ಮೊದಲನೆಯ ವಾಚನ : ಪ್ರವಾದಿ ಯೆಶಾಯನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ 7:10-14
ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ: "ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೋ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು" ಎಂದರು. ಅದಕ್ಕೆ ಆಹಾಜನು "ಇಲ್ಲ, ನಾನು ಗೂರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ" ಎಂದನು. ಆಗ ಯೆಶಾಯನು, "ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರೀವಿರಾ? ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಯಾನುವೇಲ್ ಎಂದು ಆತನಿಗೆ ಹೆಸರಿಡುವಳು" ಎಂದನು.
- ಪ್ರಭುವಿನ ವಾಕ್ಯ
ಕೀರ್ತನೆ : 24:1-2,3-4,5-6, v. 7,8
ಶ್ಲೋಕ: ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು, ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು!
1. ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವಾಗೀಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||
ಶ್ಲೋಕ
2. ಪ್ರಭುವಿನ ಶಿಖರವನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||
ಅಂಥವನಿರಬೇಕು ಶುದ್ಧ ಹಸ್ತನು; ಸುಮನಸ್ಕನು|
ಅನಾಚಾರಕೆ ಅಪ್ರಮಾಣಿಕತೆಗೆ ಒಲಿಯದವನು||
ಶ್ಲೋಕ
3. ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಫಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||
ಶ್ಲೋಕ
ಎರಡನೆಯ ವಾಚನ : ಪೌಲನು ರೋಮನರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 1:1-7
ಸಹೋದರರೇ, ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆ ಹೊಂದಿದವರು ಆದ ರೋಮ್ ನಗರರ ನಿವಾಸಿಗಳೆಲ್ಲರಿಗೆ: ಕ್ರಿಸ್ತ ಯೇಸುವಿನ ದಾಸನೂ ಪ್ರೇಷಿತನಾಗಲು ಕರೆ ಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸು ಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ. ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರ ಗ್ರಂಥದಲ್ಲಿ ವಾಗ್ದಾನಮಾಡಿದ್ದರು. ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸು ಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು. ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸು ಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು. ಯೇಸು ಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿರುವ ನೀವು ಕೂಡ ಸರ್ವ ಜನಾಂಗಗಳಲ್ಲಿ ಸೇರಿದ್ದೀರಿ.
- ಪ್ರಭುವಿನ ವಾಕ್ಯ
ಘೋಷಣೆ : ಮತ್ತಾಯ 1:22
ಅಲ್ಲೆಲೂಯ, ಅಲ್ಲೆಲೂಯ!
ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವಳು | 'ಇಮ್ಮಾನುವೆಲ್' ಎಕದರೆ "ದೇವರು ನಮ್ಮೊಡನೆ ಇದ್ದಾರೆ!" ಎಂದು ಅರ್ಥ ||
ಅಲ್ಲೆಲೂಯ!
ಶುಭ ಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:18-24
ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು, ಆತನಿಗೆ ನೀನು 'ಯೇಸು' ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ," ಎಂದನು. "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವರು" ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು. "ಇಮ್ಮಾನುವೆಲ್" ಎಂದರೆ 'ದೇವರು ನಮ್ಮೊಡನೆ ಇದ್ದಾರೆ!' ಎಂದು ಅರ್ಥ. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.
- ಪ್ರಭುವಿನ ಶುಭಸಂದೇಶ
Please send daily readings in early
ReplyDeleteWe are resolving some technical issues. We will do it.
ReplyDelete