ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

20.11.2025 - "ಧರ್ಮಶಾಸ್ತ್ರದ ಬಗ್ಗೆ ಅಭಿಮಾನವುಳ್ಳವನು, ಒಡಂಬಡಿಕೆಯನ್ನು ಕಾಪಾಡಿಕೊಳ್ಳಲು ಆಶಿಸುವವನು"

  ವಾಚನ: 1 ಮಕ್ಕಬಿಯರು 2:15-29 


ಧರ್ಮ ವಿರೋಧ ಕಾರ್ಯಗಳಲ್ಲಿ ತೊಡಗಿದ್ದ ಅರಸನ ಅಧಿಕಾರಿಗಳು ಯಜ್ಞ ಅರ್ಪಿಸುವುದಕ್ಕಾಗಿ ಮೋದೀನ್ ಊರಿಗೆ ಬಂದರು. ಅನೇಕ ಜನ ಇಸ್ರಯೇಲರು ಅದೇ ಎಡೆಗೆ ಬಂದರು.  ಮತ್ತಾತಿಯನು ಅವನ ಮಕ್ಕಳೂ ಅಲ್ಲಿಗೆ ಬಂದರು. ಅರಸನ ಅಧಿಕಾರಿಗಳು ಮತ್ತಾತಿಯನನ್ನು ಉದ್ದೇಶಿಸಿ, "ನೀನು ಈ ಊರಿಗೆ ಮುಖ್ಯಸ್ಥ, ಸನ್ಮಾನಿತ ಹಾಗು ಹಿರಿಯವನು. ನಿನ್ನ ಮಕ್ಕಳ ಹಾಗೂ ಬಂಧು ಬಳಗದವರ ಬೆಂಬಲ ನಿನಗಿದೆ. ಆದುದರಿಂದ ನೀನೇ ಮುಂದಾಳಾಗಿ ನಿಂತು, ಎಲ್ಲ ಜನಾಂಗದವರು ಜುದೇಯದ ನಿವಾಸಿಗಳು ಹಾಗು ಜೆರುಸಲೇಮಿನಲ್ಲಿ ಉಳಿದಿರುವವರು ಮಾಡಿದಂತೆ, ಅರಸನ ಅಪ್ಪಣೆಯ ಮೇರೆಗೆ ನಡೆದುಕೊ; ಆಗ ನೀನು ನಿನ್ನ ಮನೆಯವರೂ ಅರಸನ ಮಿತ್ರರೆಂದು ಪರಿಗಣಿತರಾಗುವಿರಿ; ನಿನಗೂ ನಿನ್ನ ಮಕ್ಕಳಿಗೂ ಬೆಳ್ಳಿ , ಬಂಗಾರ ಮತ್ತಿತರ ಸಂಭಾವನೆಗಳನ್ನು  ಗೌರವಾರ್ಥವಾಗಿ ಕೊಡಲಾಗುವುದು," ಎಂದು ಹೇಳಿದರು. ಆಗ ಮತ್ತಾತಿಯನು ಉದ್ವೇಗದಿಂದ, "ಅರಸನ ಸಾಮ್ರಾಜ್ಯದಲ್ಲಿರುವ ಎಲ್ಲ ಜನಾಂಗಗಳು ಬೇಕಾದರೆ ಆತನ ಮಾತನ್ನು ಕೇಳಲಿ; ಪ್ರತಿಯೊಬ್ಬನು ತನ್ನ ಪೂರ್ವಜರ ಪೂಜಾಕ್ರಮಗಳನ್ನು ತೊರೆದು, ಅರಸನ ಆಜ್ಞೆಯ ಮೇರೆಗೆ ಬೇಕಾದರೆ ನಡೆಯಲಿ; ಆದರೆ ನಾನು, ನನ್ನ ಮಕ್ಕಳು, ನನ್ನ ಬಂಧುಬಳಗದವರು ನಮ್ಮ ಪಿತ್ರುಗಳ ಒಡಂಬಡಿಕೆಯ ಪ್ರಕಾರವೇ ನಡೆಯುತ್ತೇವೆ. ಧರ್ಮಶಾಸ್ತ್ರದ ನಿಬಂಧನೆಗಳನ್ನು ನಾವು ಉಲ್ಲಂಘಿಸಲಾರೆವು. ಇಲ್ಲ, ಎಂದಿಗೂ ಇಲ್ಲ; ಅರಸನ ಮಾತನ್ನು ಕೇಳಿ, ನಾವು ನಮ್ಮ ಆರಾಧನಾ ವಿಧಿಗಳನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗುವುದಿಲ್ಲ," ಎಂದು ಗಟ್ಟಿಯಾಗಿ ಹೇಳಿದನು. ಅವನು ಈ ಮಾತುಗಳನ್ನಾಡಿ ಮುಗಿಸುವಷ್ಟರಲ್ಲಿ ಒಬ್ಬ ಯೆಹೂದ್ಯನು, ಮೋದೀನದ ಒಂದು ಜಗಲಿಯ ಮೇಲೆ ಅರಸನ ಅಪ್ಪಣೆಯ ಮೇರೆಗೆ ಏರ್ಪಡಿಸಲಾಗಿದ್ದ ಯಜ್ಞವನ್ನು ಅರ್ಪಿಸಲು ಅಲ್ಲಿಗೆ ಬಂದು ಎಲ್ಲರ ಮುಂದೆ ನಿಂತನು. ಮತ್ತಾತಿಯನು ಅದನ್ನು ನೋಡಿ ಆವೇಶಪೂರಿತನಾದನು; ಅವನ ಮೈ ನಡುಗಿತು. ನ್ಯಾಯ ಪ್ರಮಾಣಕ್ಕನುಸಾರ ತನ್ನ ಕೋಪವನ್ನು ತೋರಿಸಲು ಓಡಿಹೋಗಿ, ಅದೇ ಜಗಲಿಯ ಮೇಲೆ ಆ ವ್ಯಕ್ತಿಯನ್ನು ಕಡಿದುಹಾಕಿದನು. ಅಂಥ ಯಜ್ಞವನ್ನು ಅರ್ಪಿಸಲು ಜನರನ್ನು ಒತ್ತಾಯಪಡಿಸಿದ್ದ ಅಧಿಕಾರಿಯನ್ನು ಕೂಡ ಕೊಂದು ಹಾಕಿದನು; ಆ ಜಗಲಿಯನ್ನೂ ಕೆಡವಿ ಹಾಕಿದನು. ಸಾಲು ಎಂಬುವನ ಮಗ ಜಿಮ್ರಿ ಎಂಬುವನಿಗೆ ಫಫೀನೆಹಾಸನು ಮಾಡಿದಂತೆಯೇ ಇವನೂ ಧರ್ಮಶಾಸ್ತ್ರದ ಬಗ್ಗೆ ಅಭಿಮಾನವುಳ್ಳವನಾಗಿದ್ದನು. ತರುವಾಯ ಮತ್ತಾತಿಯನು ಊರಲ್ಲೆಲ್ಲಾ ಘಂಟಾಘೋಷವಾಗಿ, "ಧರ್ಮಶಾಸ್ತ್ರದ ಬಗ್ಗೆ ಅಭಿಮಾನವುಳ್ಳವನು, ಒಡಂಬಡಿಕೆಯನ್ನು ಕಾಪಾಡಿಕೊಳ್ಳಲು ಆಶಿಸುವವನು, ನನ್ನ ಹಿಂದೆ ಬರಲಿ," ಎಂದು ಕರೆಕೊಟ್ಟನು. ಆನಂತರ ಅವನೂ ಅವನ ಮಕ್ಕಳೂ ಊರಲ್ಲಿ ತಮಗಿದ್ದುದನ್ನೆಲ್ಲ ಅಲ್ಲೇ ಬಿಟ್ಟು ಗುಡ್ಡಗಳಿಗೆ ಓಡಿಹೋದರು. ಇವರಂತೆಯೇ ನ್ಯಾಯನೀತಿಯನ್ನು ಅರಸುತ್ತಿದ್ದ ಅನೇಕರು ಕಾಡುಸೇರಿ ಅಲ್ಲೇ ಬೀಡುಮಾಡಿದರು. 

ಕೀರ್ತನೆ: 50:1-2, 5-6, 14-15 
ಶ್ಲೋಕ: ಸನ್ಮಾರ್ಗ ಹಿಡಿವವನಿಗೆ ತೋರುವೆ ಪರಮ ಜೀವೋದ್ಧಾರವನು 

ಶುಭಸಂದೇಶ: ಲೂಕ 19:41-44 


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ, "ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ. ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ, ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸ ಮಾಡುವರು;, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆ ಹೋದೆ," ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.

19.11.2025 - "ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ; ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,"

 ವಾಚನ: 2 ಮಕ್ಕಬಿಯರು 7:1, 20-31

ಆ ಕಾಲದಲ್ಲಿ ಏಳು ಮಂದಿ ಸಹೋದರರನ್ನು ಅವರ ತಾಯಿಯೊಂದಿಗೆ, ಅರಸನ ಅಪ್ಪಣೆಯ ಮೇರೆಗೆ ದಸ್ತಗಿರಿ ಮಾಡಲಾಯಿತು. ನಿಷೇಧಿಸಲಾಗಿದ್ದ ಹಂದಿಯ  ಮಾಂಸವನ್ನು ತಿನ್ನಬೇಕೆಂದು ಅವರನ್ನು ಬಲವಂತ ಪಡಿಸಲಾಗಿತ್ತು. ಚಾಟಿಯಿಂದಲೂ ಬಾರುಗಳಿಂದಲೂ ಹೊಡೆದು ಅವರನ್ನು ಬಾಧಿಸಿದರು. ಎಲ್ಲಕ್ಕಿಂತಲೂ ಮಿಗಿಲಾಗಿ ಅವರ ತಾಯಿಯ ವರ್ತನೆ ಅತೀ ಆಶ್ಚರ್ಯಕರವಾಗಿತ್ತು! ಆಕೆ ಚಿರಸ್ಮರಣೆಗೆ ಪಾತ್ರಳಾದವಳು. ಒಂದೇ ದಿನದಲ್ಲಿ ತನ್ನ ಏಳು ಮಕ್ಕಳು ಕಣ್ಮುಂದೆ ಸತ್ತಿದ್ದರೂ ದೇವರಲ್ಲಿ ಅವಳಿಗಿದ್ದ ನಂಬಿಕೆಯ ನಿಮಿತ್ತ ಎಲ್ಲವನ್ನೂ ಧೈರ್ಯದಿಂದ ಸಹಿಸಿಕೊಂಡಳು. ಉದಾತ್ತ ಮನೋಭಾವದಿಂದ ತುಂಬಿದವಳಾಗಿ, ತನ್ನ ಸ್ತ್ರೀಸಹಜವಾದ ಆವೇಶದೊಂದಿಗೆ  ಪೌರುಷತ್ವವನ್ನೂ ಕೂಡಿಸಿ, ಒಬ್ಬೊಬ್ಬನಿಗೂ ಮಾತೃಭಾಷೆಯಲ್ಲಿ: "ನೀವು ಹೇಗೆ ನನ ಉದರದಲ್ಲಿ ಉದ್ಭವಿಸಿದಿರಿ ಎಂಬುದನ್ನು ನಾನು ಅರಿಯೆ. ನಿಮಗೆ ಜೀವವನ್ನೂ ಉಸಿರನ್ನೂ ಕೊಟ್ಟದ್ದು ನಾನಲ್ಲ. ನಿಮ್ಮ ದೇಹದ ಅಂಗಾಂಗಗಳನ್ನು ಜೋಡಿಸಿದ್ದೂ ನಾನಲ್ಲ. ಲೋಕವನ್ನು ಸೃಷ್ಟಿಸಿದವರೇ ಅದನ್ನೆಲ್ಲ ಮಾಡಿದ್ದು. ಅವರೇ ಮಾನವ ಕೋಟೆಯನ್ನು ಉಂಟುಮಾಡಿದವರು. ಸಕಲಕ್ಕೂ ಆದಿಕಾರಣರು ಅವರೇ ಅವರ ಆಜ್ಞೆಗಳನ್ನು ಪಾಲಿಸುವುದಕ್ಕಾಗಿ ನೀವು ಹಿಂಸೆಗೊಳಗಾಗುವುದರಿಂದ, ಅವರು ಕರುಣೆಯಿಂದ ನಿಮಗೆ ಜೀವವನ್ನೂ ಉಸಿರನ್ನೂ ಹಿಂದಕ್ಕೆ ಕೊಡುವರು." ಎಂದು ಹುರಿದುಂಬಿಸಿದಳು. ಇದರಿಂದ ಅಂತಿಯೋಕನಿಗೆ ಅವಮಾನವಾದಂತೆ ತೋರಿತು.  ತನ್ನನ್ನೇ ಅವಳು ಹೀನೈಸುತ್ತಿದ್ದಾಳೆಂಬುದರ ಬಗ್ಗೆ ಸಂಶಯ ಮೂಡಿತು. ಅವಳ ಕೊನೆಯ ಮಗ ಇನ್ನೂ ಉಳಿದಿದ್ದ. ಅಂತಿಯೋಕನು ಅವನನ್ನು ಮಾತುಗಳಿಂದ ಪುಸಲಾಯಿಸಿದನು; ಅವನು ತನ್ನ ಪೂರ್ವಜರ ಆಚಾರಗಳನ್ನು ತೊರೆದು ಬಿಡುವುದಾದರೆ ಅವನನ್ನು ಐಶ್ವರ್ಯವಂತನನ್ನಾಗಿ, ಉನ್ನತ ಪದವಿಯುಳ್ಳವನಾಗಿ ಮಾಡುವುದಾಗಿಯೂ ಅವನನ್ನು ತನ್ನ ಸ್ನೇಹಿತನೆಂದೆಣಿಸಿ ರಾಜ್ಯದ ವ್ಯವಹಾರಗಳ ಮೇಲ್ವಿಚಾರಕನಾಗಿ ನೇಮಿಸುವುದಾಗಿಯೂ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದನು. ಆದರೆ ಆ ಯುವಕನು ಅವನಿಗೆ ಯಾವ ವಿಧದಲ್ಲೂ ಕಿವಿಗೊಡಲಿಲ್ಲ. ಆಗ ಅರಸನು ಆ ತಾಯಿಯನ್ನು ಬಳಿಗೆ ಕರೆಸಿ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಆ ಹುಡುಗನಿಗೆ ಬುದ್ಧಿ ಹೇಳಬೇಕೆಂದು ಒತ್ತಾಯಿಸಿದನು. ಅರಸನು ಬಹಳವಾಗಿ ಒತ್ತಾಯಿಸಿದ ಮೇಲೆ, ತಾಯಿ ಮಗನಿಗೆ ಬುದ್ಧಿ ಹೇಳಿದಳು. ಮಗನ ಮೇಲೆ ಒರಗಿಕೊಂಡು, ಕ್ರೂರಿಯಾದ ಅರಸನನ್ನು ಪರಿಹಾಸ್ಯ ಮಾಡುತ್ತಾ, ಮಾತೃಭಾಷೆಯಲ್ಲೇ ಹೀಗೆಂದಳು: "ಮಗನೇ, ನನ್ನ ಮೇಲೆ ಮರುಕವಾಗಿರು. ಒಂಬತ್ತು ತಿಂಗಳು ನಿನ್ನನ್ನು ನನ್ನ ಉದರದಲ್ಲಿ ಹೊತ್ತೆ. ಮೂರು ವರ್ಷ ಮೊಲೆಯೂಡಿಸಿ ನಿನ್ನನ್ನು ಸಾಕಿಸಲಹಿದೆ. ನಿನ್ನ ಜೀವನದ ಈ ಗಳಿಗೆಯವರೆಗೂ ನಿನ್ನನ್ನು ಪೋಷಿಸಿ ಸಾಕಿದೆ. ನಿನ್ನ ಆರೈಕೆ ಮಾಡಿದೆ. ಮಗನೇ, ಸ್ವರ್ಗವನ್ನೂ ಭೂಮಿಯನ್ನೂ ಅದರಲ್ಲಿರುವುದೆಲ್ಲವನ್ನೂ ನೋಡು, ಏನೂ ಇಲ್ಲದೆ ದೇವರು ಅದೆಲ್ಲವನ್ನೂ ಉಂಟುಮಾಡಿದರು. ಮಾನವ ಕೋಟಿಯು ಸಹ ಆದೇ ರೀತಿ ಉಂಟಾಯಿತು; ಇದನ್ನು ಒಪ್ಪಿಕೋ. ಈ ಕಟುಕನಿಗೆ ನೀನು ಹೆದರಬೇಡ. ನೀನು ನಿನ್ನ ಸಹೋದರರಿಗೆ ಯೋಗ್ಯ ತಮ್ಮನೆಂದು ಸಾಬೀತುಪಡಿಸು. ಸಾವನ್ನು ಅಪ್ಪು. ಹೀಗೆ ದೇವರ ಕರುಣೆಯಿಂದ, ನಿನ್ನ ಸಹೋದರರೊಂದಿಗೆ ನಿನ್ನನ್ನು ನಾನು ಪುನಃ ಪಡೆಯುವಂತಾಗಲಿ!" ಆಕೆ ಇನ್ನೂ ಮಾತಾಡುತ್ತಿರುವಾಗಲೇ, ಆ ಯುವಕನು, "ಏತಕ್ಕಾಗಿ ಇನ್ನೂ ಕಾದಿದ್ದೀರಿ? ನಾನು ಅರಸನ ಆಜ್ಞೆಯನ್ನು ಪಾಲಿಸುವುದಿಲ್ಲ. ಬದಲಿಗೆ ಮೋಶೆಯ ಮುಖಾಂತರ ನಮ್ಮ ಪೂರ್ವಜರಿಗೆ ಕೊಟ್ಟ ನಿಯಮವನ್ನು ಅನುಸರಿಸುತ್ತೇವೆ. ಹಿಬ್ರಿಯರಾದ ನಮ್ಮ ಜನರಿಗೆ ಇಂಥ ದುಷ್ಕೃತ್ಯಗಳನ್ನು ಎಸಗಿರುವ ನೀನು ಖಂಡಿತವಾಗಿಯೂ ದೇವರ ಕೈಯಿಂದ ತಪ್ಪಿಸಿಕೊಳ್ಳುವಂತಿಲ್ಲ," ಎಂದನು.

ಕೀರ್ತನೆ: 17:1, 5-6, 8, 15
ಶ್ಲೋಕ: ಪ್ರಭೂ, ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು

ಲಕ್ಷ್ಯವಿಡು, ಓ ಪ್ರಭೂ, ಎನ್ನ ನ್ಯಾಯವಾದ ಮೊರೆಗೆ|
ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ||

ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ|
ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ||
ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ|
ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ||

ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು|
ಸತ್ಯಸಂಧನಾದ ನಾನೋ ಸೇರುವೆ ನಿನ್ನ ಸಾನಿಧ್ಯವನು|
ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು||


ಶುಭಸಂದೇಶ: ಲೂಕ 19:11-28

ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು. ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: "ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ. ಹೊರಡುವಾಗ ತನ್ನ ಹತ್ತು ಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, "ನಾನು ಬರುವತನಕ ವ್ಯಪಾರ ಮಾಡಿಕೊಂಡಿರಿ," ಎಂದು ಹೇಳಿ ಹೋದ. ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. "ಇವನು ನಮಗೆ ರಾಜನಾಗುವುದು ಬೇಡ," ಎಂದು ತಿಳಿಸಲು ಅವನ ಹಿಂದೆಯೇ  ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು. ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ. ಮೊದಲನೆಯವನು ಮುಂದೆ ಬಂದು, "ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ," ಎಂದ. ಅದಕ್ಕೆ ಅವನು, "ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಪತಿಯಾಗಿರು" ಎಂದ. ಎರಡನೆಯ ಸೇವಕನು ಬಂದು, "ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ," ಎಂದ. ಅದಕ್ಕೆ ರಾಜ, "ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು," ಎಂದ. ಬಳಿಕ ಮತೊಬ್ಬ ಸೇವಕನು ಬಂದು, "ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ. ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡು ಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ," ಎಂದ. ರಾಜ ಅವನನ್ನು ನೋಡಿ, "ಎಲಾ ದುಷ್ಟ  ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ? ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ," ಎಂದು ಹೇಳಿ ಪರಿಚಾರಕರಿಗೆ, "ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು  ಹತ್ತು ನಾಣ್ಯಗಳುಳ್ಳವನಿಗೆ ಕೊಡಿ," ಎಂದ. ಅದಕ್ಕವರು, "ಪ್ರಭುವೇ, ಅವನಲ್ಲಿ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ?" ಎಂದರು. ಆಗ ರಾಜ, "ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ; ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ," ಎಂದ. ಅಲ್ಲದೆ, "ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ," ಎಂದ." ಇದನ್ನೆಲ್ಲಾ ಹೇಳಿ ಆದ ಮೇಲೆ ಯೇಸುಸ್ವಾಮಿ ಅವರೆಲ್ಲರಿಗಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು.

18.11.2025

 ವಾಚನ: ಮಕ್ಕಬಿ 6:18-31


ಧರ್ಮಶಾಸ್ತ್ರ ಪಂಡಿತರಲ್ಲಿ ಅತೀ ನಿಪುಣನಾದ ಎಲ್ಲಾಜಾರನು ವಯೋವೃದ್ದನು, ಉಜ್ಜಲರೂಪ ಉಳ್ಳವನು. ಅವನು ಹಂದಿಮಾಂಸವನ್ನು ತಿನ್ನಲು ಬಲತ್ಕಾರದಿಂದ ಬಾಯ್ದೆರೆಯ ಮಾಡಿದರು. ಅವನಾದರೋ, ಹೊಲಸಾದ ಜೀವನ ನಡೆಸುವುದಕ್ಕಿಂತ ಮರ್ಯಾದೆಯಿಂದ ಸಾಯುವುದು ಲೇಸೆಂದು ಎಣಿಸಿದನು. ಬಾಯೊಳಗಿಂದ ಆ ಮಾಂಸವನ್ನು ಉಗಿದುಬಿಟ್ಟನು. ಬದುಕುವುದಕ್ಕಿಂತ ಹೆಚ್ಚಾಗಿ ನಿಷೇಧಿಸಲಾದ ಆಹಾರವನ್ನು ರುಚಿಸಲು ಧೈರ್ಯದಿಂದ ನಿರಾಕರಿಸಿದನು. ಹೀಗೆ ತಾನೇ ಯಾತನೆಯ ಸ್ಥಳಕ್ಕೆ ಮುನ್ನಡೆದು ಬಂದನು. ನಿಷಿದ್ಧ ಬಲಿಭೋಜನದ ಉಸ್ತುವಾರಿ ನೋಡುವಂಥವರು, ಎಲ್ಲಾಜಾರನನ್ನು ಬಹುಕಾಲ ಅರಿತವರಾದ್ದರಿಂದ, ಅವನನ್ನು ರಹಸ್ಯವಾಗಿ ಕೊಂಡೊಯ್ದು ಬೇರೆ ಯಾವುದಾದರೂ ತಿನ್ನಬಹುದಾದ ಮಾಂಸವನ್ನು ಸ್ವಿಕರಿಸಿ, ಅರಸನ ಆಜ್ಞೆಗನುಣವಾಗಿ ಬಲಿಭೋಜನ ಆಹಾರವನ್ನು ತಿನ್ನುವಂತೆ ನಟಿಸಬೇಕೆಂದು ಗುಟ್ಟಾಗಿ ಸಲಹೆಕೊಟ್ಟರು. ಹೀಗೆ ಅವರೊಂದಿಗಿದ್ದ ಸ್ನೇಹದ ನಿಮಿತ್ತ, ಅವನನ್ನು ಮರಣಶಿಕ್ಷೆಯಿಂದ ತಪ್ಪಿಸಲು ಕರುಣೆಯ ಒಂದು ದಾರಿಯನ್ನು ತೋರಿಸಿದರು. ಆದರೆ ಅವನು ತನ್ನ ವಯಸ್ಸಿನ ಯೋಗ್ಯತೆಗೆ, ಮುಪ್ಪಿನ ಘನತೆಗೆ, ನೆರೆಕೂದಲಿಗೆ ಸಲ್ಲತಕ್ಕ ಗೌರವಕ್ಕೆ, ಬಾಲ್ಯದಿಂದಲೂ ಕಾಪಾಡಿಕೊಂಡು ಬಂದ ಸನ್ನಡತೆಗೆ ತಕ್ಕಂತೆ, ಎಲ್ಲಕ್ಕಿಂತಲೂ ಹೆಚ್ಚಾಗಿ ದೇವರು ತಾವೇ ನೀಡಿದ ಪವಿತ್ರ ನಿಯಮಕ್ಕೆ ಅನುಗುಣವಾಗಿ, ಉದಾತ್ತ ನಿರ್ಧಾರವನ್ನು ಕೈಗೊಂಡು, ಕೂಡಲೇ ಮೃತ್ಯುಲೋಕಕ್ಕೆ ತನ್ನನ್ನು ಕಳುಹಿಸಿಬಿಡಬೇಕೆಂದು ಕೇಳಿಕೊಂಡನು. " ಇಂಥಾ ನಟನೆ ವಯೋವೃದ್ದನಾದ ನನಗೆ ತಕ್ಕುದಲ್ಲ. ತೊಂಬತ್ತು ವರ್ಷದ ವ್ಯಕ್ತಿಯಾದ ಎಲ್ಲಾಜಾರನೇ ತನ್ನ ಧರ್ಮವನ್ನು ಉಲ್ಲಘಿಸಿ, ಪರಕೀಯರ ಪದ್ಧತಿಯನ್ನು ಅನುಸರಿಸಿದ್ದಾನೆಂದು ಹೇಳುತ್ತಾರೆ. ಬದುಕಲು ಸ್ವಲ್ಪಕಾಲಕ್ಕೆ ಈ ರೀತಿ ವರ್ತಿಸುವುದರಿಂದ ಯುವಕರನ್ನು ತಪ್ಪುದಾರಿಗೆ ಎಳೆದಂತಾಗುತ್ತದೆ. ನನ್ನ ಮುಪ್ಪಿನ ಕಳಂಕವನ್ನೂ ನಿಂದೆಯನ್ನೂ ತಂದುಕೊಂಡಂತಾಗುತ್ತದೆ. ತಾತ್ಕಾಲಿಕವಾಗಿ ನಾನು ನರಮಾನವರ ಶಿಕ್ಷೆಯಿಂದ ಸಧ್ಯಕ್ಕೆ ತಪ್ಪಿಸಿಕೊಂಡರೂ, ಸರ್ವಶಕ್ತ ದೇವರ ಕೈಯಿಂದ ಜೀವಂತವಾಗಿ ಆಗಲಿ, ಸತ್ತಾಗ ಆಗಲಿ, ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದುದರಿಂದ, ಅವರು ಈಗ ನನ್ನ ಪ್ರಾಣತೆಗೆಯುವುದಕ್ಕೆ ನಾನೇ ಧೈರ್ಯದಿಂದ ಸಮ್ಮತಿಸುವುದರಿಂದ ನನ್ನ ಮುಪ್ಪಿನ ಘನತೆಗೆ ಯೋಗ್ಯನೆಂದು ಸ್ಪಷ್ಟೀಕರಿಸುತ್ತೇನೆ. ಹೀಗೆ ಪೂಜ್ಯ ಹಾಗೂ ಪವಿತ್ರ ನಿಯಮಕ್ಕಾಗಿ ಆಸಕ್ತಿಯಿಂದ ಮತ್ತು ಧಾರಳ ಮನಸ್ಸಿನಿಂದ ಒಳ್ಳೆಯವನಾಗಿ ಹೇಗೆ ಮರಣಹೊಂದಬಹುದು ಎಂಬ ಭವ್ಯ ಆದರ್ಶವನ್ನು ಚಿಕ್ಕವರಿಗೆ ನೀಡಿದಂತಾಗುತ್ತದೆ, " ಎಂದನು. ಇಷ್ಟನ್ನು ಹೇಳಿದ ಮೇಲೆ ಅವನು ವಧ್ಯಸ್ಥಾನಕ್ಕೆ ನೆಟ್ಟಿಗೆ ಹೋದನು. ಸ್ವಲ್ಪಹೊತ್ತಿಗೆ ಮುಂಚೆ ಸ್ನೇಹ ಪರವಾಗಿ ವರ್ತಿಸುತ್ತಿದ್ದ ಆ ಬೆಂಗಾವಲಿನವರು, ಅವನು ಮಾತಾಡಿದ್ದು ಹುಚ್ಚುತನದಿಂದ ಎಂದೆಣಿಸಿ ಅವನ ಮೇಲೆ ತಿರುಗಿಬಿದ್ದರು. ಮರಣದ ಹಂತವನ್ನು ತಲುಪುವವರೆಗೆ ಅವನನ್ನು ಹೊಡೆದರು. ಆಗ ಎಲ್ಲಾಜಾರನು ನಿಟ್ಟುಸಿರು ಬಿಡುತ್ತಾ, " ನಾನು ಮರಣದಿಂದ ತಪ್ಪಿಸಿಕೊಳ್ಳಬಹುದಾಗಿದ್ದರೂ ಸರ್ವೇಶ್ವರನಲ್ಲಿರುವ ಭಯಭಕ್ತಿಯ ನಿಮಿತ್ತವೇ ಚಾಟಿಯಿಂದಾದ ಈ ದೈಹಿಕ ಯಾತನೆಯನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೇನೆ. ಹೀಗೆ ಹಿಂಸೆಯನ್ನು ಹೃತ್ಪೂರ್ವಕವಾಗಿ ಅನುಭವಿಸುತ್ತಿದ್ದೇನೆ ಎಂಬುದು ಪರಮ ಪವಿತ್ರ ಜ್ಞಾನಿಯಾದ ಸರ್ವೇಶ್ವರನಿಗೆ ತಿಳಿದಿದೆ, " ಎಂದನು. ಹೀಗೆ ಎಲ್ಲಾಜಾರನು ಸಾವನ್ನು ಅಪ್ಪಿದನು, ಅವನ ಮರಣ ಚಿಕ್ಕವರಿಗೆ ಮಾತ್ರವಲ್ಲ, ಜನಾಂಗದ ಬಹುಭಾಗದವರಿಗೆ ಉದಾತ್ತ ಆದರ್ಶವಾಗಿತ್ತು. ಚಿರಸ್ಮರಣೆಯ ಪುಣ್ಯ ದಾಖಲೆಯಾಗಿತ್ತು.

ಕೀರ್ತನೆ 3:1-6
ಶ್ಲೋಕ: ಕಾಯ್ದು ಕಾಪಾಡುವನು ಪ್ರಭು ನನ್ನನು.

ಪ್ರಭೂ, ನನಗೆ ವಿರೋಧಿಗಳು ಅನೇಕ|
ನನಗೆದುರಾಗಿ ನಿಂತವರು ಅತ್ಯಧಿಕ||
ಈತನಿಗೆ ದೇವರ ನೆರವೆನಿತು?|
ಇಂತಿದೆ ಹಲವರ ಕೆಣಕು ಮಾತು||

ನೀನಾದರೋ ಪ್ರಭೂ, ನನಗೆ ರಕ್ಷೆ, ವಿಜಯದಾತ|
ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ||
ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು|
ಸಿರಿಸಿಖರದಿಂದಾತನು ಸದುತ್ತರ ನೀಡುವನು||

ಹಾಯಾಗಿ ಮಲಗಿ ನಿದ್ರಿಸುವೆನು|
ಸುಖಿಯಾಗಿ ಮರಳಿ ಎದ್ದೇಳುವೆನು|
ಕಾಯ್ದು ಕಾಪಾಡುವನು ಪ್ರಭು ನನ್ನನು||
ಶತ್ರುಗಳು ಸಾವಿರವಿದ್ದರೂ ನಾನವರಿಗಂಜೆನು|
ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು||


ಶುಭಸಂದೇಶ ವಾಚನ: ಲೂಕ 19:1-10



ಆ ಕಾಲದಲ್ಲಿ ಯೇಸು ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದುಹೋಗುತ್ತಿದ್ದರು. ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ. ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ. ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು. ಯೇಸು ಆ ಸ್ಥಳಕ್ಕೆ ಬಂದು ತಲೆಯೆತ್ತಿ ನೋಡಿ, " ಜಕ್ಕಾಯಾ, ಒಡನೆ ಇಳಿದು ಬಾ, ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು, " ಎಂದರು. ಜಕ್ಕಾಯನು ತಕ್ಷಣವೇ ಇಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಇದನ್ನು ನೋಡಿದವರೆಲ್ಲರು, " ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ? " ಎಂದು ಗೊಣಗುಟ್ಟಿದರು. ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, " ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ, " ಎಂದನು. ಆಗ ಯೇಸು, " ಇಂದು ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ? ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ, " ಎಂದು ಹೇಳಿದರು.

17.11.2025 - ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥ ಮಾಡಿದೆ

 ವಾಚನ: ಮಕ್ಕಬಿ 1:10-15, 41-43, 54-57, 62-64



ಮ್ಯಾಸಿಡೋನಿಯದ ಅರಸ ಅಲೆಕ್ಸಾಂಡರನು ನೇಮಿಸಿದ ಅಧಿಕಾರಿಗಳಿಂದ ವಿಷಲತೆಯ ಬೇರೊಂದು ಚಿಗುರಿಕೊಂಡಿತು. ಇವನೇ ಅಂತಿಯೋಕ ಎಪಿಫನೆಸ್ ಎಂಬುವನು. ಇವನು 'ಅಂತಿಯೋಕ' ಎಂಬ ರಾಜನ ಮಗ, ರೋಮ್ ನಗರದಲ್ಲಿ ಒತ್ತೆಯಾಳಾಗಿ ಬಿದ್ದಿದ್ದ. ಗ್ರೀಕ್ ರಾಜ್ಯದ ನೂರ ಮೂವತ್ತೇಳನೇ ವರ್ಷದಲ್ಲಿ ಇವನು ಪಟ್ಟಕ್ಕೆ ಬಂದ. ಆ ದಿನಗಳಲ್ಲಿ ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತಿದ್ದ ಕೆಲವರು ಇಸ್ರಾಯೇಲಿನಲ್ಲಿ ತಲೆಯೆತ್ತಿಕೊಂಡರು. ಇವರು, " ನಮ್ಮ ಸುತ್ತಮುತ್ತಲಿನ ಅನ್ಯಜನರ ಸಂಗಡ ಸಂಧಾನ ಮಾಡಿಕೊಳ್ಳೋಣ ಬನ್ನಿ, ನಾವು ಅವರಿಂದ ಬೇರೆಯಾದಾಗಿನಿಂದ ಬಹಳ ಸಂಕಟಗಳಿಗೆ ಈಡಾಗಿದ್ದೇವೆ, " ಎಂದು ಹೇಳುತ್ತಾ ಅನೇಕರನ್ನು ತಪ್ಪುದಾರಿಗೆ ಎಳೆದರು. ಹಲವರಿಗೆ ಈ ಸಲಹೆ ಹಿತಕರವಾಗಿಯೇ ಕಂಡಿತು. ಕೆಲವು ಮಂದಿ ಅರಸನವರೆಗೂ ಹೋದರು. ಅರಸನೂ ಅವರಿಗೆ ಅನ್ಯ ಜನರ ಆಚಾರವಿಚಾರಗಳನ್ನು ಅನುಸರಿಸಲು ಅಪ್ಪಣೆಕೊಟ್ಟನು. ಪರಿಣಾಮವಾಗಿ, ಅವರು ಹೋಗಿ ಅನ್ಯ ಜನರ ಸಂಪ್ರದಾಯದಂತೆ ಜೆರುಸಲೇಮಿನಲ್ಲೆ ಒಂದು ವ್ಯಾಯಾಮಶಾಲೆಯನ್ನು ಕಟ್ಟಿಸಿದರು. ಸುನ್ನತಿ ಚಿಹ್ನೆಗಳನ್ನು ಮರೆಮಾಚಿದರು, ಪವಿತ್ರ ಒಡಂಬಡಿಕೆಯನ್ನು ಮೀರಿದರು, ಅನ್ನಜನರೊಡನೆ ಒಂದೇ ಜನಾಂಗದಂತೆ ಬಾಳಬೇಕು, ಪ್ರತಿಯೊಬ್ಬನು ತನ್ನ ಸ್ವಂತ ಧರ್ಮವನ್ನು ಬಿಟ್ಟುಬಿಡಬೇಕು, " ಎಂದು ಪ್ರಕಟಿಸಿದನು. ಎಲ್ಲ ಜನಾಂಗದವರು ಅರಸನ ಮಾತಿಗೆ ಓಗೊಟ್ಟಿದ್ದರು. ಇಸ್ರಯೇಲರಲ್ಲಿ ಅನೇಕರು ಅವನ ಪೂಜೆಮಾಡಲು ಒಪ್ಪಿ, ಮೂರ್ತಿಗಳಿಗೆ ಬಲಿ ಅರ್ಪಿಸಿದರು, ಸಬ್ಬತ್ ದಿನವನ್ನು ಅಪವಿತ್ರಗೊಳಿಸಿದರು. ಅರಸನು ನೂರ ನಲವತೈದು ವರ್ಷದ ಮಾರ್ಗಶಿರ ಮಾಸದ ಹದಿನೈದನೆಯ ದಿನದಂದು ' ವಿನಾಶಕರ ವಿಕಟಮೂರ್ತಿ ' ಯನ್ನು ಬಲಿಪೀಠದ ಮೇಲೆ ಸ್ಥಾಪಿಸಿದನು. ಜುದೇಯದ ಊರುಕೇರಿಗಳಲ್ಲಿ ಎಲ್ಲೆಲ್ಲೂ ವಿಗ್ರಹಗಳಿಗೆ ಪೀಠಗಳನ್ನು ನಿರ್ಮಿಸಲಾಯಿತು. ಮನೆಯ ಬಾಗಿಲುಗಳಲ್ಲೂ ಊರಬೀದಿಗಳಲ್ಲೂ ಧೂಪಾರತಿಗಳನ್ನು ಎತ್ತಿಸಲಾಯಿತು. ಕೈಗೆ ಸಿಕ್ಕಿದ ಧರ್ಮಶಾಸ್ತ್ರ ಗ್ರಂಥಗಳನ್ನು ಹರಿದು ಬೆಂಕಿಗೆ ಹಾಕಲಾಯಿತು. ಯಾರಾರಲ್ಲಿ ಒಡಂಬಡಿಕೆಯ ಗ್ರಂಥವಿತ್ತೋ ಯಾರಾರು ಧರ್ಮಶಾಸ್ತ್ರಕ್ಕೆ ಬದ್ಧರಾಗಿದ್ದರೋ ಅವರನ್ನು ರಾಜಾಜ್ಞೆಯಂತೆ ಮರಣಕ್ಕೆ ಗುರಿಮಾಡಲಾಯಿತು. ಆದರೂ ಇಸ್ರಯೇಲರಲ್ಲಿ ಅನೇಕರು ರಾಜಾಜ್ಞೆಯನ್ನು ಪ್ರತಿಭಟಿಸಿ, ಅಶುದ್ದ ಆಹಾರವನ್ನು ತಿನ್ನಲು ನಿರಾಕರಿಸಿದರು. ಪವಿತ್ರ ಒಡಂಬಡಿಕೆಯನ್ನು ಮೀರಿ ಅಂಥ ಆಹಾರವನ್ನು ತಿನ್ನುವುದಕ್ಕಿಂತ ಸಾಯುವುದೇ ಲೇಸೆಂದು ಎಣಿಸಿ ಸಾವಿಗೆ ಸಿದ್ದರಾದರು. ಅಂತೆಯೇ ಹಲವರು ಪ್ರಾಣತ್ಯಾಗ ಮಾಡಿದರು. ಆಗ ಭೀಕರ ಕೋಪಾಗ್ನಿ ಇಸ್ರಾಯೇಲಿನ ಮೇಲೆ ಉರಿಯಹತ್ತಿತ್ತು.

ಕೀರ್ತನೆ: 119:53, 61, 134, 150, 155, 158
ಶ್ಲೋಕ: ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು.

ನಿನ್ನ ಶಾಸ್ತ್ರದ ಭ್ರಷ್ಟರನು ಕಂಡಾಗ|
ನನಗೆ ಬರುತ್ತದೆ ಕೋಪೋದ್ರೇಕ||
ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನ್ನು|
ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು||

ಜನಶೋಷಣೆಯಿಂದ ಮುಕ್ತಗೊಳಿಸೆನ್ನನು|
ಕೈಗೊಳ್ಳುವೆನು ಆಗ ನಿನ್ನ ನಿಯಮಗಳನು||
ದುಷ್ಕರ್ಮಿಗಳು ಬಂದಿಹರೆನ್ನ ಸಮೀಪಕ್ಕೆ|
ದೂರವಿರುವರು ಅವರು ನಿನ್ನ ಧರ್ಮಶಾಸ್ತ್ರಕ್ಕೆ||

ದೂರವಿದೆ ದುರುಳರಿಗೆ ಆ ಜೀವೋದ್ಧಾರ|
ಅವರಿಗಿದೆ ನಿನ್ನ ನಿಬಂಧನೆಗಳ ತಾತ್ಸಾರ||
ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ|
ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ||

ಶುಭಸಂದೇಶ: ಲೂಕ 18:35-43


ಆ ಕಾಲದಲ್ಲಿ ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು. ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು. " ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ, " ಎಂದು ಅವನಿಗೆ ತಿಳಿಸಲಾಯಿತು. ಕೂಡಲೇ ಅವನು, " ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, " ಎಂದು ಗಟ್ಟಿಯಾಗಿ ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು, " ಸುಮ್ಮನಿರು " ಎಂದು ಅವನನ್ನು ಗದರಿಸಿದರು. ಅವನಾದರೋ, " ದಾವೀದ ಕುಲಪುತ್ರರೇ, ನನಗೆ ದಯೆತೋರಿ, " ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು, ಅವನನ್ನು ತಮ್ಮ ಬಳಿಗೆ ಕರೆದುತರುವಂತೆ ಅಪ್ಪಣೆ ಮಾಡಿದರು. ಅವನು ಹತ್ತಿರಕ್ಕೆ ಬಂದಾಗ, " ನನ್ನಿಂದ ನಿನಗೇನಾಗಬೇಕು? " ಎಂದು ಕೇಳಲು ಅವನು, " ಸ್ವಾಮಿ, ನನಗೆ ಕಣ್ಣು ಕಾಣುವಂತೆ ಮಾಡಿ, " ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, " ದೃಷ್ಟಿಯನ್ನು ಪಡೆ, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ, " ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿ ಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.

16.11.2025 - "ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆ ಕೂದಲೊಂದೂ ನಾಶವಾಗುವುದಿಲ್ಲ"

 ಮೊದಲನೇ. ವಾಚನ: ಮಲಾಕಿ 4:1-2


"ಇಗೋ, ಆ ದಿನ ಬರುತ್ತಿದೆ ಒಲೆಯಂತೆ ಉರಿಯುತ್ತಿದೆ. ಎಲ್ಲ ಆಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ," ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ  ಸೂರ್ಯನು ಉದಹಿಸಿ, ಸುಕ್ಷೆಮವನ್ನೀಯುವ ಕಿರಣಗಳನ್ನು ಬೀರುವನು.


ಕೀರ್ತನೆ: 98:5-6, 7-8, 9

ಶ್ಲೋಕ: ಪ್ರಭು ಬರುವನು ಇಹಲೋಕಕೆ ನ್ಯಾಯತೀರಿಸಲು

ಎರಡನೇ ವಾಚನ: 2 ಥೆಸಲೋನಿಯರಿಗೆ 3:7-12

ಸಹೋದರರೇ, ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ. ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು. ನಾವು ನಿಮ್ಮೊಡನಿದ್ದಾಗ, "ದುಡಿಯಲೊಲ್ಲದವನು ಉಣಲೂಬಾರದು," ಎಂದು ನಿಮಗೆ ಆಜ್ಞಾಪಿಸಿದ್ದೆವು. ಈಗಲಾದರೋ ನಿಮ್ಮಲ್ಲಿ ಕೆಲವರು ದುಡಿಯದೆ ಮೈಗಳ್ಳರಾಗಿ ಅಲ್ಲಲ್ಲಿ ಅಲೆದಾಡುತ್ತಾ ಹರಟೆಮಲ್ಲರಾಗಿದ್ದಾರೆಂದು ನಮಗೆ ತಿಳಿದು ಬಂದಿದೆ. ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.

ಶುಭಸಂದೇಶ: ಲೂಕ 21:5-19


"ಈ ಮಹಾದೇವಾಲಯವು ಆನಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಆಲಂಕೃತವಾಗಿದೆ!" ಎಂದು ಕೆಲವರು ಮಾತನಾಡುತ್ತಿದ್ದರು. ಆಗ ಯೇಸು, "ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು," ಎಂದರು. "ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೇ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?" ಎಂದು ಕೆಲವರು ಕೇಳಿದರು. ಅದಕ್ಕೆ ಯೇಸುಸ್ವಾಮಿ, "ನೀವು ಮೋಸಹೋಗದಂತೆ ಜಾಗರೂಕರಾಗಿರಿ. "ಅನೇಕರು ನಾನೇ ಆತ, ನಾನೇ ಆತ," ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, "ಕಾಲವು ಸಮೀಪಿಸಿಬಿಟ್ಟಿತು," ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ. ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ," ಎಂದರು. ಅದೂ ಅಲ್ಲದೆ ಯೇಸು ಇಂತೆಂದರು: "ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು; ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರರುವುವು; ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು. ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರರ್ಥನಾ ಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ನಿಮ್ಮನ್ನು ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು. ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ. ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ. ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು. ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು. ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆ ಕೂದಲೊಂದೂ  ನಾಶವಾಗುವುದಿಲ್ಲ. ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ."

15.11.2025 - ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲು ರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡ ಮಾಡಿಯಾರೆ?

 ವಾಚನ: ಜ್ಞಾನ ಗ್ರಂಥ 18:14-16; 19:6-9


ಸೌಮ್ಯವಾದ ಮೌನ ಸಮಸ್ತವನು ಆವರಿಸಲು ನಡುರಾತ್ರಿ ವೇಗವಾಗಿ ಚಲಿಸಿ ಬಂದಿರಲು, ನಿಮ್ಮ ಸರ್ವಶಕ್ತ ವಾಣಿ ತನ್ನ ರಾಜ ಸಿಂಹಾಸನ ಬಿಟ್ಟು ಪ್ರಬಲ ಯುದ್ಧವೀರನಂತೆ ಸ್ವರ್ಗದಿಂದ ಜಿಗಿದು ನಾಶನಕ್ಕೆ ಗುರಿಯಾದ ನಾಡಿನೊಳಕ್ಕೆ ಬಂದಿತು. ಕಟ್ಟುನಿಟ್ಟಾದ ನಿನ್ನಾಜ್ಞೆಯೆಂಬ ಹದವಾದ ಕತ್ತಿಯನ್ನು ಅದು ಹಿಡಿದು ನಿಂತಿತ್ತು ಎಲ್ಲವನು ಸಾವಿನಿಂದ ತುಂಬಿಸಿ, ನೆಲದ ಮೇಲೆ ನಿಂತಿತ್ತು; ಆದರೂ ಆಗಸವನ್ನೇ ಮುಟ್ಟುತ್ತಿತ್ತು. ನಿಮ್ಮ ದಾಸರು ದೇವಾ, ಹಾನಿಗೀಡಾಗದಂತೆ ತಲೆಬಾಗಿತು ಸಮಗ್ರ ಸೃಷ್ಟಿ ನಿಮ್ಮ ಆಜ್ಞೆಗೆ ಬದಲಾಯಿಸಿಕೊಂಡಿತು ತನ್ನ ಸಹಜ ರೂಪವನೆ. ಪಾಳೆಯಕ್ಕೆ ನೆರಳು ನೀಡಲು ಮೇಘ ಕವಿಯಿತು ಜಲರಾಶಿಯಿದ್ದಲ್ಲಿ ಒಣನೆಲವು ಮೇಲೆದ್ದಿತು ಕೆಂಪು ಸಮುದ್ರದ ನಡುವೆ ಸುರಕ್ಷಿತ ಹೆದ್ದಾರಿ ಕಾಣಿಸಿತು ಮೊರೆಯುತ್ತಿದ್ದ ಅಲೆಗಳ ಮಧ್ಯೆ ಹುಲ್ಲುಗಾವಲುಂಟಾಯಿತು. ಒಂದೇ ಸಮೂಹದಂತೆ ನಿಮ್ಮ ಹಸ್ತಾಶ್ರಯ ಪಡೆದ ಜನರು ನಾನಾ ಅದ್ಭುತ ಕಾರ್ಯಗಳನ್ನು ನೋಡಿ , ಆ  ಸಮುದ್ರವನ್ನೆ ದಾಟಿದರು. ತಮ್ಮನ್ನು ಬಿಡುಗಡೆ ಮಾಡಿದ ನಿಮ್ಮನ್ನು ಹೇ ಸರ್ವೇಶ್ವರ, ಕೊಂಡಾಡಿದರು ಕುರಿಮರಿಗಳಂತೆ ಕುಣಿದಾಡಿದರು, ಬಿಚ್ಚದ ಕುದುರೆಗಳಂತೆ ಓಡಾಡಿದರು.


ಕೀರ್ತನೆ: 105:2-3, 36-37, 42-43
ಶ್ಲೋಕ: ನೆನೆಯಿರಿ ಪ್ರಭುವಿನ ಅದ್ಭುತಗಳನು

ಶುಭಸಂದೇಶ: ಲೂಕ 18:1-8


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: "ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ. ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, "ನನ್ನ ವಿರೋಧಿ ಅನ್ಯಾಯ ಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ," ಎಂದು ಹೇಳಿಕೊಳ್ಳುತ್ತಿದ್ದಳು. ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, "ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ; ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು," ಎಂದುಕೊಂಡ," ಆನಂತರ ಪ್ರಭು ಯೇಸು, "ಈ ನೀತಿಗೆಟ್ಟ ನ್ಯಾಯಾಧೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೇ ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲು ರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ? ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸವಿರುವುದನ್ನು ಕಾಣುವನೋ?" ಎಂದರು.

ಮನಸ್ಸಿಗೊಂದಿಷ್ಟು -15.11.2025 

ನಿರಂತರ ಪ್ರಾರ್ಥನೆಯ ಮಹತ್ವದ ಬಗ್ಗೆ ಯೇಸು ಮಾತನಾಡುತ್ತಾರೆ. ಯಾವುದೇ ಸ್ಧಾನಮಾನವಿಲ್ಲದ, ಯಾವುದೇ ಪ್ರಭಾವಿಲ್ಲದ, ಯಾವುದೇ  ಅಸ್ತ್ರವಿಲ್ಲದ  ವಿಧವೆ ಕೇವಲ ನಿರಂತರ ಮೊರೆಯಿಂದಾಗಿ ತನ್ನ ಬೇಡಿಕೆಗಳನ್ನು ಪಡೆದುಕೊಳ್ಳುತ್ತಾಳೆ. ಅದೂ ಒಬ್ಬ ದುಷ್ಟ ನ್ಯಾಯಾಧೀಶನಿಂದಲೇ. 

ನಮ್ಮ ಒಳಿತನ್ನೇ ಬಯಸುವ ದೇವರು ನಮ್ಮ ಪ್ರಾರ್ಥನೆ ಕೇಳದೆ ಇರುತ್ತಾರೆಯೇ ಎಂಬ ಸುಂದರ ಪ್ರಶ್ನೆ ಯೇಸುವಿನದು. ಆ ಬಡ ವಿಧವೆಯಂತೆಯೇ ನಾವು ಕೂಡ ಅನೇಕ ರೀತಿಯಲ್ಲಿ ಅಸಹಾಯಕರು ಅಲ್ಲವೇ? 
 
ಪ್ರಾರ್ಥನೆಯ ಶಕ್ತಿಯಲ್ಲಿ ನಂಬಿಕೆಯಿಡೋಣ, ಪ್ರಾರ್ಥಿಸುತ್ತಾ ಇರೋಣ. 

-ಚಿತ್ತ

14.11.2025 - ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ;

  ವಾಚನ: ಜ್ಞಾನ ಗ್ರಂಥ 13:1-9

ದೇವರನ್ನು ಅರಿಯದ ಮನುಜರೆಲ್ಲರು ಮಂದಮತಿಗಳೆಂಬುದು ಸಹಜ. ಕಣ್ಣಿಗೆ ಕಾಣುವ ಚೆಲುವಾದವುಗಳಿಂದ ಇರುವಾತನನುಅವರರಿಯಲಿಲ್ಲ. ಸೃಷ್ಟಿಯಾದ ವಸ್ತುಗಳನ್ನು ಗಮನಿಸಿ ಸೃಷ್ಟಿಕರ್ತನನು ಗುರುತಿಸಲಿಲ್ಲ. ಬದಲಿಗೆ ಅಗ್ನಿಆವಿವೇಗವಾಯುತಾರಾಗಣಭೋರ್ಗರೆವ ಸಾಗರಗಗನದ ಜ್ಯೋರ್ತಿಮಂಡಲ ಇವುಗಳೇ ಜಗವನ್ನಾಳುವ ದೇವರೆಂದುಕೊಂಡರಲ್ಲಾ! ಇವುಗಳಲ್ಲಿನ ಚೆಲುವಿಗೆ ಮಣಿದು ಇವುಗಳನ್ನೇ ದೇವರೆಂದುಕೊಂಡರು. ಗ್ರಹಿಸದೆ ಹೋದರು ಇವುಗಳ ಒಡೆಯ ಇನ್ನೆಷ್ಟು ಮಿಗಿಲಾಗಿರಬೇಕೆಂದು! ಸೌಂದರ್ಯಕ್ಕೆ ಮೂಲವಾದ ಸರ್ವೇಶ್ವರನೇ ನಿರ್ಮಿಸಿಹನು ಇವುಗಳನ್ನು. ಇವುಗಳಲ್ಲಿನ ಗುಣಶಕ್ತಿಗೆ ಅಚ್ಚರಿಗೊಂಡು ಹಾಗೆ ನುಡಿದಿದ್ದರೆ ಇವುಗಳನ್ನು ರೂಪಿಸಿದವನೆಷ್ಟು ಶಕ್ತನೆಂದು ತಿಳಿಯಲಿ ಅವುಗಳಿಂದಲೇ ಸೃಷ್ಟಿವಸ್ತುಗಳ ಸೌಂದರ್ಯ ಮಹತ್ವಗಳಿಂದ ಅವುಗಳ ಸೃಷ್ಟಿಕರ್ತನ ಸಾದೃಶ್ಯ ಸಾಧ್ಯ. ಇಂಥವರ ಮೇಲೆ ಬರುವ ಅಪರಾಧ ಅಂಥ ದೊಡ್ಡದೇನೂ ಅಲ್ಲದೇವರನ್ನು ಹುಡುಕುವ ಆಶೆಯಿಂದಲೇತಪ್ಪುಹಾದಿ  ಹಿಡಿದಿರಬಹುದಲ್ಲಾ. ಸೃಷ್ಟಿಕಾರ್ಯಗಳ ನಡುವೆ ಬಾಳುತ್ತಾ ವಿಚಾರಿಸುತ್ತಾರೆ ಮನಃಪೂರ್ವಕವಾಗಿ ಭ್ರಮೆಗೊಳ್ಳುತ್ತಾರೆ ಅವುಗಳ ಸಹಜವಾದ ಚೆಲುವಿಗೆ ಬೆರಗಾಗಿ. ಹೀಗಿದ್ದರೂ ಇಂಥವರನ್ನೇ ದೋಷಮುಕ್ತರೆನ್ನಲಾದೀತೆಪ್ರಪಂಚವನ್ನೇ ಶೋಧಿಸಿ ನೋಡುವ ಶಕ್ತಿ ಇವರಲ್ಲಿದ್ದ ಮೇಲೆ ಸೃಷ್ಟಿಗೆ ಒಡೆಯನಾದವನನು ಅರಿತುಕೊಳ್ಳಲು ತಡವಾದುದೇಕೆ?

ಕೀರ್ತನೆ: 19:2-3, 4-5

ಶ್ಲೋಕ: ತಾರಾಮಂಡಲ ತೋರುತಿದೆ ದೇವರ ಸೃಕೃತಿಗಳನು

ಶುಭಸಂದೇಶ: ಲೂಕ 17:26-37

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು. ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು. ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು. ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು. ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ  ನಡೆಯುವುದು. ಆ ದಿನಗಳಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ. ಲೋತನ ಪತ್ನಿಗಾದ ಗತಿಯನ್ನು ನೆನಪಿಗೆ ತಂದುಕೊಳ್ಳಿರಿ! ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ. ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು. ಒಂದೇ. ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. ಹೊಲದಲ್ಲಿದ್ದ ಇಬ್ಬರಲ್ಲಿ, ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು" ಎಂದರು. "ಸ್ವಾಮಿಾ, ಇದು ಎಲ್ಲಿ ನಡೆಯುವುದು?" ಎಂದು ಶಿಷ್ಯರು ಕೇಳಿದಾಗ, ಯೇಸು, "ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು," ಎಂದರು.

13.11.2025 - "ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ"

  ವಾಚನ: ಜ್ಞಾನ ಗ್ರಂಥ 7:22-8:1

ಸುಜ್ಞಾನದಲ್ಲಿ ಚುರುಕಾಗಿ ಅರಿಯುವ ಹಾಗೂ ಪವಿತ್ರವಾದ ಚೈತನ್ಯವಿರುವುದು; ಅದು ಅದ್ವಿತೀಯ, ನಾನಾ ವಿಧ, ಅತಿ ಸೂಕ್ಷ್ಮ ಹಾಗು ಚಲಿಸುವಂಥದ್ದು; ಅದು ಸ್ಪಷ್ಟೋಕ್ತಿಯುಳ್ಳದು, ನಿಷ್ಕಳಂಕವಾದುದು, ಸುರಕ್ಷಿತವಾದುದು, ನಿಚ್ಚಳವಾದುದು, ಸತ್ಪರವಾದುದು, ಹದವಾದುದು; ನಿರಾತಂಕವಾದುದು, ಕರುಣಾಮಯಿ, ಮಾನವ ಪ್ರಿಯವಾದುದು; ಸುಸ್ಥಿರ, ನಿಶ್ಚಿತ, ನಿಶ್ಚಿಂತೆಯುಳ್ಳದ್ದು, ಸರ್ವ ಶಕ್ತಿಯುಳ್ಳದ್ದು, ಚುರುಕು, ನಿರ್ಮಲ, ಸೂಕ್ಷ್ಮ, ಎಲ್ಲ ಜೀವಾತ್ಮಗಳಲ್ಲಿ ಸೇರಿಸಿಕೊಳ್ಳುವಂಥದ್ದು, ಸುಜ್ಞಾನ ಎಲ್ಲಾ ಚಲನೆಗಿಂತಲೂ ಚುರುಕು. ಇಡೀ ವಿಶ್ವದಲ್ಲಿ ವ್ಯಾಪಿಸಿಕೊಳ್ಳುವಷ್ಟು ಸ್ವಚ್ಛವಾದುದು. ಆಕೆ ದೇವರ ಶಕ್ತಿಯ ಉಸಿರು, ಸರ್ವಶಕ್ತನ ನಿರ್ಮಲ ಪ್ರವಾಹ. ಎಂದೇ ಆಕೆಯಲ್ಲಿ ಅಶುದ್ಧವಾದುದು ಯಾವುದೂ ಪ್ರವೇಶಿಸುವಂತಿಲ್ಲ. ಸುಜ್ಞಾನವು ಅನಾದಿ, ಪರಂಜ್ಯೋತಿಯ ಪ್ರಕಾಶ; ದೈವ ಪ್ರವೃತ್ತಿಯ ನಿಷ್ಕಳಂಕ ದರ್ಪಣ ದೇವರ ಶ್ರೇಷ್ಟತೆಯ ಪ್ರತಿರೂಪ, ಒಂಟಿಯಾಗಿದ್ದುಕೊಂಡು ಎಲ್ಲವನ್ನು ಆಕೆ ಮಾಡಬಲ್ಲಳು ತನ್ನತನವನ್ನು ಕಳೆದುಕೊಳ್ಳದೆ ಎಲ್ಲವನ್ನು ಹೊಸದಾಗಿಸುವಳು. ಪ್ರತಿಯೊಂದು ಪೀಳಿಗೆಯಲ್ಲೂ ಸಂಚರಿಸಿ, ಸಂತಾತ್ಮಗಳನ್ನು ಹೊಕ್ಕು, ಮಾನವರನ್ನು ದೇವರ ಗೆಳೆಯರನ್ನಾಗಿ, ಪ್ರವಾದಿಗಳನ್ನಾಗಿ ಮಾಡುವಳು. ಸುಜ್ಞಾನಿಯೊಂದಿಗಿರುವಾತನನ್ನೇ ಹೊರತು ಇನ್ನಾರನ್ನೂ  ಪ್ರೀತಿಸುವುದಿಲ್ಲ ದೇವರು. ಸುಜ್ಞಾನ ಸೂರ್ಯನಿಗಿಂತ ಸುಂದರಳು, ಯಾವ ತಾರಾಮಂಡಲಕ್ಕೂ ಮಿಗಿಲಾದವಳು. ಬೆಳಕಿಗೆ ಹೋಲಿಸಿದರೆ ಅದನ್ನೂ ಮೀರುವಳು. ಹಗಲು ಹೋಗಿ ಇರುಳಾಗುವುದು, ಸುಜ್ಞಾನಿಯ ಮುಂದೆ ಕೆಡುಕು ನಿಲ್ಲದು. ಸುಜ್ಞಾನವೆಂಬಾಕೆ ಸಂಪೂರ್ಣ ಶಕ್ತಿಯಿಂದ ಸರಿಯುವಳು ಜಗದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ, ಅನುಕೂಲಕರವಾಗಿಯೆ ನಡೆಸುವಳು ಎಲ್ಲವನು.

ಕೀರ್ತನೆ: 119:89, 90, 91, 130, 175
ಶ್ಲೋಕ: ಹೇ ಪ್ರಭೂ, ನಿನ್ನ ವಾಕ್ಯ ಶಾಶ್ವತ ಪರಲೋಕದಲ್ಲಿ ಅದು ಚಿರ ಶಾಶ್ವತ

ಶುಭಸಂದೇಶ: ಲೂಕ 17:20-25

ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, "ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ. "ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ," ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ," ಎಂದರು. ಆನಂತರ ಶಿಷ್ಯರನ್ನು ಉದ್ದೇಶಿಸಿ, "ಕಾಲವೊಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು. "ಇಗೋ, ಇಲ್ಲಿದ್ದಾನೆ; ಆಗೋ ಅಲ್ಲಿದ್ದಾನೆ," ಎಂದು ಜನರು ಸುದ್ದಿ ಎಬ್ಬಿಸುವರು. ಅದನ್ನು ನೀವು ನೋಡಲು ಹೋಗಬೇಡಿ; ಅಂಥವರನ್ನು ಹಿಂಬಾಲಿಸಲೂ ಬೇಡಿ. ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು. ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು," ಎಂದರು.

12.11.2025 - "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ ,"

 ವಾಚನ: ಜ್ಞಾನ ಗ್ರಂಥ 6:1-11


ಅರಸುಗಳೇ, ಕೇಳಿ ತಿಳಿದುಕೊಳ್ಳಿ; ಜಗದ ನ್ಯಾಯಮೂರ್ತಿಗಳೇ, ಅರ್ಥಮಾಡಿಕೊಳ್ಳಿ; ಬಹು ಜನಗಳ ಮೇಲೆ ದೊರೆತನ ಮಾಡುವವರೇ, ಆಲಿಸಿ, ಅನೇಕ ರಾಷ್ಪ್ರಗಳ ಮೇಲೆ ಹೆಚ್ಚಳಪಡುವವರೆ, ಕಿವಿಗೊಡಿ: ನಿಮಗೆ ಒಡೆತನ ದೊರೆತದ್ದು ಸರ್ವೇಶ್ವರನಿಂದ, ನಿಮ್ಮ ಪ್ರಭುತ್ವ ಬಂದುದು ಆ ಮಹೋನ್ನತನಿಂದ ನಿಮ್ಮ ಕಾರ್ಯಗಳನ್ನು ಶೋಧಿಸುವವನು ಆತನೇ, ನಿಮ್ಮ ಸಂಕಲ್ಪಗಳನ್ನು ಪರಿಶೀಲಿಸುವವನು ಆತನೇ, ಆತನ ರಾಜ್ಯದ ರಾಯಭಾರಿಗಳು ನೀವೆಲ್ಲ: ಸರಿಯಾಗಿ ನೀವು ನ್ಯಾಯ ತೀರಿಸಲಿಲ್ಲ, ಆತನ ಆಜ್ಞೆಗಳನ್ನು ಪರಿಪಾಲಿಸಲಿಲ್ಲ ಆ ದೇವರ ಸಂಕಲ್ಪದಂತೆ ನಡೆದುಕೊಳ್ಳಲಿಲ್ಲ. ಆತ ನಿಮ್ಮ ಮೇಲೆರಗುವನು ತ್ವರೆಯಾಗಿ, ಭೀಕರವಾಗಿ ಉನ್ನತ ಸ್ಥಾನದಲ್ಲಿರುವ ನಿಮಗೆ ತೀರ್ಪಿಡುವನು ಕ್ರೂರವಾಗಿ. ದೀನರಿಗೆ ದಯಾಪೂರಿತ ಕ್ಷಮೆ ದೊರಕಬಹುದು ಬಲಾಢ್ಯರಿಗಾದರೋ ಕಠಿಣ ಪರಿಕ್ಷೆ ಕಾದಿರುವುದು. ಸರ್ವರಿಗೂ ದೊರೆಯಾದ ಸರ್ವೇಶ್ವರ ಮುಖ ದಾಕ್ಷಿಣ್ಯ ತೋರುವವನಲ್ಲ ದೊಡ್ಡಸ್ತಿಕೆಯನ್ನು ಗಮನಿಸುವವನಲ್ಲ ಹಿರಿದು ಕಿರಿದುಗಳೆರಡನ್ನು ಮಾಡಿದಾತ, ಎಲ್ಲರನ್ನು ಸಮನಾಗಿ ನೋಡಿಕೊಳ್ಳಬಲ್ಲ. ಆದರೂ ಬಲವಂತರಿಗಾಗುವ ಪರೀಕ್ಷೆ ಇರುವುದು ಕಠಿಣತರವಾಗಿಯೇ. ಎಂದೇ ಅರಸುಕುಮಾರರೇ, ನನ್ನೀ ಬೋಧನೆಗಳೆಲ್ಲ ನಿಮಗಾಗಿಯೇ; ಸುಜ್ಞಾನಿಗಳಾಗಿ, ನೀವು ಸನ್ಮಾರ್ಗ ಬಿಡಬಾರದೆಂದೇ ಇದ ನುಡಿದಿರುವೆ. ಶುದ್ಧಾಚಾರಗಳನ್ನು ಶ್ರದ್ಧೆಯಿಂದ ಪಾಲಿಸಿದರೆ ಪರಿಶುದ್ಧರಾಗುವರು ಅವುಗಳಲ್ಲಿ ಸುಶಿಕ್ಷಿತರಾದವರು ಸರಿಯಾಗಿ ಉತ್ತರಿಸಬಲ್ಲರು. ಆದುದರಿಂದ ನನ್ನೀ ನುಡಿಗಳನು ಬಯಸಿರಿ, ಅವುಗಳಿಗಾಗಿ ಹಂಬಲಿಸಿರಿ; ಆಗ ಸುರಕ್ಷಿತರಾಗುವಿರಿ.

ಕೀರ್ತನೆ: 82:3-4, 6-7
ಶ್ಲೋಕ: ಎದ್ದೇಳು ದೇವಾ, ಸ್ಥಾಪಿಸು ನ್ಯಾಯವನು ಧರೆಯೊಳು

ಶುಭಸಂದೇಶ: ಲೂಕ 17:11-19

ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದು ಹೋಗುತ್ತಿದ್ದರು. ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಟ ರೋಗದಿಂದ ನರಳುತ್ತಿದ್ದ ಹತ್ತು ಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು, "ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ," ಎಂದು ಕೂಗಿ ಕೇಳಿಕೊಂಡರು, ಯೇಸು ಅವರನ್ನು ನೋಡಿ, "ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ," ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣ ಹೊಂದಿದರು. ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು! ಆಗ ಯೇಸು, "ಹತ್ತುಮಂದಿ ಗುಣ ಹೊಂದಿದರಲ್ಲವೆ? ಮಿಕ್ಕ ಒಂಭತ್ತು ಮಂದಿ ಎಲ್ಲಿ?  ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನ ಹೊರತು ಬೇರಾರೂ ಬರಲಿಲ್ಲವೇ?" ಎಂದರು. ಆನಂತರ ಆ ಸಮಾರಿಯದವನಿಗೆ, "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ ," ಎಂದು ಹೇಳಿದರು.

11.11.2025 - "ನಾವು ಕೇವಲ ಆಳುಗಳು ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ"

 ವಾಚನ: ಜ್ಞಾನಗ್ರಂಥ 2:23-3:9


ದೇವರು ಮಾನವನನ್ನು ಸೃಷ್ಟಿಸಿದ್ದು ಅಮರತ್ವಕ್ಕಾಗಿ ಅವನನ್ನು ರಚಿಸಿದ್ದು ತಮ್ಮ ಸ್ವರೂಪಕ್ಕನುಗುಣವಾಗಿ. ಸೈತಾನನ ಮತ್ಸರದಿಂದಲೇ ಮರಣ ಪ್ರವೇಶಿಸಿತು ಲೋಕವನ್ನು ಅವನ ಪಕ್ಷಕೆ ಸೇರಿದವರೆಲ್ಲರು ಅನುಭವಿಸುವರು ಅದನು. ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು, ಅವರನ್ನು ಮುಟ್ಟದು ಮಹಾಯಾತನೆ ಯಾವುದು. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿ ಹೋದುದು ಅವನಿಂದ ತೊಲಗಿದ ಕೆಡಂತಿತ್ತು ಸಜ್ಜನಿರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು ಅವರಾದರೋ ಶಾಂತಿಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡುಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ. ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ ಶೋಧಿಸಿದ ತರುವಾಯ ದೇವರಿಗೆ ಅವರು ಕಂಡುಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ. ಅಂಗೀಕೃತರಾದರು ಪೂರ್ಣ ದಹನಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲಿ ಹೊಳೆಯುವರು ಒಣಹುಲ್ಲಿನೊಳಗಿನ ಕಿಡಿಗಳೋಪಾದಿ, ನ್ನಾಯತೀರಿಸುವರವರು ಜನಾಂಗಗಳಿಗೆ, ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕೆ. ಸತ್ಯವನು ಅರಿವರು ದೇವರಲಿ ಭರವಸೆಯಿಡುವರು.

ಕೀರ್ತನೆ: 34:2-3, 16-17, 18-19
ಶ್ಲೋಕ: ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು

1.  ಪ್ರಭುವನು  ನಾ  ಕೊಂಡಾಡುವೆ  ಎಲ್ಲ  ಕಾಲದೊಳು|
ಆತನ  ಸ್ತುತಿ  ಸದಾ  ಇಹುದು  ನನ್ನ  ಬಾಯೊಳು||
ಪ್ರಭುವಿನಲ್ಲಿದೆ  ನನ್ನ  ಮನದಭಿಮಾನ|
ದೀನರಿದನು  ಕೇಳಿ,  ಪಡೆಯಲಿ  ಸುಮ್ಮಾನ||

2.  ದುರ್ಜನರಿಗಾದರೋ  ಪ್ರಭು  ವಿಮುಖನು|
ಅವರ  ಹೆಸರನು  ಧರೆಯಿಂದ  ಅಳಿಸುವೆನು|
ಕಿವಿಗೊಡುವನು  ಪ್ರಭು  ಸಜ್ಜನರ  ಮೊರೆಗೆ|
ನೆರವೀವನವರ  ಕಷ್ಟನಿವಾರಣೆಗೆ||

3.  ಸನಿಹದಲ್ಲಿಹನು  ಪ್ರಭು  ಭಗ್ನಹೃದಯಿಗಳಿಗೆ|
ಉದ್ಧಾರಕನಾತನು  ಮನಸ್ಸು  ಕುಗ್ಗಿದವರಿಗೆ|
ಸಜ್ಜನನಿಗೊದಗುವ  ಸಂಕಟಗಳು  ವಿಪರೀತ|
ಪ್ರಭುವೆಲ್ಲವನು  ನಿವಾರಿಸುವನು  ನಿಶ್ಚಿತ||

ಘೋಷಣೆ ಕೀರ್ತನೆ 19:8

ಅಲ್ಲೆಲೂಯ, ಅಲ್ಲೆಲೂಯ!
ಪ್ರಭುವಿನ  ನಿಯಮ  ನೀತಿಬದ್ದ ; ಮನಸ್ಸಿಗದು  ಒಸಗೆ | ಪ್ರಭುವಿನ  ಕಟ್ಟಳೆ  ಪರಿಶುದ್ದ ;  ಕಣ್ಣಿಗದು  ದೀವಿಗೆ ||
ಅಲ್ಲೆಲೂಯ!

ಶುಭಸಂದೇಶ: ಲೂಕ  17:7-10


ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ: "ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, "ಬಾ, ನನ್ನೊಂದಿಗೆ ಊಟಮಾಡು," ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ "ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರ ಮಾಡು. ಆನಂತರ ನೀನು ಊಟ ಮಾಡುವೆಯಂತೆ," ಎಂದು ಹೇಳುತ್ತಾರಲ್ಲವೇ ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, "ನಾವು ಕೇವಲ ಆಳುಗಳು ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ," ಎಂದುಕೊಳ್ಳಿರಿ," ಎಂದರು.

10.11.2025 - "ನಿನ್ನ ಸಹೋದರನು ತಪ್ಪು ಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿ ಬಿಡು"

 ವಾಚನ: ಜ್ಞಾನ ಗ್ರಂಥ 1:1-7


ಪೊಡವಿಯ ಪಾಲಕರೇ, ನ್ಯಾಯ ನೀತಿಯನ್ನು ಪ್ರೀತಿಸಿರಿ ಯಥಾರ್ಥ ಚಿತ್ತರಾಗಿ ಸರ್ವೇಶ್ವರನನ್ನು ಧ್ಯಾನಿಸಿರಿ ನಿಷ್ಕಪಟ ಮನಸ್ಸಿನಿಂದ ಆತನನ್ನು ಅರಸಿರಿ. ಸರ್ವೇಶ್ವರನು ದರ್ಶನವೀಯುವುದು ತನ್ನಲ್ಲಿ ಅಪನಂಬಿಕೆ ಪಡದವರಿಗೆ ಸರ್ವೇಶ್ವರನನ್ನು ಅರಿತುಕೊಂಡವರು ಅವರನ್ನು ಗುರಿಪಡಿಸರು ಪರೀಕ್ಷೆಗೆ. ದುರಾಲೋಚನೆಗಳು ಮಾನವನನ್ನು ದೂರ ಮಾಡುತ್ತವೆ ದೇವರಿಂದ. ದೇವರನ್ನು ಪರೀಕ್ಷಿಸಲೆತ್ನಿಸುವವನನ್ನು ಹುಚ್ಚನನ್ನಾಗಿಸುತ್ತದೆ ಆತನ ಶಕ್ತಿ ಸಾಮರ್ಥ್ಯ. ಸುಜ್ಞಾನ ಪ್ರವೇಶಿಸದು ಕಪಟಾತ್ಮವನ್ನು ಪಾಪಾಧೀನವಾದ ಹೃದಯದಲ್ಲಿ ಅದು ತಂಗದು. ಸುಶಿಕ್ಷಿತವಾದ ನಿರ್ಮಲ ಆತ್ಮ ಮೋಸದೆಡೆ ನಿಲ್ಲದು ಅವಿವೇಕ ಆಲೋಚನೆಗಳಿಂದದು ಓಡಿಹೋಗುವುದು ಅನ್ಯಾಯವು ಸಮೀಪಿಸಿದಾಗ ಅದು ಅಸಹ್ಯಪಡುವುದು. ಸುಜ್ಞಾನವೆಂಬುದು ಮಾನವನನ್ನು ಸ್ನೇಹಿಸುವ ಚೈತನ್ಯವು ಆದರೆ ದೇವದೂಷಣೆ ಆಡುವವರನ್ನು ಅದು ದಂಡಿಸದೆ ಬಿಡದು. ಏಕೆಂದರೆ ಅಂತರಾಲೋಚನೆಗಳಿಗೆ ದೇವರೇ ಸಾಕ್ಷಿ ಆತ ಹೃದಯಗಳನ್ನೂ ವೀಕ್ಷಿಸುತ್ತಾನೆ ಗಮನಿಸಿ ನಾಲಿಗೆ ಆಡುವುದನ್ನು ಅರ್ಥಮಾಡಿಕೊಳ್ಳುತ್ತಾನೆ ಚೆನ್ನಾಗಿ. ಸರ್ವೇಶ್ವರನ ಚೈತನ್ಯ ವಿಶ್ವವನ್ನು ತುಂಬಿದೆ ಸಮಸ್ತವನ್ನು ಒಟ್ಟಿಗೆ ಹಿಡಿದಿರುವ ಅದಕ್ಕೆ ಪ್ರತಿಯೊಂದೂ ತಿಳಿದಿದೆ.

ಕೀರ್ತನೆ: 139:1-3, 4-6, 7-8, 9-10
ಶ್ಲೋಕ: ನಡೆಸೆನ್ನ ಓ ಪ್ರಭೂ, ಆ ಸನಾತನ ಪಥದಲಿ


ಪ್ರಭೂ, ಪರಿಶೋಧಿಸಿರುವೆ ನೀ ನನ್ನನು|
ಅರಿತುಕೊಂಡಿರುವೆ ಅಂತರಂಗವನು||
ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ|
ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡತೆಯಲ್ಲವೂ ನಿನಗೆ ಸುಪರಿಚಿತ||

ಪ್ರಭೂ ನಾ ಮಾತೆತ್ತುವುದಕ್ಕೆ ಮುಂಚಿತವಾಗಿ|
ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ||
ನನ್ನ ಹಿಂದೆಯೂ ಮುಂದೆಯೂ ನೀನಿರುವೆ|
ಅಭಯ ಹಸ್ತವನು ನನ್ನ ಮೇಲಿರಿಸಿರುವೆ||
ನನ್ನ ಕುರಿತು ನಿನಗಿರುವ ಅರಿವು ಅಗಾಧ|
ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ||

ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು?|
ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು?||
ಆಕಾಶಕ್ಕೆ ನಾನೇರಿದರೂ ನೀನಿರುವೆ ಅಲ್ಲಿ|
ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ||

ನಾನರುಣನ ರೆಕ್ಕೆಗಳನ್ನೇರಿ ಹಾರಿದರೂ|
ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ||
ಅಲ್ಲೂ ನನ್ನ ನಡೆಸುವುದು ನಿನ್ನ ಕೈ|
ನನ್ನ ಹಿಡಿದಿರುವುದು ನಿನ್ನ ಬಲಗೈ||


ಶುಭಸಂದೇಶ: ಲೂಕ 17:1-6

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, "ಪಾಪ ಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ, ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು. ನೀವಾದರೋ ಎಚ್ಚರಿಕೆಯಿಂದಿರಿ! "ನಿನ್ನ ಸಹೋದರನು ತಪ್ಪು ಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು. ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪು ಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, "ಕ್ಷಮಿಸು," ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು," ಎಂದರು. ಸ್ವಾಮಿಾ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ," ಎಂದು ಪ್ರೇಷಿತರು ಕೇಳಿಕೊಂಡರು. ಆಗ ಯೇಸುಸ್ವಾಮಿ, "ಸಾಸಿವೆ ಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿ ಮರಕ್ಕೆ, "ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ," ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.

ಮನಸ್ಸಿಗೊಂದಿಷ್ಟು

ಪ್ರಚೋದನೆ, ಕ್ಷಮೆ ಹಾಗೂ ವಿಶ್ವಾಸ ಎಂಬುದರ ಬಗ್ಗೆ ಯೇಸು ಇಂದಿನ ಶುಭಸಂದೇಶದಲ್ಲಿ ಮಾತನಾಡುತ್ತಾರೆ. ತಪ್ಪನ್ನು, ಪಾಪವನ್ನು ಮಾಡಲು ಪ್ರಚೋದನೆ ಮಾಡುವುದು ಪಾಪ. ಅದರಲ್ಲೂ ಚಿಕ್ಕವರನ್ನು ಪ್ರಚೋದನೆಗೆ ಎಳೆದರೆ ಯೇಸು ಹೇಳುತ್ತಿರುವ ಶಿಕ್ಷೆ ದೊಡ್ಡದು. ಯೇಸು ಹೇಳುವ ಕ್ಷಮಿಸುವ ವಿಧಾನ ಹುಲು ಮಾನವರಾದ ನಮಗೆ ಕಷ್ಟ. ಆದರೆ ವಿಶ್ವಾಸವಿದ್ದರೆ ಎಂತಹ ಕಷ್ಟದ ಕೆಲಸವು ಸಾಧ್ಯ ಎನ್ನುತ್ತಾರೆ. ಅಂತಹ ವಿಶ್ವಾಸ ನಮ್ಮದಾದರೆ ಎಂತಹ ಭಾಗ್ಯ. 
'ಸಮಸ್ತವನ್ನು ಒಟ್ಟಿಗೆ ಹಿಡಿದಿರುವ ದೇವರ ಚೈತನ್ಯಕ್ಕೆ ಪ್ರತಿಯೊಂದೂ ತಿಳಿದಿದೆ' ಎಂಬ ಇಂದಿನ ವಾಚನದ ವಾಕ್ಯ ಸದಾ ನಮ್ಮ ನೆನಪಿನಲ್ಲಿರಲಿ.          

-ಚಿತ್ತ

08.11.2025 - " ಸಣ್ಣ ವಿಷಯಗಳಲ್ಲಿ ದ್ರೋಹಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ."

 ವಾಚನ: ರೋಮನರಿಗೆ 16:3-9, 16, 22-27



ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣರಕ್ಷೆಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ. ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತ ಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು, ಏಷ್ಯಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತ ಯೇಸುವನ್ನು ವಿಶ್ವಾಸಿಸಿದವನು ಆತನೇ. ನಿಮಗಾಗಿ ಬಹಳ ಶ್ರಮ ವಹಿಸಿದ ಮರಿಯಳಿಗೂ ನನ್ನ ನಮಸ್ಕಾರಗಳು. ನನ್ನ ಸ್ವದೇಶಿಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು, ಕ್ರಿಸ್ತ ಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು. ಪ್ರಭುವಿನಲ್ಲಿ ನನ್ನ ಆಪ್ತ ಗೆಳೆಯನಾದ ಅಂಪ್ಲಿಯಾತನಿಗೆ ನನ್ನ ವಂದನೆಗಳು. ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು. ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತ ಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ. ಈ ಪತ್ರವನ್ನು ಬರೆದುಕೊಟ್ಟ ತೆರ್ತ್ಯನೆಂಬ ನಾನೂ ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ. ನನಗೂ ಸಮಸ್ತ ಸಭೆಗೂ ಅತಿಥಿ ಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರೊಡನೆ ಇರಲಿ ! ಆಮೆನ್. ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮಿಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ. ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು. ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ ! ಆಮೆನ್.

ಕೀರ್ತನೆ 144:2-5, 10-11
ಶ್ಲೋಕ: ಯುಗಯುಗಾಂತರಕೂ ನಿನ್ನ ನಾಮಕ್ಕೆ ನಮನ.

ಹೊಗಳುವೆನು ನಾ ದಿನದಿನವೂ ನಿನ್ನನ್ನು|
ಭಜಿಸುವೆನೆಂದಿಗೂ ನಿನ್ನ ಹೆಸರನು||
ಪ್ರಭು ಮಹಾತ್ಮನು, ಸುತ್ಯಾರ್ಹನು|
ಆತನ ಮಹಿಮೆ ಅಗಮ್ಯವಾದದು||

ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು|
ತಿಳಿಸುವುದು ಪ್ರಭೂ, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು||
ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು|
ನಿನ್ನ ಮಹೋನ್ನತ ಮಹಿಮಾ ಪ್ರಭಾವವನು||

ಪ್ರಭೂ, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು|
ಕೊಂಡಾಡುವುದು ನಿನ್ನನು ಭಕ್ತಸಮೂಹವು||
ಪ್ರಸಿದ್ದಪಡಿಸುವರು ನಿನ್ನ ರಾಜ್ಯದ ಮಹತ್ವವನು|
ವರ್ಣಿಸುವರವರು ನಿನ್ನ ಶಕ್ತಿಸಾಮರ್ಥ್ಯವನು||

ಶುಭಸಂದೇಶ: ಲೂಕ 16:9-15



ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ಹೇಳುವುದನ್ನು ಗಮನಿಸಿರಿ, ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು. ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ. ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು ? ಯಾವನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾಗದು, ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ, ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು. " ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು. ಅದಕ್ಕೆ ಯೇಸು, " ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ, ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು, " ಎಂದರು.


ಮನಸ್ಸಿಗೊಂದಿಷ್ಟು - 11.08.2025

ಇಂದಿನ ಶುಭಸಂದೇಶದಲ್ಲಿ ಯೇಸು ನಮ್ಮ ಲೌಕೀಕ ಆಸ್ತಿಪಾಸ್ತಿಗಳು, ಸಾಮರ್ಥ್ಯಗಳು ಸ್ವರ್ಗೀಯ ಭಾಗ್ಯವನ್ನು ಪಡೆಯಲು ಸಹಾಯ ಮಾಡಬೇಕು ಎನ್ನುವ ಸಂದೇಶವನ್ನು ನೀಡುತ್ತಿದ್ದಾರೆ. ನಮ್ಮಲ್ಲಿ ಅದು ಹಿಮ್ಮುಖವಾಗಿ ಚಲಿಸಿ ಲೌಕೀಕ ವಿಷಯಗಳು ನಮ್ಮನ್ನು ದೇವರಿಂದ ದೂರ ಮಾಡುತ್ತಿದೆ.'ಇಬ್ಬರು ಯಜಮಾನನಿಗೆ ಸೇವೆ ಮಾಡಲಾಗದು' ಎಂಬ ಮಾತು ನಮ್ಮ ಆಯ್ಕೆಗಳ ಬಗ್ಗೆ ಎಚ್ಚರಿಸುತ್ತಿದೆ. 

'ಹೊಗಳುವೆನು ನಾ ದಿನದಿನವೂ ನಿನ್ನನ್ನು' ಎಂಬ ಇಂದಿನ ಕೀರ್ತನಾ ನುಡಿಗಳಂತೆ ನಮ್ಮ ನಡೆ ನುಡಿ ದೇವರನ್ನು ಸದಾ ಹೊಗಳುತ್ತಿರಲಿ.              

-ಚಿತ್ತ

07.11.2025 - "ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಸಿಸಿದ"

 ವಾಚನ: ರೋಮನರಿಗೆ 15:14-21

ಸಹೋದರರೇ, ನೀವು ಗುಣಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿ ಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ. ಆದರೂ ಕೆಲವು ವಿಷಯಗಳತ್ತ ನಿಮ್ಮ ಗಮನ ಸೆಳೆಯುವ ಉದ್ದೇಶದಿಂದ ಅಲ್ಲಲ್ಲಿ ಹೆಚ್ಚಿನ ಧೈರ್ಯವಹಿಸಿ ಬರೆದಿದ್ದೇನೆ. ದೇವರು ನನಗೆ ದಯಪಾಲಿಸಿರುವ ವಿಶೇಷ ವರದಾನದಿಂದಾಗಿ ಈ ಪ್ರಕಾರ ಬರೆದಿದ್ದೇನೆ ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತ ಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕ ಸೇವೆ. ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು. ಕ್ರಿಸ್ತ ಯೇಸು ನನ್ನ ಮುಖಾಂತರ ಅಂದರೆ, ನನ್ನ  ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಬುತ ಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರಿಗೂ ಸುತ್ತಮುತ್ತಲಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತ ಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ. ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿಯಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತ ಯೇಸುವಿನ ನಾಮವು ಪ್ರಚಾರವಾಗದ ಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ. "ಯಾರಿಗೆ ಆತನ ಸುದ್ದಿ ಮುಟ್ಟಿಲ್ಲವೋ ಅವರು ಆತನನ್ನು ನೋಡುವರು; ಯಾರು ಆತನ ವರ್ತಮಾನ ಕೇಳಿಲ್ಲವೋ ಅವರು ಅತನನ್ನು ಗ್ರಹಿಸಿಕೊಳ್ಳುವರು," ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನನ್ನ ಕಾರ್ಯವನ್ನು ನಡೆಸಿದ್ದೇನೆ.

ಕೀರ್ತನೆ: 98:1, 2-3, 3-4
ಶ್ಲೋಕ: ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು|
ಎಸಗಿಹನಾತನು ಪವಾಡ ಕಾರ್ಯಗಳನು||
ಗಳಿಸಿತಾತನ ಕೈ ಪೂತಭುಜ ಗೆಲುವನು||

ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕ ಶಕ್ತಿಯನು||
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು|
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||

ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ|
ನಮ್ಮ ದೇವ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ|
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ||

ಶುಭಸಂದೇಶ: ಲೂಕ 16:1-8


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: "ಒಬ್ಬನು ಧನಿಕನಿದ್ದ, ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, "ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು," ಎಂದ. ಆಗ ಮೇಸ್ತ್ರಿ, "ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ," ಎಂದು ಚಿಂತಾಕ್ರಾಂತನಾದ, ಮರುಕ್ಷಣ, "ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು," ಎಂದುಕೊಂಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡ. "ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?" ಎಂದು ಮೊದಲನೆಯವನನ್ನು ಕೇಳಿದ. ಅವನು, "ನೂರು ಬುದ್ದಲಿ ಎಣ್ಣೆ," ಎಂದ. ಅದಕ್ಕೆ ಮೇಸ್ತ್ರಿ, "ಇಗೋ, ನಿನ್ನ ಪತ್ರ, ಕುಳಿತುಕೊಂಡು "ಐವತ್ತು" ಎಂದು ಬೇಗನೆ ಬರೆ," ಎಂದ. ಬಳಿಕ ಇನ್ನೊಬ್ಬನನ್ನು ಕರೆದು, "ನೀನೆಷ್ಟು ಸಾಲ ತೀರಿಸಬೇಕು?" ಎಂದು ಕೇಳಿದ. ಅವನು "ನೂರು ಖಂಡುಗ ಗೋದಿ" ಎಂದಾಗ "ಇಗೋ ನಿನ್ನ ಪತ್ರ, "ಎಂಬತ್ತು"ಎಂದು ಬರೆ", ಎಂದ. ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಸಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.