ಮೊದಲನೇಯ ವಾಚನ : 2 ಸಮುವೇಲ 12:1-7, 10-17
31.01.2026 - ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?
30.01.2026 - ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆ ಕಾಳಿಗೂ ಅದನ್ನು ಹೋಲಿಸಬಹುದು
ಮೊದಲನೇಯ ವಾಚನ : 2 ಸಮುವೇಲ 11:1-4, 5-10, 13-17
ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗೂ ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳು ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಸುಂದರಿಯಾದ ಒಬ್ಬ ಸ್ತ್ರೀ ಸ್ನಾನ ಮಾಡುವುದನ್ನು ಕಂಡನು. ಕೂಡಲೇ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು ಆಕೆ “ ಎಲೀಯಾಮನ ಮಗಳೂ ಹಿತ್ತಿಯನಾದ ಉರೀಯನ ಹೆಂಡತಿಯು ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು. ಆಕೆ ಆಗತಾನೆ ಋತು ಸ್ನಾನ ಮಾಡಿ ಕೊಂಡಿದ್ದಳು. ಆಕೆಯನ್ನು ಕರೆದು ತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಆನಂತರ ಆಕೆ ತನ್ನ ಮನೆಗೆ ಹೋದಳು. ಮುಂದೆ ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು. ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ “ ಹಿತ್ತೀಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು. ಊರೀಯನು ಬಂದಾಗ ’ಯೋವಾಬನು, ಸೈನ್ಯದವರು ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ” ಎಂದು ವಿಚಾರಿಸಿದನು. ಅನಂತರ ಅವನಿಗೆ “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೇ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು. ಆದರೆ ಊರೀಯನು ಮನೆಗೆ ಹೋಗದೆ ಅರಸರ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು. ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘ ಪ್ರಯಾಣ ಮಾಡಿ ಬಂದಿರುವೆಯಲ್ಲ , ಏಕೆ ಮನೆಗೆ ಹೋಗಲಿಲ್ಲ”? ಎಂದನು. ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೆ ಹೊರತು ತನ್ನ ಮನೆಗೆ ಹೋಗಲಿಲ್ಲ. ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರ ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟೂ ಕಳುಹಿಸಿದನು. ಅದರಲ್ಲಿ ಹೀಗೆ ಬರೆಯಲಾಗಿತ್ತು “ ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿ.” ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರು ಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತು ಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು. ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.29.01.2026 - ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ
ಮೊದಲನೇಯ ವಾಚನ : 2 ಸಮುವೇಲ 7:18-19, 24-29
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಬೆಳಕಿಗೆ ಬಾರದ ಮುಚ್ಚು ಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು; ಇನ್ನೂ ಅಧಿಕವಾಗಿ ಕೊಡುವರು. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.
28.01.2026 - ಇನ್ನು ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು
ಮೊದಲನೇಯ ವಾಚನ : 2 ಸಮುವೇಲ 7:4-17
ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು. ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು: “ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ. ಬಿತ್ತನೆ ಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿ ಹೋದವು. ಇನ್ನು ಕೆಲವು ಬೀಜಗಳು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳು ಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲ ಕೊಡಲಿಲ್ಲ. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು. ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ. ‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರರು; ಪಾಪಕ್ಷಮೆ ಹೊಂದಿಯಾರರು,” ಎಂದರು. ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ. ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದು ಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ. ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚ ಕಾಲ ಮಾತ್ರ ಉಳಿಯುತ್ತದೆ. ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲ ಬಿಡದಂತೆ ಮಾಡುತ್ತವೆ. ಇವರೇ ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು. ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನು ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.
27.01.2026 - ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ
ಮೊದಲನೇಯ ವಾಚನ : 2 ಸಮುವೇಲ 6:12-15, 17-19
ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದ ನಗರಕ್ಕೆ ತಂದನು. ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು. ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು. ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದನು. ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು. ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು. ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನು, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
26.01.2026 - 'ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ
ಮೊದಲನೇ ವಾಚನ: 2 ತಿಮೊಥೇಯನಿಗೆ 1:1-8
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದ ಪಡಬೇಕೆಂದು ಹಂಬಲಿಸುತ್ತಿದ್ದೇನೆ. ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ. ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಫಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.
ಆ ಕಾಲದಲ್ಲಿ ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.
25.01.2026 - ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ.
ಮೊದಲನೇ ವಾಚನ: ಯೆಶಾಯ 8:23-9:3
ಶ್ಲೋಕ: ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು
ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು. ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸವಿೂಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು. ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ. ಹೀಗೆ: "ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ, ಕಾರ್ಗತ್ತಲಲ್ಲಿ ವಾಸಿಸುವವರಿಗೆ ದಿವ್ಯ ಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,"ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು. ಅಂದಿನಿಂದ ಯೇಸು, "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು," ಎಂಬ ಸಂದೇಶವನ್ನು ಬೋಧಿಸತೊಡಗಿದರು.
24.01.2026 - ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.
ಮೊದಲನೆಯ ವಾಚನ: 2 ಸಮುವೇಲ 1:1-4, 11-12, 17, 19, 23-27
23.01.2026 - ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ
ಮೊದಲನೇ ವಾಚನ: 1 ಸಮುವೇಲನು 26:2, 7-9, 12-13, 22-23
ಮನಸಿಗೊಂದಿಷ್ಟು : ’ಮಾಡಬೇಡ’ ಎನ್ನುವ ಆದರ್ಶಗಳ ನಡುವೆ ’ಮಾಡು’ ಎನ್ನುವ ಮೌಲ್ಯಗಳನ್ನು ಯೇಸು ನಮಗೆ ನೀಡುತ್ತಿದ್ದಾರೆ. ’ಶತ್ರುಗಳನ್ನು ದ್ವೇಷಿಸಬೇಡಿ’ ಎನ್ನುವುದು ಲೋಕ ರೂಢಿಯಲ್ಲಿ ಮಾನ್ಯವಾದ ಮೌಲ್ಯವಾದರೆ ’ಅವರನ್ನು ಪ್ರೀತಿಸಿರಿ’ ಎನ್ನುವುದು ಇನ್ನೂ ಎತ್ತರದ ಕ್ರಿಸ್ತನ ಮೌಲ್ಯ. ನಾವು ನಮ್ಮನ್ನು ಹೋಲಿಸಿಕೊಳ್ಳಬೇಕಾದುದು ನಮ್ಮ ನೆರೆಯವನ ಗುಣ ಆದರ್ಶಗಳೊಂದಿಗೆ ಅಲ್ಲ, ದೇವರ ಗುಣ ಮೌಲ್ಯಗಳೊಂದಿಗೆ. ಆಗಾದಾಗ ಮಾನವತೆಯನ್ನು ಪೊರೈಸಿ ದೈವತ್ವದತ್ತ ನಮ್ಮ ಹೆಜ್ಜೆ ಸಾಗುತ್ತದೆ.....
ಪ್ರಶ್ನೆ : ಸಾಮಾನ್ಯತೆಗಿಂತ ಇನ್ನೆಷ್ಟು ಎತ್ತರಕ್ಕೆ ಏರಬಲ್ಲವು?
22.01.2026 - ನೀವು ದೇವರ ಪುತ್ರ
ಮೊದಲನೇ ವಾಚನ: 1 ಸಮುವೇಲ 18:6-9; 19:1-7
ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟು ಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು. ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದುಮೇಯ ಪ್ರಾಂತ್ಯದಿಂದ, ಜೋರ್ಡನ್ ನದಿಯ ಪೂರ್ವ ಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು. ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು. ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ,” ಎಂದು ಕಿರುಚುತ್ತಿದ್ದವು. ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.
21.01.26 - "ಸಬ್ಬತ್ ದಿನದಲ್ಲಿ, ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ"
20.01.2026 - ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ
ಮೊದಲನೇ ವಾಚನ: 1 ಸಮುವೇಲ 16:1-13
ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ|
ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ|
ಪ್ರಜೆಗಳಲೋರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕ್ಕೆ||
ನನ್ನ ದಾಸ ದಾವೀದನನು ಗುರುತಿಸಿರುವೆ|
ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ||
ನನ್ನ ಕೈಯ ಆಸರೆ ಅವನಿಗಿದೆ ಸತತ|
ನನ್ನ ಭುಜಬಲವು ಅವನಿಗೆ ಶಕ್ತಿಯುತ||
ನನಗೆ ಪಿತ, ದೈವ, ದುರ್ಗ, ಉದ್ದಾರಕ ನೀನು|
ಇಂತೆಂದೇ ನನ್ನನು ಸಂಬೋಧಿಸುವನವನು||
ಮಾಡುವೆನವನನು ಜೇಷ್ಠ ಪುತ್ರನನ್ನಾಗಿ|
ಭೂರಾಜರುಗಳೊಳು ಅತ್ಯುನ್ನತನನ್ನಾಗಿ||
ಅಲ್ಲೆಲೂಯ, ಅಲ್ಲೆಲೂಯ!
ಹೊಗಲಿರಿ ಆತನ ಮಹತ್ತಾದ ಏಕೈಕ ನಾಮವನು | ಕೋಡು ಮೂಡುಸಿಹನು ಪ್ರಭು ತನ್ನ ಪ್ರಜೆಗೆ ||
ಅಲ್ಲೆಲೂಯ!
ಅದೊಂದು ಸಬ್ಬತ್ ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದು ಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಇದನ್ನು ಕಂಡ ಫರಿಸಾಯರು, “ನೋಡು, ಸಬ್ಬತ್ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?” ಎಂದು ಅವರನ್ನು ಕೇಳಿದರು. ಬಳಿಕ ಯೇಸು ಅವರಿಗೆ, “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ. ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.
19.01.2026 - “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ
ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತವನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ, ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ?” ಎಂದು ಕೇಳಿದರು. ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು. ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು. “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.
18.01.2026 - ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದು ಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು
ಮೊದಲನೇ ವಾಚನ: ಯೆಶಾಯ 49:3, 5-6
ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ ||
ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು |
ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು || (ಶ್ಲೋಕ)
ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ |
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? ||
ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ |
ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ”|| (ಶ್ಲೋಕ)
ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ ||
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ ||
ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು |
ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು |
ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು || (ಶ್ಲೋಕ)
17.01.2026 - ನನ್ನನ್ನು ಹಿಂಬಾಲಿಸು
ಮೊದಲನೆಯ ವಾಚನ: ಸಮುವೇಲ 9:1-4, 17-19
ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋನನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ. ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲಾ ಅತಿ ಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು. ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು, ಎಂದು ಹೇಳಿದನು. ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗೂ ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ. ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು, ಎಂದು ಸೂಚಿಸಿದನು. ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ? ಎಂದನು. ಸಮುವೇಲನು, ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ, ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಗ್ಗೆ ನಿನ್ನನ್ನು ಕಳುಹಿಸಿಕೊಡುವೆನು, ಎಂದನು. ಆ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯವಾಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ. ಎಂದನು.
ಆ ಕಾಲದಲ್ಲಿ ಯೇಸು ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು. ಅಲ್ಲಿಂದ ಹೊರಟುಹೋಗುತ್ತಿರುವಾಗ, ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು, ” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು. ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು. ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟ ಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕøತ ಜನರ ಜೊತೆಯಲ್ಲಿ ಊಟ ಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು, ” ಎಂದರು.
25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು
ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 58:1-9 ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್...






















