ಮೊದಲನೆಯ ವಾಚನ: ಪ್ರವಾದಿ ದಾನಿಯೇಲನ ಗ್ರಂಥದಿಂದ ಇಂದಿನ ವಾಚನ 3:14-20, 24-25,28
ನೆಬೂಕದ್ನೆಚ್ಚರನು ಉಗ್ರ ಕೋಪಗೊಂಡು ಶದ್ರಕ್, ಮೇಶಕ್, ಅಬೇದ್ ನೆಗೋ ಎಂಬವರನ್ನು ಹಿಡಿದು ತರಲು ಆಜ್ಞಾಪಿಸಿದನು. ನಂತರ ಅವನು ಅವರಿಗೆ, " ಶದ್ರಕ್, ಮೇಶಕ್, ಹಾಗು ಅಬೇದ್ ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ? ಈಗಲಾದರೂ ನೀವು ಸಿದ್ದರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ? " ಎಂದು ಹೇಳಿದನು. ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್ ನೆಗೋ ಎಂಬವರು ರಾಜನಿಗೆ: "ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ. ನಾವು ಸೇವೆ ಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು. ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ ಎಂದು ಉತ್ತರಕೊಟ್ಟರು. ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್ ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು. ಇದಲ್ಲದೆ ತನ್ನ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಮುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. ರಾಜ ನೆಬೂಕದ್ನೆಚ್ಚರನು ಬೆಚ್ಚಿ ಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, " ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ? " ಎಂದು ಕೇಳಿದನು. ಅವರು ರಾಜನಿಗೆ, " ಹೌದು ಪ್ರಭೂ, ಅದು ಸತ್ಯ, " ಎಂದು ಉತ್ತರಕೊಟ್ಟರು. ಅದಕ್ಕೆ, ಅವನು, " ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ. ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ ! " ಎಂದು ಹೇಳಿದನು. ನಂತರ ನೆಬೂಕದ್ನೆಚ್ಚರನು, " ಶದ್ರಕ್, ಮೇಶಕ್ ಹಾಗು ಅಬೇದ್ ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು ! " ಎಂದು ಹೇಳಿದನು.
ಕೀರ್ತನೆ: ಅಜರ್ಯ 1:29-34,V.34
ಶ್ಲೋಕ: ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನ್ವಿತರು||
ನಮ್ಮ ಪೂರ್ವಜರ ದೇವರಾದ ಸರ್ವೇಶ್ವರಾ|
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು|| ಮಹಿಮಾಯುತವಾದ ನಿಮ್ಮ ನಾಮ ಸ್ತುತ್ಯಾರ್ಹವಾದುದು|
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು||
ಪರಮ ವೈಭವದಿಂದ ಕೂಡಿದ ಮಂದಿರದಲ್ಲಿ|
ನೀವು ಸ್ತುತಿಸ್ತೋತ್ರಕ್ಕೆ ಪಾತ್ರರು:
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು||
ನಮ್ಮ ಸಾಮ್ರಾಜ್ಯದ ಸಿಂಹಾಸನದ ಮೇಲೆ ಮಂಡಿಸಿರುವ ನಿಮಗೆ ಸ್ತೋತ್ರ:
ನೀವು ಪರಮ ಪೂಜ್ಯರು ಎಂದೆಂದಿಗೂ ಮಹೋನ್ನತರು||
ಸಾಗರಾದಿಗಳನ್ನು ಸಮೀಕ್ಷಿಸುವ ನಿಮಗೆ ಸ್ತೋತ್ರ|
ನೀವು ಪರಮ ಪೂಜ್ಯರು ಎಂದೆಂದಿಗೂ ಮಹೋನ್ನತರು|
ಗಗನ ಮಂಡಲದಲ್ಲಿ ಸ್ತೋತ್ರಪಾತ್ರರು|
ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನ್ವಿತರು||
ಘೋಷಣೆ ಮತ್ತಾಯ 4:4
ನಿತ್ಯ ಸೌಭಾಗ್ಯದ ಅರಸರಾದ ಪ್ರಭು ಯೇಸುವೇ ನಿಮಗೆ, ಸ್ತುತಿಯಾಗಲಿ!
" ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ ; ದೇವರಾಡುವ ಪ್ರತಿಯೊಂದು ಮಾತಿನಿಂದ,"
ನಿತ್ಯ ಸೌಭಾಗ್ಯದ ಅರಸರಾದ ಪ್ರಭು ಯೇಸುವೇ, ನಿಮಗೆ ಸ್ತುತಿಯಾಗಲಿ!
ಶುಭಸಂದೇಶ: ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 8:31-42
ಆ ಕಾಲದಲ್ಲಿ ಯೇಸು ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: " ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು. ನೀವು ಸತ್ಯವನ್ನು ಅರಿತುಕೊಳ್ಳುವಿರಿ. ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು. " ಆದಕ್ಕೆ ಯೆಹೂದ್ಯರು, ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ? " ಎಂದು ಪ್ರಶ್ನಿಸಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, " ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ : ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ. ದಾಸನಾದವನು ಶಾಶ್ವತವಾಗಿ ಮನೆಯಲ್ಲಿ ಇರುವಂತಿಲ್ಲ. ಶಾಶ್ವತವಾಗಿ ಇರುವವನು ಪುತ್ರನೇ. ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು. ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ, ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ. ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ, " ಎಂದರು. ಆಗ ಆ ಯೆಹೂದ್ಯರು, " ಅಬ್ರಹಾಮನೇ ನಮ್ಮ ತಂದೆ, " ಎಂದು ಮರುನುಡಿದರು. ಯೇಸು, " ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ. ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ಧೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ. ನಿವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ, " ಎಂದರು. ಅದಕ್ಕೆ ಅವರು, " ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ, " ಎಂದು ಪ್ರತಿಭಟಿಸಿದರು. ಯೇಸು, ಅವರಿಗೆ, " ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ."
No comments:
Post a Comment