ವಾಚನ: ಬಾರೂಕ 1:15-22
ನಾವು ಮಾಡಬೇಕಾದ ಪಾಪನಿವೇದನೆ ಹೀಗಿರಲಿ: ನಮ್ಮ ದೇವರಾದ ಸರ್ವೇಶ್ವರ ಸತ್ಯಸ್ವರೂಪರು; ನಾವಾದರೋ ಇಂದು ನಾಚಿಕೆಗೀಡಾಗಿದ್ದೇವೆ. ನಾವು ಮಾತ್ರವಲ್ಲ, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು, ನಮ್ಮ ಅರಸರು, ಅಧಿಪತಿಗಳು, ಪ್ರವಾದಿಗಳು, ನಮ್ಮ ಪೂರ್ವಜರು ಎಲ್ಲರೂ ಅಂತೆಯೇ ನಾಚಿಕೆಗೀಡಾಗಿದ್ದೇವೆ. ಏಕೆಂದರೆ ದೇವರ ಮುಂದೆ ನಾವು ಪಾಪಿಗಳು, ಅವರಿಗೆ ಅವಿಧೇಯರಾಗಿ ನಡೆದುಕೊಂಡಿದ್ದೇವೆ. ನಾವು ನಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡಲಿಲ್ಲ ; ಅವರು ನಮಗೆ ಕೊಟ್ಟ ಆಜ್ಞೆಗಳನ್ನು ಪಾಲಿಸಲಿಲ್ಲ. ನಮ್ಮ ದೇವರಾದ ಸರ್ವೇಶ್ವರನ ನಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕರೆತಂದ ದಿನದಿಂದ ಇಂದಿನವರೆಗೂ ನಾವು ಅವರಿಗೆ ಅವಿಧೇಯರಾಗಿಯೇ ನಡೆದುಕೊಂಡಿದ್ದೇವೆ. ಅವರ ಮಾತನ್ನು ಕೇಳದೆ ಉದಾಸೀನರಾಗಿದ್ದೇವೆ. ಆದುದರಿಂದಲೇ ಉಪದ್ರವಗಳು ನಮಗೆ ಅಂಟಿಕೊಂಡಿವೆ. ಹಾಲೂ ಜೇನೂ ಹರಿಯುವ ನಾಡನ್ನು ನಮಗೆ ಕೊಡುವುದಕ್ಕಾಗಿ ನಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕರೆತಂದ ನಮ್ಮ ದೇವರಾದ ಸರ್ವೇಶ್ವರಸ್ವಾಮಿ ತಮ್ಮ ದಾಸ ಮೋಶೆಯ ಮೂಲಕ ಹಾಕಿಸಿದ ಶಾಪ ನಮ್ಮನ್ನು ಇಂದಿಗೂ ಬಿಟ್ಟಿಲ್ಲ. ನಮ್ಮ ದೇವರಾದ ಸರ್ವೇಶ್ವರ ನಮ್ಮ ಬಳಿಗೆ ಕಳುಹಿಸಿದ ಪ್ರವಾದಿಗಳು ನುಡಿದ ದೈವೋಕ್ತಿಗಳನ್ನು ನಾವು ಆಲಿಸದೆ, ಅವರ ಮಾತಿಗೆ ಕಿವಿಗೊಡದೆ ಹೋದೆವು. ಮಾತ್ರವಲ್ಲ, ನಮ್ಮಲ್ಲಿ ಪ್ರತಿಯೊಬ್ಬನು ಅವನವನ ಹೃದಯ ದುಷ್ಪ್ರೇರಣೆಗೆ ಒಳಪಟ್ಟು, ಅನ್ಯದೇವತೆಗಳ ಪೂಜೆಮಾಡಿದ್ದಾನೆ. ನಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನೇ ಮಾಡಿದ್ದಾನೆ.


No comments:
Post a Comment