನ್ನ ಬೇಡಿಕೆ," ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತಾ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ನೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದು ಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.

28.08.24 - "ನೀವು ಸುಣ್ಣ ಬಳಿದ ಸಮಾಧಿಗಳು, ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು."

ಮೊದಲನೇ ವಾಚನ: 2 ಥೆಸಲೋನಿಯರಿಗೆ 3:6-10, 16-18

ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ. ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ. ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ. ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು. ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ! ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು! ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!

ಕೀರ್ತನೆ: 128:1-2, 4-5

ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು

ಶುಭಸಂದೇಶ: ಮತ್ತಾಯ 23:27-32

ಯೇಸು ವೇದಪಾರಗರನ್ನೂ ಫರಿಸಾಯರನ್ನೂ ಉದ್ದೇಶಿಸಿ ಹೀಗೆಂದರು: “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.  ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು. “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.  ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.  ಹೀಗೆ ಪ್ರವಾದಿಗಳನ್ನು ಕೊಲೆ ಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ. ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ."



27.08.24 - "ನೀವು ನಿಮ್ಮ ತಟ್ಟೆ ಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ."

ಮೊದಲನೇ ವಾಚನ: 2 ಥೆಸಲೋನಿಯರಿಗೆ 2:1-3, 14-16

ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ: ಪ್ರಭುವಿನ ದಿನವು ಬಂದೇ ಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ. ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪ ಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು. ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.  ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.  ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.

ಕೀರ್ತನೆ: 96:10, 11-12, 13

ಶ್ಲೋಕ: ಪ್ರಭು ಧರಗೆ ನ್ಯಾಯತೀರಿಸಲು ಬಂದೇಬರುವನು ಖರೆಯಾಗಿ

ಶುಭಸಂದೇಶ: ಮತ್ತಾಯ 23:23-26


ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನಸಮೂಹವನ್ನೂ ಉದ್ದೇಶಿಸಿ, "ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.  ಅಂಧ ನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.  ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ.  ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರ ಭಾಗವೂ ಶುಚಿಯಾಗುವುದು." ಎಂದರು.

26.08.24

ಮೊದಲನೇ ವಾಚನ:  2 ಥೆಸಲೋನಿಯರಿಗೆ 1:1:5, 11-12

ನಮ್ಮ ಪುತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯರು ಬರೆಯುವ ಪತ್ರ. ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ದರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ. ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟ ಸಂಕಟಗಳನ್ನೂ ಚಿತ್ರ ಹಿಂಸೆಗಳನ್ನು ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ. ನೀವು ಅನುಭವಿಸುತ್ತಿರುವುದೆಲ್ಲಾ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗು ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು. ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾ ಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸ ಪ್ರೇರಿತ ಕಾರ್ಯಗಳು ಪೂರ್ಣವಾಗಲಿ. ಹೀಗೆ ನಿಮ್ಮ  ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.

ಕೀರ್ತನೆ: 96: 1-2ಎ, 2ಬಿ-3, 4-5
ಶ್ಲೋಕ: ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ.

ಶುಭಸಂದೇಶ: ಮತ್ತಾಯ: 23: 13-22 

"ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವು ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ. ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿ ಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತೀ ಕಠಿಣವಾದ ದಂಡನೆಗೆ ಗುರಿಯಾಗುವಿರಿ). ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗೆ ಜಲ ನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. "ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನು ಬದ್ದನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಠಿಗೆಟ್ಟ ಮತಿ ಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ, ಒಬ್ಬನು ಬಳಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನು ಬದ್ದನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಠಿ ಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ? ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ. ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲೆಸುವ ದೇವರ ಮೇಲೂ ಆಣೆಯಿಡುತ್ತಾನೆ. ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನಸ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ. 

25.08.24 - "ಪಿತನು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು"

ಪ್ರವಾದಿ ಯೆಹೋಶುವನ ಗ್ರಂಥದಿಂದ ವಾಚನ 24: 1-2, 15-18

ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರುನಾಯಕರು,      ನ್ಯಾಯಾಧಿಪತಿಗಳುಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು. ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ“ನಿಮ್ಮ ದೇವರಾದ ಸರ್ವೇಶ್ವರನಿಗೆ ಸೇವೆ ಸಲ್ಲಿಸಿರಿನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆ ಗಳಿಗೋಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ,” ಎಂದನು. ಅದಕ್ಕೆ ಜನರು“ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ. ನಾವು ದಾಸತ್ವದಲ್ಲಿದ್ದ ಈಜಿಪ್ತಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತ ಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿ ಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ. ಈ ನಾಡಿನ ನಿವಾಸಿಗಳಾಗಿದ್ದ ಅಮೋರಿ ಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.

ಎರಡನೆಯ ವಾಚನ
ಸಂತ ಪೌಲ ಎಫೆಸಿಯರಿಗೆ ಬರೆದ ಪತ್ರದಿಂದ ವಾಚನ     5: 21-32

ಕ್ರಿಸ್ತ ಯೇಸುವಿನಲ್ಲಿ ಭಯಭಕ್ತಿ ಯುಳ್ಳವರಾಗಿದ್ದು ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ. ಮಹಿಳೆಯರೇ,  ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಕ್ರಿಸ್ತ ಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತ ಯೇಸುವೇ ಧರ್ಮಸಭೆಯ ಉದ್ಧಾರಕ. ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯು ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು. ಪುರುಷರೇಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತ ಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು. ಧರ್ಮಸಭೆ ಕಳಂಕ ಕಲ್ಮಷವಾಗಲಿಸುಕ್ಕು ಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿ ಕೊಳ್ಳುವಂತೆ ಹೀಗೆ ಮಾಡಿದರು. ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ. ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತ ಯೇಸು ಹೀಗೆಯೇ ಕಾಪಾಡುತ್ತಾರೆ. ನಾವು ಆ ಸಭೆಯ ಅಂಗಗಳು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದುಗೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗುವರು,” ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆಎಂಬುದೇ ನನ್ನ ಅಭಿಪ್ರಾಯ.
ಪ್ರಭುವಿನ ವಾಕ್ಯ

ಘೋಷಣೆ
ಅಲ್ಲೆಲೂಯಅಲ್ಲೆಲೂಯ! ನಮ್ಮ ಪ್ರಭು ಯೇಸುಕ್ರಿಸ್ತರ ದೇವರು ನಿಮ್ಮ ಮನೋ ನೇತ್ರಗಳನ್ನು ತೆರೆಯಲಿಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದೆಂದು ನೀವು ಅರಿತುಕೊಳ್ಳಬೇಕುಅಲ್ಲೆಲೂಯ!

ಶುಭಸಂದೇಶ:
ಸಂತ ಯೊವಾನ್ನರು ಬರೆದ ಶುಭಸಂದೇಶದಿಂದ ವಾಚನ       6: 60-69

ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು“ಇವು ಕಟುವಾದ ಮಾತುಗಳುಇವನ್ನು ಯಾರು ತಾನೆ ಕೇಳಿಯಾರು?” ಎಂದು ಮಾತನಾಡಿ ಕೊಂಡರು. ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು“ಇಷ್ಟು ಮಾತ್ರಕ್ಕೆ ನೀವು ಕಂಗೆಡಬೇಕೇಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನೆನ್ನುವಿರಿಸಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ. ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರುತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರುಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.) “ಪಿತನು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು. ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ. ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ“ನೀವು ಕೂಡ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದರು. ಅದಕ್ಕೆ ಸಿಮೋನ ಪೇತ್ರನು“ಪ್ರಭುವೇನಾವು ಹೋಗುವುದಾದರೂ ಯಾರ ಬಳಿಗೆನಿತ್ಯ ಜೀವವನ್ನೀಯುವ ನುಡಿಯಿರುವುದು ತಮ್ಮಲ್ಲೇ. ತಾವೇ ದೇವರಿಂದ ಬಂದ ಪರಮ ಪೂಜ್ಯರು. ಹೌದುಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.
ಪ್ರಭುಕ್ರಿಸ್ತರ ಶುಭಸಂದೇಶ

24.08.24 - “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,”

 ಮೊದಲನೇ ವಾಚನ: ಪ್ರಕಟನೆ 21:9-14

ದೇವದೂತರುಗಳಲ್ಲಿ  ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.  ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;  ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.  ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.  ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.  ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.

ಕೀರ್ತನೆ: 145:10-11, 12-13, 17-18

ಶ್ಲೋಕ: ಪ್ರಭೂ, ಭಕ್ತಸಮೂಹವು ಪ್ರಸಿದ್ಧಪಡಿಸುವುದು ನಿನ್ನ ರಾಜ್ಯದ ಮಹತ್ವವನು

ಶುಭಸಂದೇಶ: ಯೊವಾನ್ನ 1:45-51


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.  ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.  ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.  ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.  ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.  ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು. ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

23.08.24 - "ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,”

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 37:1-14

ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು. 2ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ: ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.” ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು. ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ. ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು. ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು. ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ. ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು. ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು. ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಕೀರ್ತನೆ: 107:2-3, 4-5, 6-7, 8-9

ಶ್ಲೋಕ: ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು

ಶುಭಸಂದೇಶ: ಮತ್ತಾಯ 22:34-40


ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?” ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’ ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ. ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’ ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

22.08.24 - “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ”

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 36:23-28



ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.  ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು. ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.  ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.  ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.  ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

ಕೀರ್ತನೆ: 51:12-13, 14-15, 18-19

ಶ್ಲೋಕ: ಹಿಸ್ಸೋಪಿನಿಂದ ನೀ ಚಿಮುಕಿಸೆ ನಾ ಶುದ್ಧನಾಗುವೆ

ಜೀವೋದ್ಧಾರವನು  ಮರಳಿ  ಸವಿಯುವಂತೆ  ಮಾಡು|
ವಿಧೇಯನಾಗಿ  ನಡೆವ  ಸಿದ್ಧ  ಮನಸ್ಸನು  ನೀಡು||
ಬೋಧಿಸುವೆನಾಗ  ನಿನ್ನ  ಮಾರ್ಗವನು  ದುರುಳರಿಗೆ|
ತಿರುಗಿಕೊಳ್ವರಾಗ  ದ್ರೋಹಿಗಳು  ನಿನ್ನ  ಕಡೆಗೆ||

ತಪ್ಪಿಸೆನ್ನನು  ಸ್ವಾಮಿದೇವಾ,  ರಕ್ತಾಪರಾಧದಿಂದ|
ನಿನ್ನ  ಸತ್ಯಸಂಧತೆಯನು  ಸಾರುವೆ  ಮುಕ್ತಕಂಠದಿಂದ||
ತೆರೆವಂತೆ  ಮಾಡು  ಪ್ರಭೂ, ನನ್ನ  ತುಟಿಗಳನು|
ಸಾರುವುದೆನ್ನ  ಬಾಯಿ  ನಿನ್ನ  ನುಡಿಗಳನು||

ಬಲಿಯರ್ಪಣೆಯಲಿ  ನಿನಗೊಲವಿಲ್ಲ|
ದಹನಬಲಿಯಿತ್ತರೂ  ನಿನಗೆ  ಬೇಕಿಲ್ಲ||
ಮುರಿದ  ಮನವೇ  ದೇವನೊಲಿವ  ಯಜ್ಞವು|
ನೊಂದ  ಬೆಂದ  ಮನವನಾತ  ಒಲ್ಲೆಯೆನನು||

ಘೋಷಣೆ                     ಕೀರ್ತನೆ  27:11

ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ  ಪ್ರಭೂ,  ನಿನ್ನ  ಮಾರ್ಗವನು,  ಶತ್ರುರಹಿತ  ಹಾದಿಯಲಿ  ನಡೆಸು  ಎನ್ನನು,,
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 22:1-14

ಯೇಸುಸ್ವಾಮಿ ಯಾಜಕರು ಫರಿಸಾಯರನ್ನುದ್ದೇಶಿಸಿ ಈ  ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ; ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ. ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ. ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ. ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ. ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು. ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ. ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು. ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ. ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು. “ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ. ‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ. ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ. “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.

ಪೂಜಾರ್ಪಣೆ 



ಸಂತ ಸ್ಮರಣೆ  - ಸಂತ ಹೆಲೆನಾ St.Helen

 ಕ್ರೈಸ್ತ ಧರ್ಮಕ್ಕೆ ಒಂದು ಅದ್ಭುತ ತಿರುವನ್ನು ಕೊಟ್ಟು ಅದು ಒಂದು ರಾಷ್ಟ್ರದ ಧರ್ಮವಷ್ಟೇ ಆಗದೇ ವಿಶ್ವಕ್ಕೆ ವ್ಯಾಪಿಸಿದ ಕೀರ್ತಿ ಹೇಗೆ ಪ್ರೇಷಿತರಿಗೆ ಸಲ್ಲಬೇಕೋ ಹಾಗೆಯೇ ಅರಸ ಕಾನ್ ಸ್ಟಾಂಟೈನ್ ಗೂ ಸಲ್ಲಬೇಕು. ಈ ಕಾನ್ ಸ್ಟಾಂಟೈನ್ ಮಹಾರಾಜನ ತಾಯಿಯೇ ಹೆಲೆನಾ. ಏಷ್ಯಾದ ಬಡ ಕುಟುಂಬ ಒಂದರಿಂದ ಬಂದ ಹೆಲೆನಾ ಕಾನ್ ಸ್ಟಾಂಟಿಯುಸ್ ಕ್ಲೋರುಸ್ ಎಂಬ ಸೈನ್ಯಾಧಿಕಾರಿಯನ್ನು ಮದುವೆ ಯಾದಳು. 21 ವರ್ಷಗಳ ನಂತರ ಅವಳ ಅದೃಷ್ಟವೋ ದುರಾದೃಷ್ಟವೋ ಸೈನ್ಯಾಧಿಕಾರಿ ಕ್ಲೋರೋಸ್ ಅರಸನಾದ. ಇದರ ಬೆನ್ನಲ್ಲೇ ರಾಜತಾಂತ್ರಿಕ ಕಾರಣಗಳಿಗಾಗಿ ಹೆಲೆನಾ ಗೆ ವಿಚ್ಛೇದನ ನೀಡಿದ. ಒಬ್ಬನೇ ಮಗ ಕಾನ್ ಸ್ಟಾಂಟೈನ್ ತನ್ನ ತಾಯಿಗೆ ನಿಷ್ಠನಾಗಿದ್ದ ಅವಳನ್ನು ಗಾಢವಾಗಿ ಪ್ರೀತಿಸುತ್ತಿದ್ದ. ತನ್ನ ತಂದೆಯ ನಂತರ ಸಿಂಹಾಸನ ಏರಿದಾಗ ಕಾನ್ ಸ್ಟಾಂಟೈನ್  ತನ್ನ ತಾಯಿಗೆ ಮಹಾರಾಣಿಯ ಪಟ್ಟ ಕಟ್ಟಿದ. 

 313 ರಲ್ಲಿ ಮಾಕ್ಸೆಂತಿಯುಸ್ ವಿರುದ್ಧ ಕಾನ್ ಸ್ಟಾಂಟೈನ್ ಜಯಶಾಲಿಯಾದ ನಂತರ ಹೆಲೆನಾ ಕೂಡ ಕ್ರೈಸ್ತ ಧರ್ಮದ ದೀಕ್ಷೆ ಸ್ವೀಕರಿಸಿದರು. ಮಹಾರಾಣಿ ಪಟ್ಟ, ಆಕೆಯ ಧಾರ್ಮಿಕ ಕಾಳಜಿ ಮತ್ತು ವಿಶ್ವಾಸದ ಕಾರಣ ಕ್ರೈಸ್ತ ಧರ್ಮ ವ್ಯಾಪಕವಾಗಿ ಹಬ್ಬಲು ಆಕೆ ಕಾರಣಳಾದಳು. ಯುರೋಪ್ ನಲ್ಲಿ ಅನೇಕ ಚರ್ಚುಗಳನ್ನು ಸ್ಥಾಪಿಸಿ, ತನ್ನ 75ನೇ ವಯಸ್ಸಿನಲ್ಲಿ ಆಕೆಯ ಪವಿತ್ರ ನಾಡಿಗೆ ಪ್ರಯಾಣಿಸಿ ಬೆತ್ಲೆಹೆಮಿನಲ್ಲಿ ಯೇಸು ಹುಟ್ಟಿದ ಸ್ಥಳದ ಪಕ್ಕ ಮತ್ತು ಜೆರುಸಲೇಮಿನಲ್ಲಿ ಯೇಸು ಸ್ವರ್ಗಾರೋಹಣವಾದ ಸ್ಥಳದ ಹತ್ತಿರ ದೇವಾಲಯಗಳನ್ನು ಕಟ್ಟಿಸಿದರು.

 ತನ್ನ ಮಗ ಕಂಡದ್ದಲ್ಲ, ತಾನೇ 'ನಿಜವಾದ ಶಿಲುಬೆ'ಯನ್ನು ಕಂಡ ನಂತರ ಹೆಲೆನಾ ತನ್ನ ರೋಮ್ ನ ಅರಮನೆಯನ್ನು ಸಾಂತಾ ಕ್ರೂಸ್ ದೇವಾಲಯವನ್ನಾಗಿ ಪರಿವರ್ತಿಸಿದಳು. ಸಂತ ಹೆಲೆನಾ ಮರಣಶಯ್ಯೆಯಲ್ಲಿರು ವವರ ಮತ್ತು ಸೂಜಿ ಮತ್ತು ಮೊಳೆಗಳನ್ನು ತಯಾರಿಸುವವರ ಪಾಲಕಿ ಎಂದು ವಿಶ್ವಾಸಿಸಲಾಗಿದೆ


21.08.24 - "ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?"

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 34:1-11

ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು. “ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ? ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ. ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ. ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು; 6ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ. “ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ. ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ;  ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು. “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು. 
ಕೀರ್ತನೆ: 123:1-3, 3-4, 5, 6

ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?

ಶುಭಸಂದೇಶ: ಮತ್ತಾಯ 20:1-16


ಯೇಸು ತಮ್ಮ ಶಿಷ್ಯರಿಗೆ ಈ ಸಾಮತಿ ಹೇಳಿದರು, “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ. ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.  ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು. 5ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ. ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ. ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ. “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ. ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.  ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.  ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.  ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.  ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?  ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.  ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.  ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.

20.08.24 - "ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು"

ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 28:1-10



ಸರ್ವೇಶ್ವರ ವಾಣಿಯನ್ನು ನನಗೆ ದಯಪಾಲಿಸಿದರು - “ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಆಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ. ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ! ನಿನ್ನ ಜ್ಞಾನ ವಿವೇಕಿಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿ ಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ. ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ-ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ. ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸು ಮಾಡುವರು. ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು. ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರುಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ! ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”

ಕೀರ್ತನೆ: 32:26-27, 28, 30, 35-36

 ಶ್ಲೋಕ: ಬದುಕಿಸುವವನು, ಕೊಲ್ಲುವವನು ನಾನೇ

1.  ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ|
ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ||
ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು|
'ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂಲ್ಲ' ಎಂದುಕೊಂಡು||

2.    ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿ ನಿರ್ಣಯವನು|
ಆಲೋಚನೆಯಿಲ್ಲದ ಜನರಿವರು, ಸ್ವಲ್ಪವಾದರೂ ವಿವೇಕವಿಲ್ಲದವರು||
ಶ್ಲೋಕ
 
3.  ಒಬ್ಬನಿಂದ ಸಾವಿರ ಮಂದಿ ಸೋತು ಹೋದುದು|
ಒಬ್ಬರಿಗಂಜಿ ಹತ್ತು ಸಾವಿರ ಓಡಿಹೋದುದು||
ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೇ?|
ಅವರ ಸರ್ವೇಶ್ವರನು ಅವರನು ಕೈ ಬಿಟ್ಟುದರಿಂದಲ್ಲವೇ?||
ಶ್ಲೋಕ

ಶುಭಸಂದೇಶ: ಮತ್ತಾಯ 19:23-30


ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ. ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು. ಪರಿತ್ಯಾಗಕ್ಕೆ ನೂರ್ಮಡಿ ಪ್ರತಿಫಲ ಪೇತ್ರನು ಆಗ ಮುಂದೆ ಬಂದು, “ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?” ಎಂದು ಕೇಳಿದನುಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ. ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆ ತಾಯಿಯರನ್ನಾಗಲಿ, ಮಕ್ಕಳು ಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು. ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.