08.01.22

 ಮೊದಲನೇ ವಾಚನ: 1 ಯೊವಾನ್ನ 5:14-21

ಪ್ರಿಯರೇ, ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ. ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ. ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ. ಅಕ್ರಮವಾದುದೆಲ್ಲವೂ ಪಾಪವೇ. ಆದರೆ ಮಾರಕವಲ್ಲದಂಥ ಪಾಪವೂ ಇದೆ. ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು. ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ದೇವರ ಪುತ್ರ ಆಗಮಿಸಿ, ಸತ್ಯ ಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ. ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.

ಕೀರ್ತನೆ: 149: 1-6, 9 v4
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು. 

ಶುಭಸಂದೇಶ: ಯೊವಾನ್ನ 3: 22-30

ಆ ಕಾಲದಲ್ಲಿ ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು. ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು. ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ. ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು. ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೋಗುತ್ತಿದ್ದಾರೆ,” ಎಂದು ದೂರಿತ್ತರು. ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು. ನಾನು ಲೋಕೋದ್ಧಾರಕನಲ್ಲ; ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ. ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.

07.01.22 - “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,”

ಮೊದಲನೇ ವಾಚನ: 1 ಯೊವಾನ್ನ 5: 5-13


ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ, ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ. ಹೀಗೆ ಪವಿತ್ರಾತ್ಮ, ಜಲ ಮತ್ತು ರಕ್ತವೆಂಬ ಮೂರು ಸಾಕ್ಷಿಗಳು ಇವೆ. ಈ ಮೂರೂ ಕೊಡುವ ಸಾಕ್ಷ್ಯ ಒಂದೇ. ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ. ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ. ದೇವರು ನಮಗೆ ನಿತ್ಯ ಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ. ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ. ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.

ಕೀರ್ತನೆ: 147: 12-15, 19-20 
ಶ್ಲೋಕ: ಜೆರುಸಲೇಮೇ, ಕೀರ್ತಿಸು ಪ್ರಭುವನು 

ಶುಭಸಂದೇಶ: ಲೂಕ 5: 12-16 



ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು. ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು. ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು. ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ಧಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು. ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.

06.01.22 - “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು"

ಮೊದಲನೇ ವಾಚನ: 1 ಯೊವಾನ್ನ 4:19-5:4

ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ. ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು? ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ. ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ. ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ. ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ. ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.

ಕೀರ್ತನೆ: 72:1-2, 14-15, 17 v.11
ಶ್ಲೋಕ: ರಾಜರುಗಳು ಸಾಷ್ಟಾಂಗವೆರಗಲಿ ಸರ್ವೇಶ್ವರಸ್ವಾಮಿಗೆ!

ಶುಭಸ೦ದೇಶ: ಲೂಕ 4:14-22


ಆ ಕಾಲದಲ್ಲಿ ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು. ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರೂ ಅವರನ್ನು ಹೊಗಳುವವರೇ! ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರ ಗ್ರಂಥವನ್ನು ಓದುವುದಕ್ಕೆ ಅವರು ಎದ್ದು ನಿಂತಾಗ, ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು: “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.” ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು. ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

05.01.22

ಮೊದಲನೇ ವಾಚನ: 1 ಯೋವಾನ್ನ 4:11-18

ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು. ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ. ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ. ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ. ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.

ಕೀರ್ತನೆ: 72:1-2, 10, 12-13 v.11
ಶ್ಲೋಕ: ರಾಜರುಗಳು ಸಾಷ್ಟಾಂಗವೆರಗಲಿ ಸರ್ವೇಶ್ವರಸ್ವಾಮಿಗೆ!

ಶುಭಸಂದೇಶ: ಮಾರ್ಕ 6:45-52

ಇದಾದಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು. ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು. ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದು ಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು. ಆಗ ಸುಮಾರು ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು. ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, “ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ,” ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು. ಆಗ ಎದುರುಗಾಳಿ ನಿಂತು ಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು. ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ. 

04.01.22 - “ನಮ್ಮಲ್ಲಿ ಐದುರೊಟ್ಟಿ ಮತ್ತು ಎರಡು ವಿೂನುಗಳಿವೆ”

ಮೊದಲನೇ ವಾಚನ: 1 ಯೋವಾನ್ನ 4:7-10


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು. ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ. ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು. ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜ ಗುಣ ತೋರಿಬರುತ್ತದೆ.

ಕೀರ್ತನೆ: 72:1-4, 7-8 v.11
ಶ್ಲೋಕ: ರಾಷ್ಟ್ರಗಳು ಸಾಷ್ಟಾಂಗವೆರಾಗಲಿ ಸರ್ವೇಶ್ವರಸ್ವಾಮಿಗೆ. 

ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ|
ಕಲಿಸು ನಿನ್ನ ನೀತಿಯನು, ರಾಜಕುವರನಿಗೆ||
ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ|
ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ||

ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ|
ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ||
ದೀನದಲಿತರನಾತ ಉದ್ಧರಿಸಲಿ|
ಬಡಬಗ್ಗರಿಗೆ ನ್ಯಾಯ ದೊರಕಿಸಲಿ|
ಪ್ರಜಾಹಿಂಸಕರನು ಸದೆಬಡಿಯಲಿ||

ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ|
ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ||
ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ|
ಮಹಾನದಿಯಿಂದ ಭುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ||

ಘೋಷಣೆ ಮತ್ತಾಯ 4:23
ಅಲ್ಲೆಲೂಯ, ಅಲ್ಲೆಲೂಯ!

ಯೇಸು ದೈವರಾಜ್ಯದ ಸಂದೇಶವನ್ನು ಪ್ರಭೋಧಿಸುತ್ತಿದ್ದರು ಮತ್ತು ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.
ಅಲ್ಲೆಲೂಯ!

ಶುಭಸ೦ದೇಶ: ಮಾರ್ಕ 6:34-44


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು, ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು. ಅಷ್ಟರಲ್ಲಿ ಸಂಜೆಯಾಗುತ್ತಾ ಬಂದಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಈಗಾಗಲೇ ಹೊತ್ತು ವಿೂರಿಹೋಯಿತು; ಇದು ನಿರ್ಜನ ಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸವಿೂಪದ ಊರುಕೇರಿಗಳಿಗೆ ಹೋಗಿ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ,” ಎಂದರು. ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು ಅದಕ್ಕೆ ಶಿಷ್ಯರು “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು. ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ, ಹೋಗಿ ನೋಡಿಕೊಂಡು ಬನ್ನಿ,” ಎಂದರು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದುರೊಟ್ಟಿ ಮತ್ತು ಎರಡು ವಿೂನುಗಳಿವೆ,” ಎಂದು ತಿಳಿಸಿದರು. ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು. ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು. ಯೇಸು ಆ ಐದು ರೊಟ್ಟಿಗಳನ್ನೂ ಎರಡು ವಿೂನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ವಿೂನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು. ಎಲ್ಲರೂ ಹೊಟ್ಟೆ ತುಂಬಾ ತಿಂದು ತೃಪ್ತರಾದರು. ಇನ್ನೂ ಉಳಿದಿದ್ದ ರೊಟ್ಟಿ ಮತ್ತು ವಿೂನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು. ಊಟ ಮಾಡಿದವರಲ್ಲಿ ಗಂಡಸರ ಸಂಖ್ಯೆಯೇ ಐದು ಸಾವಿರ.

03.01.22 - "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು"

ಮೊದಲನೇ ವಾಚನ: 1 ಯೋವಾನ್ನ 3:22-4:6

ಪ್ರಿಯರೇ, ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ. ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ಅವರ ಆಜ್ಞೆ. ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ. ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ. ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು: ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು. ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತ ವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ. ಪ್ರಿಯ ಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ. ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ. ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ. 
ಕೀರ್ತನೆ: 2:7-8, 10-11 v.8
ಶ್ಲೋಕ: ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತ್ಯವನು. 

ಶುಭಸಂದೇಶ: ಮತ್ತಾಯ 4:12-17, 23-25


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು. ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸವಿೂಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು. ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ. ಹೀಗೆ: "ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ, ಕಾರ್ಗತ್ತಲಲ್ಲಿ ವಾಸಿಸುವವರಿಗೆ ದಿವ್ಯ ಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,"ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು. ಅಂದಿನಿಂದ ಯೇಸು, "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು," ಎಂಬ ಸಂದೇಶವನ್ನು ಬೋಧಿಸತೊಡಗಿದರು. ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶ ಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು. ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆ ತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು. ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪ ತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.

02.01.22 - ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು

ಮೊದಲನೇ ವಾಚನ:ಯೆಶಾಯ: 60:1-6

ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು. ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು. ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ. ನೀ ನೋಡು ಸುತ್ತಮುತ್ತಲ ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು. ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ. ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.

ಕೀರ್ತನೆ: 72:1-2, 7-8, 10-13 v.11
ಶ್ಲೋಕ: ರಾಜರುಗಳು ಸಾಷ್ಟಾಂಗವೆರಗಲಿ  ಸರ್ವೇಶ್ವರ ಸ್ವಾಮಿಗೆ! 

1.  ತಿಳಿಸು  ನಿನ್ನ  ನ್ಯಾಯವನು  ದೇವಾ  ರಾಜನಿಗೆ|
ಕಲಿಸು  ನಿನ್ನ  ನೀತಿಯನು  ರಾಜಕುವರನಿಗೆ||
ಆತನಾಳಲಿ  ನಿನ್ನ  ಪ್ರಜೆಯನು  ನೀತಿಯಿಂದ|
ಪರಿಪಾಲಿಸಲಿ  ದೀನದಲಿತರನು  ನ್ಯಾಯದಿಂದ||

2.  ಬೆಳೆಯಲಿ  ಆತನ  ಪಾಲನೆಯಲಿ  ನ್ಯಾಯನೀತಿ|
ಬೆಳಗಲಿ  ಚಂದ್ರನಂತೆ  ಸದಾ  ಸಂಪೂರ್ಣ  ಶಾಂತಿ||
ಸಾಗರದಿಂದ  ಸಾಗರದವರೆಗಿರಲಿ  ಆತನ  ಆಧಿಪತ್ಯ|
ಮಹಾನದಿಯಿಂದ  ಭುವಿ  ಎಲ್ಲೆಯವರೆಗಿರಲಿ  ಆತನ  ಪ್ರಭುತ್ವ||

3.  ಕಪ್ಪಗಳನರ್ಪಿಸಲಿ  ತಾರ್ಷಿಷ್ ಹಾಗೂ  ದ್ವೀಪದ್ವೀಪದ  ರಾಜರುಗಳು|
ಕಾಣಿಕೆಗಳ  ತಂದೊಪ್ಪಿಸಲಿ  ಶೆಬಾ  ಹಾಗೂ  ಶೆಬಾದ  ರಾಜರುಗಳು||
ರಾಜರುಗಳು  ಸಾಷ್ಟಾಂಗವೆರಗಲಿ  ಆತನಿಗೆ|
ಘನರಾಷ್ಟ್ರಗಳು  ಸೇವೆಸಲ್ಲಿಸಲಿ  ಆತನಿಗೆ||

4.  ಏಕೆನೆ  ಕಾಪಾಡುವನಾತ  ಮೊರೆಯಿಡುವ  ಬಡವರನು|
ಉದ್ದರಿಸುವನಾತ  ದಿಕ್ಕಿಲ್ಲದ  ದೀನದಲಿತರನು||
ದೀನದರಿದ್ರರಿಗೆ  ದಯೆಯ  ತೋರುವನು|
ದಲಿತರ  ಪ್ರಾಣವನು  ಕಾಪಾಡುವನು||


ಎರಡನೇ ವಾಚನ: ಎಫೆಸಿಯರಿಗೆ 3:2-3, 5-6


ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ. ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯ ಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ. ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು; ಇದೇ ಆ ರಹಸ್ಯ.

ಶುಭಸ೦ದೇಶ: ಮತ್ತಾಯ 2:1-12


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ; ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ. ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು. “ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?" ಎಂದು ವಿಚಾರಿಸಿದರು; "ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ," ಎಂದರು. ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವೂ ಗಲಿಬಿಲಿಗೊಂಡಿತು. ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆ ಸೇರಿಸಿದನು. "ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?" ಎಂದು ಅವರನ್ನು ವಿಚಾರಿಸಿದನು. ಅದಕ್ಕೆ ಅವರು "ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ: ‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು", ಎಂದು ಪ್ರವಾದಿ ಬರೆದಿದ್ದಾನೆ" ಎಂದು ಉತ್ತರವಿತ್ತರು. ಆಗ ಹೆರೋದನು ಆ ಜ್ಯೋತಿಷಿಗಳನ್ನು ಗೋಪ್ಯವಾಗಿ ಬರಮಾಡಿಕೊಂಡು ಅವರಿಗೆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸ್ಪಷ್ಟವಾಗಿ ಕೇಳಿ ತಿಳಿದುಕೊಂಡನು. ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, "ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು", ಎಂದು ಹೇಳಿದನು. ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು. ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು. ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು. ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.

30.08.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

  ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:7-9 ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂ...