ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

31.12.24 - "ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು"

ಮೊದಲನೇ ವಾಚನ: 1 ಯೊವಾನ್ನ 2:18-21 

ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮಿಾಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ. ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ವಷ್ಟವಾಗಿ ಕಂಡುಬರುತ್ತದೆ. ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ, ಸತ್ಯವನ್ನು ಅರಿತವರಾಗಿದ್ದೀರಿ. ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು ಆದುದರಿಂದ ನಾನು ನಿಮಗೆ  ಬರೆದಿದ್ದೇನೆ. 


ಕೀರ್ತನೆ: 96:1-2,11-12,13 
ಶ್ಲೋಕ: ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು 

ಶುಭಸಂದೇಶ: ಯೊವಾನ್ನ 1:1-18 
ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತವೇ ಸಮಸ್ತವೂ ಉಂಟಾಯಿತು ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು, ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ, ಅವರಲ್ಲಿ ವಿಶ್ವಾಸವಿಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು. ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು. ಪಿತನಿಂದ ಪಡೆದ ಆ ಮಹಿಮೆಏಕೈಕ ಪುತ್ರನಿಗೆ ಮಿಾಸಲಾದ ಮಹಿಮೆಯೇ ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ," 'ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಟರು" ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ  ಸತ್ಯವಾದರೋ ಯೇಸುಕ್ರಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಳದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

30.12.24 - "ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು"

ಮೊದಲನೇ ವಾಚನ: 1 ಯೊವಾನ್ನ 2:12-17 

ಬರೆಯುತ್ತಿಹೆನು ಪ್ರಿಯ ಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು, ಬರೆಯುತ್ತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತ್ತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು. ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು, ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು. ಲೋಕಕ್ಕೂ ಲೌಕಿಕವಾದವುಗಳಿಗೂ ನೀವು ಒಲಿಯಬಾರದು. ಈ ಲೋಕವನ್ನು ಒಲಿದರೆ ಪಿತನಲ್ಲಿ ನಿಮಗೆ ಒಲವಿಲ್ಲವೆಂದಾಯಿತು. ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುದಲ್ಲ. ಲೋಕದಿಂದಲೇ ಬಂದವು. ಲೋಕವೂ ಅದರ ವ್ಯಾಮೋಹವೂ ಗತಿಸಿ ಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು. 

ಕೀರ್ತನೆ: 96: 7-8, 8-9, 10 
ಶ್ಲೋಕ: ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು 

ಶುಭಸಂದೇಶ: ಲೂಕ 2:36-40 


ಅಶೇರನ ವಂಶಕ್ಕೆ ಸೇರಿದ ಘನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿ ಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಭತ್ತನಾಲ್ಕು ವರ್ಷ ವಯಸ್ಸು. ಮಹಾ ದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರುನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.

29.12.24 - "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ"

ಮೊದಲನೇ ವಾಚನ: ಸಿರಾಖ 3:2-6, 12-14 

ಸರ್ವೇಶ್ವರ ಮಕ್ಕಳಿಗಿಂತ ಮಿಗಿಲಾಗಿ ತಂದೆಗೆ ಗೌರವ ನೀಡಿದ್ದಾರೆ; ಗಂಡುಮಕ್ಕಳ ಮೇಲೆ ತಾಯಿಗೆ ಅಧಿಕಾರವನ್ನು ಅನುಗ್ರಹಿಸಿದ್ದಾರೆ. ತಂದೆಯನ್ನು ಸನ್ಮಾನಿಸುವವನು ತನ್ನ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿದವನಂತೆ; ತಾಯಿಯನ್ನು ಗೌರವಿಸುವವನು, ನಿಧಿ ಶೇಖರಿಸಿಟ್ಟುಕೊಂಡವನಂತೆ. ತಂದೆಯನ್ನು ಗೌರವಿಸುವವನಿಗೆ ತನ್ನ ಸ್ವಂತ ಮಕ್ಕಳಿಂದ ಆಗುವುದು ಸಂತೋಷ; ಅವನು ಪ್ರಾರ್ಥನೆ ಮಾಡುವಾಗಲೆಲ್ಲ ದೊರಕುವುದವನಿಗೆ ಪ್ರತ್ಯುತ್ತರ. ತಂದೆಯನ್ನು ಗೌರವಿಸುವವನು ಬದುಕುವನು ಬಹುಕಾಲ, ಸರ್ವೇಶ್ವರನಿಗೆ ವಿಧೇಯನಾಗಿರುವವನು ತಾಯಿಗೆ ಬರಮಾಡುವನು ಸಮಾಧಾನ. ಮಗನೇ, ನಿನ್ನ ಮುಪ್ಪಿನ ತಂದೆಗೆ ಸಹಾಯಕನಾಗಿರು, ಅವನು ಬದುಕಿರುವವರೆಗೆ ಅವನ ಮನಸ್ಸನ್ನು ನೋಯಿಸದಿರು. ತಾಳ್ಮೆಯಿಂದಿರು ಅವನ ಬುದ್ಧಿ ಮಂಕಾದಾಗ, ಅವನನ್ನು ಹೀನೈಸಬೇಡ ನೀನು ಬಲವಂತನಾಗಿರುವಾಗ, ತಂದೆಗೆ ಮಾಡಿದ ಉಪಶಮನ ಅಳಿದು ಹೋಗದು; ಬದಲಿಗೆ, ನಿನ್ನ ಪಾಪಕ್ಕೆ ಪ್ರಾಯಶ್ಚಿತವಾಗಿ ಪರಿಣಮಿಸುವುದು. 

ಕೀರ್ತನೆ: 128: 1-2, 3, 4-5 

ಶ್ಲೋಕ: ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು, 
ಆತನ ಮಾರ್ಗಗಳಲೇ ನಡೆಯುವವನು

ಧನ್ಯನು, ಪ್ರಭುವಿನಲ್ಲಿ ಭಯಭಕ್ತಿಯುಳ್ಳವನು
ಧನ್ಯನು, ಆತನ ಮಾರ್ಗದಲ್ಲೇ ನಡೆಯುವವನು


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು
ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು

ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ
ಕೂರುವರು  ನಿನ್ನ ಮಕ್ಕಳು ಊಟದ ಪಂಕ್ತಿಯಲ್ಲಿ ಓಲಿವ್ ಸಸಿಗಳಂತೆ

ಹೊಂದುವನು ಅಂತಹ ಆಶೀರ್ವಾದವನ್ನು
ಪ್ರಭುವಿನಲ್ಲಿ ಭಯ ಭಕ್ತಿಯುಳ್ಳವನು
ಸಿಯೋನಿನಲ್ಲಿರುವ ಪ್ರಭು ನಿನ್ನನ್ನು ಆಶೀರ್ವದಿಸಲಿ

ಜೆರುಸಲೇಮಿನ ಏಳ್ಗೆಯನ್ನು  ಕಾಣು ಇಡೀ ಜೀವಮಾನದಲ್ಲಿ


ಎರಡನೇ ವಾಚನ: ಕೊಲೊಸ್ಸೆಯರಿಗೆ 3:12-21 

ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತ ಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ, ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪು ಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ. ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ. ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿ ಸಮಾಧಾನದಿಂದ ತುಂಬಿರಲಿ. ನೀವು ಒಂದೇ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ. ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ. ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ  ಬುದ್ಧಿಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ. ನುಡಿಯಲ್ಲಾಗಲೀ  ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ  ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ. ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ. ಪುರುಷರೇ, ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಅವರೊಡನೆ ಕಠಿಣವಾಗಿ ವರ್ತಿಸದಿರಿ. ಮಕ್ಕಳೇ, ಎಲ್ಲದರಲ್ಲೂ ನಿಮ್ಮ ತಂದೆತಾಯಿಗಳ ಮಾತು ಕೇಳಿರಿ. ಹೀಗೆ ಮಾಡಿದರೆ ಪ್ರಭುವಿಗೆ ಮೆಚ್ಚುಗೆಯಾಗುತ್ತದೆ. ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆರಳಿಸಿ ಮನಕುಗ್ಗಿಸದಿರಿ. 

ಶುಭಸಂದೇಶ: ಮತ್ತಾಯ 2:13-15, 19-23 


ಜ್ಯೋತಿಷಿಗಳು ಹೊರಟು ಹೋದ ಮೇಲೆ ದೇವ ದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪನಃ ಹೇಳುವ ತನಕ ಅಲ್ಲೇ ಇರು." ಎಂದನು. ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಹೆರೋದನು ಸತ್ತುಹೋದನಂತರ ಈಜಿಪ್ಟಿನಲ್ಲಿದ್ದ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು," ಎಂದು ತಿಳಿಸಿದನು. ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು. ಆದರೆ ಹೆರೋದನ ಮಗ ಆರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು. ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, "ಆತನನ್ನು ನಜರೇತಿನವನೆಂದು ಕರೆಯುವರು" ಎಂಬ ಪ್ರವಚನ ನೆರವೇರಿತು.

28.12.24 - "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ"

 ಮೊದಲನೇ ವಾಚನ: ಯೊವಾನ್ನ 1:5 - 2:2 

ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಇವರ ಪುತ್ರನಿಂದಲೇ ನಾನು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ. ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು. ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಅಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪಗಳಿಂದಲೂ ಶುದ್ಧಗೊಳಿಸುತ್ತದೆ. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ. ಮತ್ತು ಸತ್ಯವೆಂಬುದೆ ನಮ್ಮಲ್ಲಿ ಇರುವುದಿಲ್ಲ. ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಆಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ. ಪ್ರಿಯ ಮಕ್ಕಳೇ, ನೀವು ಪಾಪ ಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು. ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ. ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ. 

ಕೀರ್ತನೆ: 124:2-5, 7-8 

ಶ್ಲೋಕ: ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು ಹರಿದುಹೋಯಿತಿದೋ ಬಲೆಯು, ಹಾರಿಹೋದೆವು ನಾವು 

ಶುಭಸಂದೇಶ: ಮತ್ತಾಯ  2:13-18 


ಜ್ಯೋತಿಷಿಗಳು ಹೊರಟು ಹೋದಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು," ಎಂದನು. ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, "ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದನು" ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು  ಹೇಳಿದ್ದ ಪ್ರವಚನ ಈಡೇರಿತು. ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದು ಹಾಕಿಸಿದನು. "ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು," ಪ್ರವಾದಿ ಯೆರೆಮಿಾಯನ ಈ ಪ್ರವಚನ ಅಂದು ಸತ್ಯವಾಯಿತು.

27.12.24 - "ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ"

ಮೊದಲನೇ ವಾಚನ: 1 ಯೊವಾನ್ನ 1:1-4 


ನಿಮಗೆ ನಾನು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ. ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ, ಆ ಬಗ್ಗೆ ಸಾಕ್ಷಿ ಹೇಳುತ್ತೇವೆ ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯ ಜೀವವನ್ನು ನಿಮಗೆ ಸಾರುತ್ತೇವೆ. ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ನೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ. 

ಕೀರ್ತನೆ: 97:1-2, 5-6, 11-12 

ಶ್ಲೋಕ: ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ. 


ಇದೆ ಪ್ರಭುವಿನಲಿ ಕೈಯಲಿ ರಾಜ್ಯಾಧಿಕಾರ|
ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ|
ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ||
ಇವೆ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು|
ನ್ಯಾಯ ನೀತಿ ಆತನ ಗದ್ದುಗೆಯಸ್ತಿವಾರಗಳು||

ಸಾರ್ವಭೌಮನಾದ ಪ್ರಭುವಿನ ಮುಂದೆ|
ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ||
ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು|
ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು||

ಉದಯವಾಗುವುದು ಜ್ಯೋತಿ ಸಜ್ಜನರಿಗೆ|
ಆನಂದವಿದೆ ಯಥಾರ್ಥ ಹೃದಯಿಗಳಿಗೆ||
ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ|
ಆತನ ಶ್ರೀನಾಮವನು ಕೊಂಡಾಡಿರಿ||

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!


ಓ ದೇವಾ ನಿಮ್ಮನ್ನು ಸ್ತುತಿಸುತ್ತೇವೆ. ನೀವೇ ನಮ್ಮ ಪ್ರಭುವೆಂದು ನಿಮ್ಮನ್ನು ಅಂಗೀಕರಿಸುತ್ತೇವೆ. ಪ್ರೇಷಿತ ಮಹಿಮಾ ವೃಂದವು ನಿಮ್ಮನ್ನು ಸ್ತುತಿಸುತ್ತದೆ, ಓ ಪ್ರಭೂ.
ಅಲ್ಲೆಲೂಯ!

ಶುಭಸಂದೇಶ: ಯೊವಾನ್ನ 20:2-8 

ವಾರದ ಮೊದಲನೆಯ ದಿನ ಮಗ್ದಲದ ಮರಿಯಳು ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ," ಎಂದು ಹೇಳಿದಳು. ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. ಅವನು ಬಗ್ಗಿ ನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು. ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.

26.12.24 - "ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು."

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6: 8-10; 7:54-59 


ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಬುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು "ಬಿಡುಗಡೆ ಹೊಂದಿದವರು" ಎಂಬುದರ  ಪ್ರಾರ್ಥನಾ ಮಂದಿರಕ್ಕೆ ಸೇರಿದವರು.  ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯದ ಯೆಹೂದ್ಯರೂ ಸೇರಿ ಸ್ತೇಪನನೊಂದಿಗೆ ತರ್ಕ ಮಾಡತೊಡಗಿದರು. ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ. ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ  ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು. ಆದರೆ  ಸ್ತೇಪನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,  "ಇಗೋ ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ," ಎಂದನು.  ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು. ಪಟ್ಟಣದಿಂದ  ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು. ಅವರು ತನ್ನ ಮೇಲೆ ಕಲ್ಲು ಬೀರುತ್ತಿದ್ದಾಗ  ಸ್ತೇಫನನು, "ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕಸಿ," ಎಂದು ಪ್ರಾರ್ಥಿಸಿದನು. 

ಕೀರ್ತನೆ:, 31: 3-4, 6, 8, 16, 17 

ಶ್ಲೋಕ: ನನಗಾಧಾರ ನೀನಲ್ಲವೇ? ನನ್ನಾತ್ಮವನು ನಿನಗೊಪ್ಪಿಸಿರುವೆ. 

ಶುಭಸಂದೇಶ: ಮತ್ತಾಯ 10:17-22 


ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯ ಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ. ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.

25.12.24 - "ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು"

  ಮೊದಲನೇ ವಾಚನ: ಯೆಶಾಯ  52:7-10 


ಶುಭಕರ ಸಮಾಚಾರವನು ತರುವ, ಶಾಂತಿಸಮಾಧಾನವನು ಸಾರುವ, ಸಂತಸದ ಸಂದೇಶವನು ಅರುಹುವ, ಜೀವೋದ್ಧಾರವನು ಪ್ರಕಟಿಸುವ, "ನಿನ್ನ ದೇವರೇ ರಾಜ್ಯಭಾರ ವಹಿಸುವ" ಎಂದು ಸಿಯೋನಿಗೆ ತಿಳಿಯಪಡಿಸುತ್ತ, ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸಂದರ! ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು; ಸರ್ವೇಶ್ವರ ಸಿಯೋನಿಗೆ ಮರಳಿ ಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತೆಯನು. ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ. ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು, ತಂದಿರುವನು ತನ್ನ ಜನರಿಗೆ ಸಮಾಧಾನವನು. ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಪ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು. 

ಕೀರ್ತನೆ: 98:1, 2-3, 3-4, 5-6 

ಶ್ಲೋಕ: ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ ನಮ್ಮ ದೇವ ಸಾಧಿಸಿದ ಜಯಗಳಿಕೆ 

1.  ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು
    ಎಸಗಿಹನಾತನು ಪವಾಡ ಕಾರ್ಯಗಳನು
    ಗಳಿಸಿತಾತನ ಕೈ ಪೂತಭುಜ ಗೆಲುವನು

2.  ಪ್ರಕ್ಟಿಸಿಹನಾ ಪ್ರಭು ತನ್ನ ಮುಕ್ತಿ ವಿಧಾನವನು
    ರಾಷ್ಟ್ರಗಳಿಗೆ ತೋರಿಸಿಗನು ಜೀವೋದ್ದಾರಕಾ ಶಕ್ತಿಯನು
    ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ
    ನಮ್ಮ ದೇವ ಸಾಧಿಸಿದ ಜಯಗಳಿಕೆ

3.  ಸ್ಮರಿಸಿಕೋಂಡನಾ ಪ್ರಭು ತನ್ನ ಪ್ರೀತಿಯನು
    ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು
    ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ
    ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ

4.  ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ
    ಭಜಿಸಿರಿ ಆತನನು ವಾದ್ಯಮೇಳದೊಂದಿಗೆ
    ಊದಿರಿ ಕೊಂಬನು, ತುತೂರಿಯನು

    ಉದ್ಘೋಷಿಸಿರಿ ಪ್ರಭು ರಾಜನನು

ಎರಡನೇ ವಾಚನ: ಹಿಬ್ರಿಯರಿಗೆ 1:1-6 



ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು. ಆದರೆ ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನು ಉಂಟುಮಾಡಿದ್ದು ಇವರ ಮುಖಾಂತರವೇ, ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ, ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ. ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರು ವಾಸಿಯಾದಾತ. ಎಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - "ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ," ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, "ನಾನಾತನಿಗೆ ಪಿತನು, ಆತನೆನಗೆ ಪುತ್ರನು, " ಎಂದಾಗಲಿ ಹೇಳಿದ್ದುಂಟೇ? ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ; "ದೇವದೂತರೆಲ್ಲರೂ ಆತನನ್ನು ಆರಾಧಿಸಲಿ," ಎಂದಿದ್ದಾರೆ. 

ಶುಭಸಂದೇಶ: ಯೊವಾನ್ನ 1:1-18 


ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ  ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು, ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು, ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು. ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮಿಾಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ,  "ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು" ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸುಕ್ತಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

24.12.24 - "ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,"

  ಮೊದಲನೇ ವಾಚನ: 2 ಸಮುವೇಲ  7:1-5, 8-12, 14, 16 


ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು. ಒಂದು ದಿನ ಅವನು ಪ್ರವಾದಿ ನಾತಾನನಿಗೆ, "ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!" ಎಂದನು. ಅದಕ್ಕೆ ನಾತಾನನು ಸಮ್ಮತಿಸಿ, "ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ," ಎಂದನು. ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು; "ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: "ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆ ಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು. ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು. ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚಿಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮುಂದೆ ಆಗದು. ನೀನು ಶತ್ರು ಭಯವಿಲ್ಲದೆ, ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿ ತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು." 

ಕೀರ್ತನೆ: 89:2-3, 4-5, 27, 29 

ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು 

ಶುಭಸಂದೇಶ: ಲೂಕ 1:67-79 


ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: ಸ್ತುತಿ ಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ನಮಗೊಬ್ಬ ಶಕ್ತಿಯುತ ಮುಕ್ತಿದಾತನನು. ಪುರಾತನ ಕಾಲದಿಂದಲೆ. ಪೂಜ್ಯ ಪ್ರವಾದಿಗಳ ಬಾಯಿಂದಲೆ ಅರುಹಿಸಿರುವನು ಇಂತೆಂದು ನಮಗೆ; "ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ" ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನ್ನು, ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು. ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ ನಮಗಿತ್ತಿರುವರು. ಶತ್ರುಗಳಿಂದ ರಕ್ಷಿಸುವನೆಂಬ ಅಭಯ. ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ, ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನಿತರಾಗಿ, ಸದ್ಬಕ್ತರಾಗಿ. ಸುಕುಮಾರಾ, ನೀನೆನಿಸಿಕೊಳ್ಳುವೆ "ಪರಾತ್ಪರನ ಪ್ರವಾದಿ", ಸರ್ವೇಶ್ವರನ ಮಾರ್ಗವನ್ನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ ಪಾಪಕ್ಷಮೆಯನ್ನು ಸಾರುವೆ ಆತನ ಪ್ರಜೆಗೆ. ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ. ಕೃಪಾಸಾಗರ, ದಯಾಮಯ, ನಮ್ಮ ದೇವನು, ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು, ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು.

23.12.24 - ಈ ಮಗು ಮುಂದೆ ಎಂಥವನಾಗುವನೋ!

ಪ್ರವಾದಿ ಮಲಾಕಿಯ ಗ್ರಂಥದಿಂದ ಇಂದಿನ ವಾಚನ 3:1-4, 23-24


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು  ಕೇಳಿ: “ನಾನು  ನನ್ನ ದೂತನನ್ನು  ಮುಂದಾಗಿ ಕಳುಹಿಸುತ್ತೇನೆ.  ನಾನು ಬರಲು  ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು  ಎದುರು ನೋಡುತ್ತಿರುವ ಸರ್ವೇಶ್ವರ  ಇದ್ದಕ್ಕಿದ್ದಂತೆ  ತಮ್ಮ  ಆಲಯಕ್ಕೆ  ಬರುವರು.  ಇಗೋ, ನಿಮಗೆ  ಪ್ರಿಯನಾದ  ದೂತನು ಬರುವನು.  ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.” “ಆದರೆ  ಆತನು ಬರುವಾಗ  ಆತನನ್ನು ಎದುರುಗೊಳ್ಳಬಲ್ಲವನು  ಯಾರು?  ಆತನ ದರ್ಶನವನ್ನು  ಪಡೆದು ಬದುಕಬಲ್ಲವನು ಯಾರು?  ಆತನು ಅಕ್ಕಸಾಲಿಗನ ಕುಲುಮೆಯ  ಬೆಂಕಿಗೂ  ಅಗಸನ  ಚೌಳಿಗೂ  ಸಮಾನನು.  ಬೆಳ್ಳಿಯನ್ನು ಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು.  ಆಗ  ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ  ಕಾಲದಲ್ಲಿ ಇದ್ದಂತೆ  ಜೂದಾ ಮತ್ತು  ಜೆರುಸಲೇಮಿನ  ಜನರ ಕಾಣಿಕೆಗಳು  ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.  ಇಗೋ, ಸರ್ವೇಶ್ವರಸ್ವಾಮಿಯ ಆಗಮನದ  ಭಯಂಕರ  ಮಹಾದಿನ ಬರುವುದಕ್ಕೆ  ಮುಂಚೆ  ಪ್ರವಾದಿ  ಎಲೀಯನನ್ನು  ನಿಮ್ಮಲ್ಲಿಗೆ ಕಳುಹಿಸುವೆನು.   ನಾನು  ಬಂದು   ಲೋಕವನ್ನು  ಶಪಿಸಿ ನಾಶಗೊಳಿಸದಂತೆ  ಆತನು  ಹೆತ್ತವರ  ಮನಸ್ಸನ್ನು  ಮಕ್ಕಳ  ಕಡೆಗೂ,  ಮಕ್ಕಳ  ಮನಸ್ಸನ್ನು  ಹೆತ್ತವರ  ಕಡೆಗೂ  ಒಲಿಸಿ  ಅವರನ್ನು  ಒಂದಾಗಿಸುವನು.”
ಪ್ರಭುವಿನ ವಾಕ್ಯ

ಕೀರ್ತನೆ: 25:4-5,8-9,10,14;ಲೂಕ 21:28
ಶ್ಲೋಕ:  ನೀವು  ನಿರೀಕ್ಷಿಸುತ್ತಾ  ತಲೆಯೆತ್ತಿ  ನಿಲ್ಲಿರಿ | ಏಕೆಂದರೆ,  ನಿಮ್ಮ  ಉದ್ಧಾರವು  ಸಮೀಪಿಸಿತು ||

1.  ನಿನ್ನ ಮಾರ್ಗವನು ಪ್ರಭೂ ನನಗೆ ತೋರಿಸು|
ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು||
ಸನ್ಮಾರ್ಗದಲ್ಲಿ ಮುನ್ನಡೆಸೆನ್ನ  ದೇವಾ, ಮುಕ್ತಿದಾತ|
ಕಲಿಸೆನಗೆ ನಿನಗಾಗಿ ಕಾದಿರುವೆ ಸತತ||
ಶ್ಲೋಕ

2.  ಸತ್ಯಸ್ವರೂಪನು, ದಯಾವಂತನು ಪ್ರಭು|
ದಾರಿತಪ್ಪಿದವರಿಗೆ ಬೋಧಕನು ಪ್ರಭು||
ದೀನರನು ನಡೆಸುವನು ತನ್ನ ವಿಧಿಗನುಸಾರ|
ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ||
ಶ್ಲೋಕ

3.  ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ|
ಆತನ ವಿಧಿನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ||
ಪ್ರಭುವಿನ ಮೈತ್ರಿ, ಭಯಭಕ್ತಿಯುಳ್ಳವರಿಗೆ|
ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ||
ಶ್ಲೋಕ

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಓ  ಜನಾಂಗಗಳ  ಅರಸರೇ,  ಮತ್ತು  ಧರ್ಮಸಭೆಯ  ಮೂಲೆಗಲ್ಲೇ,  ಬನ್ನಿ | ಮಣ್ಣಿನಿಂದ  ಉಂಟುಮಾಡಿದ  ಈ  ಮನುಷ್ಯರನ್ನು  ರಕ್ಷಿಸಲು  ಬನ್ನಿ ||
ಅಲ್ಲೆಲೂಯ!

ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:57-66


ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು.  ಸರ್ವೇಶ್ವರ  ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.  ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು.  ಆದರೆ ಮಗುವಿನ ತಾಯಿ, "ಇಲ್ಲ, ಅದು ಕೂಡದು, ಅವನಿಗೆ 'ಯೊವಾನ್ನ' ಎಂಬ ಹೆಸರಿಡಬೇಕು, "ಎಂದಳು.  ಅದಕ್ಕೆ ಅವರು, "ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ, " ಎಂದು ಹೇಳಿ,  "ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ? "ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು.  ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, 'ಇವನ ಹೆಸರು ಯೊವಾನ್ನ'  ಎಂದು ಬರೆದನು.  ಎಲ್ಲರೂ ಬೆರಗಾದರು.  ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಬಿಸಿ ದೇವರನ್ನು ಸ್ತುತಿಸಿದನು.  ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು.  ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.  ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು,  'ಈ ಮಗು ಮುಂದೆ ಎಂಥವನಾಗುವನೋ! 'ಎಂದುಕೊಂಡರು.  ನಿಶ್ಚಿಯವಾಗಿಯೂ ಸರ್ವೇಶ್ವರನ ಅಭಯಹಸ್ತವು  ಈ  ಮಗುವಿನ  ಮೇಲಿತ್ತು.
ಪ್ರಭುಕ್ರಿಸ್ತರ ಶುಭಸಂದೇಶ

20.12.24 - “ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ,”

ಮೊದಲನೆಯ ವಾಚನ : ಪ್ರವಾದಿ ಯೆಶಾಯನ ಗ್ರಂಥದಿಂದ ಇಂದಿನ ವಾಚನ 7:10-14

ಸರ್ವೇಶ್ವರಸ್ವಾಮಿ  ಆಹಾಜನಿಗೆ  ಹೇಳಿದ್ದೇನೆಂದರೆ:  "ನಿನ್ನ  ದೇವರಾದ  ಸರ್ವೇಶ್ವರನಿಂದ  ಒಂದು  ಗುರುತನ್ನು  ಕೇಳಿಕೊ,  ಅದು  ಪಾತಾಳದಷ್ಟು  ಆಳದಲ್ಲೇ  ಇರಲಿ,   ಆಕಾಶದಷ್ಟು  ಎತ್ತರದಲ್ಲೇ  ಇರಲಿ,  ಕೇಳು "ಎಂದರು.  ಅದಕ್ಕೆ  ಆಹಾಜನು  "ಇಲ್ಲ,  ನಾನು  ಗುರುತನ್ನು  ಕೇಳುವುದಿಲ್ಲ.  ಸರ್ವೇಶ್ವರನನ್ನು  ಪರೀಕ್ಷಿಸುವುದಿಲ್ಲ "ಎಂದನು.  ಆಗ  ಯೆಶಾಯನು:

"ದಾವೀದ  ವಂಶಜರೇ,  ಕೇಳಿರಿ,  ಮಾನವರನ್ನು  ಕೆಣಕಿದ್ದು  ಸಾಲದೆಂದು  ದೇವರನ್ನೇ  ಕೆಣಕುತ್ತಿರುವಿರಾ?  ಆಗಲಿ,  ಸರ್ವೇಶ್ವರ  ನಿಮಗೊಂದು  ಗುರುತನ್ನು  ಕೊಡುವರು.  ಇಗೋ, ಕನ್ಯೆಯೊಬ್ಬಳು  ಗರ್ಭತಳೆದು  ಪುತ್ರನೊಬ್ಬನನ್ನು  ಪ್ರಸವಿಸುವಳು.  'ಇಮ್ಮಾನುವೇಲ್'  ಎಂದು  ಆತನಿಗೆ  ಹೆಸರಿಡುವಳು, "ಎಂದರು.

- ಪ್ರಭುವಿನ ವಾಕ್ಯ

ಕೀರ್ತನೆ:            24: 1-4,5-6

ಶ್ಲೋಕ:  ಆಗಮಿಸುತಿಹನಿದೋ  ಮಹಿಮಾವಂತ  ರಾಜಾದಿರಾಜನು  ಇವನೇ  ಪ್ರಭು,  ಯುದ್ಧವೀರನು,  ಶಕ್ತಿಸಮರ್ಥನು,,

1.  ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|

ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿನಡುವೆ ಅದನು ಸ್ಥಿರಗೊಳಿಸಿದವನಾತನೇ||
ಶ್ಲೋಕ

2.  ಪ್ರಭುವಿನ ಶಿಖರವನ್ನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ ಅಪ್ರಾಮಾಣಿಕತೆಗೆ, ಒಲಿಯನವನು||
ಶ್ಲೋಕ

3.  ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಫಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||
ಶ್ಲೋಕ

ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ನಮ್ಮ  ಅರಸರೂ,  ನಮಗೆ  ನ್ಯಾಯಾಧಿಪತಿಯೂ  ಆದ  ಓ  ಇಮ್ಮಾನುವೇಲ್ | ನಮ್ಮ  ಕರ್ತರಾದ  ದೇವರೇ,  ನಮ್ಮನ್ನು  ರಕ್ಷಿಸಲು  ಬನ್ನಿ ||

ಅಲ್ಲೆಲೂಯ!

ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1: 26-38

ಎಲಿಜಬೇತಳು ಗರ್ಭಿಣಿಯಾದ  ಆರನೇ  ತಿಂಗಳಲ್ಲಿ,  ದೇವರು ಗಬ್ರಿಯೇಲ್ ದೂತನನ್ನು  ಗಲಿಲೇಯ  ಪ್ರಾಂತ್ಯದ  ನಜರೇತೆಂಬ ಊರಿನಲ್ಲಿದ್ದ  ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು.  ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು  ಆಕೆಯ  ಬಳಿಗೆ  ಬಂದು “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ  ನಿನ್ನೊಡನೆ ಇದ್ದಾರೆ!” ಎಂದನು. ಇದನ್ನು  ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು. ದೂತನು  ಆಕೆಗೆ, “ಮರಿಯಾ,  ನೀನು ಅಂಜಬೇಕಾಗಿಲ್ಲ; ದೇವರ  ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು ಗರ್ಭವತಿಯಾಗಿ  ಒಬ್ಬ ಮಗನನ್ನು  ಹೆರುವೆ. ಆತನಿಗೆ ‘ಯೇಸು’ ಎಂಬ  ಹೆಸರಿಡಬೇಕು; ಆತನು  ಮಹಾ ಪುರುಷನಾಗುವನು; ಪರಾತ್ಪರ  ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು  ಆತನಿಗೆ ಕೊಡುವರು. ಯಕೋಬನ ವಂಶವನ್ನು  ಆತನು ಚಿರಕಾಲ  ಆಳುವನು; ಆತನ  ರಾಜ್ಯಭಾರಕ್ಕೆ ಅಂತ್ಯವೇ  ಇರದು,” ಎಂದನು.  ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ?  ನನಗೆ  ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ  ನಿನ್ನ ಮೇಲೆ  ಬರುವರು; ಪರಾತ್ಪರ  ದೇವರ  ಶಕ್ತಿ ನಿನ್ನನ್ನು ಆವರಿಸುವುದು;  ಈ ಕಾರಣದಿಂದ,  ನಿನ್ನಲ್ಲಿ ಹುಟ್ಟುವ  ಆ  ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು. ನಿನ್ನ  ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು  ಕೇಳು: ಆಕೆ  ತನ್ನ  ಮುಪ್ಪಿನಲ್ಲೂ ಒಬ್ಬ  ಮಗನನ್ನು ಹೆರಲಿದ್ದಾಳೆ;  ಬಂಜೆ ಎನಿಸಿಕೊಂಡಿದ್ದ  ಆಕೆ ಈಗ  ಆರು  ತಿಂಗಳ ಗರ್ಭಿಣಿ.  ದೇವರಿಗೆ ಅಸಾಧ್ಯವಾದುದು ಯಾವುದೂ  ಇಲ್ಲ,” ಎಂದನು.  ಆಗ ಮರಿಯಳು, “ಇಗೋ,  ನಾನು ದೇವರ  ದಾಸಿ,  ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು  ಬೀಳ್ಕೊಟ್ಟು ಅದೃಶ್ಯನಾದನು.

- ಪ್ರಭುಕ್ರಿಸ್ತರ ಶುಭಸಂದೇಶ


19.12.24

ಮೊದಲನೆಯ ವಾಚನ: ನ್ಯಾಯಸ್ಥಾಪಕರ ಗ್ರಂಥದಿಂದ ಇಂದಿನ ವಾಚನ 13:2-7,24-25

ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ. ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, "ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು. ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು, "ಎಂದನು. ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, "ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. 'ಎಲ್ಲಿಂದ ಬಂದಿರಿ? 'ಎಂದು ನಾನು ಅವನನ್ನು ಕೇಳಲಿಲ್ಲ ; ಅವನು ತನ್ನ ಹೆಸರನ್ನು ತಿಳಿಸಲಿಲ್ಲ. ಆದರೆ ಆತ ನನಗೆ, 'ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು, 'ಎಂದು ಹೇಳಿದನು, "ಎಂದಳು. ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ 'ಸಂಸೋನ' ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು. ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.

ಕೀರ್ತನೆ: 71:3-6,16-17
ಶ್ಲೋಕ: ನಿನ್ನ ಗುಣಗಾನ ನನ್ನ ಬಾಯ್ತುಂಬ | ನಿನ್ನ ಘೋಷಣೆ ನನಗೆ ದಿನದಾದ್ಯಂತ ||

ನೀನಾಗೀರು ನನಗಾಶ್ರಯ ದುರ್ಗ, ಕೋಟೆಕೊತ್ತಲು|
ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು||
ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ|
ಕ್ರೂರ ಕೇಡಿಗರ ವಶದಿಂದೆನ್ನನು ತಪ್ಪಿಸಯ್ಯಾ||

ಸ್ವಾಮಿ ದೇವಾ, ನೀನೇ ನನ್ನ ಭರವಸೆ|
ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ||
ಹುಟ್ಟಿನಿಂದಲೇ ನಾ ನಿನಗಂಟಿಕೊಂಡಿರುವೆನಯ್ಯಾ|
ಗರ್ಭದಿಂದಲೇ ನೀ ಎನ್ನನು ಕರೆದು ತಂದೆಯಯ್ಯಾ||

ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ|
ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ||
ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೇ?|
ನಿನ್ನ ಅದ್ಭುತ ಕಾರ್ಯಗಳನೆಂದಿಗೂ ನಾ ಘೋಷಿಸುತ್ತಿರುವೆ||

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!

ಇಷಯನ ಬುಡದಿಂದ ಹೊರಟುಬಂದ ಓ ಚಿಗುರೇ, ಸದ್ದರ್ಮದ ಆಧಾರರಾಗಿರುವವರೇ; | ತಡಮಾಡದೆ ನಮ್ಮನ್ನು ರಕ್ಷಿಸಲು ಬೇಗನೆ ಬನ್ನಿ||
ಅಲ್ಲೆಲೂಯ

ಶುಭಸಂದೇಶ: ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:5-25

ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್. ಇವಳೂ ಆರೋನನ ಯಾಜಕ ವಂಶಕ್ಕೆ ಸೇರಿದವಳು. ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿ ನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು. ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು. ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು. ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ ಭಕ್ತಸಮೂಹವು ಹೊರಗೆ ನಿಂತು ಪ್ರಾರ್ಥನೆ ಮಾಡುತ್ತಿತ್ತು. ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು. ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯ ಭ್ರಾಂತನಾದನು. ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡು ಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು. ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹು ಜನಕ್ಕೆ ಸಂತಸವನ್ನು ತರುವುದು. ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮ ಭರಿತನಾಗುವನು. ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು. ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ನನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯ ಪ್ರಜೆಯನ್ನು ಸಿದ್ಧಗೊಳಿಸುವನು, "ಎಂದನು. ಅದಕ್ಕೆ ಜಕರೀಯನು, "ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು " ಎಂದನು. ಆಗ ದೇವದೂತನು, "ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು. ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆ ಹೋದಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾರೆ ಮೂಕನಾಗಿರುವೆ, " ಎಂದನು. ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು. ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆ ಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು. ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು. ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. 'ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ, 'ಎಂದುಕೊಳ್ಳುತ್ತಿದ್ದಳು.

18.12.24 - 'ಇಮ್ಮಾನುವೇಲ್' ಎಂದರೆ 'ದೇವರು ನಿಮ್ಮೊಡನೆ ಇದ್ದಾರೆ'

ಮೊದಲನೆಯ ವಾಚನ: ಪ್ರವಾದಿ ಯೆರೆಮೀಯನ ಗ್ರಂಥದಿಂದ ಇಂದಿನ ವಾಚನ 23:5-8


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: "ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು 'ಮೊಳಕೆ'ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತವಾಗಿರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. 'ಯೆಹೋವ ಚಿದ್ಕೇನು' (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು. "ಬರಲಿರುವ ಆ ಕಾಲದಲ್ಲಿ ಜನರು, 'ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ' ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು. ಬದಲಿಗೆ 'ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ' ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ."

ಕೀರ್ತನೆ: 72: 1-2,12-13,18-19
ಶ್ಲೋಕ: ಬೆಳೆಯಲಿ ಆತನ ಪಾಲನೆಯಲ್ಲಿ ನ್ಯಾಯನೀತಿ, ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ,,

ತಿಳಿಸು ನಿನ್ನ ನ್ಯಾಯವನು ದೇವಾ ರಾಜನಿಗೆ|
ಕಲಿಸು ನಿನ್ನ ನೀತಿಯನು ರಾಜಕುವರನಿಗೆ||
ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ|
ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ||

ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು|
ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು||
ದೀನದರಿದ್ರರಿಗೆ ದಯೆಯ ತೋರುವನು|
ದಲಿತರ ಪ್ರಾಣವನು ಕಾಪಾಡುವನು||

ಸ್ತುತ್ಯರ್ಹನು ಸ್ವಾಮಿದೇವನು, ಇಸ್ರಯೇಲನ ದೇವನು|
ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂಥವನು||
ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ|
ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ||

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!

ಇಸ್ರಯೇಲ್ ಮನೆತನವನ್ನು ಆಳುವ ಓ ಅಧಿಪತಿಯೇ, | ಸಿನಾಯ್ ಪರ್ವತದ ಮೇಲೆ ಮೋಶೆಗೆ ನ್ಯಾಯಶಾಸ್ತ್ರವನ್ನು ಕೊಟ್ಟವರೇ ನಮ್ಮನ್ನು ರಕ್ಷಿಸಲು ಬೇಗನೆ ಬನ್ನಿ||

ಅಲ್ಲೆಲೂಯ!

ಶುಭಸಂದೇಶ: ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:18-24


ಕ್ರಿಸ್ತಯೇಸುವಿನ ಜನನದ ಪ್ರಕರಣ:
ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ, ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು 'ಯೇಸು' ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ, "ಎಂದನು. "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವರು "ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು. 'ಇಮ್ಮಾನುವೇಲ್' ಎಂದರೆ 'ದೇವರು ನಿಮ್ಮೊಡನೆ ಇದ್ದಾರೆ' ಎಂದು ಅರ್ಥ. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.

17.12.24 - ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸು ಕ್ರಿಸ್ತರ ವಂಶಾವಳಿ

ಮೊದಲನೆಯ ವಾಚನ: ಆದಿಕಾಂಡ 49: 2,8-10


ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು, ಆಲಿಸಿ ನಿಮ್ಮ ತಂದೆ ಇಸ್ರಯೇಲಿನ ಮಾತನ್ನು ; ಯೆಹೂದನೇ, ವಂದಿಸುವರು ನಿನ್ನನು ಸಹೋದರರು, ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು; ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು. ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ, ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ; ಕಾಲು ಮಡಿಚಿ ಹೊಂಚುಕೂತ ಕೇಸರಿಯಂತೆ. ಈ ಸಿಂಹಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ? ರಾಜ್ಯಾಧಿಕಾರ ಪಡೆದವನು ಬರುವ ತನಕ; ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ; ತಪ್ಪದು ರಾಜದಂಡ ಯೆಹೂದನ ಕೈಯಿಂದ, ಕದಲದು ಮುದ್ರೆಕೋಲು ಅವನ ವಂಶದಿಂದ.

ಕೀರ್ತನೆ: 72: 1-4,7-8,17
ಶ್ಲೋಕ: ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ, ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ.

ತಿಳಿಸು ನಿನ್ನ ನ್ಯಾಯವನು ದೇವಾ,ರಾಜನಿಗೆ|
ಕಲಿಸು ನಿನ್ನ ನೀತಿಯನು ರಾಜಕುವರನಿಗೆ||
ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ|
ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ||

ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ|
ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ||
ದೀನದಲಿತರನಾತ ಉದ್ಧರಿಸಲಿ|
ಬಡಬಗ್ಗರಿಗೆ ನ್ಯಾಯ ದೊರಕಿಸಲಿ||

ಬೆಳೆಯಲಿ ಆತನ ಪಾಲನೆಯಲ್ಲಿ ನ್ಯಾಯನೀತಿ|
ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ||
ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ|
ಮಹಾನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ||

ಶಾಶ್ವತವಾಗಲಿ ಶ್ರೀ ನಾಮ ಆತನಿಗೆ|
ಬೆಳಗಲಿ ಆತನ ಕೀರ್ತಿ ಸೂರ್ಯವಿರುವವರೆಗೆ||
ಆತನಾಶೀರ್ವಾದ ಕೋರಲಿ ಸರ್ವರು ತಮಗೆ|
ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ||

ಘೋಷಣೆ: 
ಅಲ್ಲೆಲೂಯ, ಅಲ್ಲೆಲೂಯ!

ಸಕಲವನ್ನು ಶಕ್ತಿಯಿಂದಲೂ ದಯೆಯಿಂದಲೂ ಆಳುವ ಮಹೋನ್ನತರ ಜ್ಞಾನವೇ | ಬಂದು ನಮಗೆ ಸತ್ಯದ ಮಾರ್ಗವನ್ನು ತಿಳಿಸಿರಿ ||

ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 1:1-17


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸು ಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, ಆಮೋನನಿಗೆ ಯೋಷಿಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯ ದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್, ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್, ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸು ಹುಟ್ಟಿದ್ದು; ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯ ದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.

16.12.24 - ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,

 ಮೊದಲನೇ ವಾಚನ: ಸಂಖ್ಯಾಕಾಂಡ 24:2-7, 15-17


ಬಿಳಾಮನು ಕಣ್ಣೆತ್ತಿ ನೋಡಿದಾಗ ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವಾತ್ಮ ಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: "ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ; ಪುರುಷನ ವಾಣಿ. ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ, ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವೆಕ್ತಿಯ ವಾಣಿ. ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ! ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ; ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರು ಮರಗಳಂತೆ; ನೀರ ಬದಿಯ ದೇವದಾರು ವೃಕ್ಷಗಳಂತೆ. ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ, ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಆಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ; ಅಭಾವೃದ್ಧಿಯಾಗುತ್ತಿದೆ ಅವರ ರಾಜ್ಯ." ನಂತರ ಬಿಳಾಮನು ಪುನಃ ಪದ್ಯರೂಪದಲ್ಲಿ ಹೀಗೆಂದನು: "ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ; ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ; ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಷನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ; ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮಿಾಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ; ರಾಜದಂಡ ಹಿಡಿದವನ ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ಕೀರ್ತನೆ: 25:4-5, 6, 7, 8-9

ಶ್ಲೋಕ: ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು

ಶುಭಸಂದೇಶ: ಮತ್ತಾಯ 21:23-27


ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆ ಮಾಡತೊಡಗಿದರು. ಮುಖ್ಯ ಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, "ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?" ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು, "ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ. "ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?"  ಎಂದು ಕೇಳಿದರು. ಅದಕ್ಕೆ ಅವರು ತಮ್ಮ ತಮ್ಮೊಳಗೇ ತರ್ಕ ಮಾಡಲಾರಂಭಿಸಿದರು; "ದೇವರಿಂದ ಬಂತು ಎಂದು ಉತ್ತರಿಸಿದರೆ, "ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?" ಎಂದು ಕೇಳುವನು. "ಮನುಷ್ಯರಿಂದ ಬಂತು" ಎಂದು ಕೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ" ಎಂದುಕೊಂಡರು. ಬಳಿಕ ಬಂದು, "ನಮಗೆ ಗೊತ್ತಿಲ್ಲ," ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, "ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ," ಎಂದರು.

15.12.24

ಮೊದಲನೇ ವಾಚನ: ಜೆಫನ್ಯನು 3:14-18

ಹರ್ಷದ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ. ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನ್ನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನ್ನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ. ಜೆರುಸಲೇಮಿಗೆ ಈ ಪರಿ ಹೇಳುವವರು ಆ ದಿನದೊಳು: "ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು." ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮದ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲ್ಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲ್ಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲ್ಲಿ ಹಬ್ಬಹುಣ್ಣಿಮೆಗಳ ತರದಲ್ಲಿ. ತಡೆದುಬಿಡುವನು ಸರ್ವವಿನಾಶವನ್ನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನ್ನು.

ಯೆಶಾಯ: 12:2-3, 4, 5-6
ಶ್ಲೋಕ: ಸಿಯೋನಿನ ನಿವಾಸಿಗಳೇ ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯಯಿರುವ ಆ ಘನವಂತನ, ಇಸ್ರಯೇಲಿನಾ ಸ್ವಾಮಿ ಪರಮ ಪಾವನ

ಎರಡನೇ ವಾಚನ: ಫಿಲಿಪ್ಪಿಯರಿಗೆ 4:4-7

ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸ ಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ. ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ. ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾ ಭಾವ ಇರಲಿ. ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.

ಶುಭಸಂದೇಶ: ಲೂಕ 3:10-18

ಆಗ ಜನಸಮೂಹವು, "ಹಾಗಾದರೆ ನಾವೇನು ಮಾಡಬೇಕು?" ಎಂದು ಕೇಳಲು, "ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ," ಎಂದು ಉತ್ತರಕೊಟ್ಟನು. ಆನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, "ಭೋಧಕರೇ, ನಾವೇನು ಮಾಡಬೇಕು?" ಎಂದು ಕೇಳಿದಾಗ, "ಗೊತ್ತು ಮಾಡಿರುವುದಕ್ಕಿಂತ ಹೆಚ್ಚಾಗಿ ಕಿತ್ತುಕೊಳ್ಳಬೇಡಿ," ಎಂದನು. "ನಾವುಮಾಡಬೇಕಾದುದೇನು?" ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, "ಬಲಾತ್ಕಾರದಿಂದಾಗಲೀ, ಸುಳ್ಳು ಬೆದರಿಕೆಯಿಂದಾಗಲೀ, ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ," ಎಂದು ಆತ ಉತ್ತರವಿತ್ತನು. "ಈ ಯೊವಾನ್ನನೇ ಎಲ್ಲರು ಎದುರು ನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ" ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು. ಅದಕ್ಕೆ ಉತ್ತರವಾಗಿ ಯೊವಾನ್ನನು, "ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು. ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟು ಹಾಕುವರು," ಎಂದು ನುಡಿದನು. ಹೀಗೆ ಯೊವಾನ್ನನು ನಾನಾ ವಿಧಗಳಲ್ಲಿ ಪ್ರಭೋಧಿಸುತ್ತಾ ಜನರಿಗೆ ಶುಭಸಂದೇಶವನ್ನು ಸಾರುತ್ತಾ ಇದ್ದನು.

14.12.24 - "ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,"

ಮೊದಲನೇ ವಾಚನ: ಸಿರಾಖ 48:1-4, 9-11

ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ ಉರಿಯಿತವನ ನುಡಿ ಪಂಜಿನಂತೆ, ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ ಅವರನ್ನು ಕುಂದಿಸಿದನು ತನ್ನ ರೋಷದಿಂದಲೆ, ಆಕಾಶವನ್ನೇ ಮುಚ್ಚಿಬಿಟ್ಟನು ಸರ್ವೇಶ್ವರನ ಹೆಸರಿನಲ್ಲಿ ಬೆಂಕಿಯಿಳಿಯುವಂತೆ ಮಾಡಿದನು ಮೂರುಸಾರಿ. ಎಲೈ ಎಲೀಯನೇ, ಮಹತ್ಕಾರ್ಯಗಳಲ್ಲಿ ನೀನು  ಎಷ್ಟು ಘನವಂತನಾಗಿದ್ದೆ! ನಿನ್ನಂತೆ ಹೆಚ್ಚಳಪಡುವವರು ಯಾರಿದ್ದಾರೆ? ನೀ ಒಯ್ಯಲ್ಪಟ್ಟೆ ಬೆಂಕಿಯ ಬಿರುಗಾಳಿಯಲ್ಲಿ ಅಗ್ನಿಮಯ ಕುದುರುಗಳೆಳೆದ ರಥದಲ್ಲಿ. ಕೋಪ ರೌದ್ರಕ್ಕೇರುವುದಕ್ಕೆ ಮುಂಚೆ ಅದನ್ನು ಶಾಂತಪಡಿಸುವುದಕ್ಕಾಗಿ ತಂದೆಯ ಹೃದಯವನ್ನು ಮಗನ ಕಡೆಗೆ ತಿರುಗಿಸುವುದಕ್ಕಾಗಿ ಇಸ್ರಯೇಲಿನ ಕುಲಗಳನ್ನು ಯಥಾಸ್ಥಿತಿಗೆ ತರುವುದಕ್ಕಾಗಿ ತಕ್ಕಕಾಲದಲ್ಲಿ ಗದರಿಸುವಾತ ನೀನೆಂದು ಬರೆದಿದೆ ನಿನ್ನ ವಿಷಯವಾಗಿ. ನಿನ್ನನ್ನು ನೋಡುವವರು ಧನ್ಯರು ಪ್ರೀತಿಯಿಂದ ನಿಧನರಾದವರು ಧನ್ಯರು! ಕಾರಣ, ನಾವು ಸಹ ನಿಜವಾಗಿ ಜೀವಿಸುವೆವು.

ಕೀರ್ತನೆ: 80:2, 3, 15-16, 18, 19
ಶ್ಲೋಕ: ಸರ್ವಶಕ್ತನಾದ ದೇವನೇ, ಉದ್ಧರಿಸೆಮ್ಮನು ಬೆಳಗಲಿ ನಿನ್ನ ಮುಖಕಾಂತಿ, ಪಡೆದೆವು ರಕ್ಷಣೆಯನು

ಶುಭಸಂದೇಶ: ಮತ್ತಾಯ 17:9, 10-13

ಅವರೆಲ್ಲರು ಬೆಟ್ಟದಿಂದ ಇಳಿದು ಬರುವಾಗ ಯೇಸು, "ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ," ಎಂದು ಆಜ್ಞಾಪಿಸಿದರು. ಶಿಷ್ಯರು, "ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?", ಎಂದು ಯೇಸುವನ್ನು ಕೇಳಿದರು ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಎಲೀಯನು ಬಂದು  ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ, ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟ ಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು," ಎಂದರು. ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.

13.12.24 - "ದೈವಜ್ಞಾನವೇ ನಿಜವಾದ ಜ್ಞಾನ"

 ಮೊದಲನೇ ವಾಚನ ಯೆಶಾಯ 48:17-19

ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರಸ್ವಾಮಿಯೆ ನುಡಿದಿಹನು: "ನಿನಗೆ ಕ್ಷೇಮಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರಸ್ವಾಮಿ ದೇವರು ನಾನು. ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ. ಆಗಣಿತವಾಗಿರುತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ."

ಕೀರ್ತನೆ: 1:1-2, 3, 4, 6

ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ, ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ

ಶುಭಸಂದೇಶ: ಮತ್ತಾಯ 11:16-19
"ಈ ಪೀಳಿಗೆಯನ್ನು ನಾನು  ಯಾರಿಗೆ ಹೋಲಿಸಲಿ? ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ," ಎಂದು ಪೇಟೆಬೀದಿಗಳಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ. ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯಗಳನ್ನು ಸೇವಿಸಲಿಲ್ಲ. ಅದಕ್ಕೆ "ಇವನಿಗೆ ದೆವ್ವ ಹಿಡಿದಿದೆ" ಎಂದರು. ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ," ಎಂದರು.

12.12.24 - ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಮೊದಲನೇ ವಾಚನ: ಯೆಶಾಯ 41: 13-20 


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ. ಸರ್ವೇಶ್ವರ ಇಂತೆನ್ನುತ್ತಾರೆ: “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ. ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ. ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ. ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ? ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು. ನೆಡುವೆನು ಅಡವಿಯಲಿ ದೇವದಾರು, ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು. ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’

ಕೀರ್ತನೆ: 145: 1, 9, 10-11, 12-13ab 

ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು, ಸಹನಶೀಲನು, ಪ್ರೀತಿಪೂರ್ಣನು. 

ಶುಭಸಂದೇಶ: ಮತ್ತಾಯ 11: 11-15 

ಯೇಸು ಜನಸಮೂಹಕ್ಕೆ ಯೋವಾನ್ನನನ್ನು ಕುರಿತು ಹೀಗೆಂದರು: ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಟನೇ ಸರಿ. ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗೂ ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.

11.12.24 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ,"

ಮೊದಲನೇ ವಾಚನ: ಯೆಶಾಯ 40: 25-31 


ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನಸ್ವಾಮಿ. ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆಗ! ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯ ಬೀಳದಿದೆ’ ಎನ್ನುತ್ತಿರುವಿರಿ ಏಕೆ? ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮಥ್ರ್ಯ ಅಗಮ್ಯ ಪರಿಶೋಧನೆಗೆ. ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ. ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು. ಸರ್ವೇಶ್ವರನನ್ನು ಎದುರು ನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿದರು, ನಡೆದರೂ ಬಳಲರು.

ಕೀರ್ತನೆ: 103: 1-2, 3-4, 8, 10

ಶ್ಲೋಕ: "ನನ್ನ ಅಂತರಂಗವೇ, ಭಜಿಸು ಪ್ರಭುವನು."


ಶುಭಸಂದೇಶ: ಮತ್ತಾಯ 11: 28-30 


ಈ ಸಮಯದಲ್ಲಿ ಯೇಸು ಹೀಗೆಂದರು: "ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ,".