29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

 ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ


ಮೊದಲನೇ ವಾಚನ: ಯೆರೆಮಿಯ: 1: 17-19

ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ಕೀರ್ತನೆ: 96: 71: 1-2, 3-4,5-6, 15, 17

ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು.

1.  ಆಶ್ರಯಕೋರಿ ಹೇ ಪ್ರಭೂ, ನಾ ಬಂದಿರುವೆ|
ಆಶಾಭಂಗವಾಗದಿರಲೆಂದು ನಾ ಬೇಡುವೆ||
ಸತ್ಯಸ್ವರೂಪನೇ, ನನ್ನ ಬಿಡಿಸಿ ರಕ್ಷಿಸಯ್ಯಾ|
ನನಗೆ ಕಿವಿಗೊಟ್ಟು ಪ್ರಭೂ ನನ್ನನುದ್ದರಿಸಯ್ಯಾ||
ಶ್ಲೋಕ

2.  ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು|
ನಿನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು||
ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ|
ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ||
ಶ್ಲೋಕ

3.  ಸ್ವಾಮಿದೇವಾ, ನೀನೇ ನನ್ನ ಭರವಸೆ|
ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ||
ಹುಟ್ಟಿನಿಂದಲೇ ನಾ ನಿನಗಂಟಿಕೊಂಡಿರುವೆನಯ್ಯಾ|
ಗರ್ಭದಿಂದಲೇ ನೀ ಎನ್ನನು ಕರೆದುತಂದೆಯಯ್ಯಾ|
ನಿರಂತರವೂ ನಿನ್ನನು ಕೊಂಡಾತ್ತಿರುವೆನಯ್ಯಾ||
ಶ್ಲೋಕ

4.  ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು|
ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು||
ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ?|
ನಿನ್ನ ಅದ್ಭುತ ಕಾರ್ಯಗಳನೆಂದಿಗೂ ನಾ  ಘೋಷಿಸುತ್ತಿರುವೆ||
ಶ್ಲೋಕ

ಘೋಷಣೆ:    ಮತ್ತಾಯ 5: 10

ಅಲ್ಲೆಲೂಯ, ಅಲ್ಲೆಲೂಯ.
ನ್ಯಾಯನೀತಿಯ  ನಿಮಿತ್ತ  ಹಿಂಸೆಯನ್ನು  ತಾಳುವವರು  ಭಾಗ್ಯವಂತರು| ಸ್ವರ್ಗಸಾಮ್ರಾಜ್ಯ  ಅವರದು||
ಅಲ್ಲೆಲೂಯ.




ಶುಭಸಂದೇಶ: ಮಾರ್ಕ: 6: 17-29

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತಾ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮ ಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತಾ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗು ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಉಟ್ಟು ಹಬ್ಬದ ದಿನಾಚರಣೆಯಂದು, ಆಸ್ತಾನಿಕರಿಗೂ ಸೇನಾದಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣ ಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನು ಅವರ ಜೊತೆಯಲ್ಲಿ ಭೋಜನಕ್ಕೆ ಕುಳಿತ್ತಿದ್ದ, ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಹಾಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರು ಕೇಳು ಕೊಡುತ್ತೇನೆ," ಎಂದನು. "ನೀನು ಕೇಳಿಕೊಂಡರು ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ," ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಂದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ’ ಇದೇ ನನ್ನ ಬೇಡಿಕೆ," ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತಾ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ನೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದು ಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.

No comments:

Post a Comment

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...