29.04.2026 - ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:24--13:5


ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು. ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ ಎಂದು ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು. ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯಸ್ನೇಹಿತ ಮೆನಹೇನ ಮತ್ತು ಸೌಲ ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ವಿೂಸಲಾಗಿಡಿ,” ಎಂದರು. ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆ ಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು. ಸೈಪ್ರಸ್ ದ್ವೀಪದಲ್ಲಿ ಧರ್ಮಪ್ರಚಾರ ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು. ಅವರು ಸಲವಿೂಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾ ಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.

ಕೀರ್ತನೆ: 67:2-3, 5, 6, 8
ಶ್ಲೋಕ: ನಿನ್ನ ಕೀರ್ತಿಸಲಿ ದೇವಾ, ಜನರು, ಸಂಕೀರ್ತಿಸಲಿ ಅವರೆಲ್ಲರೂ

ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ /
ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ //
ನಿನ್ನ ಕೀರ್ತಿಸಲಿ ದೇವಾಜನರು /ಸಂಕೀರ್ತಿಸಲಿ ಅವರೆಲ್ಲರೂ //

ನಿನ್ನ ಕೀರ್ತಿಸಲಿ ದೇವಾಜನರು / 
ಸಂಕೀರ್ತಿಸಲಿ ಅವರೆಲ್ಲರೂ //

ಇತ್ತನೆಮ್ಮ ದೇವನು ಆಶೀರ್ವಾದವನು /
ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು //

ಶುಭ ಸಂದೇಶ : ಯೊವಾನ್ನ 12:44-50

ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ. ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ. ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ. ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ. ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ. ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ. ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”

No comments:

Post a Comment