ಮೊದಲನೇ ವಾಚನ: ದಾನಿಯೇಲ 9:4-10
ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: "ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ. "ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞೆಗಳನ್ನು ತೊರೆದು ಬಿಟ್ಟಿದ್ದೇವೆ. ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ. ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದುರಿಹೋಗಿರುವ ಎಲ್ಲ ಇಸ್ರಯೇಲರು ನಿಚಿಕೆಗೆ ಈಡಾಗಿದ್ದಾರೆ. ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಓಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.
ಕೀರ್ತನೆ: 79:8, 9, 11, 13
ಶ್ಲೋಕ: ಪ್ರಭೂ, ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದಿರಿ
1. ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ|
ಉರಿ ಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ||
ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮ ಮಹಿಮೆಯ ನಿಮಿತ್ತ|
ಪಾಪಗಳನು ಅಳಿಸಿ ನಮ್ಮನ್ನುದರಿಸು ನಿನ್ನ ನಾಮದ ಪ್ರಯುಕ್ತ||
ಶ್ಲೋಕ
2. ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು|
ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು||
ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ|
ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ|
ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ||
ಶ್ಲೋಕ
ಘೋಷಣೆ
(ಯೊವಾನ್ನ 6:63,68)
ದೇವರ ವಾಕ್ಯವಾದ ಪ್ರಭು ಯೇಸುವೇ, ನಿಮಗೆ ಸದಾ ಮಹಿಮೆ ಸಲ್ಲಲಿ!
ನಿಮ್ಮ ಮಾತುಗಳು ಪ್ರಭೂ, ಆತ್ಮ ಮತ್ತು ಜೀವವಾಗಿವೆ | ನಿತ್ಯ ಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ ||
ದೇವರ ವಾಕ್ಯವಾದ ಪ್ರಭು ಯೇಸುವೇ, ನಿಮಗೆ ಸದಾ ಮಹಿಮೆ ಸಲ್ಲಲಿ!
ಶುಭಸಂದೇಶ: ಲೂಕ 6:36-38
ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. "ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ, ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿ ಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು: ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು," ಎಂದರು.
ಮನಸಿಗೊಂದಿಷ್ಟು : ವೈದ್ಯರು ರೋಗಿಗಳಿಗೆ ನೀಡುವ ಔಷದಿಯ ಚೀಟಿಯಂತೆ ಮನಸ್ಸಿನ ನಿರಾಳತೆ ಹಾಗೂ ದೇವರ ಕೃಪೆಗೆ ಯೇಸು ಒಂದಷ್ಟು ಸಿದ್ಧ ಔಷದಿಗಳ ಪಟ್ಟಿ ನೀಡುತ್ತಾರೆ. ಔಷದಿಯಂತೆ ಇವು ನುಂಗುವಾಗ ಕಹಿ, ಅದರೆ ಅದು ಮನಸಿಗೆ, ನೀಡುವ ಚಿಕಿತ್ಸೆ ಅವರ್ಣನೀಯ. ನಾವು-ಪರರು-ದೇವರು ಎಂಬ ತ್ರಿಕೋನವು ಒಂದಕ್ಕೊಂದು ಬೆಸೆದುಕೊಂಡು ಅದು ಈ ಜಗದಲ್ಲಿ ನಮ್ಮನ್ನು ಮಾನವತೆಯಿಂದ ದೈವತ್ವದೆಡೆಗೆ ಪ್ರೇರೇಪಿಸುತ್ತಿದೆ. "ನಾನೇ ಬಡವ, ನಾನೇನು ಮಾಡಲು ಸಾಧ್ಯ?"ಎಂದುಕೊಳ್ಳುತ್ತಿದ್ದರೆ, 'ದಯಾವಂತರಾಗಿರಿ ಸಾಕು' ಎನ್ನುತ್ತಿದ್ದಾರೆ ಯೇಸು.
ಪ್ರಶ್ನೆ : ದೇವರಿಂದ ಅಗಾಧವಾಗಿ ಪಡೆಯುತ್ತಿರುವ ನಾವು, ಪರರಿಗೆ ನೀಡುತ್ತಿರುವ ಅಳತೆ ಸರಿಯಾಗಿದೆಯೇ?


No comments:
Post a Comment