29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

 ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ


ಮೊದಲನೇ ವಾಚನ: ಯೆರೆಮಿಯ: 1: 17-19

ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ಕೀರ್ತನೆ: 96: 71: 1-2, 3-4,5-6, 15, 17

ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು.

1.  ಆಶ್ರಯಕೋರಿ ಹೇ ಪ್ರಭೂ, ನಾ ಬಂದಿರುವೆ|
ಆಶಾಭಂಗವಾಗದಿರಲೆಂದು ನಾ ಬೇಡುವೆ||
ಸತ್ಯಸ್ವರೂಪನೇ, ನನ್ನ ಬಿಡಿಸಿ ರಕ್ಷಿಸಯ್ಯಾ|
ನನಗೆ ಕಿವಿಗೊಟ್ಟು ಪ್ರಭೂ ನನ್ನನುದ್ದರಿಸಯ್ಯಾ||
ಶ್ಲೋಕ

2.  ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು|
ನಿನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು||
ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ|
ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ||
ಶ್ಲೋಕ

3.  ಸ್ವಾಮಿದೇವಾ, ನೀನೇ ನನ್ನ ಭರವಸೆ|
ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ||
ಹುಟ್ಟಿನಿಂದಲೇ ನಾ ನಿನಗಂಟಿಕೊಂಡಿರುವೆನಯ್ಯಾ|
ಗರ್ಭದಿಂದಲೇ ನೀ ಎನ್ನನು ಕರೆದುತಂದೆಯಯ್ಯಾ|
ನಿರಂತರವೂ ನಿನ್ನನು ಕೊಂಡಾತ್ತಿರುವೆನಯ್ಯಾ||
ಶ್ಲೋಕ

4.  ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು|
ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು||
ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ?|
ನಿನ್ನ ಅದ್ಭುತ ಕಾರ್ಯಗಳನೆಂದಿಗೂ ನಾ  ಘೋಷಿಸುತ್ತಿರುವೆ||
ಶ್ಲೋಕ

ಘೋಷಣೆ:    ಮತ್ತಾಯ 5: 10

ಅಲ್ಲೆಲೂಯ, ಅಲ್ಲೆಲೂಯ.
ನ್ಯಾಯನೀತಿಯ  ನಿಮಿತ್ತ  ಹಿಂಸೆಯನ್ನು  ತಾಳುವವರು  ಭಾಗ್ಯವಂತರು| ಸ್ವರ್ಗಸಾಮ್ರಾಜ್ಯ  ಅವರದು||
ಅಲ್ಲೆಲೂಯ.




ಶುಭಸಂದೇಶ: ಮಾರ್ಕ: 6: 17-29

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತಾ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮ ಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತಾ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗು ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಉಟ್ಟು ಹಬ್ಬದ ದಿನಾಚರಣೆಯಂದು, ಆಸ್ತಾನಿಕರಿಗೂ ಸೇನಾದಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣ ಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನು ಅವರ ಜೊತೆಯಲ್ಲಿ ಭೋಜನಕ್ಕೆ ಕುಳಿತ್ತಿದ್ದ, ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಹಾಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರು ಕೇಳು ಕೊಡುತ್ತೇನೆ," ಎಂದನು. "ನೀನು ಕೇಳಿಕೊಂಡರು ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ," ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಂದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ’ ಇದೇ ನನ್ನ ಬೇಡಿಕೆ," ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತಾ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ನೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದು ಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25



ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು. ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ. “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ? ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ? ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.  ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.  ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.  ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಕೀರ್ತನೆ: 33:1-2, 4-5, 10, 11

ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು

ಶುಭಸಂದೇಶ: ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.  ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.  ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.  ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.  ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."

27.08.2026 - ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ

 ಮೊದಲನೆಯ ವಾಚನ: 1 ಥೆಸಲೋನಿಯರಿಗೆ 3:7-13



ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು. ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ. ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ. ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ. ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ದಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ದಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ, ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನಾರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವು ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.

ಕೀರ್ತನೆ 90:3-4, 12-13, 14-17
ಶ್ಲೋಕ: ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ.

ಇಳೆಯ ಮಾನವರನು ನೀ ಮಣ್ಣು ಪಾಲಾಗಿಸುತಿಹೆ,
' ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ ' ಎನ್ನುತಿಹೆ,,
ನಿನ್ನ ದೃಷ್ಟಿಯಲಿ ಪ್ರಭೂ, ಸಹಸ್ರ ವರುಷ,
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ,,

ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು,
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು,
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ?,
ನಿನ್ನೀ ಸೇವಕರ ಮೇಲಿರಲಿ ಮರುಕ,,

ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ,
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ,,
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ,
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ,,

ಶುಭಸಂದೇಶ: ಮತ್ತಾಯ 24:42-51


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು ? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ. ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ' ನನ್ನ ಯಜಮಾನ ತಡಮಾಡುವನು ' ಎಂದು ನೆನೆಸಿಕೊಂಡು, ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು."

26.08.2026 - ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ

 ಮೊದಲನೇ ವಾಚನ: 2 ಥೆಸಲೋನಿಯರಿಗೆ 3:6-10, 16-18


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ. ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ. ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ. ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು. ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ! ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು! ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!

ಕೀರ್ತನೆ: 128:1-2, 4-5

ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು

ಶುಭಸಂದೇಶ: ಮತ್ತಾಯ 23:27-32


ಯೇಸು ವೇದಪಾರಗರನ್ನೂ ಫರಿಸಾಯರನ್ನೂ ಉದ್ದೇಶಿಸಿ ಹೀಗೆಂದರು: “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರ ನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.  ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು. “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.  ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.  ಹೀಗೆ ಪ್ರವಾದಿಗಳನ್ನು ಕೊಲೆ ಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ. ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ."

25.08.2026 - ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯ ನೀತಿ, ದಯೆ ದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ

 ಮೊದಲನೇ ವಾಚನ: 2 ಥೆಸಲೋನಿಯರಿಗೆ 2:1-3, 14-16


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ: ಪ್ರಭುವಿನ ದಿನವು ಬಂದೇ ಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ. ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪ ಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು. ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.  ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.  ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.

ಕೀರ್ತನೆ: 96:10, 11-12, 13

ಶ್ಲೋಕ: ಪ್ರಭು ಧರಗೆ ನ್ಯಾಯತೀರಿಸಲು ಬಂದೇಬರುವನು ಖರೆಯಾಗಿ

1.  ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ|
ಕದಲದ ಸ್ಥಿರತೆಯನು ಇತ್ತಿಹನು ಧರೆಗೆ|
ನ್ಯಾಯವಾದ ತೀರ್ಪು ಕೊಡುವನು  ಜನಾಂಗಕೆ||
ಶ್ಲೋಕ

2.  ಹರ್ಷಿಸಲಿ  ಆಕಾಶವು, ಸಂತೋಷಿಸಲಿ ಭೂಲೋಕವು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು|
ಹರ್ಷಧ್ವನಿಗೈಯಲಿ  ಕಾಡಿನ ಫಲವೃಕ್ಷಗಳು||
ಶ್ಲೋಕ

3.  ಪ್ರಭು ಧರೆಗೆ ನ್ಯಾಯತೀರಿಸಲು ಬಂದೇಬರುವನು ಖಂಡಿತವಾಗಿ|
ಜಗಕು, ಜನತೆಗು ತೀರ್ಪಿಡುವನು ನೀತಿ ನಿಯಮಾನುಸಾರವಾಗಿ||
ಶ್ಲೋಕ

🌻✝️🌻

ಘೋಷಣೆ
(ಕೀರ್ತನೆ 119: 27)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ನಿಯಮಗಳ  ಪಥವನೆನಗೆ  ತಿಳಿಯಪಡಿಸಯ್ಯಾ | ನಿನ್ನ  ಅದ್ಭುತ  ಕಾರ್ಯಗಳನು  ನಾ  ಧ್ಯಾನಿಸುವೆನಯ್ಯಾ ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 23:23-26


ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನಸಮೂಹವನ್ನೂ ಉದ್ದೇಶಿಸಿ, "ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.  ಅಂಧ ನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.  ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ.  ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರ ಭಾಗವೂ ಶುಚಿಯಾಗುವುದು." ಎಂದರು.

24.08.2026 - ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ

  ಮೊದಲನೇ ವಾಚನ: ಪ್ರಕಟನೆ 21:9-14



ದೇವದೂತರುಗಳಲ್ಲಿ  ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.  ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;  ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.  ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.  ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.  ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.

ಕೀರ್ತನೆ: 145:10-11, 12-13, 17-18

ಶ್ಲೋಕ: ಪ್ರಭೂ, ಭಕ್ತಸಮೂಹವು ಪ್ರಸಿದ್ಧಪಡಿಸುವುದು ನಿನ್ನ ರಾಜ್ಯದ ಮಹತ್ವವನು

ಶುಭಸಂದೇಶ: ಯೊವಾನ್ನ 1:45-51


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.  ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.  ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.  ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.  ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.  ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು. ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

23.08.2026 - ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 22:15, 19-23


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು : ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು. “ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.  ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.  ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.  ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು."

ಕೀರ್ತನೆ: 138:1-2, 2-3, 6, 8

ಶ್ಲೋಕ: ಪ್ರಭೂ, ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು

1.  ಹೃದಯಪೂರ್ವಕ ವಂದನೆ ಪ್ರಭೂ, ನಿನಗೆ|
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ|

2.  ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ||
ನಿನ್ನ ಪ್ರೀತಿ ಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ|
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು|
ಅಧಿಕಮಾಡಿದೆ ನೀನು ನನ್ಮಾತ್ಮ ಶಕ್ತಿಯನು||
ಶ್ಲೋಕ

3.  ಉನ್ನತವಾದರೂ ಗಮನಿಸುವನು ಪ್ರಭು ದೀನರನು|
ದೂರದಿಂದಲೇ ಗುರುತಿಸುವಾತನು ಗರ್ವಿಷ್ಠರನು||
ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು|
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು||

ಎರಡನೇ ವಾಚನ: ರೋಮನರಿಗೆ 11:33-36

ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ! “ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು? ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?” ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.

ಶುಭಸಂದೇಶ: ಮತ್ತಾಯ 16:13-20


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.  ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.  ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು.  ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.  ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.  ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.  ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”  ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

21.08.2026 - ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು

ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 37:1-14



ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು. 2ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ: ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.” ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು. ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ. ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು. ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು. ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ. ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು. ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು. ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಕೀರ್ತನೆ: 107:2-3, 4-5, 6-7, 8-9

ಶ್ಲೋಕ: ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು

ಶುಭಸಂದೇಶ: ಮತ್ತಾಯ 22:34-40


ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?” ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’ ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ. ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’ ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

20.08.2026 - ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 36:23-28


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.  ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು. ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.  ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.  ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.  ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

ಕೀರ್ತನೆ: 51:12-13, 14-15, 18-19

ಶ್ಲೋಕ: ಹಿಸ್ಸೋಪಿನಿಂದ ನೀ ಚಿಮುಕಿಸೆ ನಾ ಶುದ್ಧನಾಗುವೆ

ಜೀವೋದ್ಧಾರವನು  ಮರಳಿ  ಸವಿಯುವಂತೆ  ಮಾಡು|
ವಿಧೇಯನಾಗಿ  ನಡೆವ  ಸಿದ್ಧ  ಮನಸ್ಸನು  ನೀಡು||
ಬೋಧಿಸುವೆನಾಗ  ನಿನ್ನ  ಮಾರ್ಗವನು  ದುರುಳರಿಗೆ|
ತಿರುಗಿಕೊಳ್ವರಾಗ  ದ್ರೋಹಿಗಳು  ನಿನ್ನ  ಕಡೆಗೆ||

ತಪ್ಪಿಸೆನ್ನನು  ಸ್ವಾಮಿದೇವಾ,  ರಕ್ತಾಪರಾಧದಿಂದ|
ನಿನ್ನ  ಸತ್ಯಸಂಧತೆಯನು  ಸಾರುವೆ  ಮುಕ್ತಕಂಠದಿಂದ||
ತೆರೆವಂತೆ  ಮಾಡು  ಪ್ರಭೂ, ನನ್ನ  ತುಟಿಗಳನು|
ಸಾರುವುದೆನ್ನ  ಬಾಯಿ  ನಿನ್ನ  ನುಡಿಗಳನು||

ಬಲಿಯರ್ಪಣೆಯಲಿ  ನಿನಗೊಲವಿಲ್ಲ|
ದಹನಬಲಿಯಿತ್ತರೂ  ನಿನಗೆ  ಬೇಕಿಲ್ಲ||
ಮುರಿದ  ಮನವೇ  ದೇವನೊಲಿವ  ಯಜ್ಞವು|
ನೊಂದ  ಬೆಂದ  ಮನವನಾತ  ಒಲ್ಲೆಯೆನನು||

ಘೋಷಣೆ                     
ಕೀರ್ತನೆ  27:11

ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ  ಪ್ರಭೂ,  ನಿನ್ನ  ಮಾರ್ಗವನು,  ಶತ್ರುರಹಿತ  ಹಾದಿಯಲಿ  ನಡೆಸು  ಎನ್ನನು,,
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 22:1-14


ಯೇಸುಸ್ವಾಮಿ ಯಾಜಕರು ಫರಿಸಾಯರನ್ನುದ್ದೇಶಿಸಿ ಈ  ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ; ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ. ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ. ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ. ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ. ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು. ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ. ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು. ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ. ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು. “ಆಮೇಲೆ ರಾಜನು ಅತಿಥಿಗಳನ್ನು ನೋಡಲು ಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ. ‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ. ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ. “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.

19.08.2026 - ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿ ತೋಟವಿತ್ತು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 34:1-11


ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು. “ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ? ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ. ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ. ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು; 6ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ. “ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ. ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ;  ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು. “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು. 

ಕೀರ್ತನೆ: 123:1-3, 3-4, 5, 6

ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?

1.  ಪ್ರಭು ಕುರಿಗಾಹಿಯಾಗಿರಲು ನನಗೆ|
ಕುಂದುಕೊರತೆಗಳೆಲ್ಲಿಯವು  ಎನಗೆ?||
ಹಸಿರುಗಾವಲುಗಳಲೆನ್ನ   ತಂಗಿಸುವನು|
ತಿಳಿಕೊಳಗಳ  ಬಳಿಗೆನ್ನ   ಕರೆದೊಯ್ಯುವನು|
ಪುನಶ್ಚೇತನಗೊಳಿಸುವನು  ನನ್ನ  ಪ್ರಾಣವನಾತ||
ಶ್ಲೋಕ

2.  ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ|
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲೂ ಅಂಜೆನು ಕೇಡಿಗೆ||
ನಿನ್ನ ಕುರಿಗೋಲು, ಊರುಗೋಲು, ಧ್ಯೆರ್ಯವನು ತರುವುದೆನಗೆ|
ಕಾಣೆನೆಂದಿಗೂ  ನಾ  ದಿಗಿಲನು,  ನೀನಿರಲು  ನನ್ನೊಂದಿಗೆ||
ಶ್ಲೋಕ

3.  ಸಜ್ಜುಗೊಳಿಸುವೆ  ನೀ  ಶತ್ರುಗಳ  ಕಣ್ಣುಂದೆಯೇ ನನಗೌತಣವನು|
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು||
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ|
ದೇವ ಮಂದಿರದಲಿ ನಾ ವಾಸಿಸುವೆ  ಚಿರಕಾಲವೆಲ್ಲ||
ಶ್ಲೋಕ

ಘೋಷಣೆ
(ಕೀರ್ತನೆ 25: 4-5)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ಸನ್ಮಾರ್ಗದಲಿ  ದೇವಾ,  ಎನ್ನ  ಮುನ್ನಡೆಸು ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 20:1-16


ಯೇಸು ತಮ್ಮ ಶಿಷ್ಯರಿಗೆ ಈ ಸಾಮತಿ ಹೇಳಿದರು, “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ. ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.  ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು. 5ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ. ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ. ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ. “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ. ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.  ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.  ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.  ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.  ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?  ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.  ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.  ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.

18.08.2026 - ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ

ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 28:1-10

ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - “ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಆಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ. ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ! ನಿನ್ನ ಜ್ಞಾನ ವಿವೇಕಿಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿ ಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ. ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ-ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ. ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸು ಮಾಡುವರು. ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು. ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ! ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”

ಕೀರ್ತನೆ: 32:26-27, 28, 30, 35-36

ಶ್ಲೋಕ: ಬದುಕಿಸುವವನು, ಕೊಲ್ಲುವವನು ನಾನೇ

ಶುಭಸಂದೇಶ: ಮತ್ತಾಯ 19:23-30


ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ. ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು. ಪರಿತ್ಯಾಗಕ್ಕೆ ನೂರ್ಮಡಿ ಪ್ರತಿಫಲ ಪೇತ್ರನು ಆಗ ಮುಂದೆ ಬಂದು, “ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?” ಎಂದು ಕೇಳಿದನು.  ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ. ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆ ತಾಯಿಯರನ್ನಾಗಲಿ, ಮಕ್ಕಳು ಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು. ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.

17.08.2026 - ಸ್ಮರಿಸಲಿಲ್ಲ ನೀವು, ಹೆತ್ತ ತಾಯಂತಿದ್ದ ದೇವರನು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 24:15-24



ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -  “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.  ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” “ಹೀಗೆ ಆಜ್ಞೆಯಾಗಲು, ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿ ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದುಕೊಂಡೆನು.  ಜನರು, “ನೀನು ಹೀಗೆ ಮಾಡುವುದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವುದಿಲ್ಲವೋ?’ ಎಂದು ನನ್ನನ್ನು ಕೇಳಿದರು. ಅದಕ್ಕೆ ನಾನು ಹೀಗೆ ಹೇಳಿದೆ: “ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದ್ದಾರೆ - ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.  ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ,  ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ.  ಈ ವಿಷಯದಲ್ಲಿ ಯೆಜೆಕಿಯೇಲನು ನಿಮಗೆ ಮುಂಗುರುತಾಗಿರುವನು. ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು."

ಧರ್ಮೋಪದೇಶಕಾಂಡ: 32:18-19, 20, 21

ಶ್ಲೋಕ: ಸ್ಮರಿಸಲಿಲ್ಲ ನೀವು, ಹೆತ್ತ ತಾಯಂತಿದ್ದ ದೇವರನು

1.  ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು?|
ಸ್ಮರಿಸಲಿಲ್ಲ ನೀವು, ಹೆತ್ತ ತಾಯಂತಿದ್ದಾ ದೇವರನು||  
ಇದ  ಕಂಡು ಸರ್ವೇಶ್ವರ ಬೇಸರಗೊಂಡ|
ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ||
ಶ್ಲೋಕ

2.  ಎಂದೇ ಇಂತೆಂದುಕೊಂಡೆನು: ಇವರಿಗೆ ವಿಮುಖನಾಗುವೆನು|
ಇವರಿಗೊದಗಲಿರುವ ಗತಿಯನು ನೋಡುವೆನು||
ಸತ್ಯವರಿತೂ ಅನುಸರಿಸದೆ ಹೋದರು|
ಈ ವಿದ್ರೋಹ ಮಕ್ಕಳಂಥವರು||
ಶ್ಲೋಕ

3.  ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ|
ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ||
ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ|
ನಾನವರನು ಸಿಟ್ಟಿಗೆಬ್ಬಿಸುವೆನು||

ಶುಭಸಂದೇಶ: ಮತ್ತಾಯ 19:16-22


ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.  ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.  “ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.  ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ.  ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.  ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.

15.08.2026 - ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ

 ಮೊದಲನೇ ವಾಚನ: ಪ್ರಕಟನಾ ಗ್ರಂಥ 11:19; 12:1-6, 10

ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ  ಮಂಜೂಷವು ಅಲ್ಲಿರುವುದು ಕಾಣಿಸಿತು. ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು. ಆಕೆ ತುಂಬು ಗರ್ಭಿಣಿ, ಪ್ರಸವ ವೇದನೆಯಿಂದ ನರಳುತ್ತಿದ್ದಳು. ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು. ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ  ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು. ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ  ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿOಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು. ಆ ಮಹಿಳೆ ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು. ಸ್ವರ್ಗದಿಂದ ಬಂದ ಮಹಾ ಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು: "ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ.

ಕೀರ್ತನೆ: 45:10, 11, 12, 16

ಶ್ಲೋಕ: ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲ್ಲಿ, ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ

1.  ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ 
ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ ||
ಎಲೌ ಕುವರಿಯೇ, ಕೇಳು, ಎನ್ನ ಮಾತೀಗೆ ಕಿವಿಗೊಡು|
ನಿನ್ನ ಜನರನು, ತೌರುಮನೆಯನು ಮರೆತುಬಿಡು||
ಶ್ಲೋಕ

2.  ಆಗ ಬಯಸುವನು ರಾಜ ನಿನ್ನ ಲಾವಣ್ಯವನು|
ಆತನ ಪಾದಕ್ಕೆರಗು, ಆತನೇ ನಿನಗೊಡೆಯನು||
ಆಗಮಿಸುತಿಹರಿದೋ  ಸಂಭ್ರಮ ಸಡಗರದಿಂದ|
ಪ್ರವೇಶಿಸುತಿಹರು ಅರಮನೆಯನು ಉತ್ಸಾಹದಿಂದ||


ಎರಡನೇ ವಾಚನ: 1 ಕೊರಿಂಥಿಯರಿಗೆ 15:20-27

ಕ್ರಿಸ್ತ ಯೇಸು ಪುನರುತ್ದಾನ ಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ದಾನವು, ಸತ್ತವರು ಪುನರುತ್ದಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ. ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ದಾನವು ಪರಿಣಮಿಸಿತು. ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ. ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯುತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಆನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ. ಅಂತ್ಯ ಬರುವುದು ಆನಂತರವೇ. ಆಗ ಯೇಸು ಎಲ್ಲಾ ಅಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.  ಶತ್ರುಗಳೆಲ್ಲರನ್ನು ತಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.  ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ. "ದೇವರು ಎಲ್ಲವನ್ನು ಆಧೀನಪಡಿಸಿ, ಅತನ ಪಾದಪೀಠವನ್ನಾಗಿಸಿದ್ದಾರೆ," ಎಂದು ಲಿಖಿತವಾಗಿದೆ. "ಎಲ್ಲವನ್ನೂ ಅಧೀನಪಡಿಸಿಕೊಳ್ಳಲಾಗಿದೆ," ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅದರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.

ಶುಭಸಂದೇಶ: ಲೂಕ 1:39-56

ಮರಿಯಳು ಪ್ರಯಾಣಹೊರಟು  ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ  ಹೀಗೆಂದಳು: "ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!ನನ್ನ ಪ್ರಭುವಿನ ತಾಯಿ ನೀನು; ನನ ಬಳಿಗೆ ಬಂದುದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ! ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು," ಆಗ ಮರಿಯಳು ಹೀಗೆಂದು ಹೊಗಳಿದಳು: "ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ; ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ ತನ್ನ ದಾಸಿಯ ದೀನತೆಯನ್ನು ನೆನಪಿಗೆ ತಂದುಕೊಂಡನಾತ   ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಆತನ ಪ್ರೀತಿ ತಲತಲಾಂತರದವರೆಗೆ, ಗರ್ವ ಹೃದಯಿಗಳನಾತ  ಚದರಿಸಿರುವನು ಪ್ರದರ್ಶಿಸಿರುವನು ತನ್ನ ಬಾಹುಬಲವನು ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು ಏರಿಸಿರುವನು ಉನ್ನತಿಗೆ ದೀನದಲಿತರನು. ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ, ಹೊರದೂಡಿರುವನು ಸಸಿರಿವಂತರನು ಬರೀಗೈಯಲಿ ನೆರವಾದನು ತನ್ನ ದಾಸ ಇಸ್ರಯೇಲರಿಗೆ  ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ ಅವನ ಸಂತತಿಗೆ, ಯುಗಯುಗಾಂತರದವರೆಗೆ," ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು.

14.08.2026 - ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 16:1-15, 60, 63

ಆಮೇಲೆ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ - “ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ - ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಂದು ಯಾರೂ ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ. ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವು ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಸುತ್ತಲೇ ಇಲ್ಲ. ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು. “ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ. ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ. “ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ. “ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.  ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.  ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,  ಕೊರಳಿಗೆ ಮಾಲೆಯನ್ನು, ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆ.  ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.  ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ. “ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ. ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.

ಕೀರ್ತನೆ: 12:2-3, 4, 5-6

ಶ್ಲೋಕ: ನಿನಗಿತ್ತು ಎನ್ನ ಮೇಲೆ ಕೋಪ ಮನ; ಆದರೆ ಆದೀಗ ಆಗಿದೆ ಶಮನ

1.  ದೇವರೇ ಉದ್ಧಾರಕನೆನಗೆ|
ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ||
ದೇವಾದಿದೇವನೇ ಎನಗೆ ಶಕ್ತಿ|
ಆತನೆನ್ನ ಕೀರ್ತನೆಯ ವ್ಯಕ್ತಿ|
ತಂದಿಹನಾತ ಎನಗೆ ಮುಕ್ತಿ||
ಶ್ಲೋಕ

2.  ಉದ್ಧರಿಸುವಾ ಒರತೆಗಳಿಂದ|
ಸೇದುವಿರಿ ನೀರನ್ನು ಹರುಷದಿಂದ||
ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು|
ಸ್ಮರಿಸಿರಿ ಆತನ ಶ್ರೀ  ನಾಮವನು||
ಸಾರಿರಿ ಜನತೆಗೆ ಆತನ ಕಾರ್ಯಗಳನು|
ಘೋಷಿಸಿರಿ ಆತನ ನಾಮಘನತೆಯನು||
ಶ್ಲೋಕ

3.  ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು|
ಎಸಗಿಹನಾತ ಮಹಿಮಾಕಾರ್ಯಗಳನು|  ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು||
ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ|  ನಿಮ್ಮ ಮಧ್ಯೆಯಿರುವ ಆ ಘನವಂತನ|
ಇಸ್ರಯೇಲಿನಾ ಸ್ವಾಮಿ ಪರಮ ಪಾವನ||
ಶ್ಲೋಕ

ಘೋಷಣೆ
(ಹಿಬ್ರಿಯರಿಗೆ 4: 12)

ಅಲ್ಲೆಲೂಯ, ಅಲ್ಲೆಲೂಯ.
ದೇವರ  ವಾಕ್ಯ  ಜೀವಂತವಾದುದು,  ಕ್ರಿಯಾತ್ಮಕವಾದುದು;| ಹೃದಯದ  ಆಶೆ  ಆಲೋಚನೆಗಳನ್ನು  ವಿವೇಚಿಸುವಂತಾದ್ದು||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 19:3-12

ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ, ‘ಈ ಕಾರಣದಿಂದಲೇ ಗಂಡನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎಂದೂ ಹೇಳಿದ್ದಾರೆಂಬುದಾಗಿ ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೇ? ಹೀಗಿರುವಲ್ಲಿ, ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು. ಈ ನಿಮಿತ್ತ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದೆ ಇರಲಿ,” ಎಂದರು. "ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು. “ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ. ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.” ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆ ಮಾಡಿಕೊಳ್ಳದಿರುವುದೇ ಲೇಸು,” ಎಂದರು.  ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ. ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.

13.08.2026 - ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು

  ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 12:1-12



ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:  “ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು. “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು. ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು. ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು. ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆಹಾಕಿ, ಕತ್ತಲಲ್ಲಿ ಹೊತ್ತುಕೊಂಡುಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.” ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆ: ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಮನೆಯೊಳಗಿನಿಂದ ಆಚೆಗೆ ಹಾಕಿದೆ; ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ, ಕತ್ತಲಲ್ಲಿ ಆ ಸಾಮಗ್ರಿಗಳನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆ. ಬೆಳಿಗ್ಗೆ ಸರ್ವೇಶ್ವರನಿಂದ ಈ ವಾಣಿ ನನಗೆ ಕೇಳಿಸಿತು: “ನರಪುತ್ರನೇ, ದ್ರೋಹಿವಂಶದವರಾದ ಇಸ್ರಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ? ನೀನು ಅವರಿಗೆ ಹೀಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಈ ಹೊರೆ ಜೆರುಸಲೇಮಿನಲ್ಲಿರುವ ರಾಜನಿಗೂ ಅಲ್ಲಿನ ಇಸ್ರಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ; ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು. ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು: ಅವನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ಸಾಮಗ್ರಿಗಳನ್ನು ಆಚೆಗೆ ಸಾಗಿಸುವನು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸದು.

ಕೀರ್ತನೆ: 78:56-57, 58-59, 61-62

ಶ್ಲೋಕ: ಮರೆಯರು ನನ್ನ ಮಹತ್ಕಾರ್ಯಗಳನು

1.  ಆದರೂ  ಬಂಡೆದ್ದು  ಪರೀಕ್ಷಿಸಿದರು  ಪರಾತ್ಪರ  ದೇವರನು|
ಕೈಗೊಂಡು  ನಡೆಯದೆ  ಹೋದರು  ಆತನ  ವಿಧಿನಿಯಮಗಳನು||
ನಂಬಿಕೆಗೆಟ್ಟು  ದ್ರೋಹಿಗಳಾದರು  ತಮ್ಮ  ಹಿರಿಯರಂತೆ|
ಆತನಿಗೆ  ಎದುರುಬಿದ್ದರು  ಹಿಮ್ಮುಖವಾದ  ಬಿಲ್ಲಿನಂತೆ||

2.  ಬೇಸರಗೊಳಿಸಿದರು  ತಮ್ಮ  ಪೂಜಾಸ್ಥಾನದಿಂದ|
ರೇಗಿಸಿದರಾತನನು  ಕೆತ್ತನೆಯ  ವಿಗ್ರಹಗಳಿಂದ||
ರಣರೌದ್ರನಾದನು  ಇದನರಿತ  ದೇವನು|
ತೊರೆದನು  ಅಸಹ್ಯದಿಂದ  ಇಸ್ರಯೇಲರನು||

3.  ಒಪ್ಪಿಸಿದನು  ತನ್ನ  ಬಲುಮೆಯನು  ಕೈಸೆರೆಗೆ|
ತನ್ನ  ಮಹಿಮೆಯನು  ವಿರೋಧಿಗಳ  ಕೈವಶಕ್ಕೆ||
ಗುರಿಮಾಡಿದನು  ತನ್ನ  ಪ್ರಜೆಯನು  ಖಡ್ಗಕೆ|
ಉಗ್ರವಾದನು  ತನ್ನ  ವಾರಸುದಾರರಿಗೆ||

ಘೋಷಣೆ                 ಕೀರ್ತನೆ 119:88

ಅಲ್ಲೆಲೂಯ, ಅಲ್ಲೆಲೂಯ!
ನಿನ್ನಚಲ  ಪ್ರೀತಿಗನುಸಾರ  ಚೈತನ್ಯಗೊಳಿಸೆನ್ನನು,  
ಕೈಗೊಳ್ಳುವೆನಾಗ  ನಿನ್ನ  ಬಾಯುಸುರಿದ  ಕಟ್ಟಳೆಗಳನು,
ಅಲ್ಲೆಲೂಯ!


ಶುಭಸಂದೇಶ: ಮತ್ತಾಯ 18:21-19:1

ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾವಿೂ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳು ಸಲವೇ?” ಎಂದು ಕೇಳಿದನು. “ಏಳು ಸಲವಲ್ಲ, ಏಳೆಪ್ಪತ್ತು ಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾವಿೂ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ. ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ. “ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ. ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು. ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು.

12.08.2026 - ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 9:1-7; 10:18-22



ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು. ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು. ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ, “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು. ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿ ಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು. ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು. ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;  ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.

ಕೀರ್ತನೆ: 113:1-2, 3-4, 5-6

ಶ್ಲೋಕ: ಪ್ರಭುವಿನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ

ಶುಭಸಂದೇಶ: ಮತ್ತಾಯ 18:15-20


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ, “ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.  ಅವರಿಗೂ ಅವನು ಕಿವಿಗೊಡದೆ ಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು. “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ. “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.  ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

11.08.2026 - ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 2:8-3:4

ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದು ಬಿಡು,” ಎಂದರು. ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು. ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು. ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು. ನಾನು ಬಾಯಿ ತೆರೆದೆ; ಅವರೇ ಆ ಸುರುಳಿಯನ್ನು ನನಗೆ ತಿನ್ನಿಸಿದರು. ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದು ಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು. ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು."

ಕೀರ್ತನೆ: 119:14, 24, 72, 103, 111, 131

ಶ್ಲೋಕ:  ನಿನ್ನ  ನುಡಿ  ಎನಿತೊ  ರುಚಿ  ನನ್ನ  ನಾಲಿಗೆಗೆ.

1.  ಸಿರಿಸಂಪತ್ತಿಗಿಂತ  ಮಿಗಿಲಾಗಿ
ಆನಂದಿಪೆ  ನಿನ್ನ  ಮಾರ್ಗಿಯಾಗಿ
ನಿನ್ನಾಜ್ಞೆಯು   ಆನಂದದಾಯಕ
ಅವೇ  ನನಗೆ  ಮಂತ್ರಾಲೋಚಕ

2.  ಸಾವಿರಾರು  ಚಿನ್ನ  ಬೆಳ್ಳಿ  ನಾಣ್ಯಗಳಿಗಿಂತ
ನಿನ್ನ  ಬಾಯಿಂದ  ಬಂದ  ಧರ್ಮಶಾಸ್ತ್ರ  ಉಚಿತ
ನಿನ್ನ  ನುಡಿ  ಎನಿತೊ  ರುಚಿ  ನನ್ನ  ನಾಲಿಗೆಗೆ
ಜೇನುತುಪ್ಪಕ್ಕಿಂತ  ಸಿಹಿ  ನನ್ನ  ಬಾಯಿಗೆ

3.  ಹೃದಯಾನಂದಕರ  ನಿನ್ನ  ಕಟ್ಟಳೆಗಳು
ನನಗಮರ  ಸ್ವಾಸ್ಥ್ಯವಾದುವುವು   ಅವುಗಳು
ಬಾಯ್ದೆರೆದು  ಹಾತೊರೆಯುತ್ತಿರುವೆ
ನಿನ್ನ  ಆಜ್ಞೆಗಳನು  ಅರಸುತಿರುವೆ

ಘೋಷಣೆ                   ಕೀರ್ತನೆ 119:34

ಅಲ್ಲೆಲೂಯ, ಅಲ್ಲೆಲೂಯ!
ನೀಡೆನಗೆ  ನಿನ್ನ  ಶಾಸ್ತ್ರದ  ಅರಿವನು,
ಪೂರ್ಣಮನದಿಂದ  ಆಚರಿಸುವೆನದನು,,
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 18:1-5, 10, 12-14


ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು: “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.” “ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.  ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ. “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ."

09.08.2026 - ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ

ಮೊದಲನೇ ವಾಚನ: 1 ಅರಸುಗಳು 19:9, 11-13



ಎಲೀಯನು ಪ್ರಯಾಣಮಾಡಿ ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.  ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ!  ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. 

ಕೀರ್ತನೆ: 85:9, 10, 11-12, 13-14

ಶ್ಲೋಕ: ತೋರಿಸೆಮಗೆ ಪ್ರಭೂ, ಕರುಣೆಯನು

1.  ನಾ ಕೇಳುತ್ತಿರುವೆನು ಪ್ರಭು ಹೇಳುವುದನು|
ತನ್ನ ಜನರಿಗಾತ ನುಡಿವುದು ಶಾಂತಿಯನು||
ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ|
ಇದರಿಂದಾತನ ಮಹಿಮೆ ನಾಡಿನಲಿರುವುದು ನಿರುತ||
ಶ್ಲೋಕ

2.  ಪ್ರೀತಿಯೂ ಸತ್ಯವೂ ಒಂದನೊಂದು ಕೂಡಿರುವುವು|
ನೀತಿಯೂ ಶಾಂತಿಯೂ ಒಂದನೊಂದು ಚುಂಬಿಸುವುವು||
ಸತ್ಯತೆಯು ಹುಟ್ಟುವುದು ಭೂಮಿಯಿಂದ|
ನೀತಿಯೂ ದೃಷ್ಟಿಸುವುದು ಗಗನದಿಂದ||
ಶ್ಲೋಕ

3.  ಪ್ರಭೂ ಕೊಟ್ಟೇ ತೀರುವನು  ಒಳಿತನು|
ನಮ್ಮ ನಾಡು ನೀಡುವುದು ಬೆಳೆಯನು||
ನಡೆವುದು ಪ್ರಭುವಿನ ಮುಂದೆ ನೀತಿ|
ಮಾಡುವುದು ಆತನ ಹೆಜ್ಜೆಗೆ ಹಾದಿ||
ಶ್ಲೋಕ

ಎರಡನೇ ವಾಚನ: ರೋಮನರಿಗೆ 9:1-5


ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.  ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ. 3ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.  ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.  ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.

ಘೋಷಣೆ
(ಎಫೆಸಿ 1: 18)

ಅಲ್ಲೆಲೂಯ, ಅಲ್ಲೆಲೂಯ.
ಯೇಸು ಕ್ರಿಸ್ತರ  ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ;| ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು||
ಅಲ್ಲೆಲೂಯ.


ಶುಭಸಂದೇಶ: ಮತ್ತಾಯ 14:22-33


ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.  ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.  ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು.  ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.  ಹೀಗೆ ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ನೋಡಿದಾಗ ಶಿಷ್ಯರು ಭಯಭ್ರಾಂತರಾದರು. ದಿಗಿಲುಗೊಂಡು, “ಭೂತ, ಭೂತ!” ಎಂದು ಚೀರಿದರು.  ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.  ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.  ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.  ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.  ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.  ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...