ಮೊದಲನೇ ವಾಚನ: ಫಿಲಿಪ್ಪಯರಿಗೆ: 2:1-4
ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನತೆ, ದೀನದಯಾಳತೆ ಇರುವುದಾದರೆ ಐಕ್ಯಮತ್ಯದಿಂದ ಬಾಳಿರಿ. ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಸ್ವಾರ್ಥ ಸಾಧನೆಗಾಗಲಿ, ಡಂಬಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ. ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.
ಕೀರ್ತನೆ: 131:1, 2, 3
ಶ್ಲೋಕ: ಎಂದೇ ನನ್ನಾತ್ಮ ಸಮಾಧಾನದಿಂದಿದೆ.
ಶುಭಸಂದೇಶ: ಲೂಕ 14:12-14
ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, "ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧು ಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನೂ ಮಾಡಲು ಇಲ್ಲದವರು. ಸತ್ಪುರುಷರು ಪುನರುತ್ದಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು." ಎಂದರು.
No comments:
Post a Comment