ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

07.09.2025 -

 ಮೊದಲನೇ ವಾಚನ: ಸುಜ್ಞಾನ ಗ್ರಂಥ 9:13-18


ದೇವರ ಸಂಕಲ್ಪವನ್ನು ಅರಿಯಬಲ್ಲವನಾರು? ಸರ್ವೇಶ್ವರನ ಚಿತ್ತವೇನೆಂದು ಗ್ರಹಿಸಬಲ್ಲವನಾರು? ಮರ್ತ್ಯ ಮಾನವರ ವಿವೇಚನೆ

ಅಸಮರ್ಪಕವಾದುದೇ ನಮ್ಮ ಯೋಜನೆಗಳೆಲ್ಲ ಕೈಗೂಡದೆ ಹೋಗುವಂಥವೇ.

 ಈ ನಶ್ವರ ದೇಹ ಅಂತರಾತ್ಮವನ್ನು ಕುಗ್ಗಿಸುತ್ತದೆ ಈ ಮಣ್ಣಿನ ಗುಡಾರ, ಚಿಂತಾಭರಿತ ಮನಕ್ಕೊoದು ಭಾರವೆ.

 ಧರೆಯ ಮೇಲಿನ ವಿಷಯಗಳನ್ನು ತಿಳಿಯುವುದೆಷ್ಟೋ ಕಷ್ಟಕರ ಕೈಗೆಟಕುವುಗಳನ್ನೇ ಕಂಡರಿತುಕೊಳ್ಳುವುದು

ಎಷ್ಟೋ ಪ್ರಯಾಸಕರ. ಇಂತಿರಲು, ಸ್ವರ್ಗದಲ್ಲಿರುವುದನು ಬಯಲಿಗೆ ತರಲು ಯಾರು ಸಮರ್ಥ? ನೀವು ನಿಮ್ಮ ಸುಜ್ಞಾನವನ್ನು

ಅನುಗ್ರಹಿಸದೆ ಹೋಗಿದ್ದರೆ ನಿಮ್ಮ ಪವಿತ್ರಾತ್ಮನನ್ನು ಸ್ವರ್ಗದಿಂದ ಕಳುಹಿಸದೆ ಹೋಗಿದ್ದರೆ ನಿಮ್ಮ ಸಂಕಲ್ಪವನ್ನು ಯಾರಾದರು

ಅರಿಯುತ್ತಿದ್ದರೆ? ಹೀಗೆ ಲೋಕದ ಮಾರ್ಗಗಳನ್ನು ತಿದ್ದಲಾಯಿತು, ನಿಮಗೆ ಮೆಚ್ಚುಗೆಯಾದುದನು ಜನರಿಗೆ ಕಲಿಸಲಾಯಿತು,

  ಸುಜ್ಞಾನದಿಂದಲೇ ಅವರಿಗೆ ರಕ್ಷಣೆ ಲಭಿಸುವಂತಾಯಿತು.


ಕೀರ್ತನೆ: 90:3-6.12-13.14.17
ಶ್ಲೋಕ:ಪ್ರಭೂ, ತಲತಲಾಂತರಕ್ಕೆ 
ಶ್ರೀನಿವಾಸ ನೀನೆಮಗೆ 

1.ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ 
  ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ಎನ್ನುತಿಹೆ 
ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ 
  ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ 

2. ಮನುಜರು ನೀ ಹರಿದೋಡಿಸುವ ಹೊಯಿಲು 
  ಇರುಳಿನ ಕನಸು, ಹಗಲಿನ ಗರಿಹುಲ್ಲು 
 ಚಿಗುರಿ ಹೂಬಿಡುವುದದು ಬೆಳಗಿನಲಿ 
  ಸೊರಗಿ ತರಗಾಗುವುದು ಬೈಗಿನಲಿ 

3.ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು 
   ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು 
 ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ?
  ನಿನ್ನೀ ಸೇವಕರ ಮೇಲಿರಲಿ ಮರುಕ 

ಎರಡನೇ ವಾಚನ: ಪೌಲನು ಫಿಲೆಮೋನನಿಗೆ ಬರೆದ ಪತ್ರ 1:9-10.12-17


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ. ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ. ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ, ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ? ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನೂ ಸ್ವಾಗತಿಸು. 

ಶುಭಸಂದೇಶ: ಲೂಕ 14:25-33

ಜನರು ಗುಂಪುಗುoಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: “ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚು ವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ‘ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರುರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ. 


No comments:

Post a Comment