08.07.2026 - ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12

ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ. ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು. “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ. ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು. ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.” ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣು ಹೋಗಬೇಕು.
ಕೀರ್ತನೆ: 105:2-3, 4-5, 6-7

ಶ್ಲೋಕ:  ಅಪೇಕ್ಷಿಸಿ ನಿತ್ಯವೂ ಪ್ರಭುವಿನ ದರ್ಶನವನು

1.  ಹಾಡಿಪಾಡಿ ಹೊಗಳಿರಿ ಪ್ರಭುವನು|
ಧ್ಯಾನಿಸಿ ನೀವು ಆತನ ಪವಾಡಗಳನು||
ಹೆಮ್ಮೆಪಡಿ ನೆನೆದಾತನ ಶ್ರೀ ನಾಮ|
ಹಿಗ್ಗಲಿ ಹೃದಯ ಕೋರಿ ಆತನ ದರ್ಶನ||
ಶ್ಲೋಕ

2.  ಅರಸಿರಿ ಪ್ರಭುವನೂ ಆತನ ಶಕ್ತಿಯನೂ|
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು||
ಆತನ ದಾಸ ಅಬ್ರಹಾಮನ ಸಂತತಿಯವರೇ,|
ಆತನಾರಿಸಿಕೊಂಡ ಯಕೋಬನ ವಂಶದವರೇ||
ಶ್ಲೋಕ

3.  ನೆನೆಯಿರಿ ಆತನದ್ಭುತಗಳನು ಮಹತ್ಕಾರ್ಯಗಳನು|
ಆತನು ವಿಧಿಸಿದಾ ನ್ಯಾಯನಿರ್ಣಯಗಳನು||
ಪ್ರಭು ದೇವನೆಂಬುದು ಶ್ರುತ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ||
ಶ್ಲೋಕ

ಘೋಷಣೆ
(ಕೀರ್ತನೆ 95: 8)

ಅಲ್ಲೆಲೂಯ, ಅಲ್ಲೆಲೂಯ.
ಆತನ  ಕರೆಗೆ  ಕಿವಿಗೊಟ್ಟರೆನಿತೋ  ಒಳಿತು  ನೀವಿಂದೇ,|ಕಲ್ಲಾಗಿಸಿಕೊಳ್ಳದಿರಿ  ಹೃದಯವನು  ನಿಮ್ಮ  ಪೂರ್ವಜರಂತೆ||
ಅಲ್ಲೆಲೂಯ.


ಶುಭಸಂದೇಶ: ಮತ್ತಾಯ 10:1-7


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ."



No comments:

Post a Comment

08.07.2026 - ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ

  ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12 ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳ...