ಮೊದಲನೇ ವಾಚನ: ಗಲಾತ್ಯರಿಗೆ 3:22-29
ಸಹೋದರರೇ, ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ. ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು. ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು. ಈಗ ಕ್ರೈಸ್ತವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ. ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ. ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ. ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ. ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.
ಕೀರ್ತನೆ: 105:2-3, 4-5, 6-7
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು
ಶುಭಸಂದೇಶ: ಲೂಕ 11:27-28
ಯೇಸುಸ್ವಾಮಿ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು. ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.
No comments:
Post a Comment