ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 30:1-2, 12-15, 18-22
04.08.2026 - ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. ಅವರನ್ನು ಅವರಷ್ಟಕ್ಕೇ ಬಿಡಿ
03.08.2026 - ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,
ಮೊದಲನೆಯ ವಾಚನ : ಯೆರೆಮೀಯನ ಗ್ರಂಥದಿಂದ ಇಂದಿನ ವಾಚನ 28: 1-17
ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ: "ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: 'ಬಾಬಿಲೋನಿಯದ ಅರಸನು ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ. ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡೊಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು. ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ." ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲ ಜನರ ಎದುರಿನಲ್ಲೇ ಪ್ರವಾದಿ ಹನನ್ಯನಿಗೆ: "ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ! ಆದರೆ ನಾನು, ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಗಮನಿಸು: ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ದ, ಆಪತ್ತು - ವಿಪತ್ತು, ಕಾಯಿಲೆ -ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು. ಹಿತಸಮಾಚಾರವನ್ನು ಸಾರುವ ಪ್ರವಾದಿಯೇ ಸರ್ವೇಶ್ವರನಿಂದ ನಿಜವಾಗಿ ಕಲಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೆ ತಿಳಿಯತಕ್ಕದ್ದು," ಎಂದು ಹೇಳಿದನು. ಆಗ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿದನು. ನೆರೆದಿದ್ದ ಜನರೆಲ್ಲರ ಮುಂದೆ, "ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದುಹಾಕಲಾಗುವುದು," ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು. ಹೀಗೆ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು, ಮುರಿದುಹಾಕಿದ ಮೇಲೆ ಸರ್ವೇಶ್ವರ ಯೆರೆಮೀಯನಿಗೆ ಹೀಗೆಂದರು: "ನೀನು ಹೋಗಿ ಹನನ್ಯನಿಗೆ: 'ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದು ಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು. ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇ ತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು." ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, "ಹನನ್ಯನೆ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ. ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ದವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ," ಎಂದು ಹೇಳಿದನು. ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು.
ಪ್ರಭುವಿನ ವಾಕ್ಯ
ಕೀರ್ತನೆ: 119: 29, 43, 79-80, 95, 102. v.68
ಶ್ಲೋಕ: ಪ್ರಭೂ, ಬೋಧಿಸೆನಗೆ ನಿನ್ನ ನಿಬಂಧನೆಗಳನ್ನು.
1. ಮಿಥ್ಯ ಮಾರ್ಗವನು ನನಗೆ ದೂರಮಾಡಯ್ಯಾ|
ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ||
ತೆಗೆಯಬೇಡ ನನ್ನ ಬಾಯಿಂದ ಸತ್ಯವನು|
ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು||
ಶ್ಲೋಕ
2. ನನ್ನತ್ತ ಬರಲಿ ನಿನ್ನಲಿ ಭಯಭಕ್ತಿಯುಳ್ಳವರು|
ನಿನ್ನ ಕಟ್ಟಳೆಗಳನು ಆಗ ಕಲಿತುಕೊಳ್ಳುವರು||
ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ|
ನನಗೆ ಒದಗದು ಆಗ ಆಶಾಭಂಗ, ಅವಮಾನ||
ಶ್ಲೋಕ
3. ಹೊಂಚುಹಾಕುತಿಹರು ದುರುಳರು ಸಂಹರಿಸಲೆನ್ನನು|
ನಾನೋ ನಿನ್ನ ಕಟ್ಟಳೆಗಳನು ಲಕ್ಷಿಸುತ್ತಿರುವೆನು||
ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ|
ನೀನೇ ನನಗದರ ಬೋಧನೆ ಮಾಡಿದ್ದರಿಂದ||
ಶ್ಲೋಕ
ಘೋಷಣೆ
(ಕೀರ್ತನೆ 19: 8)
ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಗ್ರಹಿಕೆ| ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ ||
ಶುಭಸಂದೇಶ :ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 14: 13-21
ಆ ಕಾಲದಲ್ಲಿ ಯೇಸು ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನ ಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪು ಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು. ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹ ಆಗಲೇ ಅಲ್ಲಿ ಸೇರಿತ್ತು. ಆ ಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು. ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, "ಇದು ನಿರ್ಜನ ಪ್ರದೇಶ. ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ." ಎಂದರು. ಅದಕ್ಕೆ ಯೇಸು, "ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ," ಎಂದರು. ಶಿಷ್ಯರು ಪ್ರತ್ಯುತ್ತರವಾಗಿ, "ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು. ಮಾತ್ರ ಇವೆ," ಎಂದರು. ಯೇಸು, "ಅವನ್ನು ಇಲ್ಲಿಗೆ ತನ್ನಿ," ಎಂದು ಹೇಳಿ, ಜನರೆಲ್ಲರೂ ಹುಲ್ಲಿನ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಮಾಡಿದರು. ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು. ಎಲ್ಲರೂ ಹೊಟ್ಟೆ ತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು. ಊಟಮಾಡಿದವರಲ್ಲಿ ಹೆಂಗಸರು, ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದು ಸಾವಿರ ಇದ್ದರು.
02.08.2026 - ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ
ಮೊದಲನೇ ವಾಚನ: ಯೆಶಾಯ 55:1-3
ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ. ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು. ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.
ಯೊವಾನ್ನನ ಮರಣದ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು. ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು. ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು. ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು. ಶಿಷ್ಯರು ಪ್ರತ್ಯುತ್ತರವಾಗಿ, “ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,” ಎಂದರು. ಯೇಸು, “ಅವನ್ನು ಇಲ್ಲಿಗೆ ತನ್ನಿ,” ಎಂದು ಹೇಳಿ, ಜನರೆಲ್ಲರೂ ಹುಲ್ಲಿನ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಮಾಡಿದರು. ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು. ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು. ಊಟ ಮಾಡಿದವರಲ್ಲಿ ಹೆಂಗಸರು, ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದು ಸಾವಿರ ಇದ್ದರು.
01.08.2026 - ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ
ಪ್ರವಾದಿ ಯೆರೆಮೀಯನ ಗ್ರಂಥ 26:11-16, 24
31.07.2026 - ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು
ಮೊದಲನೇ ವಾಚನ: ಯೆರೆಮೀಯ 26:1-9
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು; “ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ. ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು. “ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ, ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ, 6ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.” ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು. ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು. “ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.
ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾ ಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?” ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು.ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.
30.07.2026 - ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು
ಮೊದಲನೇ ವಾಚನ: ಯೆರೆಮೀಯ 18:1-6
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ. ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.” “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು. ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು. ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.
29.07.2026 - ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತು ರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು
ಮೊದಲನೇ ವಾಚನ: ಯೆರೆಮೀಯ15:10, 16-21
ಆ ಕಾಲದಲ್ಲಿ ಯೇಸು ಇನ್ನೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆ ಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಬಿಡುತ್ತಾನೆ. ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತು ರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅನಘ್ಗೃವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ."
28.07.26 - "ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು"
ಮೊದಲನೇ ವಾಚನ: ಯೆರೆಮೀಯ: 14:17-22
27.07.2026 - ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ
ಪ್ರವಾದಿ ಯೆರೇಮಿಯನ ಗ್ರಂಥದಿಂದ ವಾಚನ 13: 1-11
26.07.2026 - ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು
ಮೊದಲನೇ ವಾಚನ: ಅರಸರು 3:5, 7-12
ದೇವರಾದ ಸರ್ವೇಶ್ವರ ಆ ರಾತ್ರಿ ಗಿಬ್ಯೋನಿನಲ್ಲಿ ಸೊಲೊಮೋನನಿಗೆ ಕನಸಿನಲ್ಲಿ ಕಾಣಿಸಿಕೊಂಡು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು. ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು. ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ. ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು. ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು. ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ. ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ. ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು. ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.
ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ. ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.
25.07.2026 - ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು
ಮೊದಲನೇ ವಾಚನ: 2 ಕೊರಿಂಥಿಯರಿಗೆ 4:7-15
ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು. ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.
24.07.2026 - ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲ ಕೊಡುತ್ತಾನೆ.
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 3:14-17
ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ, “ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ: ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆ ಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ. ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.
23.07.2026 - ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು
ಮೊದಲನೇ ವಾಚನ: ಯೆರೆಮೀಯ 2:1-3, 7-8, 12-13
22.07.2026 - ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು
ಮೊದಲನೇ ವಾಚನ: ಪರಮಗೀತೆ 3:1-4
ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ
ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ.
ನಿನ್ನ ಮಂದಿರದಲಿ ನನಗಾದ ದರ್ಶನದಲಿ
ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ
ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ
ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ.
ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ
ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ
ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ
ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ.
ನನಗೆ ನೀನು ನಿರಂತರದ ಸಹಾಯಕ
ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ
ನನ್ನಾತ್ಮ ನಿನಗಾತುಕೊಂಡಿದೆ
ನಿನ್ನ ಬಲಗೈ ನನಗಿಂಬಾಗಿದೆ.
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದು ಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿ ಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದಾರೋ ಗೊತ್ತಿಲ್ಲ," ಎಂದು ಹೇಳಿದಳು. ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತ ವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತ್ತಿದ್ದರು. ಅವರು ಆಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿ ಬಿಟ್ಟಿದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು," ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು. ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, "ರಬ್ಬೂನಿ" ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ "ಗುರುದೇವಾ" ಎಂದರ್ಥ) ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆಂದು ತಿಳಿಸು," ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, "ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು," ಎಂದು ತಿಳಿಸಿದಳು.
21.07.2026 - ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ
ಮೊದಲನೇ ವಾಚನ: ಪ್ರವಾದಿ ಮೀಕನ ಗ್ರಂಥ 7:14-15, 18-20
ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು. “ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ,” ಎಂದು ಒಬ್ಬನು ತಿಳಿಸಿದನು. ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ, ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.
20.07.2026 - ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ
ಮೊದಲನೇ ವಾಚನ: ಮೀಕ 6:1-4, 6-8
ಕೆಲವು ಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."
04.08.2026 - ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. ಅವರನ್ನು ಅವರಷ್ಟಕ್ಕೇ ಬಿಡಿ
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 30:1-2, 12-15, 18-22 ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ಮತ್ತೊಮ್ಮೆ ಈ ಸಂದೇಶವನ್ನು ದಯಪಾಲಿಸಿದರು: “ಇಸ್ರಯೇಲರ ದೇವರಾ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...




























