ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

14.09.24 - "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು"

 ಮೊದಲನೇ ವಾಚನ: ಸಂಖ್ಯಾಕಾಂಡ - 21:4-9



ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ  ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಕೀರ್ತನೆ: 78:1-2, 34-38
ಶ್ಲೋಕ: ಮರೆಯದಿರು ಪ್ರಭುವಿನ ಮಹತ್ಕಾರ್ಯಗಳನು

ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ|
ಗಮನಕೊಡಿ ನಾ ಹೇಳುವ ಮಾತುಗಳಿಗೆ||
ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು|
ಹೊರಪಡಿಸುವೆನು ಪೂರ್ವಕಾಲದ ಗೂಢಾರ್ಥಗಳನು||

ಆತನನು ನೆನಸಿಕೊಂಡರವರು ವಧೆಯಾಗುವಾಗ|
ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ||
ನೆನೆದರಾಗ ದೇವರೇ ತಮಗಾಶ್ರಯದುರ್ಗವೆಂದು|
ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು||

ಆದರೆ ಅವರ ನಾಲಿಗೆಯಾಡಿತು ಅಸತ್ಯ|
ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ||
ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ|
ಬದ್ದರಾಗಿರಲಿಲ್ಲ ಆತನ ನಿಬಂಧನೆಗಳಲಿ||

ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ|
ಕೋಪವ ತಾಳಿಕೊಂಡನು, ಹಲವು ವೇಳೆ ಉದ್ರೇಕಗೊಳ್ಳದೆ||

ಎರಡನೇ ವಾಚನ: ಫಿಲಿಪ್ಪಿಯರಿಗೆ 2:6-11

ಜೀವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದು ಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ, ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವ ಪರಮನು, ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು,  "ಕ್ರಿಸ್ತ ಯೇಸುವೇ ಪ್ರಭು", ಎಂದೆಲ್ಲರಿಗೆ ಅರಿಕೆ ಮಾಡುವರು ಪಿತ ದೇವನ ಮಹಿಮೆಯನ್ನು ಈ ಪರಿ ಹೊಗಳಿ ಸಾರುವರವರು.

ಶುಭಸಂದೇಶ: ಯೊವಾನ್ನ 3:13-17



ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

No comments:

Post a Comment