31.01.2026 - ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?

 ಮೊದಲನೇಯ ವಾಚನ : 2 ಸಮುವೇಲ 12:1-7, 10-17


ಸರ್ವೇಶ್ವರ ಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು "ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ. ಐಶ್ವರ್ಯವಂತನಿಗೆ ಬಹಳ ಕುರಿ ದನಗಳಿದ್ದವು. ಬಡವನಿಗೆ ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡುತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೂ ಮಗುವಿನಂತೆ ಬೆಳೆಯುತ್ತಿತ್ತು. ಅವರೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲಿ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆ ಒರಗಿಕೊಂಡು ನಿದ್ರೆ ಮಾಡುತ್ತಿತ್ತು. ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕ ಬಂದ. ಆಗ ತನ್ನ ಕುರಿ ದನಗಳಿಂದ ಏನನ್ನೂ ಕೊಲ್ಲಲು ಐಶ್ವರ್ಯವಂತನಿಗೆ ಮನಸ್ಸಿಲ್ಲದೆ ಹೋಯಿತು. ಆ ಬಡವನ ಕುರಿಮರಿಯನ್ನು ಹಿಡಿದುಕೊಂಡು ಅತಿಥಿಗೋಸ್ಕರ ಅಡಿಗೆ ಮಾಡಿಸಿದ”. ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡು ಕೋಪಗೊಂಡು ನಾತಾನನಿಗೆ “ಸರ್ವೇಶ್ವರನಾಣೆ ಆ ವ್ಯಕ್ತಿ ಸಾಯಲೇಬೇಕು, ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದನು.
ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ’ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನೂ ನಾನು: ಸೌಲನಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ. ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯರನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು, ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಮತ್ತೊಬ್ಬನಿಗೆ ಕೊಡುವೆನು. ಅವನು ಹಗಲಲ್ಲೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದೆ, ನಾನು ಹೇಳುವ ಮಾತಾದರೂ ಇಸ್ರಯೇಲರ ಮುಂದೆ ಬಹಿರಂಗವಾಗಿ ನೆರವೇರುವುದು,” ಎಂದು ಹೇಳಿದನು. ಆಗ ದಾವೀದನು ನಾತಾನನಿಗೆ “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪ ಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ, ಆದರೂ ನೀನು ಈ ಕೃತ್ಯದಿಂದ ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತು ಹೋಗುವುದು,” ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದ ಬಹು ಅಸ್ವಸ್ಥವಾಗಿತ್ತು. ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ. ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಕೀರ್ತನೆ : 51:12-13,14-15,16-17
ಶ್ಲೋಕ : ಶುದ್ಧ ಹೃದಯವನ್ನು ದೇವಾ, ನಿರ್ಮಿಸು

ಶುಭಸಂದೇಶ : ಮಾರ್ಕ - 4:35-41


 ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ “ಸರೋವರದ ಆಚೆ ದಡಕ್ಕೆ ಹೋಗೋಣ” ಎಂದರು. ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು. ಆ ದೋಣಿಯ  ಸಂಗಡ ಬೇರೆ ದೋಣಿಗಳೂ ಇದ್ದವುಸ್ವಲ್ಪ ಮುಂದೆ ಹೋಗುವಷ್ಟರಲ್ಲಿ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿ ಹೋಗುವುದರಲ್ಲಿತ್ತು. ಯೇಸುವಾದರೋ  ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ’ ಗುರುವೇನಾವು ಸಾಯುತ್ತಿದ್ದೇವೆತಮಗೆ ಚಿಂತೆ ಇಲ್ಲವೇ?” ಎಂದರು. ಆಗ ಯೇಸು ಎಚ್ಚೆತ್ತುಬಿರುಗಾಳಿಯನ್ನು ಗದರಿಸಿದರುಸರೋವರಕ್ಕೆ  ಶಾಂತವಾಗಿರುಮೊರೆಯಬೇಡ,” ಎಂದು ಆಜ್ಞಾಪಿಸಿದರುತಕ್ಷಣ ಬಿರುಗಾಳಿ ನಿಂತಿತುವಾತಾವರಣ ಶಾಂತವಾಯಿತುಅನಂತರ ತಮ್ಮ ಶಿಷ್ಯರಿಗೆ  ಏಕೆ ಇಷ್ಟು ಭಯಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರುಶಿಷ್ಯರಾದರೋ ಭಯಭ್ರಾಂತರಾಗಿ ಗಾಳಿಯೂ ಸರೋವರವೂ ಇವರು ಹೇಳಿದಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

30.01.2026 - ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆ ಕಾಳಿಗೂ ಅದನ್ನು ಹೋಲಿಸಬಹುದು

 ಮೊದಲನೇಯ ವಾಚನ : 2 ಸಮುವೇಲ 11:1-4, 5-10, 13-17


ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗೂ ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳು ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಸುಂದರಿಯಾದ ಒಬ್ಬ ಸ್ತ್ರೀ ಸ್ನಾನ ಮಾಡುವುದನ್ನು ಕಂಡನು. ಕೂಡಲೇ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು ಆಕೆ “ ಎಲೀಯಾಮನ ಮಗಳೂ ಹಿತ್ತಿಯನಾದ ಉರೀಯನ ಹೆಂಡತಿಯು ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು. ಆಕೆ ಆಗತಾನೆ ಋತು ಸ್ನಾನ ಮಾಡಿ ಕೊಂಡಿದ್ದಳು. ಆಕೆಯನ್ನು ಕರೆದು ತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಆನಂತರ ಆಕೆ ತನ್ನ ಮನೆಗೆ ಹೋದಳು. ಮುಂದೆ ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು. ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ “ ಹಿತ್ತೀಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು. ಊರೀಯನು ಬಂದಾಗ ’ಯೋವಾಬನು, ಸೈನ್ಯದವರು ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ” ಎಂದು ವಿಚಾರಿಸಿದನು. ಅನಂತರ ಅವನಿಗೆ “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೇ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು. ಆದರೆ ಊರೀಯನು ಮನೆಗೆ ಹೋಗದೆ ಅರಸರ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು. ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘ ಪ್ರಯಾಣ ಮಾಡಿ ಬಂದಿರುವೆಯಲ್ಲ , ಏಕೆ ಮನೆಗೆ ಹೋಗಲಿಲ್ಲ”? ಎಂದನು. ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೆ ಹೊರತು ತನ್ನ ಮನೆಗೆ ಹೋಗಲಿಲ್ಲ. ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರ ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟೂ ಕಳುಹಿಸಿದನು. ಅದರಲ್ಲಿ ಹೀಗೆ ಬರೆಯಲಾಗಿತ್ತು “ ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿ.” ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರು ಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತು ಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು. ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.

ಕೀರ್ತನೆ
50:1-5,8-9, v.1

ಶ್ಲೋಕ:  ಕೃಪಾಳು ದೇವಾ, ಕರುಣಿಸೆನ್ನನು.

1.  ಕೃಪಾಳು ದೇವಾ ಕರುಣಿಸೆನ್ನನು|
ಕರುಣಾನಿಧಿ ಅಳಿಸೆನ್ನ ದೋಷವನು||
ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು|
ದೋಷಪರಿಹರಿಸಿ ಶುದ್ಧಗೊಳಿಸೆನ್ನನು||
ಶ್ಲೋಕ

2.  ಒಪ್ಪಿಕೊಂಡೆನಿದೋ ನಾನೇ ಅಪರಾಧಿ|
ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ||
ಹೌದು ದೇವಾ, ನಿನಗೆ ದ್ರೋಹವೆಸಗಿದೆ|
ನಿನ್ನ ಕಣ್ಗೆ ಕೆಟ್ಟದುದನೇ ಮಾಡಿದೆ||
ಶ್ಲೋಕ

3.  ನಿನ್ನ ನಿರ್ಣಯವು ನ್ಯಾಯಯುತ|
ನೀ ನೀಡುವ ತೀರ್ಪು ನಿರ್ಲಿಪ್ತ||
ನಾ ಜನಿಸಿದೆ ಪಾಪದಲ್ಲೇ|
ದ್ರೋಹಿ ನಾ ಮಾತೃ ಗರ್ಭದಿಂದಲೇ||
ಶ್ಲೋಕ

4.  ಹರ್ಷಾನಂದವನು ಮೊಳಗಿಸೆನ್ನೊಳು|
ಪುಳಕಗೊಳ್ಳುವುವು ನೀ ಮುರಿದೆಲುಬುಗಳು||
ನನ್ನ ಪಾಪದೋಷಕೆ ವಿಮುಖನಾಗು|
ಸರ್ವ ದ್ರೋಹಗಳನು ಅಳಿಸಿಹಾಕು||
ಶ್ಲೋಕ

ಘೋಷಣೆ
2 ತಿಮೊತಿ 1:10

ಅಲ್ಲೆಲೂಯ, ಅಲ್ಲೆಲೂಯ!
ನಮ್ಮ ಉದ್ಧಾರಕ ಕ್ರಿಸ್ತಯೇಸು ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ | ಅಮರ ಜೀವವನ್ನು ಶುಭಸಂದೇಸದ ಮೂಲಕ ಬೆಳಕಿಗೆ ತಂದರು ||
ಅಲ್ಲೆಲೂಯ!


ಶುಭಸಂದೇಶ : ಮಾರ್ಕ 4:26-34


ಯೇಸು ಸ್ವಾಮಿ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ? ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆ ಕಾಳಿಗೂ ಅದನ್ನು ಹೋಲಿಸಬಹುದು. ಸಾಸಿವೆ ಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸಿಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರಂಬೆಗಳನ್ನು ಅದು ತಳೆಯುತ್ತದೆ,” ಎಂದರು. ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ. ಅದರೆ ತಮ್ಮ ಆಪ್ತ ಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.

29.01.2026 - ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ

 ಮೊದಲನೇಯ ವಾಚನ : 2 ಸಮುವೇಲ 7:18-19, 24-29



ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು! ಸರ್ವೇಶ್ವರಾ, ಸರ್ವೇಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ! ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು! “ದೇವರೇ, ಸರ್ವೇಶ್ವರಾ, ತಾವು ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ. ‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ. ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ. ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ದೇವರು; ನಿಮ್ಮ ವಾಕ್ಯ ಸತ್ಯವಾದದ್ದು; ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಟ ವಾಗ್ದಾನ ಮಾಡಿದ್ದೀರಿ. ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು.

ಕೀರ್ತನೆ: 132:1-2, 3-5, 11, 12, 13-14

ಶ್ಲೋಕ : ದಾವೀದರಸನ ಸಿಂಹಾಸನವನ್ನು ದೇವರು ಆತನಿಗೆ ಕೊಡುವರು

ಕೀರ್ತನೆ
132:1-2,3-5,11-14, v. ಲೂಕ 1:32

1.  ನೆನಸಿಕೋ ಹೇ ಪ್ರಭೂ,  ದಾವೀದನನು|
ಆತ ಸಹಿಸಿದ ಕಷ್ಟ-ದು:ಖಗಳನು ||
ಸ್ಮರಿಸಿಕೋ ಪ್ರಭೂ, ಆತನು ಮಾಡಿದ ಶಪಥವನು|
ಯಕೋಬ್ಯ ಘನದೇವನಿಗಾತ ಕೊಟ್ಟ ಈ ಮಾತನು||
ಶ್ಲೋಕ

2.  ಪ್ರಭುವಿಗೆ ಆಲಯವೊಂದನು ನಿರ್ಮಿಸುವ ತನಕ|
ಯಕೋಬ್ಯ ಘನದೇವನಿಗೆ ಗುಡಿ ಕಟ್ಟುವ ತನಕ||
ನಾ ಸೇರೆನು ನನ್ನರಮನೆಯನು, ನಾ ಏರೆನು ನನ್ನ ಶಯ್ಯೆಯನು|
ಮುಚ್ಚೆನು ನಾನು ಕಣ್ಣುಗಳನು, ಕೂಡಿಸೆನು ನಾನು ರೆಪ್ಪೆಗಳನು||
ಶ್ಲೋಕ

3.  ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ|
ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ||
ನಿನ್ನ ಸಿಂಹಾನದಲ್ಲಿ ಕೂರಿಸುವೆನು ನಿನ್ನ ತನುಜನೊಬ್ಬನನು|
ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವವರಾದರೆ|
ಕೂರುವರು ಸದಾಕಾಲ ಅವರ ಮಕ್ಕಳು ನಿನ್ನ ಸಿಂಹಾಸನದ ಮೇಲೆ||
ಶ್ಲೋಕ

4.  ಆರಿಸಿಕೊಂಡಿಹನು ಪ್ರಭು ಸಿಯೋನ್ ನಗರವನು|
ಅಪೇಕ್ಷಿಸಿಹನು ತನ್ನ ನಿವಾಸಕ್ಕಾಗಿ ಅದನು||
ಎಂದೆಂದಿಗೂ ಇದೇ ನನ್ನ ನಿವಾಸ,|
ಇರುವೆನಿಲ್ಲೇ, ಇದು ನನ್ನ ಅಭಿಲಾಶ||
ಶ್ಲೋಕ


ಘೋಷಣೆ
(1 ಥೆಸಲೋನಿ 2:13)

ಅಲ್ಲೆಲೂಯ, ಅಲ್ಲೆಲೂಯ!
ದೇವರ ಸಂದೇಶವನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ | ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ ||
ಶ್ಲೋಕ


ಶುಭಸಂದೇಶ: ಮಾರ್ಕ 4:21-25


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಬೆಳಕಿಗೆ ಬಾರದ ಮುಚ್ಚು ಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು; ಇನ್ನೂ ಅಧಿಕವಾಗಿ ಕೊಡುವರು. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.

28.01.2026 - ಇನ್ನು ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು

 ಮೊದಲನೇಯ ವಾಚನ : 2 ಸಮುವೇಲ 7:4-17



ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!” “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆ ಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು. ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು. ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚಿಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿ ತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ಆದರೆ ನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದ ಹಾಗೆ, ಅವನನ್ನು ಬಿಟ್ಟು ಹೋಗುವುದಿಲ್ಲ. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.” ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.

ಕೀರ್ತನೆ: 89:4-5, 27-28, 29-30

ಶ್ಲೋಕ : ಮೆಲ್ಕಿಸದೆಕ್ ಪರಂಪರೆಯ ಯಾಜಕ ನೀ ನಿರುತ

ಶುಭಸಂದೇಶ: ಮಾರ್ಕ 4:1-20


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು. ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು: “ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ. ಬಿತ್ತನೆ ಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿ ಹೋದವು. ಇನ್ನು ಕೆಲವು ಬೀಜಗಳು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳು ಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲ ಕೊಡಲಿಲ್ಲ. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು. ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ. ‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರರು; ಪಾಪಕ್ಷಮೆ ಹೊಂದಿಯಾರರು,” ಎಂದರು. ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ. ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದು ಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ. ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚ ಕಾಲ ಮಾತ್ರ ಉಳಿಯುತ್ತದೆ. ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲ ಬಿಡದಂತೆ ಮಾಡುತ್ತವೆ. ಇವರೇ ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು. ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನು ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.

27.01.2026 - ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ

 ಮೊದಲನೇಯ ವಾಚನ : 2 ಸಮುವೇಲ 6:12-15, 17-19


ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದ ನಗರಕ್ಕೆ ತಂದನು. ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು. ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು. ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದನು. ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು. ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು. ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನು, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಕೀರ್ತನೆ
24:7,8,9,10, v. 7

ಶ್ಲೋಕ:  ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು.

1.  ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು|
ತೆರೆದು ಸ್ವಾಗತಿಸಲಿ ಕದಗಳು ಸನಾತನ ದ್ವಾರಗಳು||
ಯಾರಿವನು ಮಹಿಮಾವಂತ ರಾಜಾಧಿರಾಜನು?|
ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು!||
ಶ್ಲೋಕ

2.  ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು|
ತೆರೆದು ಸ್ವಾಗತಿಸಲಿ ಕದಗಳು ಸನಾತನ ದ್ವಾರಗಳು||
ಯಾರಿವನು ಮಹಿಮಾವಂತ ರಾಜಾಧಿರಾಜನು?|
ಇವನೇ ಸೇನಾಧೀಶ್ವರನು, ಮಹಿಮಾರಾಜನು||
ಶ್ಲೋಕ

ಘೋಷಣೆ
(2 ಕೊರಿಂಥ 5:19)

ಅಲ್ಲೆಲೂಯ, ಅಲ್ಲೆಲೂಯ!
ದೇವರು ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂದಾನಗೊಳಿಸಿ | ಆ ಸಂದಾನದ ಸಂದೇಶವನ್ನು, ಸಾರುವ ಸೌಭಾಗ್ಯವನ್ನು ನಮಗೆ ಕೊಟ್ಟಿದ್ದಾರೆ ||
ಅಲ್ಲೆಲೂಯ!


ಶುಭಸಂದೇಶ - ಮಾರ್ಕ 03:31 -35

ಯೇಸುಸ್ವಾಮಿಯ ತಾಯಿ ಮತ್ತು ಸಹೋದರರು ಅಲ್ಲಿಗೆ ಬಂದರು. ಒಳಗೆ ಜನರು ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದರು. ಆದುದರಿಂದ ಅವರು ಹೊರಗೇ ನಿಂತು, ಯೇಸುವಿಗೆ ಬರಬೇಕೆಂದು ಹೇಳಿಕಳುಹಿಸಿದರು. “ನಿಮ್ಮ ತಾಯಿಯೂ ಸಹೋದರರೂ ಹೊರಗೆ ನಿಮಗಾಗಿ ಕಾದಿದ್ದಾರೆ,” ಎಂದು ಯೇಸುವಿಗೆ ತಿಳಿಸಿದರು. ಅದಕ್ಕೆ ಯೇಸು, “ನನಗೆ ತಾಯಿ ಯಾರು?, ಸಹೋದರರು ಯಾರು?” ಎನ್ನುತ್ತಾ ತಮ್ಮ ಸುತ್ತಲೂ ಕುಳಿತಿದ್ದವರ ಮೇಲೆ ದೃಷ್ಟಿ ಹರಿಸಿ, "ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು! ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.

26.01.2026 - 'ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ

 ಮೊದಲನೇ ವಾಚನ: 2 ತಿಮೊಥೇಯನಿಗೆ 1:1-8

ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದ ಪಡಬೇಕೆಂದು ಹಂಬಲಿಸುತ್ತಿದ್ದೇನೆ. ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ. ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಫಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.

ಕೀರ್ತನೆ: 96: 1-3, 7-8, 10. v .3

ಶ್ಲೋಕ: ಪ್ರಸಿದ್ಧಪಡಿಸಿರಿ ಆತನ ಘನತೆಯನ್ನು ರಾಷ್ಟ್ರಗಳಿಗೆ, ಆತನದ್ಭುತಾಕಾರ್ಯಗಳನು ಸಕಲ ಜನಾಂಗಗಳಿಗೆ 

ಶುಭಸಂದೇಶ: ಲೂಕ 10: 1- 9


ಆ ಕಾಲದಲ್ಲಿ ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.



25.01.2026 - ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ.

 ಮೊದಲನೇ ವಾಚನ: ಯೆಶಾಯ 8:23-9:3


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟ ಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.  ಆದರೂ ಕಷ್ಟ ಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆ ಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆ ಗೌರವ ಬಂದೊದಗುವುದು. ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಡಿಗರಿಗೆ. ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.

ಕೀರ್ತನೆ: 27:1, 4, 13-14

ಶ್ಲೋಕ: ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು

ನನಗೆ  ಬೆಳಕು,  ನನಗೆ  ರಕ್ಷೆ  ಪ್ರಭುವೇ|
ನಾನಾರಿಗೂ  ಅಳುಕೆನು||
ನನ್ನ  ಬಾಳಿಗಾಧಾರ  ಪ್ರಭುವೇ|
ನಾನಾರಿಗೂ  ಅಂಜೆನು||

ನಾನೊಂದನು  ಕೋರಿದೆ  ಪ್ರಭುವಿನಿಂದ|
ನಾನದನ್ನೇ  ನಿರೀಕ್ಷಿಸಿದೆ  ಆತನಿಂದ||
ವಾಸಿಸಬೇಕು  ಜೀವಮಾನವೆಲ್ಲ  ನಾನಾತನ  ಮಂದಿರದಲಿ|
ನಾ  ತಲ್ಲೀನನಾಗಬೇಕು  ಅಲ್ಲಾತನ  ಪ್ರಸನ್ನತೆಯಲಿ||

ಪ್ರಭುವಿನೊಳಿತನು  ನಾ  ಕಾಣುವೆ  ಜೀವಲೋಕದೊಳು|
ನಾನಿಟ್ಟಿರುವೆ  ನಂಬಿಕೆ  ನಿರೀಕ್ಷೆ  ಅದರೊಳು||
ಪ್ರಭುವನು  ಎದುರು  ನೋಡುತ್ತಿರು  ಮನವೇ|
ಧೈರ್ಯದಿಂದ  ನಿರೀಕ್ಷಿಸುತ್ತಿರು  ಎದೆಗುಂದದೆ||

ಎರಡನೇ ವಾಚನ: 1 ಕೊರಿಂಥಿಯರಿಗೆ 1:10-13, 17

ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದ ವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ. ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೋಯೇಯನ ಮನೆಯವರಿಂದ ತಿಳಿದು ಬಂದಿದೆ. ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ. ಕ್ರಿಸ್ತಯೇಸು ಭಾಗ ಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ? ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಶುಭಸಂದೇಶವನ್ನು ಸಾರುವುದಕ್ಕೆ. ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.

ಶುಭಸಂದೇಶ: ಮತ್ತಾಯ 4:12-23


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು. ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸವಿೂಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು. ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ. ಹೀಗೆ: "ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ, ಕಾರ್ಗತ್ತಲಲ್ಲಿ ವಾಸಿಸುವವರಿಗೆ ದಿವ್ಯ ಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,"ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು. ಅಂದಿನಿಂದ ಯೇಸು, "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು," ಎಂಬ ಸಂದೇಶವನ್ನು ಬೋಧಿಸತೊಡಗಿದರು.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು. "ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು," ಎಂದು ಹೇಳಿ ಯೇಸು ಅವರನ್ನು ಕರೆದರು. ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು. ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶ ಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.

24.01.2026 - ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

 ಮೊದಲನೆಯ ವಾಚನ: 2 ಸಮುವೇಲ 1:1-4, 11-12, 17, 19, 23-27



ಸೌಲನು ಸತ್ತನಂತರ ಸಂಭವಿಸಿದ ಘಟನೆಗಳು: ದಾವೀದನು ಅಮಾಲೇಕ್ಯರನ್ನು ಸದೆಬಡಿದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ತಂಗಿದ್ದನು. ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು. ದಾವೀದನು ಅವನನ್ನು ನೋಡಿ, " ನೀನು ಎಲ್ಲಿಂದ ಬಂದೆ? " ಎಂದು ಕೇಳಿದನು. ಅವನು, " ನಾನು ಇಸ್ರಯೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ, " ಎಂದು ಉತ್ತರ ಕೊಟ್ಟನು. ಆಗ ದಾವೀದನು, " ಏನಾಯಿತೆಂದು ತಿಳಿಸು, " ಎನ್ನಲು ಆ ವ್ಯಕ್ತಿ, " ಇಸ್ರಯೇಲರು ರಣರಂಗದಿಂದ ಓಡಿಹೋದರು; ಅನೇಕರು ಮಡಿದರು. ಸೌಲನೂ ಅವನ ಮಗ ಯೋನಾತಾನನೂ ಮರಣಹೊಂದಿದರು, " ಎಂದು ತಿಳಿಸಿದನು. ಸೌಲನು, ಅವನ ಮಗ ಯೋನಾತಾನನು ಹಾಗು ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿದರು. ಸಾಯಂಕಾಲದವರೆಗೆ ಉಪವಾಸಮಾಡಿದರು. ದಾವೀದನು ಸೌಲ -- ಯೋನಾತಾನರ ಮೇಲೆ ಒಂದು ಶೋಕಗೀತೆಯನ್ನು ರಚಿಸಿದನು: ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ? ಸೌಮ್ಯರು, ಅತಿಪ್ರಿಯರು, ಆ ಸೌಲ -- ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು, ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು! ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ? ಯುದ್ದವೀರರೇ, ಹೇಗೆ ಮಡಿದು ಹೋದಿರಿ ರಣರಂಗದಲಿ? ಯೋನಾತಾನನು ಹತನಾಗಿ ಬಿದ್ದಿಹನಲ್ಲಾ ಬೆಟ್ಟಗುಡ್ಡದಲಿ! ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ. ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ! ಅಯ್ಯೋ, ಆ ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು!

ಕೀರ್ತನೆ 80:1-2, 4-6 
ಶ್ಲೋಕ: ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು.

ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ|
ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ|
ವಿರಾಜಿಸು ಕೆರೂಬಿಯರ ಮಧ್ಯೆ ಆಸೀನನಾದವನೇ|
ಶೋಭಿಸು ಎಫ್ರೆಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ|
ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ||

ಸ್ವಾಮಿದೇವನೇ, ಸರ್ವಶಕ್ತನೇ|
ಅದೆನಿತು ಕಾಲ ನೀ ಮುನಿದಿರುವೆ?|
ನಿನ್ನವರ ಮೊರೆಯನಾಲಿಸದಿರುವೆ?||
ರೋದನವನೆ ಅವರಿಗೆ ಅನ್ನವಾಗಿಸಿದೆ|
ಹರಿಯುವ ಕಂಬನಿಯನೆ ಪಾನವಾಗಿಸಿದೆ|
ನೆರೆಯವರಿಗೆ ನಮ್ಮನ್ನು ಕಲಹಕಾರಣವಾಗಿಸಿದೆ|
ಶತ್ರುಗಳ ಅಪಹಾಸ್ಯಕ್ಕೆ ನಮ್ಮನ್ನು ಗುರಿಪಡಿಸಿದೆ||

ಶುಭಸಂದೇಶ ವಾಚನ: ಮಾರ್ಕ 3:20-21


ಆ ಕಾಲದಲ್ಲಿ ಯೇಸು ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು. " ಈತನಿಗೆ ಹುಚ್ಚು ಹಿಡಿದಿದೆ, " ಎಂದು ಜನರು ಮಾತನಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.

23.01.2026 - ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ

 ಮೊದಲನೇ ವಾಚನ: 1  ಸಮುವೇಲನು 26:2, 7-9, 12-13, 22-23



ಸೌಲನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕಾಗಿ ಜೀಫ್ ಮರುಭೂಮಿಗೆ ಹೋದನು. ದಾವೀದನು ಮತ್ತು ಅಬೀಷೈಯು, ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯೆ ಮಲಗಿಕೊಂಡು ನಿದ್ರೆ ಮಾಡುತ್ತಿದ್ದನು. ಅವನ ಭರ್ಜಿಯನ್ನು ಅವನ ತಲೆಯ ಹತ್ತಿರ ನೆಲಕ್ಕೆ ತಿವಿದು ನಿಲ್ಲಿಸಲಾಗಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು. ಅಬೀಷೈಯು ದಾವೀದನಿಗೆ, "ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ." ಎಂದು ಹೇಳಿದನು. ಆದರೆ ದಾವೀದನು, "ಅವನನ್ನು ಕೊಲ್ಲಬೇಡ;   ಸರ್ವೇಶರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು," ಎಂದನು. ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗು ತಂಬಿಗೆಗಳನ್ನು ತೆಗೆದುಕೊಂಡು ಹೋದರೂ ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢ ನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು. ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸುರಕ್ಷಿತವಾದ ದೂರ ಸ್ಥಳಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತನು. ದಾವೀದನು, "ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ.  ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿ  ಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ  ಒಪ್ಪಿಸಿಕೊಟ್ಟಿದ್ದರೂ ನೀವು  ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈ ಹಾಕಲಿಲ್ಲ.

ಕೀರ್ತನೆ: 103:1-2, 3-4, 8-10, 12-13
ಶ್ಲೋಕ: ಪ್ರಭು ದಯಾಳು, ಕೃಪಾಪೂರ್ಣನು.

ಎರಡನೇ ವಾಚನ: 1 ಕೊರಿಂಥಿಯರಿಗೆ 15:45-49


ವಿತ್ರ ಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ. ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು, ಆನಂತರ ಆದುದು ಆಧ್ಯಾತ್ಮಿಕವಾದುದು. ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂದಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು ಮಣ್ಣಿಗೆ ಸಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ. ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.

ಶುಭಸಂದೇಶ: ಲೂಕ 6:27-38

"ನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಹೊಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆಯಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು, ನಿನ್ನ ಸ್ವತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಟರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಟರು ಸಹ ಹಾಗೆಯೇ ಮಾಡುತ್ತಾರಲ್ಲವೆ? ಸಾಲ ತೀರಿಸುವಂಥ ನಂಬಿಗಸ್ಥನಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಟರು ಸಹ ಸಾಲ ಕೊಡುತ್ತಾರಲ್ಲವೆ?" ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ.  ಅವರಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲ ಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ  ಒಳ್ಳೆಯವರು ಕೃತಘ್ನರಿಗೂ ಒಳ್ಳೆಯವರು. ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. "ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು," ಎಂದರು.

ಮನಸಿಗೊಂದಿಷ್ಟು :  ’ಮಾಡಬೇಡ’ ಎನ್ನುವ ಆದರ್ಶಗಳ ನಡುವೆ ’ಮಾಡು’ ಎನ್ನುವ ಮೌಲ್ಯಗಳನ್ನು ಯೇಸು ನಮಗೆ ನೀಡುತ್ತಿದ್ದಾರೆ. ’ಶತ್ರುಗಳನ್ನು ದ್ವೇಷಿಸಬೇಡಿ’ ಎನ್ನುವುದು ಲೋಕ ರೂಢಿಯಲ್ಲಿ  ಮಾನ್ಯವಾದ ಮೌಲ್ಯವಾದರೆ ’ಅವರನ್ನು ಪ್ರೀತಿಸಿರಿ’ ಎನ್ನುವುದು ಇನ್ನೂ ಎತ್ತರದ ಕ್ರಿಸ್ತನ ಮೌಲ್ಯ. ನಾವು ನಮ್ಮನ್ನು ಹೋಲಿಸಿಕೊಳ್ಳಬೇಕಾದುದು ನಮ್ಮ ನೆರೆಯವನ ಗುಣ ಆದರ್ಶಗಳೊಂದಿಗೆ ಅಲ್ಲ, ದೇವರ ಗುಣ ಮೌಲ್ಯಗಳೊಂದಿಗೆ. ಆಗಾದಾಗ ಮಾನವತೆಯನ್ನು ಪೊರೈಸಿ ದೈವತ್ವದತ್ತ ನಮ್ಮ ಹೆಜ್ಜೆ ಸಾಗುತ್ತದೆ..... 

ಪ್ರಶ್ನೆ : ಸಾಮಾನ್ಯತೆಗಿಂತ ಇನ್ನೆಷ್ಟು ಎತ್ತರಕ್ಕೆ ಏರಬಲ್ಲವು?

22.01.2026 - ನೀವು ದೇವರ ಪುತ್ರ

ಮೊದಲನೇ ವಾಚನ: 1 ಸಮುವೇಲ 18:6-9; 19:1-7


ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು. ಅವರು: “ಸೌಲ ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತು ಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು. ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು. ಅಂದಿನಿಂದ ಸೌಲನು ದಾವೀದನ ಮೇಲೆ ಕಣ್ಣಿಟ್ಟನು. ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು. ನನ್ನ ತಂದೆಯ ಬಳಿಯಲ್ಲಿದ್ದು ನಿನ್ನ ಬಗ್ಗೆ ಅವರೊಡನೆ ಮಾತಾಡಿ ಗೊತ್ತಾದ ವಿಷಯವನ್ನು ನೀನು ಅವಿತುಕೊಂಡಿರುವ ಸ್ಥಳಕ್ಕೆ ಬಂದು ತಿಳಿಸುವೆನು,” ಎಂದು ಹೇಳಿದನು. ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ. ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು. ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು. ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.


ಕೀರ್ತನೆ: 56:2-3, 9-10, 10-11, 12-13

ಶ್ಲೋಕ: ದೇವರಲ್ಲಿ ನಿರ್ಭೀತ ನಂಬಿಕೆ ನನಗೆ

ಶುಭಸಂದೇಶ: ಮಾರ್ಕ 3:7-12


ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟು ಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು. ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದುಮೇಯ ಪ್ರಾಂತ್ಯದಿಂದ, ಜೋರ್ಡನ್ ನದಿಯ ಪೂರ್ವ ಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು. ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು. ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ,” ಎಂದು ಕಿರುಚುತ್ತಿದ್ದವು. ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.

21.01.26 - "ಸಬ್ಬತ್ ದಿನದಲ್ಲಿ, ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ"


ಮೊದಲನೇ ವಾಚನ: 1 ಸಮುವೇಲ 17:32-33, 37, 40-51















ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧ ಮಾಡುತ್ತೇನೆ,” ಎಂದು ಹೇಳಿದನು. ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧ ವೀರ,” ಎಂದು ಹೇಳಿದನು. ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು. ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟ ಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು. ಇತ್ತ ಫಿಲಿಷ್ಟಿಯನು ದಾವೀದನ ಕಡೆ ಧಾವಿಸಿ ಬಂದನು. ಗುರಾಣಿ ಹೊರುವವನು ಅವನ ಮುಂದೆ ಇದ್ದನು. ಫಿಲಿಷ್ಟಿಯನು ದಾವೀದನನ್ನು ಸವಿೂಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನನ್ನು ದಿಟ್ಟಿಸಿ ತಾತ್ಸಾರದಿಂದ, “ನೀನು ಕೋಲು ಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು. “ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು. ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯ ಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದು ಬರುವುದು. ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು. ಕೂಡಲೆ ಆ ಫಿಲಿಷ್ಟಿಯನು ದಾವೀದನ ಮೇಲೆ ಎರಗಲು ಮತ್ತೆ ಧಾವಿಸಿದನು. ದಾವೀದನೂ ಫಿಲಿಷ್ಟಿಯರ ಸೈನ್ಯದ ಕಡೆಗೆ ನುಗ್ಗಿ ಆ ಫಿಲಿಷ್ಟಿಯನನ್ನು ಎದುರುಗೊಳ್ಳಲು ಓಡಿದನು. ಕೈಯನ್ನು ಚೀಲದಲ್ಲಿ ಹಾಕಿ, ಒಂದು ಕಲ್ಲನ್ನು ತೆಗೆದು, ಅವನ ಕಣ್ಣಿಗೆ ಗುರಿಯಿಟ್ಟು, ಕವಣೆಯನ್ನು ಬೀಸಿ ಹೊಡೆದನು. ಆ ಕಲ್ಲು ಅವನ ಹಣೆಯನ್ನು ಹೊಕ್ಕಿತು. ಅವನು ಮುಖ ಕೆಳಗಾಗಿ ನೆಲಕ್ಕೆ ಉರುಳಿದನು. ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು. ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತು ಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿ ಹೋದರು.


ಕೀರ್ತನೆ: 144:1-2, 9-10

ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯ ದುರ್ಗಕೆ


ಶುಭಸಂದೇಶ: ಮಾರ್ಕ 3:1-6



ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು. ಅವನನ್ನು ಸಬ್ಬತ್‍ ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚು ಹಾಕುತ್ತಿದ್ದರು. ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ, “ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ. ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು. ಫರಿಸಾಯರು ಅಲ್ಲಿಂದ ಹೊರಗೆ ಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆ ಮಾಡಲು ಒಳಸಂಚು ಹೂಡಿದರು.

20.01.2026 - ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ

 ಮೊದಲನೇ ವಾಚನ: 1 ಸಮುವೇಲ 16:1-13

ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು. ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದು ಹಾಕುವನಲ್ಲವೇ?” ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು. ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು. ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?” ಎಂದು ಕೇಳಿದರು. ಅವನು, “ಹೌದು ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು. ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು. ಆದರೆ ಸರ್ವೇಶ್ವರ ಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿ ಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು. ಜೆಸ್ಸೆಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರ ಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು. ತರುವಾಯ ಜೆಸ್ಸೆಯನು ಶಮ್ಮ ಎಂಬವನನ್ನು ಬರ ಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು. ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರ ಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು. ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆತರಿಸಿದನು. ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು. ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟು ಹೋದನು.

ಕೀರ್ತನೆ: 89:20, 21-22, 27-28
ಶ್ಲೋಕ: ನನ್ನ ದಾಸ ದಾವೀದನನು ಗುರುತಿಸಿರುವೆ

ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ|
ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ|
ಪ್ರಜೆಗಳಲೋರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕ್ಕೆ||

ನನ್ನ ದಾಸ ದಾವೀದನನು ಗುರುತಿಸಿರುವೆ|
ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ||
ನನ್ನ ಕೈಯ ಆಸರೆ ಅವನಿಗಿದೆ ಸತತ|
ನನ್ನ ಭುಜಬಲವು ಅವನಿಗೆ ಶಕ್ತಿಯುತ||

ನನಗೆ ಪಿತ, ದೈವ, ದುರ್ಗ, ಉದ್ದಾರಕ ನೀನು|
ಇಂತೆಂದೇ ನನ್ನನು ಸಂಬೋಧಿಸುವನವನು||
ಮಾಡುವೆನವನನು ಜೇಷ್ಠ ಪುತ್ರನನ್ನಾಗಿ|
ಭೂರಾಜರುಗಳೊಳು ಅತ್ಯುನ್ನತನನ್ನಾಗಿ||

ಅಲ್ಲೆಲೂಯ, ಅಲ್ಲೆಲೂಯ!
ಹೊಗಲಿರಿ ಆತನ ಮಹತ್ತಾದ ಏಕೈಕ ನಾಮವನು | ಕೋಡು ಮೂಡುಸಿಹನು ಪ್ರಭು ತನ್ನ ಪ್ರಜೆಗೆ ||
ಅಲ್ಲೆಲೂಯ!


ಶುಭಸಂದೇಶ: ಮಾರ್ಕ 2:23-28


ಅದೊಂದು ಸಬ್ಬತ್ ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದು ಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಇದನ್ನು ಕಂಡ ಫರಿಸಾಯರು, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?” ಎಂದು ಅವರನ್ನು ಕೇಳಿದರು. ಬಳಿಕ ಯೇಸು ಅವರಿಗೆ, “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ. ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.

19.01.2026 - “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ

ಮೊದಲನೇ ವಾಚನ: 1 ಸಮುವೇಲ 15:16-23



ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು” ಎನ್ನಲು ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ. ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು. ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು. ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದುತಂದೆ. ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಗಿಲ್ಗಾಲಿನಲ್ಲಿ ಬಲಿಯರ್ಪಣೆ ಮಾಡುವುದಕ್ಕಾಗಿ ಉಳಿಸಿ ತಂದರು,” ಎಂದು ಉತ್ತರಕೊಟ್ಟನು. ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚು ತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ. ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು” ಎಂದು ನುಡಿದನು.


ಕೀರ್ತನೆ: 50:8-9, 16-17, 21, 23
ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ಪರಮ ಜೀವೋದ್ದಾರವನು


ಶುಭಸಂದೇಶ: ಮಾರ್ಕ 2:18-22


ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತವನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ, ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ?” ಎಂದು ಕೇಳಿದರು. ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು. ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು. “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.

18.01.2026 - ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದು ಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು

 ಮೊದಲನೇ ವಾಚನ: ಯೆಶಾಯ 49:3, 5-6



ಆತನೆನಗೆ ಇಂತೆಂದ: “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.” ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ; ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ. ಮತ್ತೆ ಆತ ಇಂತೆಂದನು ನನಗೆ: “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”

ಕೀರ್ತನೆ: 40:2, 4, 7-8, 8-9, 10

ಶ್ಲೋಕ: ಪ್ರಭೂ, ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ

ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ |
ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ ||
ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು |
ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು || (ಶ್ಲೋಕ)

ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ |
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? ||
ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ |
ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ”|| (ಶ್ಲೋಕ)

ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ ||
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ ||
ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು |
ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು |
ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು || (ಶ್ಲೋಕ)

ಎರಡನೇ ವಾಚನ: 1 ಕೊರಿಂಥಿಯರಿಗೆ 1:1-3


ಕ್ರಿಸ್ತ ಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ. ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!

ಶುಭಸಂದೇಶ: ಯೊವಾನ್ನ 1:29-34


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ. ಇವರು ‘ನನ್ನ ಬಳಿಕ ಬಂದವರಾದರೂ ನನಗಿಂತಲೂ ಮೊದಲೇ ಇದ್ದವರು; ಆದುದರಿಂದ ಇವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದುದು ಇವರನ್ನು ಕುರಿತೇ. ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು. ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದು ಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು. ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆ ಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದು ಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು. ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.

17.01.2026 - ನನ್ನನ್ನು ಹಿಂಬಾಲಿಸು

ಮೊದಲನೆಯ ವಾಚನ: ಸಮುವೇಲ 9:1-4, 17-19



ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋನನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ. ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲಾ ಅತಿ ಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು. ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು, ಎಂದು ಹೇಳಿದನು. ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗೂ ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ. ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು, ಎಂದು ಸೂಚಿಸಿದನು. ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ? ಎಂದನು. ಸಮುವೇಲನು, ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ, ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಗ್ಗೆ ನಿನ್ನನ್ನು ಕಳುಹಿಸಿಕೊಡುವೆನು, ಎಂದನು. ಆ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯವಾಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ. ಎಂದನು.


ಕೀರ್ತನೆ: 21:1-2, 5-6
ಶ್ಲೋಕ: ಅರಸನಿಗೆ ಹರ್ಷವಾಯಿತು ಪ್ರಭೂ, ನೀ ತೋರಿದ ಪರಾಕ್ರಮಕ್ಕಾಗಿ.

ಅರಸನಿಗೆ ಹರ್ಷವಾಯಿತು ಪ್ರಭೂ|
ನೀ ತೋರಿದ ಪರಾಕ್ರಮಕ್ಕಾಗಿ
ಆತನ ಮನದಾಸೆಯನು ನೀ ಪೂರೈಸಿದೆ|
ಆತನಧರ ಬಯಕೆಯನು ಅನುಗ್ರಹಿಸಿದೆ||
ನೀನಾತನನು ಸ್ವಾಗತಿಸಿದ ಶುಭಾಶಯದೊಂದಿಗೆ|
ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ||

ಕೋರಿದನಾತನು ಜೀವಮಾನ ಕಾಲವನು|
ನೀನಿತ್ತೆ ಯುಗಯುಗಾಂತರದ ಆಯುಷ್ಯವನು||

ನಿನ್ನ ನೆರವಿಂದೇರಿತು ಆತನ ಘನತೆ|
ಶೋಭೆ, ಪ್ರಭಾವಗಳ ನೀನವನಿಗಿತ್ತೆ||
ಅಮರ ಭಾಗ್ಯಗಳನು ನೀನನುಗ್ರಹಿಸಿದೆ|
ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ||

ಶುಭಸಂದೇಶ ವಾಚನ: ಮಾರ್ಕ 2: 13-17


ಆ ಕಾಲದಲ್ಲಿ ಯೇಸು ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು. ಅಲ್ಲಿಂದ ಹೊರಟುಹೋಗುತ್ತಿರುವಾಗ, ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು, ” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು. ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು. ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟ ಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕøತ ಜನರ ಜೊತೆಯಲ್ಲಿ ಊಟ ಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು, ” ಎಂದರು.

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...