02.09.2026 - ನೀವು ದೇವರ ಪುತ್ರ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 3:1-9


ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.  ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ. ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ? ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು? ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ. ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು. ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು. ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ. ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.

ಕೀರ್ತನೆ: 33:12-13, 14-15, 20-21

ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ

1.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|

ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ!||

ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ|

ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ||

ಶ್ಲೋಕ


2.  ಸ್ಥಾವರ ಸಿಂಹಾಸನದಿಂದ ನೋಡುತಿಹನು|

ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು||

ಅವರೆಲ್ಲರ ಹೃದಯಗಳನ್ನು ನಿರ್ಮಿಸಿದಾತನವನು ಅವರವರ  ಕೃತ್ಯಗಳನು ಪರೀಕ್ಷಿಸುತಿಹನು||

ಶ್ಲೋಕ


3.  ಕಾದಿದೆ ಎನ್ನ ಮನ ಪ್ರಭುವಿಗಾಗಿ|

ಆತನಿಹನು ಎನಗೆ ಗುರಾಣಿಯಾಗಿ||

ನೆಮ್ಮದಿಯಿಂದಿದೆ ಎನ್ನ ಮನ ಆತನಲಿ|

ನಂಬಿರುವೆವು ಆತನ ಶ್ರೀ ನಾಮದಲಿ||

ಶ್ಲೋಕ


ಘೋಷಣೆ

(ಕೀರ್ತನೆ 27: 11)

ಅಲ್ಲೆಲೂಯ, ಅಲ್ಲೆಲೂಯ.

ಬೋಧಿನೆನಗೆ  ಪ್ರಭೂ,  ನಿನ್ನ  ಮಾರ್ಗವನು | ಶತ್ರುರಹಿತ  ಹಾದಿಯಲಿ  ನಡೆಸು  ಎನ್ನನು ||

ಅಲ್ಲೆಲೂಯ.

ಶುಭಸಂದೇಶ: ಲೂಕ 4:38-44

ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು. ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು. ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.  ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ. ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು.  ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು.  ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.

01.09.2026 - ಇಂದಿನ ಬೈಬಲ್ ವಾಚನ | ಎಂಥಾ ಮಾತುಗಳಿವು, ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 2:10-16


ಸಹೋದರರೇ, ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.  ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.  ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ. ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.  ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.  ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.  “ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.

ಕೀರ್ತನೆ: 145:8-9, 10-11, 12-13, 13-14

ಶ್ಲೋಕ: ಪ್ರಭುವಿನ ಮಾರ್ಗ ಧರ್ಮಸಮ್ಮತ

1.  ಪ್ರಭು, ದಯಾನಿಧಿ ಕೃಪಾಸಾಗರನು|
ಸಹನಶೀಲನು ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

2.  ಪ್ರಭೂ, ನಿನ್ನ ಸ್ತುತಿಪುದು ಸೃಷ್ಟಿಯೆಲ್ಲವೂ|
ಕೊಂಡಾಡುವುದು ನಿನ್ನನ್ನು ಭಕ್ತಸಮೂಹವು|
ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು||
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು|
ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು|
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಮಹಿಮೆ ಪ್ರಭಾವವನು||
ಶ್ಲೋಕ

3.  ಶಾಶ್ವತವಾದುದು ನಿನ್ನ ರಾಜ್ಯವು|
ಇರುವುದೆಂದಿಗೂ ನಿನ್ನ ಆಳ್ವಿಕೆಯು||
ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು|
ನಡೆಯಲಿ ಆತನು ಸದಾ ಪ್ರೀತಿಮಯನು||
ಶ್ಲೋಕ

ಘೋಷಣೆ:    (ಕೀರ್ತನೆ 25: 4)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ನೀನೊಪ್ಪುವ  ಪಥದಲ್ಲಿ  ನಾ  ನಡೆಯ  ಕಲಿಸು ||
ಅಲ್ಲೆಲೂಯ.

ಶುಭಸಂದೇಶ: ಲೂಕ 4:31-37


ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.  ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು. ದುಷ್ಟ ದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು.  ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.  ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.  ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು. ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.



02.09.2026 - ನೀವು ದೇವರ ಪುತ್ರ

  ಮೊದಲನೇ ವಾಚನ: 1 ಕೊರಿಂಥಿಯರಿಗೆ 3:1-9 ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇ...