16.12.2025 - "ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಮೊದಲನೆಯ ವಾಚನ : ಪ್ರವಾದಿ ಜೆಫನ್ಯನ ಗ್ರಂಥದಿಂದ ಇಂದಿನ ವಾಚನ: 3:1-2,9-13


ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ! ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲಿಲ್ಲ.  ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ. ಆಗ ಎಲ್ಲರು ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.  ಚದರಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.  ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ  ದುಷ್ಕ್ರತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ.  ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು.  ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ. ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು.  ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು‌.  ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು.  ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು.  ಅವರನ್ನು ಯಾರೂ ಹೆದರಿಸರು.

 - ಪ್ರಭುವಿನ ವಾಕ್ಯ

ದೇವರಿಗೆ ಕೃತಜ್ಞತೆ ಸಲ್ಲಲಿ


ಕೀರ್ತನೆ : 34 : 1-2,5-6, 16-17, 18,22, v. 6

ಶ್ಲೋಕ:  ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು.


1.  ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು|

ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು||

ಪ್ರಭುವಿನಲ್ಲಿದೆ ನನ್ನ ಮನದಭಿಮಾನ|

ದೀನರಿದನು ಕೇಳಿ ಪಡೆಯಲಿ ಸುಮ್ಮಾನ||

ಶ್ಲೋಕ


2.  ಆತನತ್ತ ತಿರುಗಿದ ಮುಖ ಅರಳುವುದು|

ಲಜ್ಜೆಯಿಂದೆಂದಿಗು ಕುಂದಿಹೋಗದು||

ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು|

ಸರ್ವಾಪತ್ತಿನಿಂದವನು ಮುಕ್ತಗೊಂಡನು||

ಶ್ಲೋಕ


3.  ದುರ್ಜನರಿಗಾದರೋ ಪ್ರಭು ವಿಮುಖನು|

ಅವರ ಹೆಸರನು ಧರೆಯಿಂದ ಅಳಿಸುವನು||

ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ|

ನೆರವೀವನವರ ಕಷ್ಟನಿವಾರಣೆಗೆ||

ಶ್ಲೋಕ


4.  ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ|

ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ||

ತನ್ನ ದಾಸರನು ಉದ್ಧಾರ ಮಾಡದಿರನು ಪ್ರಭು|

ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು||

ಶ್ಲೋಕ


ಘೋಷಣೆ

ಅಲ್ಲೆಲೂಯ, ಅಲ್ಲೆಲೂಯ!

ಇಗೋ, ಸರ್ವೇಶ್ವರಸ್ವಾಮಿ ತಮ್ಮ ಜನರನ್ನು ರಕ್ಷಿಸಲು ಬರುತ್ತಿದ್ದಾರೆ | ಅವರನ್ನು ಸ್ವೀಕರಿಸಲು ಸಿದ್ಧರಿರುವವರು ಧನ್ಯರು ||

ಅಲ್ಲೆಲೂಯ!


ಶುಭಸಂದೇಶ

ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ: 21:28-32


ಆ ಕಾಲದಲ್ಲಿ ಯೇಸು ಮುಖ್ಯ ಯಾಜಕರನ್ನೂ ಪ್ರಜಾಪ್ರಮುಖರನ್ನೂ ಉದ್ದೇಶಿಸಿ ಹೀಗೆಂದರು:"ಈ ಬಗ್ಗೆ ನಿಮಗೇನು ಅನಿಸುತ್ತದೆ?  ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, 'ಮಗನೇ, ಈ ಹೊತ್ತು ದ್ರಾಕ್ಷಿ ತೋಟಕ್ಕೆ ಹೋಗಿ ಕೆಲಸಮಾಡು' ಎಂದ.  ಅದಕ್ಕೆ ಅವನು, 'ನಾನು ಹೋಗುವುದಿಲ್ಲ' ಎಂದು ಉತ್ತರವಿತ್ತ.  ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ. ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ.  ಅವನು, 'ಇಗೋ, ಹೋಗುತ್ತೇನಪ್ಪಾ' ಎಂದು ಹೇಳಿದ, ಆದರೆ ಹೋಗಲೇ ಇಲ್ಲ. ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು? "ಎಂದು ಯೇಸು ಕೇಳಿದರು.  "ಮೊದಲನೆಯ ಮಗನೇ," ಎಂದು ಉತ್ತರಿಸಿದರು ಅವರು. ಆಗ ಯೇಸು, "ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ.  ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು.  ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪ ಪಡಲಿಲ್ಲ,  ಯೊವಾನ್ನನನ್ನು ನಂಬಲೂ ಇಲ್ಲ."

ಪ್ರಭುವಿನ ಶುಭಸಂದೇಶ

ಕ್ರಿಸ್ತರೇ ನಿಮಗೆ ಸ್ತುತಿ ಸಲ್ಲಲಿ

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...