15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9



ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ. ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು. ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು : ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ. ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ. ‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ. “ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ. ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು. ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”

ಕೀರ್ತನೆ: 48:2-3, 3-4, 5-6, 7-8
ಶ್ಲೋಕ: ಸರ್ವಶಕ್ತ ಪ್ರಭುವನು ದೇವನಗರದಲ್ಲಿ ಕಂಡೆವು

ಶುಭಸಂದೇಶ: ಮತ್ತಾಯ11:20-24


ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು; :ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ. ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತ ಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು. ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.

13.07.2026 - ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 1:10-17 


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ. ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು? ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ. ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ. ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ. ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.

ಕೀರ್ತನೆ: 50:8-9, 16-17, 21, 23

ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು

ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತ್ತಿಲ್ಲ|
ನನ್ನ ಮುಂದಿದೆ ಸತತ ನಿನ್ನ ದಹನಬಲಿಗಳೆಲ್ಲ||
ನಾ ಕೋರುವುದು ನಿನ್ನ ಮನೆಯ ಹೋರಿಗಳನಲ್ಲ|
ನಾ ಬಯಸುವುದು ನಿನ್ನ ಮಂದೆಯ ಹೋತಗಳನ್ನಲ್ಲ||

ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು?|
ನನ್ನ ನಿಬಂಧನೆಗಳ ನೀವು ಜಪಿಸುವುದೆಂತು||
ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ|
ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ||

ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ?|
ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ?||
ಧನ್ಯವಾದದ ಬಲಿಯರ್ಪಿಸುವವನೇ ನನಗೆ ಸನ್ಮಾನಿತನು|
ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು||

ಘೋಷಣೆ ಕೀರ್ತನೆ 119:34

ಅಲ್ಲೆಲೂಯ, ಅಲ್ಲೆಲೂಯ!

ನೀಡೆನಗೆ ನಿನ್ನ ಶಾಸ್ತ್ರದ ಅರಿವನು | ಪೂರ್ಣಮನದಿಂದ ಆಚರಿಸುವೆನದನು ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 10:34--11:1

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ, ಛೇದಿಸುವ ಖಡ್ಗವನ್ನು ತರಲು ಬಂದೆನು. ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ದ ಮಗಳಿಗೂ, ಅತ್ತೆಗೆ ವಿರುದ್ದ ಸೊಸೆಗೂ ಭೇದ ಹುಟ್ಟಿಸಲು ಬಂದೆನು; ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು. "ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅತವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ. "ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ. ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆ ಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ." ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.

11.07.2026 - “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 6:1-8 


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. 2ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು. ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು. ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿಕೊಂಡೆನು. ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು. ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು. ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.

ಕೀರ್ತನೆ: 93:1, 1-2, 5

ಶ್ಲೋಕ:  ವಹಿಸಿಹನು ಪ್ರಭು ರಾಜ್ಯಾಧಿಕಾರವನು




ಶುಭಸಂದೇಶ: ಮತ್ತಾಯ 10:24-33


ಯೇಸುಸ್ವಾಮಿ ಶಿಷ್ಯರಿಗೆ ಕೊಟ್ಟ ಆದೇಶ ಇದು: "ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?” “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ."

10.07.2026 - ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 14:2-10 

ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ. ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು. ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿ ಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆತೋರಿಸುವವನು ನೀನೇ,” ಎಂದು ಹೇಳು. ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು. ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ. ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ. ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ. ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ”. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.” ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿ ಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.

ಕೀರ್ತನೆ: 51:3-4, 8-9, 12-13, 14, 17

ಶ್ಲೋಕ:  ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ

ಶುಭಸಂದೇಶ: ಮತ್ತಾಯ 10:16-23

ಯೇಸುಸ್ವಾಮಿ ಶಿಷ್ಯರ ನಿಯೋಗವನ್ನು ಕಳುಹಿಸುವಾಗ ಅವರಿಗೆ ಕೊಟ್ಟ ಆದೇಶ ಇದು: “ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ. ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು. ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.

09.07.2026 - “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 11:1, 3-4, 8-9 

ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ. ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ. ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ. “ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ? ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.

ಕೀರ್ತನೆ: 80:2, 3, 15-16

ಶ್ಲೋಕ:  ದೇವರೇ, ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು

ಶುಭಸಂದೇಶ:  ಮತ್ತಾಯ 10:7-15


ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. “ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ನೀವು ಒಂದು ಮನೆಗೆ ಹೋದಾಗ, “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆ ಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ. ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ. ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.

08.07.2026 - ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12

ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ. ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು. “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ. ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು. ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.” ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣು ಹೋಗಬೇಕು.
ಕೀರ್ತನೆ: 105:2-3, 4-5, 6-7

ಶ್ಲೋಕ:  ಅಪೇಕ್ಷಿಸಿ ನಿತ್ಯವೂ ಪ್ರಭುವಿನ ದರ್ಶನವನು

1.  ಹಾಡಿಪಾಡಿ ಹೊಗಳಿರಿ ಪ್ರಭುವನು|
ಧ್ಯಾನಿಸಿ ನೀವು ಆತನ ಪವಾಡಗಳನು||
ಹೆಮ್ಮೆಪಡಿ ನೆನೆದಾತನ ಶ್ರೀ ನಾಮ|
ಹಿಗ್ಗಲಿ ಹೃದಯ ಕೋರಿ ಆತನ ದರ್ಶನ||
ಶ್ಲೋಕ

2.  ಅರಸಿರಿ ಪ್ರಭುವನೂ ಆತನ ಶಕ್ತಿಯನೂ|
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು||
ಆತನ ದಾಸ ಅಬ್ರಹಾಮನ ಸಂತತಿಯವರೇ,|
ಆತನಾರಿಸಿಕೊಂಡ ಯಕೋಬನ ವಂಶದವರೇ||
ಶ್ಲೋಕ

3.  ನೆನೆಯಿರಿ ಆತನದ್ಭುತಗಳನು ಮಹತ್ಕಾರ್ಯಗಳನು|
ಆತನು ವಿಧಿಸಿದಾ ನ್ಯಾಯನಿರ್ಣಯಗಳನು||
ಪ್ರಭು ದೇವನೆಂಬುದು ಶ್ರುತ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ||
ಶ್ಲೋಕ

ಘೋಷಣೆ
(ಕೀರ್ತನೆ 95: 8)

ಅಲ್ಲೆಲೂಯ, ಅಲ್ಲೆಲೂಯ.
ಆತನ  ಕರೆಗೆ  ಕಿವಿಗೊಟ್ಟರೆನಿತೋ  ಒಳಿತು  ನೀವಿಂದೇ,|ಕಲ್ಲಾಗಿಸಿಕೊಳ್ಳದಿರಿ  ಹೃದಯವನು  ನಿಮ್ಮ  ಪೂರ್ವಜರಂತೆ||
ಅಲ್ಲೆಲೂಯ.


ಶುಭಸಂದೇಶ: ಮತ್ತಾಯ 10:1-7


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ."



07.07.2026 - “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 8:4-7, 11-13

“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ. ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ? ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು. ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು. “ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ. ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ. ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು."

ಕೀರ್ತನೆ: 115:3-4, 5-6, 7-8, 9-10

ಶ್ಲೋಕ:  ಪ್ರಭುವಿನಲ್ಲಿದೆ ಭರವಸೆ ಇಸ್ರಯೇಲ್ ಜನರಿಗೆ

ಕೀರ್ತನೆ
115: 3-10. v. 9

ಶ್ಲೋಕ:  ಪ್ರಭುವಿನಲ್ಲಿದೆ  ಭರವಸೆ  ಇಸ್ರಯೇಲ್  ಜನರಿಗೆ.

1.  ಪರದಲ್ಲಿಹನು  ನಮ್ಮ  ದೇವನು|
ಗೈವನು  ತನಗಿಷ್ಟ  ಬಂದುದನು||
ಅವರ  ವಿಗ್ರಹ  ಬರೀ  ಬೆಳ್ಳಿ  ಬಂಗಾರ|
ಅವು  ಮಾನವನ  ಕೈ ಕೆಲಸಗಳು  ಮಾತ್ರ||
ಶ್ಲೋಕ

2.  ಬಾಯಿದ್ದರೂ  ಅವು  ಮಾತಾಡುವುದಿಲ್ಲ|
ಕಣ್ಣುಗಳಿದ್ದರೂ  ಅವು  ಕಾಣುವುದಿಲ್ಲ||
ಕಿವಿಯಿದ್ದರೂ  ಅವು  ಕೇಳುವುದಿಲ್ಲ|
ಮೂಗಿದ್ದರೂ  ಅವು  ಮೂಸುವುದಿಲ್ಲ||
ಶ್ಲೋಕ

3.  ಕೈಯಿದ್ದರೂ  ಅವು  ಮುಟ್ಟುವುದಿಲ್ಲ|
ಕಾಲಿದ್ದರೂ  ಅವು  ನಡೆಯುವುದಿಲ್ಲ||
ಅವುಗಳಂತಾಗುವರು  ಅವುಗಳನು  ಮಾಡುವವರು|
ಅವುಗಳಂತಾಗುವರು  ಅವುಗಳನು  ನಂಬುವವರು||
ಶ್ಲೋಕ

4.  ಪ್ರಭುವಿನಲ್ಲಿದೆ  ಭರವಸೆ  ಇಸ್ರಯೇಲ್  ಜನರಿಗೆ|
ಆತನೇ  ಸಹಾಯಕ  ರಕ್ಷಾಕವಚ  ಅವರಿಗೆ||
ಪ್ರಭುವಿನಲ್ಲಿದೆ  ಭರವಸೆ  ಆರೋನನ  ಕುಲಕೆ|
ಆತನೇ  ಸಹಾಯಕ  ರಕ್ಷಾಕವಚ  ಅವರಿಗೆ|| 
ಶ್ಲೋಕ


ಘೋಷಣೆ
(ಕೀರ್ತನೆ 27: 11)

ಅಲ್ಲೆಲೂಯ, ಅಲ್ಲೆಲೂಯ.
ಬೋಧಿಸುವೆನು ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 9:32-38


ಕುರುಡರು ಹೊರಟು ಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು. ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿ ಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.

06.07.2026 - ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,

 ಮೊದಲನೇ ವಾಚನ: ಹೊಶೇಯ 2:16, 17-18, 21-22


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ. ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಚರಿಸದಂತೆ ಮಾಡುವೆನು. ಆ ದಿನಗಳಲ್ಲಿ ನನ್ನ ಜನರಿಗೆ ಹಾನಿ ಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದ ಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು. ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು. ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.

ಕೀರ್ತನೆ: 145:2-3, 4-5, 6-7, 8-9

ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು

ಕೀರ್ತನೆ
145: 2-9, v. 8

ಶ್ಲೋಕ:  ಪ್ರಭು  ದಯಾನಿಧಿ,  ಕೃಪಾಸಾಗರನು.

1.  ಹೊಗಳುವೆನು ನಾ ದಿನದಿನವೂ ನಿನ್ನನು|
ಭಜಿಸುವೆನೆಂದೆಂದಿಗೂ ನಿನ್ನ ಹೆಸರನು||
ಪ್ರಭು ಮಹಾತ್ಮನು ಸ್ತತ್ಯರ್ಹನು|
ಆತನ ಮಹಿಮೆ ಅಗಮ್ಯವಾದದು||
ಶ್ಲೋಕ

2.  ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು|
ತಿಳಿಸುವುದು ಪ್ರಭೂ, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು||
ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು|
ನಿನ್ನ ಮಹೋನ್ನತ ಮಹಿಮಾಪ್ರಭಾವವನು||
ಶ್ಲೋಕ

3.  ಜನರು ಸಾರುವರು ನಿನ್ನ  ಅದ್ಭುತಶಕ್ತಿಯನು|
ನಾ ಪ್ರಸಿದ್ದಪಡಿಸುವೆನು ನಿನ್ನ ಮಹಿಮೆಯನು||
ಪ್ರಕಟಿಸುವರವರು ನಿನ್ನ ಮಹೋಪಕಾರವನು|
ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು||
ಶ್ಲೋಕ

4.  ಪ್ರಭು ದಯಾನಿಧಿ ಕೃಪಾಸಾಗರನು|
ಸಹನಶೀಲನು ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

🌺✝️🌺

ಘೋಷಣೆ
(ಕೀರ್ತನೆ 25: 4,5)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ಸನ್ಮಾರ್ಗದಲಿ  ಮುನ್ನಡೆಸೆನ್ನ  ದೇವಾ ||
ಅಲ್ಲೆಲೂಯ.





ಶುಭಸಂದೇಶ: ಮತ್ತಾಯ 9:18-26


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, "ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು," ಎಂದು ಬೇಡಿಕೊಂಡನು. ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿ ಹೋದರು. ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು" ಎಂದುಕೊಂಡಿದ್ದಳು ಆಕೆ. ಯೇಸು ಹಿಂದಿರುಗಿ ಆಕೆಯನ್ನು ನೋಡಿ, "ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ," ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು. ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲ ಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, "ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ" ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯ ಮಾಡಿದರು. ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು. ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿ ಹರಡಿತು. 

04.07.2026 - ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ

 ಮೊದಲನೆಯ ವಾಚನ: ಆಮೋಸ 9:11-15



ಸರ್ವೇಶ್ವರ ಇಂತೆನ್ನುತ್ತಾರೆ: "ದಿನ ಬರಲಿದೆ, ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದುದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು. ಹೀಗೆ ನನ್ನ ಜನರು ಎದೋಮಿನ ಮಿಕ್ಕ ಭಾಗವನ್ನೂ ಸರ್ವೇಶ್ವರನ ಪ್ರಜೆ ಎನ್ನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು." ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು: ಕಾಲ ಬರುವುದು. ಆಗ ಹೊಸಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು, ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು. ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು. ಬೇರೂರಿಸುವೆನು ಅವರನು ಸ್ವಂತನಾಡಿನಲಿ, ಕೀಳರಾರು ಅವರನು ಅಲ್ಲಿಂದ ಮರಳಿ." ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.

ಕೀರ್ತನೆ: 85:9, 11-12, 13-14
ಶ್ಲೋಕ: ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ.

ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ|
ಇದರಿಂದ ತನ್ನ ಮಹಿಮೆ ನಾಡಿನಲ್ಲಿರುವುದು ನಿರುತ||

ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ|
ಸರ್ವೇಶ್ವರನಿಗೆ ಜಯಜಯ ಘೋಷಮಾಡಿರಿ ಮಾಡಿರಿ||
ಪರಾತ್ಪರನಾದ ಪ್ರಭುವು ಘನಗಂಭೀರನು|
ಪ್ರಪಂಚಕ್ಕೆಲ್ಲ ರಾಜಧಿರಾಜನು||

ಏರಿದನು ಪ್ರಭು ಜಯಜಯಕಾರದೊಂದಿಗೆ|
ಆರೋಹಣವಾದನು ತುತೂರಿನಾದ ಜೊತೆಗೆ||
ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ|
ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ||

ದೇವನು ಭೂಮಂಡಲಕ್ಕೆಲ್ಲಾ ಒಡೆಯನು|
ಕೀರ್ತನೆಯಿಂದ ಕೊಂಡಾಡಿರಿ ಆತನನು||
ವಹಿಸಿಕೊಂಡನು ದೇವನು ಸರ್ವಾಧಿಪತ್ಯ|
ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ||

ಶುಭಸಂದೇಶ: ಮತ್ತಾಯ 9:14-17


ಯೊವಾನ್ನನ ಶಿಷ್ಯರು ಯೇಸುವಿನ ಬಳಿಗೆ ಬಂದರು. "ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ? " ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು, " ಮದುವಣಿಗನು ಜೊತೆಯಲ್ಲಿರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗರಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು. " ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ, " ಎಂದರು.

03.07.2026 - ನನ್ನ ಪ್ರಭುವೇ, ನನ್ನ ದೇವರೇ,

 ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು  : 10:24-35 


ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು. ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿನು ಅವನನ್ನು ಎದುರಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರ ಮಾಡಿದನು. ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ,   ಎದ್ದು ನಿಲ್ಲು,  ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.

ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು. ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.

ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು. ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ. ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು. ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.

ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ವಿಷಯ ನನಗೆ ಮನದಟ್ಟಾಗಿದೆ. ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

-ಪ್ರಭುವಿನ ವಾಕ್ಯ


ಕೀರ್ತನೆ

42: 2-5. v. 5


ಶ್ಲೋಕ:  ಜೀವಂತ  ದೇವರಿಗಾಗಿ  ದಾಹದಿಂದಿದೆ  ಎನ್ನ  ಮನ.

1.  ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ|

ದಣಿದೆನ್ನ ಮನ ದೇವಾ ಹಂಬಲಿಸುತಿದೆ ನಿನಗಾಗಿ||

ಶ್ಲೋಕ

2.  ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ|

ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ||

ಶ್ಲೋಕ

3.  ಜನಸಮೂಹದೊಡನೆ ನಾ ಜಯಜಯಕಾರ  ಮಾಡುತ|

ಸ್ತುತಿಗೀತೆಗಳ ಹಾಡುತ ತೀರ್ಥಯಾತ್ರೆ. ಗೈಯುತ|

ದೇಗುಲಕೆ ತೆರಳಿದಾ ಸವಿನೆನಪು ಮನಗರಗಿಸುವುದು ನಿರುತ||

ಶ್ಲೋಕ

4.  ಎನ್ನ ಮನವೇ, ಚಿಂತಿಸುವೆಯೇಕೆ?|

ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ||

ಮತ್ತೆ ಸ್ತುತಿಸುವೆ ನಾನಾತನನು|

ಮುಕ್ತಿದಾತ ಪರಮಾತ್ಮ ಆತನೆನಗೆ||

ಶ್ಲೋಕ

ಎರಡನೇ ವಾಚನ  : ಹಿಬ್ರಿಯರಿಗೆ 1:2-3 


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ. ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.

-ಪ್ರಭುವಿನ ವಾಕ್ಯ

ಶುಭಸಂದೇಶ: ಯೊವಾನ್ನ20:24-29

ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.

ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.

02.07.2026 - ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು

 ಮೊದಲನೇ ವಾಚನ: ಆದಿಕಾಂಡ 22:1-19

 
ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, "ಅಬ್ರಹಾಮನೇ, "  ಎಂದು ಕರೆದರು. ಅವನು "ಇಗೋ, ಸಿದ್ದನಿದ್ದೇನೆ" ಎಂದನು. ಆಗ ದೇವರು, "ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂಆದ ಇಸಾಕನನ್ನು ಕರೆದುಕೊಂಡು ಮೊರೀಯ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು" ಎಂದರು. ಅಬ್ರಾಮನು ಮುಂಜಾನೆಯೇ ಎದ್ದು ತನ್ನ ಹೆಸರುಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ದಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು. ಅವನು ತನ್ನ ಸೇವಕರಿಗೆ, "ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಿಗೆ ಬರುತ್ತೇವೆ," ಎಂದು ಹೇಳಿದನು. ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು. ಹೊಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, "ಅಪ್ಪಾ" ಎಂದು ಕರೆದ; "ಏನು ಮಗನೇ?" ಎಂದ ಅಬ್ರಹಾಮ. ಇಸಾಕನು, "ಬೆಂಕಿ--ಕಟ್ಟಿಗೆಯೇನೋ ಇವೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?" ಎಂದು ಕೇಳಿದ. ಅದಕ್ಕೆ ಅಬ್ರಹಾಮನು, "ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ," ಎಂದು ಉತ್ತರಕೊಟ್ಟ, ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು. ದೇವರು ಹೇಳಿದ ಸ್ಥಳಕ್ಕೆ  ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ. ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ. ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, "ಇಗೋ ಸಿದ್ಧನಿದ್ಧೇನೆ" ಎಃದ. ದೂತನು ಅವನಿಗೆ, "ಹುಡುಗನ ಮೇಲೆ ಕೈಯೊತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು," ಎಂದು ಹೇಳಿದನು. ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ. ಆ ಸ್ಥಳಕ್ಕೆ "ಯೆಹೋವ ಯೊರೆ ಎಂದು ಹೆಸರಿಟ್ಟ. "ಬೆಟ್ಟದ ಮೇಲೆ ಸರ್ವೇಶ್ವರಸ್ವಾಮಿಯೇ ಒದಗಿಸುತ್ತಾರೆ" ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, "ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ; ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮೂದ್ರತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರುಶತ್ರುಗಳ ಪಟ್ಟಣಗಳನ್ನು ಸ್ವಾಧೀನ ಪಡಿಸಿಕೊಳ್ಳುವರು. ನೀನು ನನ್ನ ಮಾತುಗಳನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು. ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ," ಎಂದನು. ತರುವಾಯ ಅಬ್ರಹಾಮನುತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.

 ಕೀರ್ತನೆ: 115:1-2, 3-4, 5-6, 8-9

 ಶ್ಲೋಕ: ನಡೆವೆನು ನಾನು ಪ್ರಭುವಿನ ಕಣ್ಮುಂದೆ

 ಶುಭಸಂದೇಶ: ಮತ್ತಾಯ 9:1-8

ಯೇಸುಸ್ವಾಮಿ ದೋಣಿಯನ್ನು ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು. ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, "ಮಗೂ, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು. ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ? "ನಿನ್ನ ಪಾಪಗಳು ಕ್ಷಮಿಸಲಾಗಿದೆ" ಎನ್ನುವುದು ಸುಲಭವೂ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, "ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು. ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು. ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.

01.07.2026 - "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ?

 ಮೊದಲನೇ ವಾಚನ: ಆದಿಕಾಂಡ 21:5, 8-20

ಇಸಾಕನು ಹುಟ್ಟಿದಾಗ ಅಬ್ರಹಾಮನಿಗೆ ನೂರು ವರ್ಷವಾಗಿತ್ತು. ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆ ಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು. ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು. ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕು ಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು. ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು. ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು. ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು. ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು, ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು. ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು; ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು. ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದರು; ನೀರಿನ ಬಾವಿಯೊಂದು ಅವಳಿಗೆ ಕಾಣಿಸಿತು; ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಆ ಹುಡುಗನಿಗೆ ಕುಡಿಸಿದಳು. ಹುಡುಗನ ಸಂಗಡ ದೇವರಿದ್ದರು.

ಕೀರ್ತನೆ: 34:6-7, 9-10, 11-12
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು. 

ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I
ಕಾಯುವನು ಪ್ರಭುವಿನ ದೂತನೆ ಬಂದಿಳಿದು II
ಸವಿದು ನೋಡು ಪ್ರಭುವಿನ ಮಾಧುರ್ಯವನು I
ಆತನನು ಆಶ್ರಯಿಸಿಕೊಂಡವನು ಧನ್ಯನು II

ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II
ಯುವ ಕೇಸರಿಗೆ ಇರಬಹುದು ಹಸಿವು, ದಾಹ I
ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II

ಬನ್ನಿ ಮಿತ್ರರೇ, ಆಲಿಸಿರೀ ಮಾತನು I
ಕಲಿಸುವೆನು ನಾ ನಿಮಗೆ ದೇವ ಭಯವನು II
ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I
ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II

ಕಾದಿಡು ನಾಲಿಗೆಯನು ಕೇಡನು ಆಡದಂತೆ I
ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II

ಶುಭಸಂದೇಶ: ಮತ್ತಾಯ 8:28-34


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಅವರು ಯೇಸುವನ್ನು ನೋಡಿದೊಡನೆಯೇ "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತ ಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?" ಎಂದು ಕೂಗಿಕೊಂಡರು. ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪ ದೂರದಲ್ಲೇ ಮೇಯುತ್ತಿತ್ತು. "ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ," ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು, "ಹೋಗಿ" ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿ ಹೋಯಿತು. ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನ ಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು. ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟು ಹೋಗಬೇಕೆಂದು ಮನವಿ ಮಾಡಿಕೊಂಡಿತು.

30.06.2026 - ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ

 ಮೊದಲನೇ ವಾಚನ: ಪ್ರವಾದಿ ಆಮೋಸನ ಗ್ರಂಥ 3:1-8; 4:11-12


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ: “ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.” ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ? ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ? ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ? ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ? ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ. ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?.” “ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ. ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ," ಎನ್ನುತ್ತಾರೆ ಸರ್ವೇಶ್ವರ.

ಕೀರ್ತನೆ: 5:4-6, 6-7, 8
ಶ್ಲೋಕ: ಪ್ರಭೂ, ಸತ್ಯಪಥದಲಿ ನಡೆಸೆನ್ನನು

ಶುಭಸಂದೇಶ: ಮತ್ತಾಯ 8:23-27


ಆಮೇಲೆ ಯೇಸುಸ್ವಾಮಿ ದೋಣಿಯನ್ನು ಹತ್ತಿದರು. ಶಿಷ್ಯರೂ ಹತ್ತಿ ಅವರ ಸಂಗಡಹೋದರು. ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು. ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರು ಪಾಲಾಗುತ್ತಿದ್ದೇವೆ,” ಎಂದರು. ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.

29.06.2026 - ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು,

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11


ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು. ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು. ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು). ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು. ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು. ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು. ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು. ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು. ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು. ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು. ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.

ಕೀರ್ತನೆ: 34:2-3, 4-5, 6-7, 8-9

ಶ್ಲೋಕ: ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು

1.  ಪ್ರಭುವನು ನಾ ಕೊಂಡಾಡುವ ಎಲ್ಲ ಕಾಲದೊಳು|
ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು||
ಪ್ರಭುವಿನಲ್ಲಿದೆ ನನ್ನ ಮನದಭಿಮಾನ|
ದೀನರಿದನು ಕೇಳಿ, ಪಡೆಯಲಿ ಸುಮ್ಮಾನ||
ಶ್ಲೋಕ

2.  ಬನ್ನಿ, ಕೊಂಡಾಡುವ ಪ್ರಭು ದೇವನನು|
ಘನಪಡಿಸೋಣ ಅವನ ಶ್ರೀ ನಾಮವನು||
ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು|
ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು||
ಶ್ಲೋಕ

3.  ಆತನತ್ತ ತಿರುಗಿದ ಮುಖ ಅರಳುವುದು|
ಲಜ್ಜೆಯಿಂದೆಂದಿಗು ಕುಂದಿಹೋಗದು||
ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು|
ಸರ್ವಾಪತ್ತಿನಿಂದವನು ಮುಕ್ತಗೊಂಡನು||
ಶ್ಲೋಕ

4.  ಭಯಭಕುತಿಯುಳ್ಳವರು ಸುತ್ತಲು  ಕಾವಲಿದ್ದು|
ಕಾಯುವನು ಪ್ರಭುವಿನ ದೂತನೇ ಬಂದಿಳಿದು||
ಸವಿದು ನೋಡು ಪ್ರಭುವಿನ ಮಾಧುರ್ಯವನು|
ಆತನನು ಆಶ್ರಯಿಸಿಕೊಂಡವನು ಧನ್ಯನು||
ಶ್ಲೋಕ

ಎರಡನೇ ವಾಚನ: 2 ತಿಮೊಥೇಯನಿಗೆ 4:6-8, 17-18

ಅತಿ ಪ್ರಿಯನೇ, ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.

ಶುಭಸಂದೇಶ: ಮತ್ತಾಯ 16:13-19


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು. ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು. ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ. ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು. ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...