ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

26.8.2025

ಮೊದಲನೇ ವಾಚನ: 1 ಥೆಸಲೋನಿಯರಿಗೆ 2:1-8

 ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು. ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು. ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ. ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರoಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ. ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ. ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ. ತಾಯಿ ತನ್ನ ಮಕ್ಕಳನ್ನು ಸಾಕಿ ಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು. ೮ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು. 


ಕೀರ್ತನೆ: 139:1-6

ಶ್ಲೋಕ: ಪ್ರಭು, ಪರಿಶೋಧಿಸಿರುವೆ ನೀ ನನ್ನನು

1. ಪ್ರಭು, ಪರಿಶೋಧಿಸಿರುವೆ ನೀ ನನ್ನನು 
  ಅರಿತುಕೊಂಡಿರುವೆ ಅಂತರoಗವನು 
 ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ 
  ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ 


2. ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ 
 ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ 
 ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ 
  ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ 

 3.ನನ್ನ ಹಿಂದೆಯೂ ಮುಂದೆಯೂ ನೀನಿರುವೆ 
  ಅಭಯ ಹಸ್ತವನು ನನ್ನ ಮೇಲಿರಿಸಿರುವೆ 
  ನನ್ನ ಕುರಿತು ನಿನಗಿರುವ ಅರಿವು ಅಗಾಧ 
  ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ 


ಶುಭಸಂದೇಶ: ಮತ್ತಾಯ 23:13-22
ಆ ಕಾಲದಲ್ಲಿ ಯೇಸು ಧರ್ಮಶಾಸ್ತಿಗಳನ್ನೂ ಫರಿಸಾಯರನ್ನೂ ಉದ್ದೇಶಿಸಿ ಹಿಗೇಂದರು ಎಂದರು"ಕಪಟ ಧರ್ಮಶಾಸ್ತಿçಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತçದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆ ದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷö್ಯ ಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು. ಅಂಧ ನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ. ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ. ಕಪಟ ಧರ್ಮಶಾಸ್ತಿçಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ. ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆ ಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.ಎಂದರು

20.07.2025

 ಮೊದಲನೆಯ ವಾಚನ: ಆದಿಕಾಂಡ 18:1-10


ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರಸ್ವಾಮಿಯ ದರ್ಶನವಾಯಿತು. ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ, " ಸ್ವಾಮಿ, ದಯವಿರಲಿ; ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ. ನೀರು ತರಿಸಿಕೊಡುತ್ತೇನೆ, ಕಾಲು ತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ. ಸ್ವಲ್ಪ ಆಹಾರ ತರುತ್ತೇನೆ. ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೆ? " ಎನ್ನಲು ಅವರು " ನೀನು ಹೇಳಿದಂತೆಯೇ ಆಗಲಿ, " ಎಂದರು. ಆಗ ಅಬ್ರಹಾಮನು ಗುಡಾರದಲ್ಲಿದ್ದ ಸರಾಳ ಬಳಿಗೆ ಓಡಿ ಆಕೆಗೆ, " ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು, " ಎಂದನು. ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಅವಳ ಕೈಗೆ ಕೊಟ್ಟನು. ಆಳು ಬೇಗನೇ ಆಡಿಗೆಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗೂ ಅಟ್ಟಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರಮಾಡಿದನು. ಬಳಿಕ, " ನಿನ್ನ ಹೆಂಡತಿ ಸಾರಾಳು ಎಲ್ಲಿ? " ಎಂದು ಆ ಅತಿಥಿಗಳು ವಿಚಾರಿಸಿದಾಗ, " ಅಲ್ಲಿ ಗುಡಾರದಲ್ಲಿದ್ದಾಳೆ, " ಎಂದು ಉತ್ತರಕೊಟ್ಟನು. ಆಗ ಸರ್ವೇಶ್ವರಸ್ವಾಮಿ, " ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಾಳಿಗೆ ಮಗನಿರುತ್ತಾನೆ, " ಎಂದರು.

ಕೀರ್ತನೆ: 15:1-5
ಶ್ಲೋಕ: ಯೋಗ್ಯನಾರು ಪ್ರಭೂ, ನಿನ್ನ ಗುಡಾರದಲಿ ಬಿಡಾರ ಮಾಡಲು | ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು||

ಅಂಥವನಿರಬೇಕು ನಿರ್ದೋಷಿ ಸನ್ಮಾರ್ಗಿ|
ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ||
ಚಾಡಿಯನು ಹೇಳನು ಕೇಡನು ಮಾಡನನ್ಯರಿಗೆ|
ಗುರಿಮಾಡನವನು ನೆರೆಹೊರೆಯವರನು ನಿಂದೆಗೆ||

ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು|
ನಷ್ಟವಾದರೂ ಕೊಟ್ಟ ಮಾತನು ತಪ್ಪನವನು||
ಕೊಡುವನು ಕಡವನು, ಬಯಸನು ಬಡ್ಡಿಯನು|
ಎಡವರ ಕೇಡಿಗೆ ಪಡೆಯನು ಲಂಚವನು|
ಕದಲನೆಂದಿಗೂ ಈಪರಿ ನಡೆವವನು||

ಎರಡನೆಯ ವಾಚನ: 2 ಕೊಲೊಸ್ಸೆಯರಿಗೆ  1:24-28

ಸಹೋದರರೇ, ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತ ಯೇಸು ತಮ್ಮ ಶರೀರವಾದ ಧರಾಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಸುತ್ತಿದ್ದೇನೆ. ದೇವರು ನನ್ನನ್ನು ಧರ್ಮಸಭೆಯ ದಾಸರನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ. ಯುಗಯುಗಾಂತರಗಳಿಂದಲೂ ತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯವನ್ನು ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ. ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತ ಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ. ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ಪರಿಣಿತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.

ಶುಭಸಂದೇಶ: ಲೂಕ 10:38-42

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರೆಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು. ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಸನ್ನಿಧಿಯಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. ಮಾರ್ತಳಾದರೋ, ಅತಿಥಿಸತ್ಕಾರರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, " ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯಮಾಡುವಂತೆ ಅವಳಿಗೆ ಹೇಳಿ, " ಎಂದಳು. ಯೇಸು ಆಕೆಗೆ ಪ್ರತ್ಯುತ್ತರವಾಗಿ, " ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆಪೇಚಾಟಗಳಿಗೆ ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು, " ಎಂದರು.

19.07.2025 - "ನನಗೆ ಪರಮ ಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು"

 ಮೊದಲನೇ ವಾಚನ: ವಿಮೋಚನಾಕಾಂಡ 12:37-42



ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು. ಅವರೊಂದಿಗೆ ಬಹು ಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು. ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಅಹಾರವನ್ನು ಸಿದ್ಧಪಡಿಸಿಕೊಳ್ಳಲೂ  ಸಾಧ್ಯವಾಗಿರಲಿಲ್ಲ. ಇಸ್ರಯೇಲರು ಈಜಿಪ್ಟ್ ದೇಶದಲ್ಲಿ ನಾನೂರ ಮೂವತ್ತು ವರ್ಷಗಳ ಕಾಲ ವಾಸವಾಗಿದ್ದರು. ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟು ಬಂದವು. ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದುದ್ದು ಆ ರಾತ್ರಿಯೇ. ಆದುದರಿಂದಲೇ ಇಸ್ರಯೇಲರೆಲ್ಲರು ತಲ ತಲಾಂತಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.

ಕೀರ್ತನೆ: 136:1, 23-24, 10-12, 13-15

ಶ್ಲೋಕ: ಪ್ರಭುವಿನ ಪ್ರೀತಿ ಶಾಶ್ವತ

ಶುಭಸಂದೇಶ: ಮತ್ತಾಯ 12:14-21

ಫರಿಸಾಯರು ಯೇಸುವನ್ನು ಕೊಲೆ ಮಾಡಲು ಒಳ ಸಂಚು ಹೂಡಿದರು.  ತಮಗೆ ವಿರುದ್ಧ ಒಳ ಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟು ಹೋದರು. ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು. ಮತ್ತು ತಮ್ಮ ವಿಷಯಗಳನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆ ಮಾಡಿದರು. ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: "ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನ ಬಂಧು, ನಂದಿ ಹೋಗುತಿಹ ದೀನ ದಲಿತರಿಗೆ ಕೃಪಾಸಿಂಧು, ನ್ಯಾಯ ನೀತಿಗೆ ಜಯ ದೊರಕಿಸದೆ ಬಿಡನಿವನು. ನಂಬುವರು ಅನ್ಯ ಜನರೆಲ್ಲರು ಇವನ ನಾಮವನು."

17.07.2025 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ,"

 ಮೊದಲನೇ ವಾಚನ: ವಿಮೋಚನಾಕಾಂಡ 3:13-20



ಮೋಶೆ ದೇವರಿಗೆ, "ನಾನು ಇಸ್ರಯೇಲರ ಬಳಿಗೆ ಹೋಗಿ, "ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ," ಎಂದು ಹೇಳಿದಾಗ ಅವರು ಒಂದು ವೇಳೆ, "ಆತನ ಹೆಸರೇನು?" ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?" ಎಂದು ಕೇಳಿದನು. ಆಗ ದೇವರು ಹೀಗೆಂದರು: "ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ "ತಾನಾಗಿ ಇರುವವನು, ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ" ಎಂದು ಹೇಳು." ದೇವರು ‌ಮೋಶೆಗೆ ಮತ್ತೆ ಇಂತೆದರು: "ನೀನು ಇಸ್ರಯೇಲರಿಗೆ, ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂದು ಹೇಳು. ಇದು ಸದಾ ಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೇ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು. ನೀನು ಹೋಗಿ ಇಸ್ರಯೇಲರ ಹಿರಿಯರನ್ನು  ಕೂಡಿಸು.  ಅವರಿಗೆ, ನಿಮ್ಮ ಪೂರ್ವಜರ ದೇವರು ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ. ಈಜಿಪ್ಟಿನಲ್ಲಿ ನಿಮಗುಂಟಾಗಿರುವ ಕಷ್ಟಸಂಕಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನು ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ" ಎಂದು ತಿಳಿಸು. ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ. ಅಪ್ಪಣೆಯಾಗಬೇಕು" ಎಂದು ಕೇಳಿಕೊಳ್ಳಿ ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ. ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೇ ನಾನಾ ವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆ ಮಾಡುವನು.

ಕೀರ್ತನೆ: 105:1, 5, 8-9, 24-25 26-27
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು

ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I
ಮಾಡಿರಿ ಆತನ ನಾಮಸ್ಮರಣೆಯನು I
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II

ಆತನ ದಾಸ ಅಬ್ರಹಾಮನ ಸಂತತಿಯವರೇ I
ಆತನಾರಿಸಿಕೊಂಡ ಯಕೋಬನ ವಂಶದವರೇ II
ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II

ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II
ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I
ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II

ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I
ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II
ಕಳಿಸಿದ ತನ್ನ ದಾಸ ಮೋಶೆಯನು I
ತಾನು ಆರಿಸಿಕೊಂಡ ಆರೋನನನು II

ನೋಡಿದರಿವರು ಆತನ ಸೂಚಕಕಾರ್ಯಗಳನು I
ಹಾಮ ನಾಡಿನಲಿ ನಾನಾ ಅದ್ಭುತಕಾರ್ಯಗಳನು II


ಶುಭಸಂದೇಶ: ಮತ್ತಾಯ 11: 28-30


ಆ ಸಮಯದಲ್ಲಿ ಯೇಸುಸ್ವಾಮಿ, ಜನಸಮೂಹವನ್ನುದ್ದೇಶಿಸಿ: "ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ: ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು: ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ," ಎಂದರು.

16.07.2025 - "ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆ ಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ"

 ಮೊದಲನೇ ವಾಚನವಿಮೋಚನಾಕಾಂಡ 3:1-6, 9-12

ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು "ಹೋರೇಬ್" ಎಂಬ ದೇವರ ಬೆಟ್ಟಕ್ಕೆ ಬಂದನು. ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೇ ಇತ್ತು. ಆಗ ಮೋಶೆ, "ಇದೇನು ಆಶ್ಚರ್ಯ! ಪೊದೆ ಸುಟ್ಟು ಹೋಗದೆ ಇರುವುದಕ್ಕೆ ಕಾರಣವೇನು? ನಾನು ಹತ್ತಿರ ಹೋಗಿ ತಿಳಿದುಕೊಳ್ಳುತ್ತೇನೆ ಎಂದುಕೊಂಡನು. ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು ಸರ್ವೇಶ್ವರಸ್ವಾಮಿ ಕಂಡರು. ಪೊದೆಯೊಳಗಿಂದ, "ಮೋಶೆ, ಮೋಶೆ," ಎಂದು ದೇವರು ಕರೆದರು. ಅದಕ್ಕವನು, "ಇಗೋ, ಇದ್ದೇನೆ," ಎಂದು ಉತ್ತರ ಕೊಟ್ಟನು. ದೇವರು ಅವನಿಗೆ, "ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದು ಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರ ಭೂಮಿ," ಎಂದು ಹೇಳಿದರು ಅದೂ ಅಲ್ಲದೆ, "ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು," ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು. ಈಗ ಕೇಳು: "ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ. ಆದ್ದರಿಂದ ಹೋಗು, ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರ ತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ. ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ," ಇರುವುದು.

ಕೀರ್ತನೆ: 103:1-2, 3-4, 6-7
ಶ್ಲೋಕಪ್ರಭು ದಯಾಳುಕೃಪಾಪೂರ್ಣನು

ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I
ನನ್ನ ಕೂಗು ಸೇರಲಿ ನಿನ್ನ ಬಳಿಗೆ II
ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I
ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II

ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I
ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II
ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I
ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II

ಅಡವಿಯ ರಣಹದ್ದಿಗೆ ಸಮನಾದೆ I
ಹಾಳುರಿನ ಗೂಗೆಯ ಹಾಗಾದೆ II
ಮನೆಮೇಲಿನ ಒಂಟಿ ಪಕ್ಷಿಯಾದೆ I
ಬಳಲುತ್ತಿರುವೆನು ನಿದ್ರೆಯಿಲ್ಲದೆ II

ಶುಭಸಂದೇಶಮತ್ತಾಯ 11:25-27



ಆ ಸಮಯದಲ್ಲಿ ಯೇಸುಸ್ವಾಮಿ, "ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆ ಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ, ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು" ಎಂದು ಹೇಳಿದರು.

15.07.2025 - "ಕೋರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ!"

 ಮೊದಲನೇ ವಾಚನವಿಮೋಚನಾಕಾಂಡ 2:1-15


ಲೇವಿಯ ವಂಶಸ್ಥನಾದ ಒಬ್ಬನು ಲೇವಿಯ ಕುಲದ ಕನ್ಯೆಯನ್ನು ಮದುವೆಯಾದನು. ಆಕೆ ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು. ಅದು ಅತಿ ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಿದಳು. ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೇ ಆಕೆ ಅಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು. ಮಗುವಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕಾಗಿ ಆ ಮಗುವಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತು ಕೊಂಡಳು. ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬು ಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು. ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. "ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು," ಎಂದುಕೊಂಡಳು. ಆ ಮಗುವಿನ ಅಕ್ಕ ಬಂದು, "ನಿಮ್ಮ ಪರವಾಗಿ ಈ ಕೂಸನ್ನು ಸಾಕಲು ಹಿಬ್ರಿಯ ಮಹಿಳೆಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೇ?" ಎಂದು ಫರೋಹನ ಪುತ್ರಿಯನ್ನು ವಿಚಾರಿಸಿದಳು. "ಹೌದು, ಹಾಗೆಯೇ ಮಾಡು," ಎಂದಳು ಫರೋಹನ ಪುತ್ರಿ, ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದು ತಂದಳು. ಅವಳಿಗೆ ಆ ರಾಜಪುತ್ರಿ, "ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನ್ನ ಪರವಾಗಿ ಸಾಕು ನಾನೇ ನಿನಗೆ ಸಂಬಳವನ್ನು ಕೊಡುತ್ತೇನೆ," ಎಂದಳು. ಅಂತೆಯೇ ಆ ಮಹಿಳೆ ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು. ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. "ನೀರಿನಿಂದ ನಾನು ಇವನನ್ನು ಎತ್ತಿದೆ" ಎಂದು ಹೇಳಿ ಅಕೆ ಅವನಿಗೆ " ಮೋಶೆ ಎಂದು ಹೆಸರಿಟ್ಟಳು. ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟಿ ಕೆಲಸಗಳನ್ನು ನೋಡುತ್ತಿದ್ದನು. ಒಮ್ಮೆ ಒಬ್ಬ ಈಜಿಪ್ಟಿನವನು ತನ್ನ ದೇಶೀಯನಾದ ಹಿಬ್ರಿಯನನ್ನು ಹೊಡೆಯುವುದನ್ನು ಕಂಡನು. ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಈಜಿಪ್ಟನನ್ನು ಹೊಡೆದು ಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಬಿಟ್ಟನು. ಮಾರನೆಯ ದಿನ ಕೂಡ ಮೋಶೆ ಹೊರಗೆ ಹೋಗಿ ನೋಡಿದನು. ಈ ಸಾರಿ ಇಬ್ಬರು ಹಿಬ್ರಿಯರೇ ಜಗಳವಾಡುತ್ತಿದ್ದರು ತಪ್ಪಿತಸ್ಥನಿಗೆ, "ಏನಯ್ಯಾ, ಸ್ವಕುಲದವರನ್ನೇ ಹೊಡಿಯುತ್ತಿರುವೆ ಏಕೆ?" ಎಂದು ಕೇಳಿದನು. ಅದಕ್ಕೆ ಅವನು, "ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿರುವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದು ಹಾಕಬೇಕೆಂದಿರುವೆಯಾ?" ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, "ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!" ಎಂದು ಅಂಜಿದನು. ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನ ಗೈದು ಮಿದ್ಯಾನ್ ನಾಡನ್ನು ಸೇರಿದನು.

ಕೀರ್ತನೆ: 69:3, 14, 30-31, 33-34
ಶ್ಲೋಕಬಡ ಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು.

ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I
ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II
ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I
ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II

ಸಂಕೀರ್ತಿಸುವೆನು ದೇವರ ಶ್ರೀನಾಮವನು I
ಕೃತಜ್ಞತೆಯಿಂದಾತನನು ಕೊಂಡಾಡುವೆನು II
ಸ್ವಾಮಿ ದೇವನಿಗಿದುವೇ ಸುಪ್ರೀತಿ I
ಕೊಂಬುಗೊರಸುಳ್ಳ ಗೂಳಿಬಲಿಗಿಂತ II

ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I
ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II
ಭೂಮ್ಯಾಕಾಶಗಳು ಆತನನು ಕೊಂಡಾಡಲಿ I
ಸಾಗರಗಳು, ಜಲಚರಗಳು ಆತನನು ಭಜಿಸಲಿ II

ಘೋಷಣೆ              ಕೀರ್ತನೆ 119:27
ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ನಿಯಮಗಳ  ಪಥವನೆನಗೆ  ತಿಳಿಯಪಡಿಸಯ್ಯಾ |  ನಿನ್ನ  ಅದ್ಭುತ  ಕಾರ್ಯಗಳನು  ನಾ  ಧ್ಯಾನಿಸುವೆನಯ್ಯಾ ||
ಅಲ್ಲೆಲೂಯ!

ಶುಭಸಂದೇಶಮತ್ತಾಯ 11:20-24


ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಬುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿ: "ಕೋರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಬುತ ಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಬಳಿದುಕೊಂಡು, ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ. ಎಲೈ ಕಫೆರ್ನವುಮ್ ಪಟ್ಟಣವೇ,.ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಬತ ಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು. ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ." ಎಂದರು.

14.07.2025 - "ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ"

ಮೊದಲನೇ ವಾಚನ: ವಿಮೋಚನಾಕಾಂಡ 1:8-14, 22


ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ. ಅವನು ತನ್ನ ಜನರಿಗೆ, "ಇಸ್ರಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಬಲಾಢ್ಯರಾಗಿದ್ದಾರೆ, ಅಧೀನದಲ್ಲಿರಿಸಲು ಕಷ್ಟ ಸಾಧ್ಯ. ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನಗೈಯಬಹುದು. ಆದುದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು," ಎಂದು ಎಚ್ಚರಿಸಿದನು. ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸ ಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ "ಪಿತೋಮ್" ಮತ್ತು "ರಾಮ್ಸೇಸ್" ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಈಜಿಪ್ಟನರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚು ಹರಡಿಕೊಳ್ಳುತ್ತಿದ್ದರು. ಆದ್ದರಿಂದ ಇಸ್ರಯೇಲರ ಬಗ್ಗೆ ಈಜಿಪ್ಟರು ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. ಇಸ್ರಯೇಲರಿಂದ ಕ್ರೂರತನದಿಂದ ಸೇವೆ ಮಾಡಿಸಿಕೊಂಡರು. ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ  ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು. ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು," ಎಂದು ಆಜ್ಞೆ ಮಾಡಿದನು.

ಕೀರ್ತನೆ: 124:1-3, 4-6, 7-8
ಶ್ಲೋಕ: ನಮಗುದ್ಧಾರ ಪ್ರಭುವಿನ ನಾಮದಲ್ಲಿ

ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II
ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I
ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II
ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ I

ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ I
ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ II
ತುತ್ತಾಗಿಸಲಿಲ್ಲ ನಮ್ಮನ್ನು ಶತ್ರುಗಳ ಬಾಯಿಗೆ I
ಕೃತಜ್ಞತಾಪೂರ್ವಕ ಸ್ತೋತ್ರ ಇಗೋ ಪ್ರಭುವಿಗೆ II

ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I
ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II
ನಮಗುದ್ಧಾರ ಪ್ರಭುವಿನ ನಾಮದಲಿ I
ಭೂಮ್ಯಾಕಾಶವನು ಸೃಜಿಸಿದಾತನಲಿ II

ಶುಭಸಂದೇಶ: ಮತ್ತಾಯ: 10:34-11:1




ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು. "ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ ಛೇದಿಸುವ ಖಡ್ಗವನ್ನು ತರಲು ಬಂದೆನು. ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ, ಅತ್ತೆಗೆ ವಿರುದ್ಧ ಸೊಸೆಗೂ ಭೇದ ಹುಟ್ಟಿಸಲು ಬಂದೆನು; ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು. ನನ್ನನ್ನು ಪ್ರೀತಿಸುವುದಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ತನ್ನ ಶಿಲುಬೆಯನ್ನು ಹೊತ್ತು ನನ್ನನ್ನ ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ. ನಿಮ್ಮನ್ನು ಸ್ವಾಗತಿಸುವವನು  ನನ್ನನ್ನು ಸ್ವಾಗತಿಸುತ್ತಾನೆ. ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳಿಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ. ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆ ಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ." ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.

13.07.2025 - "ದಯೆ ತೋರಿದವನೇ ನೆರೆಯವನು,"

 ಮೊದಲನೇ ವಾಚನ: ಧರ್ಮೋಪದೇಶಕಾಂಡ  30:10-14


ಮೋಶೆಯು ಇಸ್ರಯೇಲರನ್ನು ಕುರಿತು ಹೀಗೆಂದನು. "ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟು ಮಾಡುವರು. ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶ ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದುದಲ್ಲ. ಸಾಧಿಸುವುದಕ್ಕೆ ಅಸಾಧ್ಯವಾದುದ್ದೂ ಅಲ್ಲ. ಇದು ಮೇಲಣ ಲೋಕದಲ್ಲಿರುವ ಮಾತಲ್ಲ. "ನಿಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ಧಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು" ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ. ಇದು ಸಮೂದ್ರದ ಆಚೆ ಇರುವ ಮಾತಲ್ಲ; "ನಿಮಗಾಗಿ  ಸಮೂದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳೂತ್ತಿದ್ದೆವು" ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ. ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.

ಕೀರ್ತನೆ: 69: 14, 17, 30-31, 33-34, 36, 37

ಶ್ಲೋಕ: ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು.

ಎರಡನೇ ವಾಚನ: ಕೊಲೊಸ್ಸೆಯರಿಗೆ 1:15-20

ಅದೃಶ್ಯ ದೇವನ ಅದೃಶ್ಯ ರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ. ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ ಅಧಿಪತ್ಯವಾಗಿರಲಿ, ಅದುದೆಲ್ಲವೂ ಅತನಲಿ.  ಆತನಿಂದ ಆತನಿಗಾಗಿ. ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ. ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲ್ಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ. ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವ ಸಂಪೂರ್ಣತೆಯನು. ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿ ಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.

ಶುಭಸಂದೇಶ: ಲೂಕ

  
ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ "ಬೋಧಕರೇ, ಅಮರ ಜೀವ ನನಗೆ  ಪ್ರಾಪ್ತಿಯಾಗಬೇಕಾದರೆ ನಾನು ಮಾಡಬೇಕಾದುದು ಏನು?" ಎಂದು ಕೇಳಿದನು. ಅದಕ್ಕೆ ಯೇಸು, "ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?" ಎಂದು ಮರು ಪ್ರಶ್ನೆ ಹಾಕಿದರು. ಅವನು, "ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು" ಎಂದಿದೆ," ಎಂದು ಉತ್ತರ ಕೊಟ್ಟನು. ಯೇಸು, "ಸರಿಯಾಗಿ ಉತ್ತರ ಕೊಟ್ಟೆ. ಅದರಂತೆ ಮಾಡು. ನಿನಗೆ ಅಮರ ಜೀವ ಲಭಿಸುವುದು," ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, "ನನ್ನ ನೆರೆಯವರು ಯಾರು?" ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಯೇಸು ಅವನಿಗೆ ಹೀಗೆಂದು ವಿವರಿಸಿದರು. "ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ, ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆ ಜೀವ ಮಾಡಿ, ಅಲ್ಲೇ ಬಿಟ್ಟುಹೋದರು.

ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಿಸಿಕೊಂಡು ಹೋದ . ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟ. ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ, ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕ ಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, "ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚವಾದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ," ಎಂದ. ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?" ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, "ದಯೆ ತೋರಿದವನೇ ನೆರೆಯವನು," ಎಂದನು. ಆಗ ಯೇಸು, "ಹೋಗು, ನೀನು ಹಾಗೆಯೇ ಮಾಡು," ಎಂದು ಹೇಳಿದರು.

12.07.2025 - "ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು"

 ಮೊದಲನೆಯ ವಾಚನ: ಆದಿಕಾಂಡ 49: 29-33; 50:15-25



ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸವಿೂಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು. ಆ ಗವಿ ಕಾನಾನ್ ನಾಡಿನ ಮಮ್ರೆಗೆದುರಾಗಿರುವ ಮಕ್ಬೇಲ ಎಂಬ ಬಯಲಿನಲ್ಲಿದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡು ಕೊಂಡನು. ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿ ಆಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು. ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು. ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು: “ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ - ‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು.’ ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು. ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ ನಾವು ನಿನಗೆ ಗುಲಾಮರು,” ಎಂದು ಹೇಳಿದರು. ಆದರೆ ಜೋಸೆಫನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ; ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದಿರಿ. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ. ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದೆ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು. ಜೋಸೆಫನೂ ಅವನ ತಂದೆಯ ಕುಟುಂಬದವರೂ ಈಜಿಪ್ಟಿನಲ್ಲಿ ವಾಸಮಾಡುತ್ತಾ ಬಂದರು. ಜೋಸೆಫನು ನೂರಹತ್ತು ವರ್ಷ ಬದುಕಿದ್ದನು; ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು. ಜೋಸೆಫನು ತನ್ನ ಅಣ್ಣ ತಮ್ಮಂದಿರಿಗೆ, “ನನ್ನ ಮರಣಕಾಲವು ಸವಿೂಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು. ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.

ಕೀರ್ತನೆ: 105:1-2, 3-4, 5-7
ಶ್ಲೋಕ: ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು. 

ಸಲ್ಲಿಸಿ ಪ್ರಭುವಿಗೆ ಕೃತಜ್ಞತಾ ಸ್ತೋತ್ರವನು
ಮಾಡಿರಿ ಆತನ ನಾಮಸ್ಮರಣೆಯನು
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು
ಹಾಡಿ ಪಾಡಿ ಹೊಗಳಿರಿ ಪ್ರಭುವನು
ಧ್ಯಾನಿಸಿ ನೀವು ಆತನ ಪವಾಡಗಳನು

ಹೆಮ್ಮೆಪಡಿ ನೆನೆದಾತನ ಶ್ರೀನಾಮಹಿಗ್ಗಲಿ
ಹೃದಯ,ಕೋರಿ ಆತನ ದರ್ಶನ
ಆರಸಿರಿ ಪ್ರಭುವನೂ ಆತನ ಶಕ್ತಿಯನೂ
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು

ನೆನೆಯಿರಿ ಆತನಾದ್ಭುತಗಳನು, ಮಹಾತ್ಕಾರ್ಯಗಳನು
ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು
ಪ್ರಭು ನಮ್ಮ ದೇವನೆ0ಬುದು ಶ್ರುತ
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ

ಶುಭಸಂದೇಶ: ಮತ್ತಾಯ 10:24-33


ಆ ಕಾಲದಲ್ಲಿ ಯೇಸು ಶಿಷ್ಯರಿಗೆ ಕೊಟ್ಟ ಆದೇಶ ಇದು: "ಗುರುವಿಗಿಂತ ಶಿಷ್ಯನು ಶ್ರೇಷ್ಟನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?" "ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರ ಪಡಿಸಿರಿ. ಕಿವಿಮಾತಾಗಿ ಕೇಳಿದ್ದನ್ನು ಮನೆ ಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. "ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.

11.07.2025 - "ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿ ಕೊಡಲಾಗುವುದು"

 ಮೊದಲನೆಯ ವಾಚನ: ಆದಿಕಾಂಡ 46:1-7, 28-30



ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು. ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, “ಇಗೋ, ಸಿದ್ಧನಿದ್ದೇನೆ,” ಎಂದನು. ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು; ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು. ಬಳಿಕ ಯಕೋಬನು ಬೇರ್ಷೆಬದಿಂದ ಪ್ರಯಾಣ ಮಾಡಿದನು. ಯಕೋಬನ ಮಕ್ಕಳು ತಮ್ಮ ತಂದೆಯಾದ ಯಕೋಬನನ್ನು ಮತ್ತು ತಮ್ಮ ಮಡದಿಮಕ್ಕಳನ್ನು ಫರೋಹನು ಕಳಿಸಿದ್ದ ಬಂಡಿಗಳಲ್ಲಿ ಕೂರಿಸಿಕೊಂಡು ಹೊರಟರು. ಕಾನಾನ್ ನಾಡಿನಲ್ಲಿ ತಾವು ಸಂಪಾದಿಸಿದ್ದ ಆಸ್ತಿಪಾಸ್ತಿಯನ್ನೂ ದನಕುರಿಗಳನ್ನೂ ತೆಗೆದುಕೊಂಡು ಈಜಿಪ್ಟ್ ದೇಶವನ್ನು ತಲುಪಿದರು. ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು. ಗೋಷೆನ್ ಪ್ರಾಂತ್ಯದಲ್ಲಿ ಜೋಸೆಫ್ ತನ್ನನ್ನು ಭೇಟಿಯಾಗಬೇಕೆಂದು ತಿಳಿಸಲು ಯಕೋಬನು ಯೆಹೂದನನ್ನು ಮುಂದಾಗಿ ಜೋಸೆಫನ ಬಳಿಗೆ ಕಳಿಸಿದನು. ಅವರೆಲ್ಲರು ಗೋಷೆನ್ ಪ್ರಾಂತ್ಯವನ್ನು ಬಂದು ಸೇರಿದರು. ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು. ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು.

ಕೀರ್ತನೆ: 37:3-4, 18-19, 27-28, 39-40
ಶ್ಲೋಕ: ಸಜ್ಜನರ ಜೀವೋದಾರ ಪ್ರಭುವಿನಿ0ದ

ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು
ಸುರಕ್ಷಿತನಾಗಿ ಬಾಳು ಸಿರಿ ನಾಡಿನಲ್ಲಿದ್ದು
ಪ್ರಭುವಿನ0ದಲೆ ಬಯಸು ನಿನ್ನಾ0ದವನು
ನೆರವೇರಿಸುವನಾತ ನಿನ್ನ ಮನದಾಸೆಯನು

ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ
ಪ್ರಭುವಿಗೆ ಗೊತ್ತು ಅವರ ಬಾಳಿನಾ0ತ್ಯ
ಮಾನನಷ್ಟವಿರದು ಕಷ್ಟಕಾಲದಲಿ
ಕು0ದುಕೊರತೆಯಿರದು ಬರಗಾಲದಲಿ

ಕಟ್ಟದನು ಬಿಡು ಒಳ್ಳೆದನು ಮಾಡು
ಸಿರಿನಾಡಿನಲಿ ಚಿರಕಾಲ ಬಾಳು
ಪ್ರಭುವು ನ್ಯಾಯಪ್ರಿಯನು,ಭಕ್ತಜನರ ಪರಿಪಾಲಕನು
ಚಿರವುಳಿಸುವನು ಇವರನು,ಅಳಿಸುವನು ದುರುಳರ ಪೀಳಿಗೆಯನು

ಸಜ್ಜನರ ಜೀವೋದಾರ ಪ್ರಭುವಿನಿ0ದ
ಆಪತ್ಕಾಲದಲಿ ಆಶ್ರಯಆತನಿ0ದ
ತನ್ನಾಶ್ರಿತರನು ಪ್ರಭು ಕೈನೀಡಿ ಕಾಪಾಡುವನು
ದುಷ್ಟರ ವಶದಿ0ದ ತಪ್ಪಿಸಿ ಉದ್ದರಿಸುವನು

ಶುಭಸಂದೇಶ: ಮತ್ತಾಯ 10:16-23


ಯೇಸು ಶಿಷ್ಯರ ನಿಯೋಗವನ್ನು ಕಳುಹಿಸುವಾಗ ಅವರಿಗೆ ಕೊಟ್ಟ ಆದೇಶ ಇದು: "ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮ ಬುದ್ದಿಯುಳ್ಳವರೂ ಪಾರಿವಾಳಗಳಂತೆ ಸರಳ ಜೀವಿಗಳೂ ಆಗಿರಿ. ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಮದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು. ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆ ಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.

09.07.2025 - " 'ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ ' ಎಂದು ಬೋಧನೆ ಮಾಡಿರಿ"

 ಮೊದಲನೆಯ ವಾಚನ: ಆದಿಕಾಂಡ 41:55-57, 42:5-7, 17-24



ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಪರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, " ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ, " ಎಂದು ಉತ್ತರ ಕೊಟ್ಟನು. ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು. ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು, ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು. ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು. ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು. ಜೋಸೆಫನು ಅವರನ್ನು ನೋದಿದ ಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುನುಡಿಯಿಂದ, " ನೀವು ಎಲ್ಲಿಯವರು? " ಎಂದು ಕೇಳಿದನು. ಅವರು, " ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು, " ಎಂದು ಹೇಳಿದರು. ಅವರೆಲ್ಲರನ್ನು ಮೂರು ದಿನಗಳವರೆಗೆ ಕಾವಲಲ್ಲಿ ಇರಿಸಿದನು. ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, " ನಾನು ದೇವರಲ್ಲಿ ಭಯಭಕ್ತಿಯುಳ್ಳವನು, ನಿಮಗೆ ಜೀವದ ಜೀವದ ಮೇಲೆ ಆಶೆಯಿದ್ದರೆ ನಾನು ಹೇಳಿದಂತೆ ಮಾಡಿ: ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ. ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ. ಆಗ ನೀವು ಸಾಯದೆ ಉಳಿಯುವಿರಿ, " ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು. ಆಗ ಅವರು ತಮ್ಮತಮ್ಮೊಳಗೆ, " ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿಯಿಂದ ಬೇಡಿಕೊಂಡ. ಅವನ ಪ್ರಾಣ ಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ, " ಎಂದು ಮಾತಾಡಿಕೊಂಡರು. ಅಂತೆಯೇ ರೂಬೇನನು, " ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ ' ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆ ಹೋದಿರಿ. ಅವನ ರಕ್ತ ಈಗ ನಿಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ, " ಎಂದ. ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತನಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನಸಲಿಲ್ಲ. ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.

ಕೀರ್ತನೆ 33 : 2-3, 10-11, 18-19
ಶ್ಲೋಕ: ನಮ್ಮ ಮೇಲಿರಲಿ ಪ್ರಭು ನಿನ್ನಚಲ ಪ್ರೀತಿ.

ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ
ಕೀರ್ತಿಸಿ ದಶತಂತಿ ವೀುಣೆಯನು ಭಾರಿಸುತ
ನೂತನ ಕೀರ್ತನೆಯನು ಆತನಿಗೆ ಹಾಡಿರಿ
ಇಂಪಾಗಿ ಬಾರಿಸಿ ಸೊಂಪಾಗಿ ಭಜಿಸಿರಿ

ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು
ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು
ಪ್ರಭುವಿನ ಯೋಜನೆ ಶಾಶ್ವತ
ಅವನ ಸಂಕಲ್ಪ ಅನವರತ

ಪ್ರಭುವಾದರೋ ಕಟಾಕ್ಷಿಸುವನು ತನಗಂಜಿನಡೆವವರನು
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು
ತಪ್ಪಿಸುವನವರ ಪ್ರಾಣವನು ಮರಣದಿಂದ
ಉಳಿಸುವನು ಜೀವವನು ಕ್ಷಾಮಡಾಮರದಿಂದ

ಶುಭಸಂದೇಶ: ಮತ್ತಾಯ 10 : 1-7


ಆ ಕಾಲದಲ್ಲಿ ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿ ಪ್ರೇಷಿತರ ಹೆಸರುಗಳು ಇವು: ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೇಯ ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ ಫಿಲಿಪ್ಪ ಮತ್ತು ಬಾರ್ತೊಲೊಮಾಯ ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ ಅಲ್ಪಾಯನ ಮಗ ಯಕೋಬ ಮತ್ತು ತದ್ದಾಯ ದೇಶಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶ ಇದು: " ಪರಕೀಯರತ್ತ ಹೋಗಲೇ ಬೇಡೀ, ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ, ಹೋಗುತ್ತಾ, ' ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ ' ಎಂದು ಬೋಧನೆಮಾಡಿರಿ."

24.06.2025 - “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 49:1-6


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ. ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ. ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.” ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ. ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವ ಜನಾಂಗಗಳಿಗೆ.

ಕೀರ್ತನೆ: 139:1-3, 13-15
ಶ್ಲೋಕ: ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ

ಭು, ಪರಿಶೋಧಿಸಿರುವೆ ನೀ ನನ್ನನು I
ಅರಿತುಕೊಂಡಿರುವೆ ಅಂತರಂಗವನು II
ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I
ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II

ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II
ನನ್ನ ಅಂತರಂಗವನು ಉಂಟುಮಾಡಿದಾತ ನೀನು I
ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II

ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II
ನನ್ನ ಅಸ್ಥಿಪಂಜರವನು ರೂಪಿಸುವಾಗ I

ತಾಯಗರ್ಭದೊಳು ಅಚ್ಚರದಿ ರಚಿಸುವಾಗ I
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I
ಮರೆಯಾಗಿರಲಿಲ್ಲ ನಾನು ನಿನಗಾಗ II

ಎರಡನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:22-26

ಪೌಲನು ಉಪದೇಶ ಮಾಡುತ್ತಾ ಹೀಗೆಂದನು: "ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ. ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು. ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು. “ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ."

ಶುಭಸಂದೇಶ: ಲೂಕ  1:57-66, 80


ದಿನ ತುಂಬಿದಾಗ ಎಲಿಜಬೇತಳು ಗಂಡುಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು. ಆದರೆ ಮಗುವಿನ ತಾಯಿ, “ಇಲ್ಲ, ಅದು ಕೂಡದು, ಅವನಿಗೆ ‘ಯೊವಾನ್ನ’ ಎಂಬ ಹೆಸರಿಡಬೇಕು,” ಎಂದಳು. ಅದಕ್ಕೆ ಅವರು, “ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ,” ಎಂದು ಹೇಳಿ, “ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು. ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.

20.06.2025 - "ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು"

 ಮೊದಲನೇ ವಾಚನ: 2 ಕೊರಿಂಥಿಯರಿಗೆ 11:18, 21-30

ಅನೇಕರು ಕೇವಲ ಪ್ರಾಪಂಚಿಕ ವಿಷಯಗಳನ್ನು ಕುರಿತು ತಮ್ಮನ್ನೇ ಹೊಗಳಿಕೊಳ್ಳುತ್ತಾರೆ. ಹಾಗೆಯೇ ನಾನೂ ಹೊಗಳಿಕೊಳ್ಳುತ್ತೇನೆ. ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ. ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ. ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿವಿೂರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ. ಐದು ಸಾರಿ ಯೆಹೂದ್ಯರಿಂದ ನನಗೆ ನಲವತ್ತಕ್ಕೆ ಒಂದು ಕಡಿಮೆ ಚಾಟಿ ಏಟುಗಳು ಬಿದ್ದವು. ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ. ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ. ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ. ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. ಇಂಥ ಇನ್ನಿತರ ಕಷ್ಟ ಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ. ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ. ನಾನು ನನ್ನನ್ನೇ ಹೊಗಳಿಕೊಳ್ಳಬೇಕಾಗಿ ಬಂದರೆ, ನನ್ನ ದೌರ್ಬಲ್ಯವನ್ನು ಬಹಿರಂಗಪಡಿಸುವ ವಿಷಯಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.

ಕೀರ್ತನೆ: 34:1-2, 3-4, 5-6
ಶ್ಲೋಕ: ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ

ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು
ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು
ಪ್ರಭುವಿನಲ್ಲಿದೆ ನನ್ನ ಮನದಭಿಮಾನ
ದೀನರಿದನು ಕೇಳಿ, ಪಡೆಯಲಿ ಸುಮ್ಮಾನ ಶ್ಲೋಕ

ಬನ್ನಿ, ಕೊಂಡಾಡುವ ಪ್ರಭು ದೇವನನು
ಘನಪಡಿಸೋಣ ಅವನ ಶ್ರೀನಾಮವನು
ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು
ಭಯಭೀತಿಯಿಂದೆನ್ನನು ಮುಕ್ತ ನಾಗಿಸಿಹನು ಶ್ಲೋಕ

ಆತನತ್ತ ತಿರುಗಿದ ಮುಖ ಅರಳುವುದು
ಲಜ್ಜೆಯಿಂದೆಂದಿಗು ಕುಂದಿಹೋಗದು
ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು
ಸರ್ವಾಪತ್ತಿನಿಂದವನು ಮುಕ್ತಗೊಂಡನು. ಶ್ಲೋಕ

ಶುಭಸಂದೇಶ: ಮತ್ತಾಯ 6: 19-23


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು. ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು, ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು. ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ."ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು. ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!"

19.06.2025 - "ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು"

 ಮೊದಲನೇ ವಾಚನ: 2 ಕೊರಿಂಥಿಯರಿಗೆ 11:1-11


ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನಿಮ್ಮ ಬಗ್ಗೆ ದೇವರಿಗಿರುವ ಪೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ. ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು. ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ. “ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ. ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ. ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಿಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ? ನಿಮಗೆ ಸೇವೆ ಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿ ಮಾಡುತ್ತಿದ್ದೆ. ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ. ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ. ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.

ಕೀರ್ತನೆ: 112:1-2, 3-4, 9
ಶ್ಲೋಕ: ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು

ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ
ಹೊಗಳುವೆ ಪ್ರಭುವನು ಮನಃ ಪೂರ್ವಕವಾಗಿ ಹಾಡಿ
ಮಹತ್ತಾದವು ಪ್ರಭುವಿನಾ ಕಾರ್ಯಗಳು
ಕೊಂಡಾಡುವರು ಅವುಗಳನು ಭಕ್ತಾದಿಗಳು ಶ್ಲೋಕ

ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ
ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ
ಆತನ ಅದ್ಭುತಕಾರ್ಯ ಸ್ಮರಣೀಯ ಶ್ಲೋಕ

ಕರುಣಾವಂತ ಪ್ರಭು, ಪ್ರೀತಿಯನು.
ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು
ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು
ಯುಗಯುಗಾಂತರಕು ದೃಢವಾಗಿರುವುವು
ಸತ್ಯನೀತಿಗಳು ಅವುಗಳಿಗೆ ಅಡಿಪಾಯವು. ಶ್ಲೋಕ

ಶುಭಸಂದೇಶ: ಮತ್ತಾಯ 6: 7-15

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ. ಆದುದರಿಂದ ಹೀಗೆಂದು ಪ್ರಾರ್ಥನೆ ಮಾಡಿ: "ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ. ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ. "ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು. ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು."