ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:5-11
ಸಹೋದರರೇ, ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ: ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.
ಕೀರ್ತನೆ: 22:26-27, 28-30, 31-32
ಶ್ಲೋಕ: ಪ್ರಭೂ, ನೀನೇ ಸ್ಫೂರ್ತಿ ತುಂಬು ಸಭೆಯಲಿ ನಾ ಮಾಳ್ಪ ಸ್ತುತಿಗೆ
ಶುಭಸಂದೇಶ: ಲೂಕ 14:15-24
ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು. ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ. ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ. ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು. ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ. ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು. “ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ. ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!' ಎಂದು ಸ್ಪಷ್ಟಪಡಿಸಿದ".
No comments:
Post a Comment