ಪ್ರವಾದಿ ಮೀಕನ ಗ್ರಂಥದಿಂದ ವಾಚನ 2 : 1-5
ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ. ಇತರರ ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ. ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ : “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತಾನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು. ಆ ದಿನಗಳಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯ ಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ, ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವ ದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋಧಿಸುವರು. ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.ಕೀರ್ತನೆ 10 : 1-2, 3-4, 7-8,14
ಶ್ಲೋಕ : ಪ್ರಭೂ, ದಲಿತನನು ಮರೆಯದಿರಯ್ಯಾ|
1. ನನ್ನಿಂದೇಕೆ ಪ್ರಭೂ, ಅಷ್ಟು ದೂರವಿರುವೆ?|
ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ?||
ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು|
ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಳಿನೊಳವರು||
ಶ್ಲೋಕ
2. ಕೇಡಿಗನು ತನ್ನ ಮನದಾಶೆಗಾಗಿ ಹೆಮ್ಮೆಪಡುತಿಹನು|
ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು||
ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ|
ಅವನ ಮನದೊಳಿದೊಂದೇ ಭಾವನೆ: "ದೇವರೇ ಇಲ್ಲ"! ||
ಶ್ಲೋಕ
3. ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ|
ಅವಿತಿದೆ ಪಾಪ ಅತಿ ವಿನಾಶ ನಾಲಿಗೆಯಡಿಯಲಿ||
ಊರು ಸಂದುಗೊಂದುಗಳಲೆ ಅವಿತಿದ್ದು| ನಿರ್ಗತಿಕರಿಗಾಗಿ ಅಲ್ಲೇ ಕಾದಿದ್ದು
ಕೊಲೆಗೈವನು ಮರೆಯಲ್ಲೇ ಮೇಲೆಬಿದ್ದು||
ಶ್ಲೋಕ
4. ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು|
ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು||
ಶ್ಲೋಕ
ಶುಭಸಂದೇಶ ಮತ್ತಾಯ 12:14-21
ಫರಿಸಾಯರು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು. ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು. ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನೂ ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆ ಮಾಡಿದರು. ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: “ಇಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಮುರಿದ ಜೊಂಡಿನಂತಹ ದುರ್ಬಲರಿಗಿಂತ ದೀನಬಂಧು, ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು, ನ್ಯಾಯನೀತಿಗೆ ಜಯದೊರಕಿಸದೆ ಬಿಡನಿವನು. ನೆನೆಯುವರು ಅನ್ಯ ಜನರೆಲ್ಲರು ಇವನ ನಾಮವನು."


No comments:
Post a Comment