06.07.2026 - ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,

 ಮೊದಲನೇ ವಾಚನ: ಹೊಶೇಯ 2:16, 17-18, 21-22


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ. ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಚರಿಸದಂತೆ ಮಾಡುವೆನು. ಆ ದಿನಗಳಲ್ಲಿ ನನ್ನ ಜನರಿಗೆ ಹಾನಿ ಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದ ಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು. ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು. ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.

ಕೀರ್ತನೆ: 145:2-3, 4-5, 6-7, 8-9

ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು

ಕೀರ್ತನೆ
145: 2-9, v. 8

ಶ್ಲೋಕ:  ಪ್ರಭು  ದಯಾನಿಧಿ,  ಕೃಪಾಸಾಗರನು.

1.  ಹೊಗಳುವೆನು ನಾ ದಿನದಿನವೂ ನಿನ್ನನು|
ಭಜಿಸುವೆನೆಂದೆಂದಿಗೂ ನಿನ್ನ ಹೆಸರನು||
ಪ್ರಭು ಮಹಾತ್ಮನು ಸ್ತತ್ಯರ್ಹನು|
ಆತನ ಮಹಿಮೆ ಅಗಮ್ಯವಾದದು||
ಶ್ಲೋಕ

2.  ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು|
ತಿಳಿಸುವುದು ಪ್ರಭೂ, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು||
ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು|
ನಿನ್ನ ಮಹೋನ್ನತ ಮಹಿಮಾಪ್ರಭಾವವನು||
ಶ್ಲೋಕ

3.  ಜನರು ಸಾರುವರು ನಿನ್ನ  ಅದ್ಭುತಶಕ್ತಿಯನು|
ನಾ ಪ್ರಸಿದ್ದಪಡಿಸುವೆನು ನಿನ್ನ ಮಹಿಮೆಯನು||
ಪ್ರಕಟಿಸುವರವರು ನಿನ್ನ ಮಹೋಪಕಾರವನು|
ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು||
ಶ್ಲೋಕ

4.  ಪ್ರಭು ದಯಾನಿಧಿ ಕೃಪಾಸಾಗರನು|
ಸಹನಶೀಲನು ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

🌺✝️🌺

ಘೋಷಣೆ
(ಕೀರ್ತನೆ 25: 4,5)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ಸನ್ಮಾರ್ಗದಲಿ  ಮುನ್ನಡೆಸೆನ್ನ  ದೇವಾ ||
ಅಲ್ಲೆಲೂಯ.





ಶುಭಸಂದೇಶ: ಮತ್ತಾಯ 9:18-26


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, "ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು," ಎಂದು ಬೇಡಿಕೊಂಡನು. ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿ ಹೋದರು. ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು" ಎಂದುಕೊಂಡಿದ್ದಳು ಆಕೆ. ಯೇಸು ಹಿಂದಿರುಗಿ ಆಕೆಯನ್ನು ನೋಡಿ, "ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ," ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು. ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲ ಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, "ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ" ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯ ಮಾಡಿದರು. ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು. ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿ ಹರಡಿತು. 

No comments:

Post a Comment

06.07.2026 - ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,

  ಮೊದಲನೇ ವಾಚನ: ಹೊಶೇಯ 2:16, 17-18, 21-22 ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ...