01.01.2026 - ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು

ಸಂಖ್ಯಾಕಾಂಡದಿಂದ ಇಂದಿನ ಮೊದಲನೆಯ ವಾಚನ: 6:22-27



ಸರ್ವೇಶ್ವರಸ್ವಾಮಿ  ಮೋಶೆಗೆ  ಹೀಗೆಂದರು:  

  "ನೀನು  ಆರೋನನಿಗೂ  ಅವನ  ಮಕ್ಕಳಿಗೂ  ಹೀಗೆ  ಆಜ್ಞಾಪಿಸು:

'ನೀವು  ಇಸ್ರಯೇಲರನ್ನು  ಆಶೀರ್ವದಿಸುವಾಗ  ಈ  ಪ್ರಕಾರ  ಹೇಳಬೇಕು.  ಸರ್ವೇಶ್ವರ  ನಿಮ್ಮನ್ನು  ಆಶೀರ್ವದಿಸಿ  ಕಾಪಾಡಲಿ,  ಸರ್ವೇಶ್ವರ  ಪ್ರಸನ್ನ  ಮುಖದಿಂದ  ನಿಮ್ಮನ್ನು  ನೋಡಿ,  ನಿಮಗೆ  ದಯೆತೋರಲಿ.  ಸರ್ವೇಶ್ವರ  ನಿಮ್ಮ  ಮೇಲೆ  ಕೃಪಾಕಟಾಕ್ಷವಿಟ್ಟು,  ಶಾಂತಿಯನ್ನು  ಅನುಗ್ರಹಿಸಲಿ, 'ಹೀಗೆ  ಅವರು  ಇಸ್ರಯೇಲರ  ಮೇಲೆ  ನನ್ನ  ಹೆಸರನ್ನು  ಉಚ್ಛರಿಸುವಾಗ  ನಾನು  ಅವರನ್ನು  ಆಶೀರ್ವದಿಸುವೆನು."

- ಪ್ರಭುವಿನ ವಾಕ್ಯ

ಕೀರ್ತನೆ:  67:1-2,3-7,V 1

ಶ್ಲೋಕ:  ಹರಸು  ದೇವಾ,  ನಮ್ಮನ್ನಾಶೀರ್ವದಿಸು.


1.  ಹರಸು ದೇವಾ, ನಮ್ಮನ್ನಾಶೀರ್ವದಿಸು|

ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು||

ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ|

ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತೆಗೆಲ್ಲಾ||


2.  ನಿನ್ನ ಕೀರ್ತಿಸಲಿ ದೇವಾ, ಜನರು|

ಸಂಕೀರ್ತಿಸಲಿ ಅವರೆಲ್ಲರೂ||

ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ|

ಆದರ್ಶ ನೀಡುತಿ ಜಗದ ರಾಷ್ಟ್ರಗಳಿಗೆ||


3.  ನಿನ್ನ ಕೀರ್ತಿಸಲಿ ದೇವಾ, ಜನರು|

ಸಂಕೀರ್ತಿಸಲಿ ಅವರೆಲ್ಲರೂ|

ಇತ್ತನೆಮ್ಮ ದೇವನು ಆಶೀರ್ವಾದವನು||

ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು|

ನಮ್ಮೆಲ್ಲರನ್ನು ದೇವನು ಹರಸಲಿ, ಎಲ್ಲೆಡೆ ಆತನ ಭಯಭಕ್ತಿಯಿರಲಿ||


ಎರಡನೆಯ ವಾಚನ : ಪೌಲನು ಗಲಾತ್ಯರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 4:4-7


ಇವರು  ಧರ್ಮಶಾಸ್ತ್ರಕ್ಕೆ  ಅಧೀನರಾದವರನ್ನು  ಬಿಡುಗಡೆ  ಮಾಡುವುದಕ್ಕಾಗಿಯೂ  ದೇವಪುತ್ರರ  ಪದವಿಯನ್ನು  ನಮಗೆ  ಒದಗಿಸಿಕೊಡುವುದಕ್ಕಾಗಿಯೂ  ಒಬ್ಬ  ಸ್ತ್ರೀಯಲ್ಲಿ  ಜನಿಸಿದರು;  ಧರ್ಮಶಾಸ್ತ್ರಕ್ಕೆ  ಅಧೀನರಾಗಿಯೇ  ಹುಟ್ಟಿದರು.  ನೀವು  ದೇವರ  ಮಕ್ಕಳಾಗಿರುವುದರಿಂದಲೇ,  "ಅಪ್ಪಾ,  ತಂದೆಯೇ, " ಎಂದು  ಕರೆಯುವ  ತಮ್ಮ  ಪುತ್ರನ  ಆತ್ಮವನ್ನು  ದೇವರು  ನಮ್ಮ  ಹೃದಯಗಳಿಗೆ  ಕಳುಹಿಸಿದ್ದಾರೆ.  ಆದ್ದರಿಂದ,  ದೇವರ  ಅನುಗ್ರಹದಿಂದಲೇ  ನೀನು  ಇನ್ನು  ಮನೆಯಾಳಲ್ಲ,  ಮಗನಾಗಿದ್ದೀ,  ಮಗನೆಂದ  ಮೇಲೆ  ನೀನು  ವಾರಸುದಾರನೂ  ಹೌದು.

- ಪ್ರಭುವಿನ ವಾಕ್ಯ

ಘೋಷಣೆ : (ಹಿಬ್ರಿಯರಿಗೆ 1:1-2)

ಅಲ್ಲೆಲೂಯ, ಅಲ್ಲೆಲೂಯ!

ಪೂರ್ವಕಾಲದಲ್ಲಿ  ದೇವರು  ನಮ್ಮ  ಪಿತೃಗಳೊಡನೆ  ಹಲವಾರು  ವಿಧದಲ್ಲಿ,  ಅನೇಕ  ಸಾರಿ  ಪ್ರವಾದಿಗಳ  ಮುಖಾಂತರ  ಮಾತನಾಡಿದರು | ಆದರೆ,  ಇತ್ತೀಚಿನ  ಅಂತಿಮ  ದಿನಗಳಲ್ಲಿ  ಅವರು  ತಮ್ಮ  ಪುತ್ರನ  ಮುಖೇನ  ನಮ್ಮೊಡನೆ  ಮಾತನಾಡಿದ್ದಾರೆ ||

ಅಲ್ಲೆಲೂಯ!


ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 2:16-21


ಆ  ಕಾಲದಲ್ಲಿ  ಕುರುಬರು  ತ್ವರೆಯಾಗಿ  ಹೋಗಿ,  ಮರಿಯಳನ್ನೂ  ಜೋಸೆಫನನ್ನೂ  ಗೋದಲಿಯಲ್ಲಿ  ಮಲಗಿದ್ದ  ಶಿಶುವನ್ನೂ  ಕಂಡರು.  ಕಂಡ  ಮೇಲೆ  ಆ  ಮಗುವಿನ  ವಿಷಯವಾಗಿ  ದೂತನು  ತಮಗೆ  ಹೇಳಿದ್ದನ್ನೆಲ್ಲ  ಅವರಿಗೆ  ತಿಳಿಯಪಡಿಸಿದರು.  ಕುರುಬರು  ಹೇಳಿದ  ವಿಷಯವನ್ನು  ಕೇಳಿದವರೆಲ್ಲರೂ  ಆಶ್ಚರ್ಯಪಟ್ಟರು.  ಮರಿಯಳಾದರೋ  ಈ  ವಿಷಯಗಳನ್ನೆಲ್ಲಾ  ಮನಸ್ಸಿನಲ್ಲಿಯೇ  ಇಟ್ಟುಕೊಂಡು  ಆಲೋಚಿಸುತ್ತಾ  ಬಂದಳು.  ಇತ್ತ,  ಕುರುಬರು  ತಾವು  ಕೇಳಿದ್ದನ್ನು  ನೆನೆಯುತ್ತಾ,  ದೇವರ  ಮಹಿಮೆಯನ್ನು  ಸಾರುತ್ತಾ,  ಕೊಂಡಾಡುತ್ತಾ  ಹಿಂದಿರುಗಿದರು.  ದೇವದೂತನು  ಅವರಿಗೆ  ತಿಳಿಸಿದಂತೆ  ಎಲ್ಲವೂ  ಸಂಭವಿಸಿತ್ತು.  ಎಂಟನೆಯ  ದಿನ  ಶಿಶುವಿಗೆ  ಸುನ್ನತಿ  ಮಾಡಬೇಕಾಗಿದ್ದ  ಸಂದರ್ಭದಲ್ಲಿ  ಅದಕ್ಕೆ  'ಯೇಸು'  ಎಂಬ  ಹೆಸರನಿಟ್ಟು  ನಾಮಕರಣ  ಮಾಡಿದರು.  ಈ  ಹೆಸರನ್ನು  ಮರಿಯಳು  ಗರ್ಭಿಣಿಯಾಗುವುದಕ್ಕೆ  ಮುಂಚೆಯೇ  ದೂತನು  ಸೂಚಿಸಿದ್ದನು.

- ಪ್ರಭುವಿನ ಶುಭಸಂದೇಶ

31.12.2025 - ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.

ಮೊದಲನೆಯ ವಾಚನ : ಯೊವಾನ್ನನ ಮೊದಲನೆಯ ಪತ್ರದಿಂದ ಇಂದಿನ ವಾಚನ 2:18-21


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತ ವಿರೋಧಿ  ಬರುವನೆಂದು ನೀವು  ಕೇಳಿದ್ದೀರಿ.  ಈಗಾಗಲೇ ಅನೇಕ  ಕ್ರಿಸ್ತ ವಿರೋಧಿಗಳು ತಲೆದೋರಿದ್ದಾರೆ. ಇದರಿಂದ  ಅಂತಿಮ ಕಾಲ  ಸನ್ನಿಹಿತವಾಯಿತೆಂದು ನಮಗೆ  ತಿಳಿದುಬರುತ್ತದೆ. ಈ ಕ್ರಿಸ್ತ ವಿರೋಧಿಗಳು  ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು.  ಅವರು ನಮ್ಮವರೇ ಆಗಿದ್ದರೆ,  ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು.  ಇದರಿಂದ  ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ  ನಮ್ಮವರಲ್ಲ ಎಂಬುದಾಗಿ  ಸ್ಪಷ್ಟವಾಗಿ  ಕಂಡುಬರುತ್ತದೆ. ನೀವಾದರೋ ಪರಿಶುದ್ದವಾದವರಿಂದ  ಅಭಿಷಿಕ್ತರಾಗಿದ್ದೀರಿ, ಸತ್ಯವನ್ನು ಅರಿತವರಾಗಿದ್ದೀರಿ. ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ. ನೀವು ಸತ್ಯವನ್ನು  ಅರಿತವರು;  ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು.  ಆದುದರಿಂದ ನಾನು ನಿಮಗೆ ಬರೆದಿದ್ದೇನೆ.

- ಪ್ರಭುವಿನ ವಾಕ್ಯ


ಕೀರ್ತನೆ  96: 1-2, 11-13, v. 11

ಶ್ಲೋಕ:  ಹರ್ಷಿಸಲಿ  ಆಕಾಶವು,  ಸಂತೋಷಿಸಲಿ  ಭೂಲೋಕವು.

1.  ಹೊಸ ಗೀತೆಯನು ಹಾಡಿರಿ ಪ್ರಭುವಿಗೆ|

ವಿಶ್ವವೆಲ್ಲವು ಹಾಡಲಿ ಆತನಿಗೆ||

ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ|

ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ||

ಶ್ಲೋಕ


2.  ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು|

ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು||

ಉಲ್ಲಾಸಿಸಲಿ ಹೊಲಗದ್ದೆಗಳು, ಪೈರು ಪಚ್ಚೆಗಳು|

ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು||

ಶ್ಲೋಕ


3.  ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ|

ಜಗಕು ಜನತೆಗು ತೀರ್ಪಿಡುವನು ನೀತಿ ನಿಯಮಾನುಸಾರವಾಗಿ||

ಶ್ಲೋಕ

ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ಪವಿತ್ರ ದಿನವೊಂದು  ಉದಯಿಸಿದೆ, ರಾಷ್ಟ್ರಗಳೆ, ಬಂದು  ಸರ್ವೇಶ್ವರಸ್ವಾಮಿಯನ್ನು ಸ್ತುತಿಸಿರಿ | ಏಕೆಂದರೆ, ಇಂದು  ಪೃಥ್ವಿಯ ಮೇಲೆ  ಅತಿಶಯವಾದ ಬೆಳಕೊಂದು  ಪ್ರಕಾಶಿಸಿದೆ ||

ಅಲ್ಲೆಲೂಯ!

ಶುಭಸಂದೇಶ : ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:1-18  

ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು  ದೇವರೊಂದಿಗೆ ಇದ್ದರು.  ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವ ಜನಾಂಗದ ಜ್ಯೋತಿಯಾಗಿತ್ತು.  ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು, ಆತನ ಹೆಸರು ಯೊವಾನ್ನ. ಈತನು  ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು.  ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು.  ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ, ಅವರಲ್ಲಿ ವಿಶ್ವಾಸವಿಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಿಕ ಇಚ್ಛೆಯಿಂದ ಅಲ್ಲ, ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು. ಆ ದಿವ್ಯವಾಣಿ ಮನುಷ್ಯ ಆದರು.  ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಆ ಮಹಿಮೆಯೇ ಎಂದೇ ಅವರು ಕೃಪಾವರದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ," 'ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು' ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು.  ಅವರ ಪರಿಪೂರ್ಣತೆಯಿಂದ ನಾವೆಲ್ಲರು ಕೃಪಾವರದ ಮೇಲೆ ಕೃಪಾವರವನ್ನು ಪಡೆದಿದ್ದೇವೆ.  ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ಕೃಪಾವರ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ. 

- ಪ್ರಭುಕ್ರಿಸ್ತರ ಶುಭಸಂದೇಶ

29.12.2025 - ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು; ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನು.

ಮೊದಲನೆಯ ವಾಚನ : ಯೊವಾನ್ನನು ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 2:3-11


ಪ್ರಿಯರೇ, ನಾವು ದೇವರ ಆಜ್ಞೆಗಳನ್ನು ಕೈಕೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.  ದೇವರನ್ನು ಬಲ್ಲನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ. ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ. ತಾನು ದೇವರಲ್ಲಿ ನೆಲಸಿದ್ದೇನೆಂದು ಹೇಳುವವನು ಕ್ರಿಸ್ತ ಯೇಸು ಜೀವಿಸಿದಂತೆಯೇ ಜೀವಿಸಬೇಕು.  ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.  ಪ್ರಿಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಜೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ. ಈ ಆಜ್ಞೆಯೇ ನೀವು ಈಗಾಗಲೇ ಕೇಳಿರುವ ಸಂದೇಶ ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ.  ಅದರ ನೈಜ ಗುಣವು ಕ್ರಿಸ್ತ ಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ.  ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ;  ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತದೆ.  "ನಾನು ಬೆಳಕಿನಲ್ಲಿದ್ದೇನೆ"  ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು. ತನ್ನ ಸಹೋದರನನ್ನು ದ್ವೇಷಿಸುವವನು ಕತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.

-ಪ್ರಭುವಿನ ವಾಕ್ಯ

ಕೀರ್ತನೆ : 96:1-3,5-6, v. 11

ಶ್ಲೋಕ:  ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು.

1.  ಹೊಸಗೀತೆಯನು ಹಾಡಿರಿ ಪ್ರಭುವಿಗೆ|

ವಿಶ್ವವೆಲ್ಲವು ಹಾಡಲಿ ಆತನಿಗೆ|

ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ||

ಶ್ಲೋಕ


2.  ಆತನ ಮುಕ್ತಿಮಾರ್ಗವನು ಪ್ರತೀನಿತ್ಯವೂ ಸಾರಿರಿ|

ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ|

ಆತನದ್ಬುತ ಕಾರ್ಯಗಳನು ಸಕಲ ಜನಾಂಗಗಳಿಗೆ||

ಶ್ಲೋಕ


3.  ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ|

ಇವೆ ಮಹಿಮೆ, ಮಹತ್ವ ಆತನ ಸನ್ನಿಧಿಯಲಿ|

ಶಕ್ತಿ ಸೌಂದರ್ಯ ಆತನ ಗರ್ಭಗುಡಿಯಲಿ||

ಶ್ಲೋಕ

ಘೋಷಣೆ : ಯೊವಾನ್ನ 1:14,12

ಆ  ದಿವ್ಯವಾಣಿ  ಮನುಷ್ಯ  ಆದರು,  ಮನುಷ್ಯರಾಗಿ  ನಮ್ಮೊಡನೆ  ವಾಸಮಾಡಿದರು |  ಕೆಲವರಾದರೋ  ಅವರನ್ನು  ಬರಮಾಡಿಕೊಂಡರು   ಅಂಥವರಿಗೆ, ದೇವರ  ಮಕ್ಕಳಾಗುವ  ಹಕ್ಕನ್ನು ಕೊಟ್ಟರು||

ಅಲ್ಲೆಲೂಯ !


ಶುಭಸಂದೇಶ :  ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 2:22-35


ಆ ಕಾಲದಲ್ಲಿ ಮೋಶೆಯ, ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು.  ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲ ಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು: “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು; ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನು. ನೀನಿತ್ತ ಉದ್ದಾರಕನನು ನಾ ಕಂಡೆ ಕಣ್ಣಾರೆ, ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ. ಈತ ಅನ್ಯ ಜನರನ್ನು ಬೆಳಗಿಸುವ ಜ್ಯೋತಿ; ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ!” ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆ ತಾಯಿಗಳು iಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವ ಸಂಕೇತವಾಗುವನು.  ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,” ಎಂದು ಹೇಳಿದನು.

- ಪ್ರಭುವಿನ ಶುಭಸಂದೇಶ

28.12.2025 - ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು


ಮೊದಲನೆಯ ವಾಚನ : ಸಿರಾಖನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ 3:2-6,12-14

ಸರ್ವೇಶ್ವರ ಮಕ್ಕಳಿಗಿಂತ ಮಿಗಿಲಾಗಿ ತಂದೆಗೆ ಗೌರವ ನೀಡಿದ್ದಾರೆ; ಗಂಡುಮಕ್ಕಳ ಮೇಲೆ ತಾಯಿಗೆ ಅಧಿಕಾರವನ್ನು ಅನುಗ್ರಹಿಸಿದ್ದಾರೆ.  ತಂದೆಯನ್ನು ಸನ್ಮಾನಿಸುವವನು ತನ್ನ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿದವನಂತೆ; ತಾಯಿಯನ್ನು ಗೌರವಿಸುವವನು, ನಿಧಿ ಶೇಖರಿಸಿಟ್ಟುಕೊಂಡವನಂತೆ.  ತಂದೆಯನ್ನು ಗೌವವಿಸುವವನಿಗೆ ತನ್ನ ಸ್ವಂತ ಮಕ್ಕಳಿಂದ ಆಗುವುದು ಸಂತೋಷ; ಅವನು ಪ್ರಾರ್ಥನೆ ಮಾಡುವಾಗಲೆಲ್ಲ ದೊರಕುವುದವನಿಗೆ ಪ್ರತ್ಯುತ್ತರ.  ತಂದೆಯನ್ನು ಗೌರವಿಸುವವನು ಬದುಕುವನು ಬಹು ಕಾಲ, ಸರ್ವೇಶ್ವರನಿಗೆ ವಿಧೇಯನಾಗಿರುವವನು ತಾಯಿಗೆ ಬರಮಾಡುವನು ಸಮಾಧಾನ.  ಮಗನೇ, ನಿನ್ನ ಮುಪ್ಪಿನ ತಂದೆಗೆ ಸಹಾಯಕನಾಗಿರು, ಅವನು ಬದುಕಿರುವವರೆಗೆ ಅವನ ಮನಸ್ಸನ್ನು ನೋಯಿಸದಿರು.  ತಾಳ್ಮೆಯಿಂಂದಿರು ಅವನ ಬುದ್ಧಿ ಮಂಕಾದಾಗ, ಅವನನ್ನು ಹೀನೈಸಬೇಡ ನೀನು ಬಲವಂತನಾಗಿರುವಾಗ, ತಂದೆಗೆ ಮಾಡಿದ ಉಪಶಮನ ಅಳಿದು ಹೋಗದು; ಬದಲಿಗೆ, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಪರಿಣಮಿಸುವುದು.

- ಪ್ರಭುವಿನ ವಾಕ್ಯ

ಕೀರ್ತನೆ 128:1-5, v. 1

ಶ್ಲೋಕ:  ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು, ಆತನ ಮಾರ್ಗಗಳಲೇ ನಡೆಯುವವನು ಧನ್ಯನು!

1.  ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು|

ಆತನ ಮಾರ್ಗಗಳಲೇ ನಡೆಯುವವನು ಧನ್ಯನು||

ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು|

ಧನ್ಯನಾಗುವೆ ನೀನು;  ನಿನಗೆ ಶುಭವಾಗುವುದು||

ಶ್ಲೋಕ


2.  ಇರುವಳು ನಿನ್ನ ಪತ್ನಿ ಮನೆಯಲ್ಲಿ|

ಫಲಭರಿತ ದ್ರಾಕ್ಷಾಲತೆಯಂತೆ||

ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ|

ಓಲಿವ್ ಸಸಿಗಳಂತೆ||

ಶ್ಲೋಕ


3.  ಹೊಂದುವನು ಅಂತಹ ಆಶೀರ್ವಾದವನು|

ಪ್ರಭುವಿನಲಿ ಭಯಭಕ್ತಿಯುಳ್ಳವನು|

ಸಿಯೋನಿನಲ್ಲಿರುವ ಪ್ರಭು ನಿನ್ನನ್ನು ಆಶೀರ್ವದಿಸಲಿ|

ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಇಡೀ ಜೀವಮಾನದಲಿ||

ಶ್ಲೋಕ


ಎರಡನೆಯ ವಾಚನ : ಪೌಲನು ಕೊಲೊಸ್ಸೆಯರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 3:12-21

 ಸಹೋದರರೇ,  ನೀವು ದೇವರಿಂದ ಆಯ್ಕೆಯಾದವರು.  ದೇವರಿಗೆ ಪ್ರಿಯವಾದವರು.

ದೇವರ ಸ್ವಂತ ಜನರು. 

ಹೀಗಿರಲಾಗಿ ಕನ್ನಿಕರ ಧಯೇ ದೀನತೆ ವಿನಯಶೀಲತೆ  ಶಾಂತಿ ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.

ಒಬ್ಬರನ್ನೋಬ್ಬರು ಸೈರಿಸಿಕೊಳ್ಳಿ.

ಒಬ್ಬನ ಮೇಲೆ ತಪ್ಪು ಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ.

ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.

ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ.

ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.

ನಿಮ್ಮ ಹೃನ್ಮನಗಳು ಕ್ರಿಸ್ತ ಯೇಸುವಿನ ಶಾಂತಿ ಸಮಾಧಾನದಿಂದ ತುಂಬಿರಲಿ.

ನೀವು ಒಂದೇ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ;

ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.

ಕ್ರಿಸ್ತ ಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ.

ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶ ಮಾಡಿರಿ ಹಾಗೂ ಬುದ್ಧಿಹೇಳಿಕೊಳ್ಳಿರಿ.

ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.

ನುಡಿಯಲ್ಲಾಗಲೀ ನಡೆಯಲ್ಲಾಗಲಿ ನೀವು ಏನು ಮಾಡಿದರೂ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ.

ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಮಹಿಳೆಯರೇ ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.

ಪುರುಷರೇ, ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. 

ಅವರೊಡನೆ ಕಠಿಣವಾಗಿ ವರ್ತಿಸದಿರಿ.

ಮಕ್ಕಳೇ, ಎಲ್ಲದರಲ್ಲೂ ನಿಮ್ಮ ತಂದೆತಾಯಿಗಳ ಮಾತು ಕೇಳಿರಿ.

ಹೀಗೆ ಮಾಡಿದರೆ ಪ್ರಭುವಿಗೆ ಮೆಚ್ಚುಗೆಯಾಗುತ್ತದೆ.

ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆರಳಿಸಿ ಮನ ಕುಗ್ಗಿಸದಿರಿ.

- ಪ್ರಭುವಿನ ವಾಕ್ಯ

ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ನಿಮ್ಮ  ಹೃನ್ಮನಗಳು  ಕ್ರಿಸ್ತ  ಯೇಸುವಿನ  ಶಾಂತಿ  ಸಮಾಧಾನದಿಂದ  ತುಂಬಿರಲಿ| ಕ್ರಿಸ್ತ  ಯೇಸುವಿನ  ವಾಕ್ಯ  ನಿಮ್ಮಲ್ಲಿ  ನೆಲಸಿ  ಸಮೃದ್ಧಿಯಾಗಿ  ಬೆಳೆಯಲಿ ||

ಅಲ್ಲೆಲೂಯ!

- ಶುಭಸಂದೇಶ


ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 2:13-15,19-23


ಆ ಕಾಲದಲ್ಲಿ ಜ್ಯೋತಿಷಿಗಳು ಹೊರಟು ಹೋದಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು," ಎಂದನು. ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಹೆರೋದನು ಸತ್ತುಹೋದನಂತರ ಈಜಿಪ್ಟಿನಲ್ಲಿದ್ದ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು," ಎಂದು ತಿಳಿಸಿದನು. ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು. ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು. ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, "ಆತನನ್ನು ನಜರೇತಿನವನೆಂದು ಕರೆಯುವರು" ಎಂಬ ಪ್ರವಚನ ನೆರವೇರಿತು.

- ಪ್ರಭುವಿನ ಶುಭಸಂದೇಶ

27.12.2025 - ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,

ಮೊದಲನೆಯ ವಾಚನ : ಯೊವಾನ್ನನ ಮೊದಲನೆಯ ಪತ್ರದಿಂದ ಇಂದಿನ ವಾಚನ 1:1-4

ಸಹೋದರರೇ,  ನಿಮಗೆ ನಾವು ಪ್ರಚುರಪಡಿಸುವ ಸಜೀವ ವಾಣಿ ಆದಿಯಿಂದ ಇರುವಂಥಾದ್ದು.  ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೇ ಕೇಳಿದ್ದೇವೆ,  ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ. ಆ ಜೀವ  ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ, ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯ ಜೀವವನ್ನು ನಿಮಗೆ ಸಾರುತ್ತೇವೆ.  ಪಿತನೊಡನೆಯೂ ಅವರ ಪುತ್ರ ಕ್ರಿಸ್ತ ಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.  ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.

ಪ್ರಭುವಿನ ವಾಕ್ಯ

ಕೀರ್ತನೆ 97:1-2,5-6,11-12,v. 12

ಶ್ಲೋಕ:  ಸಜ್ಜನರೇ, ಪ್ರಭುವಿನಲ್ಲಿ ಆನಂದಿಸಿರಿ.

1.  ಇದೆ ಪ್ರಭುವಿನ ಕೈಯಲ್ಲಿ ರಾಜ್ಯಾಧಿಕಾರ|

ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ||

ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ||

ಇವೆ ಮುಗಿಲು ಕಾರ್ಮುಗಿಲೂ ಆತನ ಸುತ್ತಲು|

ನ್ಯಾಯ ನೀತಿ ಆತನ ಗದ್ದುಗೆಯಸ್ತಿವಾರಗಳು||

ಶ್ಲೋಕ


2.  ಸಾರ್ವಭೌಮನಾದ ಪ್ರಭುವಿನ ಮುಂದೆ|

ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ||

ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು|

ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು||

ಶ್ಲೋಕ


3.  ಉದಯವಾಗುವುದು ಜ್ಯೋತಿ ಸಜ್ಜನರಿಗೆ|

ಆನಂದವಿದೆ ಯಥಾರ್ಥ ಹೃದಯಿಗಳಿಗೆ||

ಸಜ್ಜನರೇ ಪ್ರಭುವಿನಲ್ಲಿ ಆನಂದಿಸಿರಿ|

ಆತನ ಶ್ರೀ ನಾಮವನು ಕೊಂಡಾಡಿರಿ||

ಶ್ಲೋಕ

ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ಓ  ದೇವಾ  ನಿಮ್ಮನ್ನು  ಸ್ತುತಿಸುತ್ತೇವೆ,  ನೀವೇ  ನಮ್ಮ  ಪ್ರಭುವೆಂದು  ಅಂಗೀಕರಿಸುತ್ತೇವೆ |  ಪ್ರೇಷಿತ  ಮಹಿಮಾ ವೃಂದವು ನಿಮ್ಮನ್ನು  ಸ್ತುತಿಸುತ್ತದೆ, ಓ  ಪ್ರಭೂ||

ಅಲ್ಲೆಲೂಯ!

ಶುಭಸಂದೇಶ : ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 20:2-8


ವಾರದ ಮೊದಲನೆಯ ದಿನ, ಮಗ್ಗಲದ ಮರಿಯಳು     ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು. ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.  ಇಬ್ಬರೂ ಓಡಿದರು.  ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. ಅವನು ಬಗ್ಗಿ ನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು.  ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.  ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು. 

- ಪ್ರಭುವಿನ ಶುಭಸಂದೇಶ

26.12.2025 - ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯ ಸ್ಥಾನಗಳಿಗೆ ಹಿಡಿದೊಪ್ಪಿಸುವರು.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6: 8-10; 7:54-59 


ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಬುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು "ಬಿಡುಗಡೆ ಹೊಂದಿದವರು" ಎಂಬುದರ  ಪ್ರಾರ್ಥನಾ ಮಂದಿರಕ್ಕೆ ಸೇರಿದವರು.  ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯದ ಯೆಹೂದ್ಯರೂ ಸೇರಿ ಸ್ತೇಪನನೊಂದಿಗೆ ತರ್ಕ ಮಾಡತೊಡಗಿದರು. ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ. ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ  ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು. ಆದರೆ  ಸ್ತೇಪನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,  "ಇಗೋ ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ," ಎಂದನು.  ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು. ಪಟ್ಟಣದಿಂದ  ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು. ಅವರು ತನ್ನ ಮೇಲೆ ಕಲ್ಲು ಬೀರುತ್ತಿದ್ದಾಗ  ಸ್ತೇಫನನು, "ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕಸಿ," ಎಂದು ಪ್ರಾರ್ಥಿಸಿದನು. 

ಕೀರ್ತನೆ
31:2-3,5-7,15-16,V.5

ಶ್ಲೋಕ:  ನನಗಾಧಾರ ನೀನಲ್ಲವೇ? ನನ್ನಾತ್ಮವನು ನಿನಗೊಪ್ಪಿಸಿರುವೆ.

1.  ನನ್ನಾಶ್ರಯಗಿರಿ ದುರ್ಗಸ್ಥಾನವಾಗಿರು ನೀನೇ|
ಕೈಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ|
ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ||
ಶ್ಲೋಕ

2.  ನನಗಾಧಾರ ನೀನಲ್ಲವೇ? ನನ್ನಾತ್ಮವನು ನಿನಗೊಪ್ಪಿಸಿರುವೆ|
ನಂಬಿಗಸ್ತನಾದ ದೇವನೇ, ನೀಯೆನ್ನ ಮುಕ್ತಗೊಳಿಸಿರುವೆ||
ನಾನಾದರೋ ಪ್ರಭೂ, ಭರವಸೆಯಿಟ್ಟಿರುವುದು ನಿನ್ನಲ್ಲೇ|
ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು||
ಶ್ಲೋಕ

3.  ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ|
ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ||
ಬೆಳಗಿಸಲಿ ದಾಸನನು ನಿನ್ನ ಮುಖ ತೇಜವು|
ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು||
ಶ್ಲೋಕ


ಘೋಷಣೆ
ಕೀರ್ತನೆ 118:26,27

ಅಲ್ಲೆಲೂಯ, ಅಲ್ಲೆಲೂಯ!
ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ | ಪ್ರಭುವೇ ನಮ್ಮ ಮೇಲೆ ಜ್ಯೋತಿಯನು ಬೆಳಗಿದವರು ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 10:17-22 


ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯ ಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾ ಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ. ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.

24.12.25 - 'ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ'

ಮೊದಲನೆಯ ವಾಚನ : ಸಮುವೇಲನ ಎರಡನೆ ಗ್ರಂಥದಿಂದ ಇಂದಿನ ವಾಚನ 7:1-5,8-12,14-16


ಸರ್ವೇಶ್ವರನ ಅನುಗ್ರಹದಿಂದ ಸುತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು. ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು. ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು. ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು. ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:  ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?  “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು. ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚಿಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು."

ಪ್ರಭುವಿನ ವಾಕ್ಯ

ಕೀರ್ತನೆ - 89:2-3,4-5,27-29,V.1

ಶ್ಲೋಕ:  ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು.


1.  ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು|

ಸಾರುವೆನು ತಲತಲಾಂತರಕೂ ನಿನ್ನ ಸತ್ಯತೆಯನು||

ನಿನ್ನಚಲ ಪ್ರೀತಿ ಪ್ರಭೂ, ನನಗೆ ಶಾಶ್ವತ ಸಿದ್ದ|

ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ||

ಶ್ಲೋಕ


2.  ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ|

ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರನಾದ ಶಪಥ||

ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು|

ಸ್ಥಿರಪಡಿಸುವೆ ಯುಗಯುಗಕೂ ನಿನ್ನ ಸಿಂಹಾಸನವನು||

ಶ್ಲೋಕ


3.  ನನಗೆ ಪಿತ, ದೈವ, ದುರ್ಗ, ಉದ್ದಾರಕ ನೀನು|

ಇಂತೆಂದೇ ನನ್ನನು ಸಂಬೋಧಿಸುವನವನು||

ಉಳಿಸುವೆನು ಅವನ ಸಂತಾನವನು ನಿರಂತರವಾಗಿ|

ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ||

ಶ್ಲೋಕ

ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ಓ ಉದಯಕಾಲದ ನಕ್ಷತ್ರವೇ, ಅನಂತ ಜ್ಯೋತಿಯ ಪ್ರಭೆಯೇ, ನೀತಿಯ ಸೂರ್ಯನೇ | ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುತ್ತಿರುವ ನಮಗೆ ಪ್ರಕಾಶ ನೀಡಲು ಬನ್ನಿ ||

ಅಲ್ಲೆಲೂಯ!


ಶುಭಸಂದೇಶ: ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:67-79


ಕಾಲದಲ್ಲಿ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:

ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ,

ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ.

ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ನಮಗೊಬ್ಬ ಶಕ್ತಿಯುತ ಮುಕ್ತಿದಾತನನು.

ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ ಅರುಹಿಸಿರುವನು ಇಂತೆಂದು ನಮಗೆ

'ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ

ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಾಮಾಣಿಸಿದ ಪ್ರೀತಿಯನು,

ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು.  

ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ ನಮಗಿತ್ತಿರುವರು 

ಶತ್ರುಗಳಿಂದ ರಕ್ಷಿಸುವೆನೆಂಬ ಅಭಯ.

ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ.

ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ.

ಸುಕುಮಾರಾ, ನೀನೆನಿಸಿಕೊಳ್ಳುವೆ 'ಪರಾತ್ಪರನ ಪವಾದಿ'

ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ,

ಮುಂದಾಗಿ ತೆರಳಿ ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ.

ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಜನರಿಗೆ.

ಕೃಪಾಸಾಗರ, ದಯಾಮಯ, ನಮ್ಮ ದೇವನು,

ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು 

ಬೆಳಗಿಸಲು ಇರುಳಿನಲು, ಮರಣದ ಮುಸುಕಿರಲು ಬಾಳುವವರನು,

ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು.

- ಪ್ರಭುವಿನ ಶುಭಸಂದೇಶ

23.12.2025 - ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು

ಮೊದಲನೆಯ ವಾಚನ : ಪ್ರವಾದಿ ಮಲಾಕಿಯ ಗ್ರಂಥದಿಂದ ಇಂದಿನ ವಾಚನ: 3:1-4; 4:5-6


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ:  "ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ.  ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು.  ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು.  ಇಗೋ, ನಿಮಗೆ ಪ್ರಿಯನಾದ ದೂತನು ಬರುವನು.  ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.  ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು?  ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?  ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು.  ಬೆಳ್ಳಿಯನ್ನು ಶುಧ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು.  ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.  ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.  ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.  ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು."

- ಪ್ರಭುವಿನ ವಾಕ್ಯ

ಕೀರ್ತನೆ : 25:4-5,8-9,10,14, ಲೂಕ 21:28

ಶ್ಲೋಕ:  ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ | ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು ||


1.  ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು|

ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು||

ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ|

ಕಲಿಸೆನಗೆ ನಿನಗಾಗಿ ಕಾದಿರುವೆ ಸತತ||

ಶ್ಲೋಕ


2.  ಸತ್ಯಸ್ವರೂಪನು ದಯಾವಂತನು ಪ್ರಭು|

ದಾರಿತಪ್ಪಿದವರಿಗೆ ಬೋಧಕನು ವಿಭು||

ದೀನರನು ನಡೆಸುವನು ತನ್ನ ವಿಧಿಗನುಸಾರ|

ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ||

ಶ್ಲೋಕ


3.  ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ|

ಆತನ ವಿಧಿನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ||

ಪ್ರಭುವಿನ ಮೈತ್ರಿ, ಭಯಭಕ್ತಿಯುಳ್ಳವರಿಗೆ |

ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ||

ಶ್ಲೋಕ


ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ಓ ಜನಾಂಗಗಳ ಅರಸರೇ, ಮತ್ತು ಧರ್ಮಸಭೆಯ ಮೂಲೆಗಲ್ಲೇ | ಬನ್ನಿ, ಮಣ್ಣಿನಿಂದ ಉಂಟುಮಾಡಿದ ಈ ಮನುಷ್ಯರನ್ನು ರಕ್ಷಿಸಲು ಬನ್ನಿ ||

ಅಲ್ಲೆಲೂಯ!


ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:57-66


ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು.  ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.  ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು.  ಆದರೆ ಮಗುವಿನ ತಾಯಿ, "ಇಲ್ಲ, ಅದು ಕೂಡದು, ಅವನಿಗೆ 'ಯೊವಾನ್ನ' ಎಂಬ ಹೆಸರಿಡಬೇಕು, " ಎಂದಳು.  ಅದಕ್ಕೆ ಅವರು, "ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ, " ಎಂದು ಹೇಳಿ, "ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು.  ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು,  'ಇವನ ಹೆಸರು ಯೊವಾನ್ನ' ಎಂದು ಬರೆದನು.  ಎಲ್ಲರೂ ಬೆರಗಾದರು.  ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು;  ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.  ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು.  ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.  ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು 'ಈ ಮಗು ಮುಂದೆ ಎಂಥವನಾಗುವನೋ! ' ಎಂದುಕೊಂಡರು.  ನಿಶ್ಚಯವಾಗಿಯೂ ಸರ್ವೇಶ್ವರನ ಅಭಯಹಸ್ತವು ಈ ಮಗುವಿನ ಮೇಲಿತ್ತು.

- ಪ್ರಭುವಿನ ಶುಭಸಂದೇಶ

22.12.2025 - "ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ, ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ;

ಮೊದಲನೆಯ ವಾಚನ : ಸಮುವೇಲನ ಮೊದಲನೆಯ ಗ್ರಂಥದಿಂದ ಇಂದಿನ ವಾಚನ: 1:24-28


ಹನ್ನಳು ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು.  ಅವನು ಇನ್ನೂ ಚಿಕ್ಕವನು ಆಗಿದ್ದನು.  ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗು ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು. ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯನ ಬಳಿಗೆ ತರಲಾಯಿತು.  ಹನ್ನಳು ಏಲಿಗೆ, "ಪ್ರಭೂ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ. ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.  ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು," ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.

-ಪ್ರಭುವಿನ ವಾಕ್ಯ

ಕೀರ್ತನೆ : 1ಸ.ಮು.ವೇ. 2:1, 4-5,6-7,8, v. 1

ಶ್ಲೋಕ:  ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ.

1.  ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ|

ಉನ್ನತೋನ್ನತವಾಗಿದೆ ನನ್ನ ಶಕ್ತಿ ದೇವನಲಿ||

ನನಗಿದೆ ಶತ್ರುಗಳನ್ನು ಧಿಕ್ಕರಿಸುವ ಶಕ್ತಿ|

ನನಗಿತ್ತಿರುವನಾ ಸಂತಸದಾಯಕ ಮುಕ್ತಿ||

ಶ್ಲೋಕ

 

2.  ಮುರಿದು ಬಿದ್ದಿವೆ ಶೂರರ ಬಿಲ್ಲು ಬಾಣಗಳು|

ದುರ್ಬಲರಾದರೋ ಶೌರ್ಯದ ನಡುಕಟ್ಟಿ ನಿಂತಿಹರು||

ಉಂಡು ಸುಖದಿಂದಿರುವವರು ಹಸಿವುಗೊಂಡವರು|

ಹೊಟ್ಟೆಗಾಗಿ ಕೂಲಿ ಮಾಡುತ್ತಿಹರು, ತೃಪ್ತರಿದ್ದವರು||

ಬಂಜೆ ಹೆರುವಳು ಆರೇಳು ಮಕ್ಕಳನು|

ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು||

ಶ್ಲೋಕ

 

3.  ಜೀವಕೊಡುವವನು, ತೆಗೆದುಕೊಳ್ಳುವವನು ಸರ್ವೇಶ್ವರನೇ|

ಪಾತಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ||

ಬಡತನ ಸಿರಿತನ ಕೊಡುವವನು ಸರ್ವೇಶ್ವರನೇ|

ತಗ್ಗಿಸುವವನು ಹೆಚ್ಚಿಸುವವನು ಆತನೇ|| ಎತ್ತುವನಾತ ದೀನರನು ಧೂಳಿನಿಂದ ದರಿದ್ರರನು ತಿಪ್ಪೆಯಿಂದ|

ಶ್ಲೋಕ

 

4.  ಕುಳ್ಳರಿಸುವನವರನು ಅಧಿಪತಿಳ ಸಮೇತ||

ಅನುಗ್ರಹಿಸುವನು ಹಕ್ಕಾಗಿ ಮಹಿಮಾಸನ|

ಕಾರಣ, ಭೂಮಿಯ ಆಧಾರಸ್ಥಂಭಗಳು ಸರ್ವೇಶ್ವರನವೇ|

ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ||

ಶ್ಲೋಕ

ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ಓ ಜನಾಂಗಗಳ ಅರಸರೇ, ಮತ್ತು ಧರ್ಮಸಭೆಯ ಮೂಲೆಗಲ್ಲೇ| ಬನ್ನಿ, ಮಣ್ಣಿನಿಂದ ನೀವು ಉಂಟುಮಾಡಿದ ಮನುಷ್ಯರನ್ನು ರಕ್ಷಿಸಲು ಬನ್ನಿ ||

ಅಲ್ಲೆಲೂಯ!


ಶುಭಸಂದೇಶ - ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:46-56


ಮರಿಯಳು ಹೀಗೆಂದು ಹೊಗಳಿದಳು

"ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ;  

ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ.  

ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವ ಜನಾಂಗ,

ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ, ನಿಜಕ್ಕೂ ಆತನ ನಾಮಧೇಯ ಪರಮ ಪೂಜ್ಯ.

ಆತನಲ್ಲಿ ಭಯಭಕ್ತಿಯುಳ್ಳವರಿಗೆ ಆತನ ಪ್ರೀತಿ ತಲತಲಾಂತರದವರೆಗೆ,

ಗರ್ವ ಹೃದಯಿಗಳನಾತ ಚದರಿಸಿರುವನು, ಪ್ರದರ್ಶಿಸಿರುವನು ತನ್ನ ಬಾಹುಬಲವನು,

ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು, ಏರಿಸಿರುವನು ಉನ್ನತಿಗೆ ದೀನದಲಿತರನು.

ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ, ಹೊರದೂಡಿರುವನು ಸಿರಿವಂತರನು ಬರಿಗೈಯಲಿ,

ನೆರವಾದನು ತನ್ನ ದಾಸ ಇಸ್ರಯೇಲನಿಗೆ, ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ 

ಮರೆಯಲಿಲ್ಲ ಆತ ಕರುಣೆ ತೋರಲು ಅಬ್ರಹಾಮನಿಗೆ ಅವನ ಸಂತತಿಗೆ, ಯುಗಯುಗಾಂತರದವರೆಗೆ."

ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು

-ಪ್ರಭುವಿನ ಶುಭಸಂದೇಶ

21.12.2025 - "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವರು"

ಮೊದಲನೆಯ ವಾಚನ : ಪ್ರವಾದಿ ಯೆಶಾಯನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ 7:10-14

ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ:  "ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೋ. ಅದು ಪಾತಾಳದಷ್ಟು  ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು" ಎಂದರು.  ಅದಕ್ಕೆ ಆಹಾಜನು "ಇಲ್ಲ, ನಾನು ಗೂರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ" ಎಂದನು. ಆಗ ಯೆಶಾಯನು,  "ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರೀವಿರಾ?  ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು.  ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು.  ಇಮ್ಯಾನುವೇಲ್ ಎಂದು ಆತನಿಗೆ ಹೆಸರಿಡುವಳು" ಎಂದನು. 

ಪ್ರಭುವಿನ ವಾಕ್ಯ

ಕೀರ್ತನೆ : 24:1-2,3-4,5-6, v. 7,8

ಶ್ಲೋಕ:  ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು, ಇವನೇ ಪ್ರಭು, ಯುದ್ಧವೀರನು,  ಶಕ್ತಿಸಮರ್ಥನು!

1.  ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|

ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||

ಕಡಲನು ತಳಪಾಯವಾಗೀಸಿದವನು ಆತನೇ|

ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಶ್ಲೋಕ


2.  ಪ್ರಭುವಿನ ಶಿಖರವನು ಏರಬಲ್ಲವನಾರು?|

ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||

ಅಂಥವನಿರಬೇಕು ಶುದ್ಧ ಹಸ್ತನು; ಸುಮನಸ್ಕನು|

ಅನಾಚಾರಕೆ ಅಪ್ರಮಾಣಿಕತೆಗೆ ಒಲಿಯದವನು||

ಶ್ಲೋಕ


3.  ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|

ನೀತಿಯ ಸತ್ಫಲ ರಕ್ಷಕ ದೇವನಿಂದ||

ಇಂಥವರೇ ದೇವರ ದರ್ಶನಾಭ್ಯರ್ಥಿಗಳು|

ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶ್ಲೋಕ


ಎರಡನೆಯ ವಾಚನ : ಪೌಲನು ರೋಮನರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 1:1-7

 ಸಹೋದರರೇ,  ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆ ಹೊಂದಿದವರು ಆದ ರೋಮ್ ನಗರರ ನಿವಾಸಿಗಳೆಲ್ಲರಿಗೆ:  ಕ್ರಿಸ್ತ ಯೇಸುವಿನ ದಾಸನೂ ಪ್ರೇಷಿತನಾಗಲು ಕರೆ ಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ:  ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸು ಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.  ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರ ಗ್ರಂಥದಲ್ಲಿ ವಾಗ್ದಾನಮಾಡಿದ್ದರು.  ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸು ಕ್ರಿಸ್ತರನ್ನು ಕುರಿತಾದುದು.  ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.  ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸು ಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.  ಯೇಸು ಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿರುವ ನೀವು ಕೂಡ ಸರ್ವ ಜನಾಂಗಗಳಲ್ಲಿ ಸೇರಿದ್ದೀರಿ.

- ಪ್ರಭುವಿನ ವಾಕ್ಯ


ಘೋಷಣೆ : ಮತ್ತಾಯ 1:22

ಅಲ್ಲೆಲೂಯ, ಅಲ್ಲೆಲೂಯ!

ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವಳು | 'ಇಮ್ಮಾನುವೆಲ್' ಎಕದರೆ "ದೇವರು ನಮ್ಮೊಡನೆ ಇದ್ದಾರೆ!" ಎಂದು ಅರ್ಥ ||

ಅಲ್ಲೆಲೂಯ!

ಶುಭ ಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:18-24


ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು.  ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು.  ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.  ಆಕೆಯ ಪತಿ ಜೋಸೆಫನು ನೀತಿವಂತನು.  ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.  ಆಕೆ ಒಬ್ಬ ಮಗನನ್ನು ಹೆರುವಳು, ಆತನಿಗೆ ನೀನು 'ಯೇಸು' ಎಂಬ ಹೆಸರಿಡಬೇಕು.  ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,"  ಎಂದನು. "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವರು" ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.  "ಇಮ್ಮಾನುವೆಲ್" ಎಂದರೆ 'ದೇವರು ನಮ್ಮೊಡನೆ ಇದ್ದಾರೆ!' ಎಂದು ಅರ್ಥ. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.

- ಪ್ರಭುವಿನ ಶುಭಸಂದೇಶ

20.12.2025 - “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?”

ಮೊದಲನೆಯ ವಾಚನ : ಪ್ರವಾದಿ ಯೆಶಾಯನ ಗ್ರಂಥದಿಂದ ಇಂದಿನ ವಾಚನ 7:10-14


ಸರ್ವೇಶ್ವರಸ್ವಾಮಿ ಆಹಾಜನಿಗೆ  ಹೇಳಿದ್ದೇನೆಂದರೆ: "ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ, ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು  ಎತ್ತರದಲ್ಲೇ ಇರಲಿ, ಕೇಳು" ಎಂದರು. 

ಅದಕ್ಕೆ ಆಹಾಜನು "ಇಲ್ಲ, ನಾನು ಗೂರುತನ್ನು  ಕೇಳೂವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ" ಎಂದನು. ಆಗ ಯೆಶಾಯನು : "ದಾವೀದ  ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ  ಕೆಣಕುತ್ತಿರುವಿರಾ? ಆಗಲಿ, ಸರ್ವೇಶ್ವರ ನಿಮಗೊಂದು  ಗುರುತನ್ನು ಕೊಡುವರು.  ಇಗೋ,  ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವಳು!"

ಪ್ರಭುವಿನ ವಾಕ್ಯ

ಕೀರ್ತನೆ - 24:1-2,3-4,5-6, v. 8

ಶ್ಲೋಕ:  ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು | ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು |


1.  ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|

ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||

ಕಡಲನು ತಳಪಾಯವಾಗೀಸಿದವನು ಆತನೇ|

ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಶ್ಲೋಕ


2.  ಪ್ರಭುವಿನ ಶಿಖರವನು ಏರಬಲ್ಲವನಾರು?|

ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||

ಅಂಥವನಿರಬೇಕು ಶುದ್ಧ ಹಸ್ತನು, ಸುಮನಸ್ಕನು|

ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||

ಶ್ಲೋಕ


3.  ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|

ನೀತಿಯ ಸತ್ಫಲ ರಕ್ಷಕ ದೇವನಿಂದ||

ಇಂಥವರೇ ದೇವರ ದರ್ಶನಾಭ್ಯರ್ಥಿಗಳು|

ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶ್ಲೋಕ


ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ಮೋಕ್ಷರಾಜ್ಯದ ಬಾಗಿಲನ್ನು ತೆರೆಯುವ ಓ ದಾವೀದನ ಬೀಗದ ಕೈಗಳೇ | ಕಾರ್ಗತ್ತಲೆಯ ಸೆರೆಮನೆಯಲ್ಲಿ ಬಂಧಿತರಾದವರನ್ನು ಬಿಡುಗಡೆ ಮಾಡಲು ಬನ್ನಿ||

ಅಲ್ಲೆಲೂಯ!

ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:26-38


ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ!  ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ!’ ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ  ಯೇಸು’ ಎಂಬ ಹೆಸರಿಡಬೇಕು; ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು. ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ! ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು. ಆಗ ಮರಿಯಳು, “ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.

ಪ್ರಭುವಿನ ಶುಭಸಂದೇಶ

19.12.2025 - 'ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,'

ಮೊದಲನೆ ವಾಚನ ನ್ಯಾಯಸ್ಥಾಪಕರ ಗ್ರಂಥದಿಂದ ಇಂದಿನ ವಾಚನ 13:2-7,24-25             ‍                                      


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ. ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, "ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.  ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು. ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,"  ಎಂದನು.  ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, "ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. 'ಎಲ್ಲಿಂದ ಬಂದಿರಿ?' ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.  ಆದರೆ ಆತ ನನಗೆ, 'ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು.  ಯಾವ ನಿಷಿದ್ಧ ಆಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,' ಎಂದು ಹೇಳಿದನು,"  ಎಂದಳು.  ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ  'ಸಂಸೋನ' ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.  ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.

- ಪ್ರಭುವಿನ ವಾಕ್ಯ

ಕೀರ್ತನೆ : 71 : 3-4, 5-6, 16-17. v. 8

ಶ್ಲೋಕ:  ನಿನ್ನ ಗುಣಗಾನ ನನ್ನ ಬಾಯ್ತುಂಬ, ನಿನ್ನ ಘೋಷಣೆ ನನಗೆ ದಿನದಾದ್ಯಂತ.

1.  ನೀನಾಗಿರು ನನಗಾಶ್ರಯ ದುರ್ಗ, ಕೋಟೆಕೊತ್ತಲು|

ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು||

ದುರುಳರ ಕೈಯಿಂದೆನ್ನನು ದೇವಾ, ಬಿಡೀಸಯ್ಯಾ|| ಕ್ರೂರ ಕೇಡಿಗರ ವಶದಿಂದೆನ್ನನು ತಪ್ಪಿಸಯ್ಯ 

ಶ್ಲೋಕ

 

2.  ಸ್ವಾಮಿ ದೇವಾ, ನೀನೇ ನನ್ನ ಭರವಸೆ|

ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ||

ಹುಟ್ಟಿನಿಂದಲೇ ನಾ ನಿನಗಂಟಿಕೊಂಡಿರುವೆನಯ್ಯಾ|

ಗರ್ಭದಿಂದಲೇ ನೀ ಎನ್ನನು ಕರೆದು ತಂದೆಯಯ್ಯಾ||

ಶ್ಲೋಕ

 

3.  ಪ್ರಭು ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ|

ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ||

ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೇ?|

ನಿನ್ನ ಅದ್ಭುತ ಕಾರ್ಯಗಳನೆಂದಿಗೂ ನಾ ಘೋಷಿಸುತ್ತಿರುವೆ||

ಶ್ಲೋಕ


ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!

ಇಷಯನ ಬುಡದಿಂದ ಹೊರಟುಬಂದ ಓ ಚಿಗುರೇ, ಸದ್ಧರ್ಮದ ಆಧಾರರಾಗಿರುವವರೇ;| ನಮ್ಮನ್ನು ರಕ್ಷಿಸಲು ಬೇಗನೆ ಬನ್ನಿ ||

ಅಲ್ಲೆಲೂಯ!


ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:5-25

ಜುದೇಯ ಪ್ರಾಂತ್ಯದ ರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು.  ಇವನ ಪತ್ನಿಯ ಹೆಸರು ಎಲಿಜಬೇತ್.  ಇವಳೂ ಆರೋನನ ಯಾಜಕ ವಂಶಕ್ಕೆ ಸೇರಿದವಳು.  ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು;  ಸರ್ವೇಶ್ವರನ ವಿಧಿ ನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.  ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ.  ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.

ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.  ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಾಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು.  ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ ಭಕ್ತಸಹಮೂಹವು ಹೊರಗೆ ನಿಂತು ಪ್ರಾರ್ಥನೆ ಮಾಡುತ್ತಿತ್ತು. ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು.  ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯಭ್ರಾಂತನಾದನು. ದೂತನು ಅವನಿಗೆ, "ಜಕರೀಯಾ, ಭಯಪಡಬೇಡ!  ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ.  ನಿನ್ನ ಪತ್ನಿ ಎಲಿಜಬೇತಹಲ್ಲಿ ನಿನಗೆ ಒಂದು ಗಂಡು ಮಗು ಹುಟ್ಟುವುದು.  ನೀನು ಅವನಿಗೆ 'ಯೊವಾನ್ನ' ಎಂದು ನಾಮಕರಣ ಮಾಡಬೇಕು. ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹು ಜನಕ್ಕೆ ಸಂತಸವನ್ನು ತರುವುದು.  ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು.  ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು;  ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.  ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು.  ಎಲೀಯನಂತೆ ಶಕ್ತಿ ಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆಮಕ್ಕಳನ್ನು ಪುನಃ ಒಂದಾಗಿಸುವನು.  ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು.  ಹೀಗಾಗಿ ಪ್ರಭುವಿಗೆ ಯೋಗ್ಯ ಪ್ರಜೆಯನ್ನು ಸಿದ್ಧಗೊಳಿಸುವನು," ಎಂದನು. ಅದಕ್ಕೆ ಜಕರೀಯನು, "ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು ಎಂದನು. ಆಗ ದೇವದೂತನು, "ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಾಬ್ರಿಯೇಲನ್ನು; ಈ ಶುಭ ಷಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.  ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು.  ಆದರೆ ನೀನು ಅದನ್ನು ನಂಬದೆ ಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ," ಎಂದನು. ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.  ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆ ಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು. ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು. ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. 'ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,' ಎಂದುಕೊಳ್ಳುತ್ತಿದ್ದಳು.

ಪ್ರಭುವಿನ ಶುಭಸಂದೇಶ

18.12.25 - "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು

ಪ್ರವಾದಿ ಯೆರೆಮಿಯ ಗ್ರಂಥದಿಂದ ಇಂದಿನ ವಾಚನ: 23:5-8

ಸರ್ವೇಶ್ವರ ಹೇಳುವುದನ್ನು ಗಮನಿಸಿರಿ:  "ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು 'ಮೊಳಕೆ'ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು.  ವಿವೇಕದಿಂದ ಕಾರ್ಯಸಾಧಿಸುವನು.  ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.  ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತವಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು.  'ಯೆಹೋವ ಚಿದ್ಕೇನು' (ಎಂದರೆ 'ಸರ್ವೇಶ್ವರನೇ ನಮ್ಮ ಸದ್ಧರ್ಮ,') ಎಂಬ ಹೆಸರು ಆತನಿಗಿರುವುದು.  "ಬರಲಿರುವ ಆ ಕಾಲದಲ್ಲಿ ಜನರು, 'ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ'  ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು.  ಬದಲಿಗೆ  'ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ' ಎಂದು ಪ್ರಮಾಣ ಮಾಡುವರು.  ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು." ಇದು ಸರ್ವೇಶ್ವರನಾದ ನನ್ನ ನುಡಿ."

ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಕೀರ್ತನೆ
72:1-2,12-13,18-19, v. 7

ಶ್ಲೋಕ:  ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ | ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ ||

1.  ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ|
ಕಲಿಸು ನಿನ್ನ ನೀತಿಯನು ರಾಜಕುವರನಿಗೆ||
ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ|
ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ||
ಶ್ಲೋಕ

2.  ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು|
ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು||
ದೀನದರಿದ್ರರಿಗೆ ದಯೆಯ ತೋರುವನು|
ಬಡವರ ಪ್ರಾಣವನು ಕಾಪಾಡುವನು||
ಶ್ಲೋಕ

3.  ಸ್ತುತ್ಯರ್ಹನು ಸ್ವಾಮಿ ದೇವನು, ಇಸ್ರಯೇಲರ ದೇವನು|
ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂಥವನು||
ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ|
ಆಮೆನ್, ಆಮೆನ್, ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ||
ಶ್ಲೋಕ

ಘೋಷಣೆ

ಅಲ್ಲೆಲೂಯ, ಅಲ್ಲೆಲೂಯ!
ಇಸ್ರಯೇಲ್ ಮನೆತನವನ್ನು ಆಳುವ ಓ ಅಧಿಪತಿಯೇ, | ಸಿನಾಯ್ ಪರ್ವತದ ಮೇಲೆ ಮೋಶೆಗೆ ನ್ಯಾಯಶಾಸ್ತ್ರವನ್ನು ಕೊಟ್ಟವರೇ ನಮ್ಮನ್ನು ರಕ್ಷಿಸಲು ಬೇಗನೆ ಬನ್ನಿ||
ಅಲ್ಲೆಲೂಯ!

ಶುಭಸಂದೇಶ

ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:18-24

ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು.  ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು.  ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.  ಆಕೆಯ ಪತಿ ಜೋಸೆಫನು ನೀತಿವಂತನು.  ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.  ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು 'ಯೇಸು'  ಎಂಬ ಹೆಸರಿಡಬೇಕು.  ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ!" ಎಂದನು. "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು,  'ಇಮ್ಮಾನುವೇಲ್'  ಎಂದು ಆತನಿಗೆ ಹೆಸರಿಡುವರು"  ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.  'ಇಮ್ಮಾನುವೇಲ್' ಎಂದರೆ 'ದೇವರು ನಮ್ಮೊಡನೆ ಇದ್ದಾರೆ' ಎಂದು ಅರ್ಥ. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...