ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

06.1124 - "ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ."

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:12-18 

ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ. ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ. ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ. ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ. ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು. ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ. ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.

ಕೀರ್ತನೆ: 27:1, 4, 13-14

ಶ್ಲೋಕ:  ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ 

ಶುಭಸಂದೇಶ: ಲೂಕ 14:25-33


ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: “ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕಹಾಕುವುದಿಲ್ಲವೇ? ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ."

05.11.24 - “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!”

 ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:5-11

ಸಹೋದರರೇ, ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ: ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.

ಕೀರ್ತನೆ: 22:26-27, 28-30, 31-32

ಶ್ಲೋಕ: ಪ್ರಭೂ, ನೀನೇ ಸ್ಫೂರ್ತಿ ತುಂಬು ಸಭೆಯಲಿ ನಾ ಮಾಳ್ಪ ಸ್ತುತಿಗೆ

ಶುಭಸಂದೇಶ: ಲೂಕ 14:15-24



ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು. ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ. ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ. ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು. ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ. ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು. “ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ. ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!' ಎಂದು ಸ್ಪಷ್ಟಪಡಿಸಿದ". 

04.11.24

ಮೊದಲನೇ ವಾಚನ: ಫಿಲಿಪ್ಪಯರಿಗೆ: 2:1-4

ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನತೆ, ದೀನದಯಾಳತೆ ಇರುವುದಾದರೆ ಐಕ್ಯಮತ್ಯದಿಂದ ಬಾಳಿರಿ. ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿಧ್ಯೇಯಗಳು  ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಸ್ವಾರ್ಥ ಸಾಧನೆಗಾಗಲಿ, ಡಂಬಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ. ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.

ಕೀರ್ತನೆ: 131:1, 2, 3
ಶ್ಲೋಕ: ಎಂದೇ ನನ್ನಾತ್ಮ ಸಮಾಧಾನದಿಂದಿದೆ.

ಶುಭಸಂದೇಶ: ಲೂಕ 14:12-14

ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, "ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧು ಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ  ಪ್ರತಿಯಾಗಿ ಏನೂ ಮಾಡಲು ಇಲ್ಲದವರು. ಸತ್ಪುರುಷರು ಪುನರುತ್ದಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು." ಎಂದರು.

03.11.24 - "ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು"

ಮೊದಲನೆಯ ವಾಚನ: ಧರ್ಮೋಪದೇಶಕಾಂಡ 6:2-6

ಮೋಶೆಯು ಜನರಿಗೆ ಇಂತೆಂದನು: ನೀವು ಹಾಗು ನಿಮ್ಮ ಪುತ್ರಪೌತ್ರೌದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು, ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು, ಆಗ ನೀವು ದಿರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ. ಆದುದರಿಂದ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂ ಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ ಅಭಿವೃದ್ಧಿಯಾಗುವಂತೆ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ. ಇಸ್ರಯೇಲ್ ಜನಾಂಗವೇ ಕೇಳು: ನಿನ್ನ ದೇವರಾದ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು. ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು. ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.

ಕೀರ್ತನೆ 138:1-3, 6, 8
ಶ್ಲೋಕ: ಪ್ರಭೂ, ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು.


ಹೃದಯಪೂರ್ವಕ ವಂದನೆ ಪ್ರಭೂ ನಿನಗೆ|
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ|
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ||

ನಿನ್ನ ಪ್ರೀತಿ ಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ|
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು|
ಅಧಿಕಮಾಡಿದೆ ನೀನು ನನಾತ್ಮಶಕ್ತಿಯನು||

ಉನ್ನತವಾದರೂ ಗಮನಿಸುವನು ಪ್ರಭು ದೀನರನು|
ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು||
ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು|
ಮರೆತುಬಿಡಬೇಡ ನಿನ್ನಯ ಕೈಕೃತಿಯನು||

ಎರಡನೆಯ ವಾಚನ: ಹಿಬ್ರಿಯರಿಗೆ 7:23-28


ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು ಶಾಶ್ವತವಾಗಿ ಉಳಿಯುವಂಥಾದ್ದು. ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು. ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ದರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು. ಇವರು ಮಿಕ್ಕ ಪ್ರಧಾನ ಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶ್ವಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು. ಧರ್ಮಶಾಸ್ತ್ರ ನೇಮಿಸಿರುವ ಪ್ರಧಾನ ಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನ ಯಾಜಕರನ್ನಾಗಿ ನೇಮಿಸುತ್ತದೆ.

ಶುಭಸಂದೇಶ: ಮಾರ್ಕ 12:28-34


ಆ ಕಾಲದಲ್ಲಿ ಪುನರುತ್ಥಾನದ ಬಗ್ಗೆ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿಯೊಬ್ಬನು, ಯೇಸು ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು," ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು? " ಎಂದು ಕೇಳಿದನು. ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ, ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದಿಲ್ಲ, " ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, " ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ, ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದವು, " ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, "ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ, " ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ

02.11.24 - "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು"

 ಮೊದಲನೇ ವಾಚನ: ಜ್ಞಾನಗ್ರಂಥ 3:1-9 

ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು ಅವರನ್ನು ಮುಟ್ಟದು ಮಹಾಯಾತನೆ ಯಾವುದೂ. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು. ಅವರಾದರೋ ಶಾಂತಿ ಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡು ಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ, ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ. ಶೋಧಿಸಿದ ತರುವಾಯ ದೇವರಿಗೆ ಅವರು ಕಂಡು ಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ, ಅಂಗೀಕೃತರಾದರು ಪೂರ್ಣ ದಹನ ಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲ್ಲಿ ಹೊಳೆಯುವರು ಒಣ ಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯ ತೀರಿಸುರವರು ಜನಾಂಗಗಳಿಗೆ ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕ್ಕೆ. ಸತ್ಯವನ್ನು ಅರಿವರು ದೇವರಲ್ಲಿ ಭರವಸಯಿಡುವವರು ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು. ದೇವರಿಂದ ಆಯ್ಕೆಯಾದವರಿಗಿರುವುದು ಕೃಪಾನುಗ್ರಹವು ದೇವರೇ ಕಾಪಾಡುವರು ಸಜ್ಜನರನು .

ಕೀರ್ತನೆ: 23:1-3, 3-4, 5, 6 
ಶ್ಲೋಕ:, ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ? 

ಎರಡನೇ ವಾಚನ: ರೋಮನರಿಗೆ 6:3-9 

ಸಹೋದರರೇ, ಕ್ರಿಸ್ತ ಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೇ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ದೇವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತ ಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವೂ ಸಹ ಹೊಸ ಜೀವವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನವಾದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪ ಬಂಧದಿಂದ ಬಿಡುಗಡೆ ಹೊಂದಿದವನು. ಕ್ರಿಸ್ತ ಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ  ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು  ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. 

ಶುಭಸಂದೇಶ: ಮತ್ತಾಯ 25:31-46  

"ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಆರಸನು ತನ್ನ ಬಲಗಡೆಯಿರುವ ಜನರಿಗೆ, "ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ, ಲೋಕಾದಿಯಿಂದ ನಿಮಗಾಗಿ ಸಿದ್ಧ ಮಾಡಿದ ಸಾಮ್ರಾಜ್ಯವನ್ನು ಸ್ವಾಸ್ಥ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆ ಇಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ," ಎಂದು ಹೇಳುವನು. ಅದಕ್ಕೆ ಆ ಸಜ್ಜನರು "ಸ್ವಾಮಿಾ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?" ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, "ಈ ನನ್ನ ಸಹೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎನ್ನುವನು. "ಆನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, "ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ," ಎಂದು ಹೇಳುವನು. ಅದಕ್ಕೆ ಅವರು ಕೂಡ, "ಸ್ವಾಮಿಾ, ತಾವು ಯಾವಾಗ ಹಸಿದಿದ್ದೀರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಬಂಧಿಯಾಗಿದ್ದಿರಿ, ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, "ಇವರಲ್ಲ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೇ ಮಾಡಲಿಲ್ಲ," ಎನ್ನುವನು. "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.

01.11.24

 ಮೊದಲನೇ ವಾಚನ: ಪ್ರಕಟಣಾ ಗ್ರಂಥ 7:2-4, 9-14

ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ: “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು : ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. ಅವರು ಗಟ್ಟಿಯಾದ ಧ್ವನಿಯಿಂದ: “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು. ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ, “ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು. ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನ‍ನ್ನು ಪ್ರಶ್ನಿಸಿದನು. ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

ಎರಡನೇ ವಾಚನ: 1 ಯೊಹಾನ್ನ 3:1-3


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ. ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.

ಕೀರ್ತನೆ: 24:1-2, 3-4, 5-6
ಶ್ಲೋಕ: ಇಂಥವರೇ ದೇವರ ದರ್ಶನಾಭ್ಯರ್ಥಿಗಳು 

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವು ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಪಭುವಿನ ಶಿಖರವನು ಏರಬಲ್ಲವನಾರು|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||

ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಪಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶುಭಸಂದೇಶ: ಮತ್ತಾಯ 5:1-12



ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು. “ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.  ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.” “ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು". 

31.10.24

ಮೊದಲನೆಯ ವಾಚನ: ಎಫೆಸಿಯರಿಗೆ 6:10-20

ಸಹೋದರರೇ, ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ. ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ. ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರ ಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ. ಎಂದೇ ದೇವರು ಕೋಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮಟ್ಟದೆ ನಿಲ್ಲುತ್ತೀರಿ; ಹಿಮ್ಮಟ್ಟದೆ ನಿಲ್ಲಲೇ ಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ, ನೀತಿಯೆಂಬ ರಕ್ಷಾಕವಚವನ್ನು ತೊಟ್ಟುಕೊಳ್ಳಿರಿ. ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟಿಕೊಳ್ಳಿರಿ. ಸತತವೂ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಹೀಗೆ ಸೈತಾನನ ಅಗ್ನಿಬಾಣಗಳನ್ನೆಲ್ಲಾ ನಂದಿಸಲು ಶಕ್ತರಾಗುವಿರಿ. ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ. ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ. ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ತವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನಿನಗೋಸ್ಕರ ಪ್ರಾರ್ಥಿಸಿರಿ. ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.

ಕೀರ್ತನೆ 144:1, 2, 9-10
ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ

ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ|
ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ||

ಆತನೇ ನಮಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ|
ನನಗೆ ರಕ್ಷಾಕವಚ, ಆಶ್ರಯ, ಶತ್ರುವಿಧ್ವಂಸಕ||

ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು|
ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು||
ನೀನೆ ಅರಸುಗಳಿಗೆ ಜಯಪ್ರದನು|
ದಾಸ ದಾವೀದನನು ಬಿಡಿಸಿದವನು||

ಶುಭಸಂದೇಶ: ಲೂಕ 13:31-35

ಆ ಕಾಲದಲ್ಲಿ ಕೆಲವು ಮಂದಿ ಫರಿಸಾಯರು ಯೇಸುವಿನ ಬಳಿಗೆ ಬಂದು, " ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ, " ಎಂದರು. ಅದಕ್ಕೆ ಯೇಸು, "ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯ ಸಿದ್ಧಿಗೆ ಬರುವುದು. ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು. ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ‌. ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳು ಬೀಳುವುದು. 'ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು, ' ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ, " ಎಂದರು.

30.10.24

ಮೊದಲನೇ ವಾಚನ: ಎಫೆಸಿಯರಿಗೆ: 6: 1-9

ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು. ’ನಿನ್ನ ತಂದೆತಾಯಿಯನ್ನು ಗೌರವಿಸು’ ಎಂಬುದು ವಾಗ್ದಾನದಿಂದ ಕೂಡಿದ ಮೊದಲನೇಯ ಆಜ್ನೆ. ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ. ತಂದೆತಾಯಿಗಳೇ ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸ ಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ. ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕ ಮನಸ್ಸಿನಿಂದಲೂ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಚೆಯನ್ನು ಹೃದಯ ಪೂರ್ವಕವಾಗಿ ಈಡೇರಿಸಿರಿ. ನೀವು ಮಾಡುವುದು ಜನಸೇವೆಯಲ್ಲ, ಪ್ರಭುಸೇವೆ ಎಂದೇ ಭಾವಿಸಿ ನಗುಮುಖದಿಂದ ಸೇವೆಮಾಡಿ. ದಾಸ್ಯದಲ್ಲಿರುವವನಾಗಲಿ, ಸ್ವತಂತ್ರ ಉಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ. ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗ ಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.

ಕೀರ್ತನೆ: 145: 10-13ಎಬಿ, 13ಸಿಡಿ-14
ಶ್ಲೋಕ: ನುಡಿಯಲಿ ಪ್ರಭು ಸದಾ ಪ್ರಾಮಾಣಿಕರು.

ಶುಭಸಂದೇಶ: ಲೂಕ: 13: 22-30

ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತಾ ಪ್ರಯಾಣ ಮಾಡುತ್ತಿದ್ದರು. ಆಗ ಒಬ್ಬನು, "ಸ್ವಾಮಿ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೋ?" ಎಂದು ವಿಚಾರಿಸಿದನು. ಆಗ ಯೇಸು ಜನರಿಗೆ, "ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವ ಪ್ರಯತ್ನ ಮಾಡಿ. ಏಕೆಂದರೆ ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ’ಸ್ವಾಮಿ, ನಮಗೆ ಬಾಗಿಲು ತೆರೆಯಿರಿ, ಎಂದು ನೀವು ಕೇಳುವಿರಿ. ಅದಕ್ಕೆ ಅವನು, ’ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು. ಆಗ ನೀವು, ’ನಿಮ್ಮೊಂದಿಗೆ ನಾವು ಊಟ ಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶ ಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ. ಆದರೆ ಅವನು ಪುನಃ, ’ನೀವು ಎಲ್ಲಿಯವರೋ ನಾನರಿಯೇ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು. ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲುಕಡಿತವೇನು! ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು. "ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು," ಎಂದರು.

29.10.24 - “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ?"

 ಮೊದಲನೇ ವಾಚನ: ಎಫೆಸಿಯರಿಗೆ 5:21-33 

ಮಹಿಳೆಯರೇ, ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ.  ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.  ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು. ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.  ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.  ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.  ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.  ನಾವು ಆ ಸಭೆಯ ಅಂಗಗಳು.  ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದು ಕೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗಿರುವರು.”  ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.  ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ. 

ಕೀರ್ತನೆ: 128:1-2, 3, 4-5 

ಶ್ಲೋಕ: ಹೊಂದುವನು ಆಶೀರ್ವಾದವನು, ಪ್ರಭುವಿನಲಿ ಭಯಭಕ್ತಿಯುಳ್ಳವನು. 

ಶುಭಸಂದೇಶ: ಲೂಕ 13:18-21 

ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು. ಪುನಃ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?  ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು. 

28.10.24 - "ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು"

 ಮೊದಲನೇ ವಾಚನ: ಎಫೆಸಿಯರಿಗೆ 2:19-22 


ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.  ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.  ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.  ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ. 

ಕೀರ್ತನೆ: 19:2-3, 4-5 

ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ. 

ಶುಭಸಂದೇಶ: ಲೂಕ 6:12-16 


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.  ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.  ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,  ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,  ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. 

27.10.24 - "ದಾವೀದ ಕುಲಪುತ್ರರೇ, ನನಗೆ ದಯೆತೋರಿ"

ಮೊದಲನೆಯ ವಾಚನ: ಯೆರೆಮೀಯ 31:7-9

ಸರ್ವೇಶ್ವರ ಹೀಗೆನ್ನುತ್ತಾರೆ: " ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ, ಜನಾಂಗಗಳಾ  ರೋಮಣಿಗೆ ಜೈಕಾರ ಮಾಡಿರಿ. 'ಸರ್ವೇಶ್ವರ ಅಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು ' ಎಂದು ಗೋಷಿಸುತ್ತಾ ಸ್ತುತಿಸಿರಿ. ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರ ದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು. ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.

ಕೀರ್ತನೆ 126:16
ಶ್ಲೋಕ: ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ.

ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ|
ಅದೊಂದು ಕನಸು ಕಂಡಂಡಿತ್ತು ನಮಗೆ ಆವಾಗ|
ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ||

ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ|
ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ||
ಪ್ರಭು ನಮಗೆ ಮಹತ್ಕಾರ್ಯಮಾಡಿದುದು ಖಚಿತ|
ಎಂತಲೇ ನಾವಾನಂದಭರಿತರಾಗುವುದು ಉಚಿತ||

ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ|
ನೀಡು ಸಿರಿ ಸೌಭಾಗ್ಯ ಹೇ ಪ್ರಭೂ, ನಮಗೆ ಮತ್ತೆ||
ಅಳುತ್ತಳುತ್ತಾ ಬಿತ್ತುವವರು ನಲಿನಲಿಯುತ್ತಾ ಕೊಯ್ಯುವರು|
ದುಃಖಿಸುತ್ತಾ ಬೀಜ ಬಿತ್ತಲು ಹೋದವನು|
ಹರ್ಷಿಸುತ್ತಾ ಕೊಯ್ದುತರುವನು ತೆನೆಗಳನು||

ಎರಡನೆಯ ವಾಚನ: ಹಿಬ್ರಿರಿಯರಿಗೆ  5:1-6

ಪ್ರತಿಯೊಬ್ಬ ಪ್ರಧಾನ ಯಾಜಕ ಜನರ ಮಧ್ಯದಿಂದ ಆರಿಸಲಾದವನು, ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು. ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು. ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ. ಅಲ್ಲದೆ, ಪ್ರಧಾನ ಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆಹೊಂದಿದವರಾಗಿರಬೇಕು. ಅದೇ ರೀತಿ ಕ್ರಿಸ್ತ ಯೇಸು, ಪ್ರಧಾನ ಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. "ನೀನೇ ನನ್ನ ಪುತ್ರನು, ನಾನೇ ನಿನ್ನನ್ನು ಪಡೆದಿದ್ದೇನೆ, " ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು. ಅವರೇ ಮತ್ತೊಂದು ಕಡೆಯಲ್ಲಿ : " ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ, " ಎಂದಿದ್ದಾರೆ.

ಶುಭಸಂದೇಶ: ಮಾರ್ಕ 10:46-52

ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡ ಗುಂಪು ಅವರನ್ನು ಹಿಂಬಾಲಿಸಿತು. ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, "ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, "ಎಂದು ಗಟ್ಟಿಯಾಗಿ ಕೂಗಿಕೊಂಡನು. ಅನೇಕರು ' ಸುಮ್ಮನಿರು ' ಎಂದು ಅವನನ್ನು ಗದರಿಸಿದರು. ಅವನಾದರೋ, "ದಾವೀದ ಕುಲಪುತ್ರರೇ, ನನಗೆ ದಯೆತೋರಿ, " ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು, " ಅವನನ್ನು ಕರೆದುಕೊಂಡು ಬನ್ನಿ, " ಎಂದು ಅಪ್ಪಣೆಮಾಡಿದರು. ಅವರು ಹೋಗಿ, " ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ, " ಎಂದು ಹೇಳಿದರು. ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಯೇಸು, " ನನ್ನಿಂದ ನಿನಗೆ ಏನಾಗಬೇಕು? " ಎಂದು ಕೇಳಿದರು. ಅದಕ್ಕೆ ಅವನು, "ಗುರುದೇವಾ! ನನಗೆ ಕಣ್ಣುಕಾಣುವಂತೆ ಮಾಡಿ, " ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, " ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥ ಮಾಡಿದೆ, " ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿ ಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆ ಹೋದನು.

26.10.24 - "ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ"

 ಮೊದಲನೇ ವಾಚನ:  ಎಫೆಸಿಯರಿಗೆ 4:7-16 


ಸಹೋದರರೇ, ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.” ‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ.  ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.  ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.  ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ. ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.  ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.  ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ. 

ಕೀರ್ತನೆ: 122:1-2, 3-4, 4-5 

ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದು ಜಾನರೆನ್ನ ಕರೆದಾಗ ಆಯಿತೆನಗೆ ಆನಂದ. 

ಶುಭಸಂದೇಶ: ಲೂಕ 13:1-9 


ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.  ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ?  ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ. ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ? ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು. ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ. ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ. ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ,’ ಎಂದನು.” 

25.10.22 - “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?"

 ಮೊದಲನೇ ವಾಚನ: ಎಫೆಸಿಯರಿಗೆ   4:1-6 


ಸಹೋದರರೇ, ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ. ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. 

ಕೀರ್ತನೆ: 24:1-2, 3-4, 5-6 

ಶ್ಲೋಕ: ಇಂಥವರೇ ದೇವರ ದರ್ಶನಾಭ್ಯರ್ಥಿಗಳು 

ಶುಭಸಂದೇಶ: ಲೂಕ 12:54-59 


ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ.  ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.  ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ? “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು? ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.  ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು. 

24.10.24 - “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.

ಮೊದಲನೇ ವಾಚನ: ಎಫೆಸಿಯರಿಗೆ  3:14-21 

ಸಹೋದರರೇ, ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:  ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.  ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;  ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.  ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.  ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ. ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್!

ಕೀರ್ತನೆ: 33:1-2, 4-5, 11-12, 18-19 

ಶ್ಲೋಕ: ಪ್ರಭು ಅಚಲ ಪ್ರೀತಿಯಿಂದ ಜಗವನು ತುಂಬಿಹನು 

ಶುಭಸಂದೇಶ: ಲೂಕ 12:49-53 

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.  ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.  ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.  ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು.  ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು. 

23.10.24 - "ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು"

 ಮೊದಲನೇ ವಾಚನ: ಎಫೆಸಿಯರಿಗೆ 3:2-12 

ಸಹೋದರರೇ, ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ. ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ. ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ. ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ. ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ. ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು. ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.  ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.  ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.  ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.  

ಯೆಶಾಯ: 12:2-3, 4, 5-6 

ಶ್ಲೋಕ: ಉದ್ಧರಿಸುವ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ. 

ಶುಭಸಂದೇಶ: ಲೂಕ 12:39-48 


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.  ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.  ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.  ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.  ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು." 

22.10.24 - “ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ"

 ಮೊದಲನೇ ವಾಚನ: ಎಫೆಸಿಯರಿಗೆ 2:12-22 


ಸಹೋದರರೇ, ಹಿಂದೊಮ್ಮೆ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ. ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.  ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.  ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ. ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ. ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು. ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು. ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ. 

 ಕೀರ್ತನೆ: 85:9-10, 11-12, 13-14 

ಶ್ಲೋಕ: ತೋರಿಸೇಮಗೆ ಪ್ರಭೂ, ಕರುಣೆಯನು.  

ಶುಭಸಂದೇಶ: ಲೂಕ 12:35-38 


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.  ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.  ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. “ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು. 

 

21.10.24 - "ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?"

 ಮೊದಲನೇ ವಾಚನ: ಎಫೆಸಿಯರಿಗೆ 2:1-10 

ಸಹೋದರರೇ, ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ. ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ. ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು. ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ). ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು. ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು. ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ. ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.  ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ. 

ಕೀರ್ತನೆ: 100:2, 3, 4, 5 

ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು. 

ಶುಭಸಂದೇಶ: ಲೂಕ 12:13-21 


ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು.  ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.  ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು. ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.  ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,  ‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.  ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.  ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.  “ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು. 

20.10.24 - "ನರಪುತ್ರನು ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೋಡುವುದಕ್ಕೆ ಬಂದಿದ್ದಾನೆ."

ಮೊದಲನೆಯ ವಾಚನ: ಯಶಾಯ 53:10-11

ಸರ್ವೇಶ್ವರನ ಚಿತ್ತದಂತೆ ಜರ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು, ಪಡೆಯುವನು ಚಿರಜೀವವನು ತಾನೇ ನೆರವೇರಿಸುವನು ಸರ್ವೇಶ್ವರನ ಸಂಕಲ್ಪವನು. ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹು ಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.

ಕೀರ್ತನೆ 33:4-5, 18-19, 20, 22
ಶ್ಲೋಕ: ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ.

ಸತ್ಯವಾದುದು ಆತನ ಪವಿತ್ರ ವಾಕ್ಯ|
ಸತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು|
ಅಚಲ ಪ್ರೀತಿಯಿಂದ ಜಗವನು ತುಂಬಿಹನು||

ಪ್ರಭುವಾದರೋ ಕಟಿಕ್ಷಿಸುವನು ತನಗಂಜಿ ನಡೆದವರನು|
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು||
ತಪ್ಪಿಸವನವನು ಪ್ರಾಣವನು ಮರಣದಿಂದ|
ಉಳಿಸುವನು ಜೀವವನು ಕ್ಷಾಮಡಾಮರದಿಂದ||

ಕಾದಿದೆ ಎನ್ನ ಮನ ಪ್ರಭುವಿಗಾಗಿ|
ಆತನಿಹನು ಎನಗೆ ಗುರಾಣಿಯಾಗಿ||
ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ|
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ||

ಎರಡನೆಯ ವಾಚನ: ಹಿಬ್ರಿರಿಯರಿಗೆ 4:14-16

ಸಹೋದರರೇ, ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ. ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ -- ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ. ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.

ಶುಭಸಂದೇಶ: ಮಾರ್ಕ 10:35-45

ಆ ಕಾಲದಲ್ಲಿ ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, " ಗುರುವೇ, ನಮ್ಮದೊಂದು ಬಿನ್ನಹವಿದೆ, ಅದನ್ನು ನಡೆಸಿಕೊಡಬೇಕು, " ಎಂದು ವಿಜ್ಞಾಪಿಸಿಕೊಂಡರು." ನನ್ನಿಂದ ನಿಮಗೇನಾಗಬೇಕು? " ಎಂದು ಯೇಸು ಕೇಳಿದರು. " ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು, " ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು. ಅದಕ್ಕೆ ಯೇಸು, " ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕೂಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದಾದೀತೆ? ಎಂದು ಪ್ರಶ್ನಿಸಿದರು. " ಹೌದು ಆಗುತ್ತದೆ, " ಎಂದು ಅವರು ಮರು ನುಡಿದರು. ಆಗ ಯೇಸು, " ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ, ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧ ಮಾಡಲಾಗಿದೆಯೋ ಅವರಿಗೇ ಸಿಗುವುದು, " ಎಂದು ನುಡಿದರು. ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ ಯೊವಾನ್ನರ ಮೇಲೆ ಸಿಟ್ಟುಗೊಂಡರು. ಆಗ ಯೇಸು ಶಿಷ್ಯರೆಲ್ಲರನ್ನು ತಮ್ಮ ಬಳಿಗೆ ಕರೆದು, " ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೇತನ ಮಾಡುತ್ತಾರೆ, ಇದು ನಿಮಗೆ ಗೊತ್ತು. ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ, ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ. ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೋಡುವುದಕ್ಕೂ ಬಂದಿದ್ದಾನೆ, " ಎಂದು ಬೋಧಿಸಿದರು.

19.10.24 - "ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,”

 ಮೊದಲನೇ ವಾಚನ: ಎಫೆಸಿಯರಿಗೆ 1:15-23 

ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.  ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.  ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.  ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.  ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.  ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ. 

 ಕೀರ್ತನೆ: 8:2-3, 4-5, 6-7 

ಶ್ಲೋಕ: ಒಡೆಯನಾಗಿಸಿದೆ ಪ್ರಭೂ ಮಾನವನನು ನಿನ್ನಯ ಕರಕೃತಿಗಳಿಗೆ  

ಶುಭಸಂದೇಶ: ಲೂಕ 12:8-12 


“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ. “ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು. “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು. 

18.10.24

ಮೊದಲನೆಯ ವಾಚನ: 2 ತಿಮೋಥೆಯ 4:10-17

ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ. ಲೂಕನು ಮಾತ್ರ ನನ್ನ ಜೊತೆಯಿದ್ದಾನೆ. ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ. ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ. ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ. ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು. ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿಯಾಗಿದ್ದಾನೆ. ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮಿಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು.

ಕೀರ್ತನೆ 145:11, 12-13, 17-18
ಶ್ಲೋಕ: ಪ್ರಭೂ, ನಿನ್ನ ಭಕ್ತಸಮೂಹವು ಪ್ರಸಿದ್ಧಪಡಿಸುವುದು, ನಿನ್ನ ರಾಜ್ಯದ ಮಹತ್ವವನು.

ಪ್ರಭೂ, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು|
ಕೊಂಡಾಡುವುದು ನಿನ್ನನು ಭಕ್ತಸಮೂಹವು||
ಪ್ರಸಿದ್ದಪಡಿಸುವರು ನಿನ್ನ ರಾಜ್ಯದ ಮಹತ್ವವನು|
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು||

ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು|
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು||
ಶಾಶ್ವತವಾದುದು ನಿನ್ನ ರಾಜ್ಯವು|
ಇರುವುದೆಂದಿಗು ನಿನ್ನ ಆಳ್ವಿಕೆಯು||

ನುಡಿಯಲಿ ಪ್ರಭು ಸದಾ ಪ್ರಮಾಣಿಕನು|
ನಡೆಯಲಿ ಆತನು ಸದಾ ಪ್ರೀತಿಮಯನು||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ|
ಯಥಾರ್ಥವಾಗಿ ಆತನನು ಅರಸುವವರಿಗೆ||

ಶುಭಸಂದೇಶ: ಲೂಕ 10:1-9


ಆ ಕಾಲದಲ್ಲಿ ಯೇಸು ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, " ಬೆಳೆಯೇನೋ ಹೇರಳವಾಗಿದೆ, ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ' ಮನೆಗೆ ಶಾಂತಿ, ' ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ' ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ, ' ಎಂದು ತಿಳಿಸಿರಿ.

17.10.24 - "ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ"

ಮೊದಲನೇ ವಾಚನ: ಎಫೆಸಿಯರಿಗೆ 1:3-10

ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ. ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ. ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ. 

ಕೀರ್ತನೆ:  98:1, 2-3, 3-4, 5-6

ಶ್ಲೋಕ: ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು  

ಶುಭಸಂದೇಶ: ಲೂಕ 11:47-54




ಯೇಸು ಧರ್ಮಶಾಸ್ತ್ರಜ್ಞರನ್ನುದ್ದೇಶಿಸಿ ಹೀಗೆಂದರು: "ಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದುಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ. ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು. ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.  ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.  ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು. ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ, ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.