30.04.25 - ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು, ಕಾಯುವನು ಪ್ರಭುವಿನ ದೂತನೇ ಬಂದಿಳಿದು

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ಇಂದಿನ ವಾಚನ 5:17-26


ಪ್ರಧಾನ ಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು. ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು. ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು. " ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವ ಜೀವದ ಬಗ್ಗೆ ಜನರಿಗೆ ಬೋಧಿಸಿರಿ, " ಎಂದನು. ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನ ಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು. ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು: " ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ, " ಎಂದು ತಿಳಿಸಿದರು. ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು. ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, " ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಭೂಧಿಸುತ್ತಿದ್ದಾರೆ, " ಎಂದನು. ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲುತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.

ಕೀರ್ತನೆ: 34:1-8, v.6
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು |

ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು|
ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು||
ಪ್ರಭುವಿನಲ್ಲಿದೆ ನನ್ನ ಮನದಭಿಮಾನ|
ದೀನರಿದನು ಕೇಳಿ, ಪಡಯಲಿ ಸುಮ್ಮಾನ||

ಬನ್ನಿ, ಕೊಂಡಾಡುವ ಪ್ರಭು ದೇವನನು|
ಘನಪಡಿಸೋಣ ಅವನ ಶ್ರೀನಾಮವನು||
ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು|
ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು||

ಆತನತ್ತ ತಿರುಗಿದ ಮುಖ ಅರಳುವುದು|
ಲಜ್ಜೆಯಿಂದೆಂದಿಗು ಕುಂದಿಹೋಗದು||
ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು|
ಸರ್ವಾಪತ್ತಿನಿಂದವನು ಮುಕ್ತಗೊಂಡನು||

ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು|
ಕಾಯುವನು ಪ್ರಭುವಿನ ದೂತನೇ ಬಂದಿಳಿದು||
ಸವಿದು ನೋಡು ಪ್ರಭುವಿನ ಮಾಧುರ್ಯವನು|
ಆತನನು ಆಶ್ರಯಿಸಿಕೊಂಡವನು ಧನ್ಯನು||

ಘೋಷಣೆ: ಯೊವಾನ್ನ 3:16
ಅಲ್ಲೆಲೂಯ, ಅಲ್ಲೆಲೂಯ!

ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ದಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ||

ಶುಭಸಂದೇಶ: ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 3:16-21


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು. ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ. ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿದು; ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು. ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕ್ರತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ, ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ."

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...