17.05.2026 - ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11

ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು. ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಯೇಸುಸ್ವಾಮಿಯ ಸ್ವರ್ಗಾರೋಹಣ ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ ಸ್ಥಾಪಿಸುವಿರೋ?” ಎಂದು ಕೇಳಿದರು.ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ. ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು. ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು. “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತಿರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿ ಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಕೀರ್ತನೆ: 47:2-3, 6-7, 8-9
ಶ್ಲೋಕ: ಏರಿದನು ಪ್ರಭು ಜಯಜಯಕಾರದೊಂದಿಗೆ, ಆರೋಹಣವಾದನು ತುತೂರಿನಾದದ ಜೊತೆಗೆ

1.  ಸರ್ವ  ಜನಾಂಗಗಳೇ,  ಚಪ್ಪಾಳೆ  ಹೊಡೆಯಿರಿ|
ಸರ್ವೇಶ್ವರನಿಗೆ  ಜಯಜಯ ಘೋಷಮಾಡಿರಿ||
ಪರಾತ್ಪರನಾದ  ಪ್ರಭುವು  ಘನಗಂಭೀರನು|
ಪ್ರಪಂಚಕ್ಕೆಲ್ಲಾ  ರಾಜಾಧಿರಾಜನು||
ಶ್ಲೋಕ

2.  ಏರಿದನು  ಪ್ರಭು ಜಯಜಯಕಾರದೊಂದಿಗೆ|
ಆರೋಹಣವಾದನು  ತುತೂರಿನಾದದ  ಜೊತೆಗೆ||
ಕೀರ್ತಿಸಿರಿ  ನಮ್ಮ  ದೇವನನು  ಸಂಕೀರ್ತಿಸಿರಿ|
ಕೀರ್ತಿಸಿರಿ  ನಮ್ಮ  ರಾಜನನು  ಸಂಕೀರ್ತಿಸಿರಿ||
ಶ್ಲೋಕ

3.  ದೇವನು  ಭೂಮಂಡಲಕ್ಕೆಲ್ಲಾ  ಒಡೆಯನು|
ಕೀರ್ತನೆಯಿಂದ  ಕೊಂಡಾಡಿರಿ  ಆತನನು||
ವಹಿಸಿಕೊಂಡನು  ದೇವನು  ಸರ್ವಾಧಿಪತ್ಯ|
ಅಲಂಕರಿಸಿಹನು  ತನ್ನ  ಪೂಜ್ಯ  ಗದ್ದುಗೆಯ||
ಶ್ಲೋಕ

ಎರಡನೇ ವಾಚನ: ಎಫೆಸಿಯರಿಗೆ 1:17-23


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೇಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.

ಶುಭಸಂದೇಶ: ಮತ್ತಾಯ 28:16-20


ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು. ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು.


No comments:

Post a Comment

17.05.2026 - ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11 ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕ...