24.04.22 - "ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು"

ಮೊದಲನೆಯ ವಾಚನ: ಪ್ರೇಷಿತರಕಾರ್ಯಕಲಾಪಗಳಿಂದ 5:12-16


ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತ ಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆ ಸೇರುತ್ತಿದ್ದರು. ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ. ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು. ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು. ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು.

ಕೀರ್ತನೆ 118: 2-4, 22-27

ಶ್ಲೋಕ: ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ

ಸಾರಲಿ ಇಸ್ರಯೇಲಿನ ಜನತೆ
ಆತನ ಪ್ರೀತಿ ಶಾಶ್ವತ ಎಂದೆ
ಸಾರಲಿ ಆರೋನನ ವಂಶಲತೆ
ಆತನ ಪ್ರೀತಿ ಶಾಶ್ವತ ಎಂದೆ
ಸಾರಲಿ ಆತನ ಭಕ್ತರ ಪಂಥ
ಆತನ ಪ್ರೀತಿ ಶಾಶ್ವತ ಅಂಥ||

ಮನೆ ಕಟ್ಟುವವರು ಮೂಲೆಗೆಸೆದ ಕಲ್ಲು
ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು
ಪ್ರಭುವಿನಿಂದಲೇ ಆದ ಈ ಕಾರ್ಯ
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ!
ಪ್ರಭುವೇ ನಿಯೋಜಿಸಿದ ದಿನವಿದು
ಹರ್ಷಿಸಿ ಆನಂದಿಸೋಣ ಇಂದು||

ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು
ಸುಕ್ಷೇಮ ನೀಡು ಪ್ರಭ ಕರುಣೆಯಿಟ್ಟು
ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ
ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ
ಪ್ರಭುವೇ ದೇವನು, ನಮ್ಮ ಮೇಲೆ ಜ್ಯೋತಿಯನ್ನು ಬೆಳಗಿದವನು||

ಎರಡನೆಯ ವಾಚನ:ಪ್ರಕಟನಾಗ್ರಂಥ 1:9-13, 17-19,


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು. ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು. ಅದು ಹೀಗೆಂದು ನುಡಿಯಿತು: ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್‍ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು. ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ. ಆ ದೀಪಸ್ತಂಭಗಳ ನಡುವೆ 'ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು. ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ. ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ, ಎಂದರು.

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ನನ್ನನ್ನು ಕಂಡದ್ದರಿಂದ ತಾನೇ ನಿನಗೆ ವಿಶ್ವಾಸ ಹುಟ್ಟಿತು
ಕಾಣದೆ ವಿಶ್ವಾಸಿಸುವವರು ಧನ್ಯರು.
ಅಲ್ಲೆಲೂಯ!

ಶುಭಸಂದೇಶ: ಯೊವಾನ್ನ 20:19-31


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. ನಿಮಗೆ ಶಾಂತಿ ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನಃ, ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ, ಎಂದರು. ಅನಂತರ ಅವರ ಮೇಲೆ ಉಸಿರೂದಿ, ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು; ಯಾರ ಪಾಪಗಳನ್ನು ನೀವು ಕ್ಷಮಿಸದೆ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು, ಎಂದು ನುಡಿದರು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸುಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು ನಾವು ಪ್ರಭುವನ್ನು ನೋಡಿದೆವು, ಎಂದು ಹೇಳಿದರು. ಅದಕ್ಕೆ ಅವನು, ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು, ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ, ಎಂದುಬಿಟ್ಟನು. ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, ನಿಮಗೆ ಶಾಂತಿ ಎಂದರು. ಆಮೇಲೆ ತೋಮನಿಗೆ, ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು; ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು, ಎಂದು ಹೇಳಿದರು. ಆಗ ತೋಮನು, ನನ್ನ ಪ್ರಭುವೇ, ನನ್ನ ದೇವರೇ, ಎಂದನು. ಯೇಸು ಅವನಿಗೆ ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು, ಎಂದು ಹೇಳಿದರು. ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ: ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.

23.04.22 - " ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯವನ್ನು ಕುರಿತು ಮೌನದಿಂದಿರಲಾಗದು."

ಮೊದಲನೆಯ ವಾಚನ

ಪ್ರೇಷಿತರ  ಕಾರ್ಯಕಲಾಪಗಳಿಂದ  ವಾಚನ  4:13-21 

ಅವಿದ್ಯಾವಂತರು  ಹಾಗೂ  ಜನ  ಸಾಮಾನ್ಯರು  ಆಗಿದ್ದರೂ,  ಪ್ರೇಷಿತರು  ಇಷ್ಟು  ಧೈರ್ಯಶಾಲಿಗಳಾಗಿರುವುದನ್ನು  ಕಂಡು  ಸಭೆಯ  ಸದಸ್ಯರು  ಚಕಿತರಾದರು,  ಯೇಸುವಿನ  ಸಂಗಡಿಗರೆಂದು  ಇವರ  ಗುರುತುಹಚ್ಚಿದರು.  ಗುಣಹೊಂದಿದ್ದ  ಆ  ಮನುಷ್ಯನು  ಪೇತ್ರ  ಮತ್ತು  ಯೊವಾನ್ನರ  ಜೊತೆ  ನಿಂತಿರುವುದನ್ನು  ಕಂಡು  ನಿರುತ್ತರರಾದರು.   ಸಭಾಕೂಟದಿಂದ  ಪ್ರೇಷಿತರನ್ನು  ಹೊರಗೆ  ಕಳುಹಿಸಿ  ತಮ್ಮೊಳಗೆ  ಚರ್ಚಿಸಲಾರಂಭಿಸಿದರು: " ಇವರನ್ನು  ಏನು  ಮಾಡೋಣ?  ಇವರು  ಮಾಡಿರುವ  ಅಪರೂಪ  ಅದ್ಬುತ  ಜೆರುಸಲೇಮಿನ  ಸರ್ವರಿಗೂ  ತಿಳಿದು  ಹೋಗಿದೆ. ಅದನ್ನು  ಅಲ್ಲಗಳೆಯುವಂತಿಲ್ಲ. ಆದರೂ,  ಈ  ಸಮಾಚಾರ  ಜನರಲ್ಲಿ  ಮತ್ತಷ್ಟು  ಹರಡದಂತೆ  ಇನ್ನು  ಮೇಲೆ  ಯಾರ  ಬಳಿಯಲ್ಲೂ   ಯೇಸುವಿನ  ಹೆಸರೆತ್ತದಂತೆ  ಇವರಿಗೆ  ಎಚ್ಚರಿಕೆ  ಕೊಡೋಣ, " ಎಂದುಕೊಂಡರು.   ಅನಂತರ  ಪ್ರೇಷಿತರನ್ನು  ಒಳಕ್ಕೆ  ಕರೆದು, " ಇನ್ನು  ಮುಂದೆ  ಯೇಸುವಿನ  ಹೆಸರೆತ್ತಿ  ಮಾತನಾಡಬಾರದು, ಬೋಧಿಸಕೂಡದು, "ಎಂದು  ಕಟ್ಟಪ್ಪಣೆ  ಮಾಡಿದರು.  ಆಗ  ಪೇತ್ರ  ಮತ್ತು  ಯೊವಾನ್ನರು, " ನಾವು  ದೇವರಿಗೆ  ವಿಧೇಯರಾಗಬೇಕೋ?  ನಿಮಗೆ  ವಿಧೇಯರಾಗಿಬೇಕೋ?  ದೇವರ  ದೃಷ್ಟಿಯಲ್ಲಿ  ಯಾವುದು ಸರಿ?  ನೀವೇ  ನಿರ್ಣಯಿಸಿರಿ.   ನಾವಂತೂ  ಕಣ್ಣಾರೆ  ಕಂಡು  ಕಿವಿಯಾರೆ  ಕೇಳಿದ  ವಿಷಯವನ್ನು  ಕುರಿತು  ಮೌನದಿಂದಿರಲಾಗದು, " ಎಂದು  ಬದಿಲು  ನುಡಿದರು.  ನಡೆದ  ಅದ್ಬುತಕ್ಕಾಗಿ  ಜನರೆಲ್ಲರೂ  ದೇವರನ್ನು  ಕೊಂಡಾಡುತ್ತಿದ್ದರು.  ಇದನ್ನು  ಅರಿತ  ಆ  ಸಭಾಸದಸ್ಯರಿಗೆ  ಪ್ರೇಷಿತರನ್ನು  ಶಿಕ್ಷಿಸುವ  ಮಾರ್ಗ  ತೋಚದೆ  ಹೋಯಿತು.  ಆದುದರಿಂದ  ಅವರನ್ನು  ಇನ್ನೂ  ಅಧಿಕವಾಗಿ  ಎಚ್ಚರಿಸಿ  ಕಳುಹಿಸಿಬಿಟ್ಟರು.

ಕೀರ್ತನೆ                        118:1, 14-21 

ಶ್ಲೋಕ:   ಸದುತ್ತರವನ್ನು ಪಾಲಿಸಿದ   ಪ್ರಭೂನಿನಗೆ  ವಂದನೆ.


1.  ಸಲ್ಲಿಸಿ  ನೀವೆಲ್ಲ  ಪ್ರಭುವಿಗೆ  ಧನ್ಯವಾದ

ಆತ  ಒಳ್ಳೆಯವಆತನ  ಪ್ರೀತಿ  ಶಾಶ್ವತ||

ಪ್ರಭುವೇ  ನನಗೆ  ಬಲವುಧೈರ್ಯವು|

ಆತನಿಂದಲೇ  ನನಗೆ  ಉದ್ಧಾರವು||

ಜಯಘೋಷಹರ್ಷಸುನಾದ 

ಸಜ್ಜನರ  ಬಿಡಾರದಿಂದ|

ಪರಾಕ್ರಮಪ್ರದರ್ಶನ  ಪ್ರಭುವಿನ  ಬಲಗೈಯಿಂದ||

ಶ್ಲೋಕ

2.  ವಿಜಯ  ಸಾಧನ  ಪ್ರಭುವಿನಾ  ಬಲಗೈಯಿಂದ|

ಪರಾಕ್ರಮಪ್ರದರ್ಶನವೂ  ಅದರಿಂದ||

ಸಾಯೆನುಜೀವದಿಂದಿರುವೆನು ನಾನು|

ಪ್ರಭುವಿನ  ಕಾರ್ಯಗಳನು  ಸಾರುವೆನು||

ಗುರಿಪಡಿಸಿಹನು  ಎನ್ನನ್ನು  ಪ್ರಭು  ಕಠಿಣ  ಶಿಕ್ಷೆಗೆ|

ಆದರೂ  ಗುರಿಮಾಡಲಿಲ್ಲ  ಎನ್ನನ್ನು  ಮರಣಕೆ||

 

ಶ್ಲೋಕ

 

3.  ತೆರೆಯಿರಿ  ಎನಗೆ  ನೀತಿದ್ವಾರಗಳನು|

ಒಳನುಗ್ಗಿ  ಹೊಗಳುವೆನು  ಪ್ರಭುವನು||

ಇದುವೇ  ದ್ವಾರ  ಪ್ರಭುವಿನ  ಮಂದಿರಕೆ|

ಇದುವೇ  ಪ್ರವೇಶಮಾರ್ಗ  ಸಜ್ಜನರಿಗೆ||

ಸದುತ್ತರ  ಪಾಲಿಸಿದ  ಪ್ರಭೂನಿನಗೆ  ವಂದನೆ|

ಉದ್ಧಾರ  ಮಾಡಿದೆನಿನಗೆ  ಕೃತಜ್ಞತಾ  ವಂದನೆ||

 

ಶ್ಲೋಕ

 

ಘೋಷಣೆ                ಕೀರ್ತನೆ 118:24

 

ಅಲ್ಲೆಲೂಯ, ಅಲ್ಲೆಲೂಯ ! ಪ್ರಭುವೇ  ನಿಯೋಜಿಸಿದ  ದಿನವಿದು | ಹರ್ಷಿಸಿ  ಆನಂದಿಸೋಣ  ಇಂದು || ಅಲ್ಲೆಲೂಯ !

 

ಸಂತ  ಮಾರ್ಕನು  ಬರೆದ  ಪವಿತ್ರ  ಶುಭಸಂದೇಶ - 16:9-15



ಭಾನುವಾರ  ಮುಂಜಾನೆ  ಪುನರುತ್ಥಾನ  ಹೊಂದಿದ  ಯೇಸು,  ಮೊತ್ತಮೊದಲು  ಮಗ್ದಲದ  ಮರಿಯಳಿಗೆ  ಕಾಣಿಸಿಕೊಂಡರು.  ಅವರು  ಏಳು  ದೆವ್ವಗಳನ್ನು  ಹೊರಗಟ್ಟಿದ್ದು  ಈಕೆಯಿಂದಲೇ. ಈಕೆ  ಹೋಗಿ  ತಾನು  ಕಂಡದ್ದನ್ನು  ಯೇಸುವಿನ  ಸಂಗಡಿಗರಿಗೆ  ತಿಳಿಸಿದಳು.  ಅವರಾದರೋ  ಇನ್ನೂ  ಶೋಕಭರಿತರಾಗಿ  ಅಳುತ್ತಾ  ಕುಳಿತಿದ್ದರು.  ಆದರೆ  ಯೇಸು  ಜೀವಂತರಾಗಿದ್ದಾರೆ  ಮತ್ತು  ಆಕೆಗೆ  ಕಾಣಿಸಿಕೊಂಡಿದ್ದಾರೆ  ಎಂಬ  ವಾರ್ತೆಯನ್ನು  ಕೇಳಿದಾಗ  ಅವರು  ಅದನ್ನು  ನಂಬಲೇ  ಇಲ್ಲ.  ತರುವಾಯ,  ಹಳ್ಳಿಯೊಂದಕ್ಕೆ  ಪ್ರಯಾಣ  ಮಾಡುತ್ತಿದ್ದ  ತಮ್ಮ  ಇಬ್ಬರು  ಶಿಷ್ಯರಿಗೆ  ಯೇಸು  ಇನ್ನೊಂದು  ರೀತಿಯಲ್ಲಿ  ಕಾಣಿಸಿಕೊಂಡರು. ಇವರಿಬ್ಬರೂ  ಹಿಂದುರುಗಿ  ಬಂದು,  ಮಿಕ್ಕ  ಶಿಷ್ಯರಿಗೆ  ಇದನ್ನು  ತಿಳಿಸಿದರು.  ಆದರೆ  ಅದನ್ನು  ಅವರು  ನಂಬದೆ  ಹೋದರು.  ಅನಂತರ,  ಹನ್ನೊಂದು  ಮಂದಿ  ಶಿಷ್ಯರು  ಊಟ ಮಾಡುತ್ತಿದ್ದಾಗ  ಯೇಸು  ಪ್ರತ್ಯಕ್ಷರಾದರು.  ತಾವು  ಪುನರುತ್ಥಾನ  ಹೊಂದಿದ  ಮೇಲೆ,  ತಮ್ಮನ್ನು  ಕಂಡವರ  ಮಾತನ್ನು  ಅವರು  ನಂಬಿದಿದ್ದ  ಕಾರಣ  ಅವರ  ಅವಿಶ್ವಾವನ್ನೂ  ಹೃದಯ  ಕಾಠಿಣ್ಯವನ್ನೂ  ಯೇಸು  ಖಂಡಿಸಿದರು.  ಬಳಿಕ  ಅವರಿಗೆ,  " ನೀವು  ವಿಶ್ವದ  ಎಲ್ಲೆಡೆಗಳಿಗೂ  ಹೋಗಿ,  ಜಗತ್ತಿಗೆಲ್ಲಾ  ಶುಭಸಂದೇಶವನ್ನು  ಪ್ರಬೋಧಿಸಿರಿ, " ಎಂದರು.

ಮನಸ್ಸಿಗೊಂದಿಷ್ಟು : ಯೇಸುವಿನ ಪುನರುತ್ಥಾನ ದೈವ ಯೋಜಿತವಾದುದೇ ಆದರೂ ಅಂದಿನ ಯೇಸುವಿನ ಆಪ್ತರೇ ಅದನ್ನು ಮೊದಮೊದಲು ನಂಬಲಿಲ್ಲ ಎನ್ನುವುದನ್ನು ಇಂದಿನ ಶುಭ ಸಂದೇಶ ಹೇಳುತ್ತದೆ. ಯೇಸುವನ್ನು ಕಣ್ಣಾರೆ ಕಂಡವರು ಹೇಳಿದರೂ ಅವರು ನಂಬದೆ ಹೋದದ್ದನ್ನು ಯೇಸುವೇ ಖಂಡಿಸುತ್ತಾರೆ. ನಮ್ಮ ಮೇಲೂ ಪ್ರಭುವಿನ ಪುನರುತ್ಥಾನ ಬೀರಿರುವ ಪ್ರಭಾವವೇನು ಎಂದು ನಾವು ಕೇಳಿಕೊಳ್ಳಬೇಕಾಗುತ್ತದೆ. ಅಂದು ಶಿಷ್ಯರಿಗೆ ಸಹಜವಾದ ಭಯವಿತ್ತು, ಗೊಂದಲಗಳಿದ್ದವು, ಅಜ್ಞಾನವಿತ್ತು, ನಂಬಲು ಅಡ್ಡ ಗೋಡೆಗಳಿದ್ದವು.  ಆದರೆ ನಮಗೆ ಪುನರುತ್ಥಾನದ ಬಗ್ಗೆ ಪೂರ್ಣ ಜ್ಞಾನವನ್ನು ಶುಭಸಂದೇಶ ನೀಡಿದೆ. ನಮ್ಮ ಹೃದಯವು ಕ್ರಿಸ್ತನ ಪುನುರುತ್ಥಾನವನ್ನು ಒಪ್ಪಿಕೊಳ್ಳಲು  ವಿಶ್ವಾಸವೊಂದೇ ಕೊರತೆ. ಶಿಷ್ಯರು, ಆಪ್ತರು ಮೊದಲು ನಂಬಲಿಲ್ಲ, ಆದರೆ ನಂಬಿದ ಮೇಲೆ ಒಂದು ಕ್ಷಣವೂ ಸುಮ್ಮನಿರಲಿಲ್ಲ. ಯೇಸುವನ್ನು , ಅವರ ಪುನರುತ್ಥಾನವನ್ನು ಇಡೀ ವಿಶ್ವಕ್ಕೆ ಸಾರಿದರು. ವಿಶ್ವದ  ಎಲ್ಲೆಡೆಯಲ್ಲೂ    ಶುಭಸಂದೇಶವನ್ನು  ಪ್ರಬೋಧಿಸಿರಿ" ಯೇಸುವಿನ ಮಾತು ಮೊದಲು ನಮ್ಮ ಹೃದಯದಲ್ಲಿ ಸಾಕಾರಗೊಳ್ಳಬೇಕು. 

22.04.22 - ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 4:1-12


ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು. ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೋಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು. ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು. ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಿದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು. ಪ್ರಧಾನ ಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನ ಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು. ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, " ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ ? " ಎಂದು ಪ್ರಶ್ನಿಸಿದರು. ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು : "ಜನರ ಅಧಿಕಾರಿಗಳೇ, ಪ್ರಮುಖರೇ, ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ : ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ. ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಆವರನ್ನು ಪುನಲುಗೊಳಿಸಿದ್ದಾರೆ. 'ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು' ಎಂದು ಬರೆದಿರುವುದು ಇವರನ್ನು ಕುರಿತೇ. ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ."

ಕೀರ್ತನೆ 118:1-2, 4, 22-27.
ಶ್ಲೋಕ: ಮನೆಕಟ್ಟುವವರು ಮೂಲೆಗೆಸದ ಕಲ್ಲು, ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು.

ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ|
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ||
ಸಾರಲಿ ಇಸ್ರಯೇಲಿನ ಜನತೆ|
ಆತನ ಪ್ರೀತಿ ಶಾಶ್ವತ ಎಂದೇ||
ಸಾರಲಿ ಆತನ ಭಕ್ತರ ಪಂಥ|
ಆತನ ಪ್ರೀತಿ ಶಾಶ್ವತ ಅಂಥ||

ಮನೆಕಟ್ಟುವವರು ಮೂಲೆಗೆಸದ ಕಲ್ಲು|
ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು||
ಪ್ರಭುವಿನಿಂದಲೇ ಆದ ಈ ಕಾರ್ಯ|
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ||
ಪ್ರಭುವೇ ನಿಯೋಜಿಸಿದ ದಿನವಿದು|
ಹರ್ಷಿಸಿ ಆನಂದಿಸೋಣ ಇಂದು ||

ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು|
ಸುಕ್ಷೇಮ ನೀಡು ಪ್ರಭೂ ಕರುಣೆಯಿಟ್ಟು||
ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ||
ಪ್ರಭುವೇ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು ||

ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ ! ಪ್ರಭುವೇ ನಿಯೋಜಿಸಿದ ದಿನವಿದು| ಹರ್ಷಿಸಿ ಆನಂದಿಸೋಣ ಇಂದು | ಅಲ್ಲೆಲೂಯ !

ಶುಭಸಂದೇಶ: ಯೊವಾನ್ನ 21:1-14


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು: ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿದ್ದರು. ಆಗ ಸಿಮೋನ ಪೇತ್ರನು, " ನಾನು ಮೀನು ಹಿಡಿಯಲು ಹೋಗುತ್ತೇನೆ, " ಎಂದನು. ಮಿಕ್ಕವರು, " ನಾವೂ ನಿಮ್ಮೊಡನೆ ಬರುತ್ತೇವೆ, " ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ. ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು.  ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ. ಯೇಸು ಅವರಿಗೆ, " ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೆ? " ಎಂದು ಕೇಳಿದರು. " ಏನೂ ಇಲ್ಲ, " ಎಂದರು ಅವರು. " ದೋಣಿಯ ಬಲಗಡೆ ಬಲೆ ಬೀಸಿರಿ, ಮೀನುಗಳು ಸಿಗುತ್ತವೆ, " ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬೆಲೆಯನ್ನು ಎಳೆಯಲೂ ಆಗದೆ ಹೋಯಿತು. ಆಗ ಯೇಸುವಿನ ಆಪ್ತ ಶಿಷ್ಯನು ಪೇತ್ರನಿಗೆ, " ಅವರೇ ಪ್ರಭೂ " ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿಧನು. ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬೆಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು. ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು. ಯೇಸು ಅವರಿಗೆ, " ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ, " ಎಂದು ಹೇಳಿದರು. ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದು ತಂದನು. ಬಲೆಯ ತುಂಬ ದೊಡ್ಡ ಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವರಿಗೆ, " ಬಂದು ಊಟಮಾಡಿ, " ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, " ನೀವು ಯಾರು ? " ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.

ಯೇಸು ಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು, ಹಾಗೆಯೇ ಮೀನನ್ನೂ ಕೊಟ್ಟರು. ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

21.04.22 - " ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?"

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 3:11-26

'ಸೊಲೊಮೋನನ ಮಂಟಪ ' ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಗುಣಹೊಂದಿದ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು. ಇದನ್ನು ನೋಡಿ ಪೇತ್ರನು ಇಂತೆಂದನು: "ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾದಿದೆವೆಂದು ಭಾವಿಸುತ್ತೀರೋ ? ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕರಿಸಿದಿರಿ. ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ. ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ, ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು. ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ. "ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ. ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ. ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು. ಸರ್ವೇಶ್ವರನ ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು, ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು ಕಳುಹಿಸುವರು.  ಸಮಸ್ತವನ್ನೂ ಪುನರ್ ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ. 'ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು. ಆ ಪವಾದಿಗೆ ಕಿವಿಗೊಡದವನು ದೇವಜನರಿಂದ ದಖರವಾಗಿ ನಾಶವಾಗುತ್ತಾನೆ, ' ಎಂದು ಮೋಶೆ ಹೇಳಿದ್ದಾನೆ. ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ. ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು,. ಪೂರ್ವಜ ಅಬ್ರಹಾಮನಿಗೆ, 'ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು' ಎಂದಿದ್ದಾರೆ ದೇವರು. ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ. ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ."

ಕೀರ್ತನೆ 8:1, 4-8
ಶ್ಲೋಕ: ಪ್ರಭೂ, ಓ ನಮ್ಮ ಪ್ರಭೂ, ಎನಿತು ಮಹಿಮಾನ್ವಿತ , ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ.

ಪ್ರಭೂ, ಓ ನಮ್ಮ ಪ್ರಭೂ, ಎನಿತು ಮಹಿಮಾನ್ವಿತ|
ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ||
ಇಂತಿರಲು ಮನುಜನು ಎಷ್ಟರವನು ನೀನವನನು ಲಕ್ಷಿಸಲು?|
ಏತರದವನು ನರಮಾನವನು ನೀನವನನು ಪರಾಮರಿಸಲು?||

ಆದರೆ ದೇವದೂತರಿಗಿಂತ ಕಿಂಚಿತ್ತೇ ಕೀಳಾಗಿಸಿದೆ ಮನುಜನನು|
ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು||
ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ|
ಒಳಪಡಿಸಿದೆ ಸಕಲವನು ಅವನ ಪಾದದಡಿಗೆ||

ಕುರಿಗಳನು, ಕರುಗಳನು, ಕಾಡುಮೃಗಗಳನು|
ಗರಿಗಳನು, ಮೀನುಗಳನು, ಜಲಚರಗಳನು|
ಕರಗತ ಮಾಡಿದೆ ನೀ ಅವನಿಗೆಲ್ಲವನು||

ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ ! ಪ್ರಭುವೇ ನಿಯೋಜಿಸಿದ ದಿನವಿದು | ಹರ್ಷಿಸಿ ಆನಂದಿಸೋಣ ಇಂದು || ಅಲ್ಲೆಲೂಯ!

ಶುಭಸಂದೇಶ ವಾಚನ: ಲೂಕ 24:35-48


ಆ ಕಾಲದಲ್ಲಿ ಶಿಷ್ಯರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದುಕೊಡುವಾಗ ಯೇಸುವನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿ ಮಾಡಿದರು. ಅವರು ವರದಿಮಾಡುತ್ತಿದ್ದಂತೆ ಯೇಸುವೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, 'ನಿಮಗೆ ಶಾಂತಿ' ಎಂದರು. ಅವರೆಲ್ಲರೂ ಚಕಿತರಾಗಿ, ದಿಗಿಲಕೂಗೊಂಡು, ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿದರು. ಆಗ ಯೇಸು, " ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ, " ಎಂದರು. (ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು). ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, " ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ? " ಎಂದು ಕೇಳಿದರು. ಹುರಿದ ಮೀನಿನ ತುಂಡೊಂದನ್ನು ಶಿಷ್ಯರು ಕೊಟ್ಟರು. ಯೇಸು ಅದನ್ನು ತೆಗೆದುಕೊಂಡು ಅವರ ಎದುರಿಗೇ ತಿಂದರು. ತರುವಾಯ ಯೇಸು, " ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು, "ಎಂದರು. ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ದಿಯನ್ನು ವಿಕಾಸಗೊಳಿಸಿದರು. ಅನಂತರ, " ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು, ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು. ಇದಕ್ಕೆಲ್ಲಾ ನೀವೇ ಸಾಕ್ಷಿಗಳು, " ಎಂದು ಹೇಳಿದರು.

ಮನಸ್ಸಿಗೊಂದಿಷ್ಟು - ಪಾಸ್ಕ ಕಾಲ : ಯೇಸು ಇಲ್ಲಿ ಶಿಷ್ಯರಿಗೆ ಕಾಣಿಸಿಕೊಂಡಾಗ ಆದ ಸುಂದರ ರೂಪಾಂತರವನ್ನು ನಾವು ಕಾಣಬಹುದು. ಯೇಸುವನ್ನು ಕಂಡ ಶಿಷ್ಯರು ಮೊದಲು ಭಯಭೀತರಾಗುತ್ತಾರೆ, ನಂತರ ಆಶ್ಚರ್ಯಗೊಳ್ಳುತ್ತಾರೆ, ಆನಂದಗೊಳ್ಳುತ್ತಾರೆ, ಯೇಸುವಿನಿಂದ ತಮ್ಮ ಬುದ್ದಿಯನ್ನು ವಿಕಾಸಗೊಳಿಸಿಕೊಳ್ಳುತ್ತಾರೆ. ಕೊನೆಗೆ ಇಡೀ ವಿಶ್ವದ ಜನಾಂಗಕ್ಕೆ ಶುಭ ಸಂದೇಶವನ್ನು ಸಾರುವ ಜವಾಬ್ದಾರಿ ಪಡೆಯುಯುತ್ತಾರೆ. ಎಂತಹ ಸುಂದರ ರೂಪಾಂತರ?. ನಮ್ಮ ಭಯಗಳಲ್ಲಿ, ಗೊಂದಲಗಳಲ್ಲಿ , ಸಂಶಯಗಳಲ್ಲಿ, ದುಃಖದಲ್ಲಿ ನಾವು ಭರವಸೆ ಕಳೆದುಕೊಳ್ಳದೆ "ಏಕೆ ಕಳವಳ ಪಡುತ್ತೀರಿ" ಎನ್ನುವ ಯೇಸುವಿನ ಮಾತಿನಲ್ಲೇ ಸದಾ ನಮ್ಮ ಸಮಾಧಾನವನ್ನು ಹುಡುಕುವುದೇ ಸರಿಯಲ್ಲವೇ? ಶುಭಸಂದೇಶವನ್ನು ಸಾರುವ ಆಜ್ಞೆ  ಶಿಷ್ಯರಿಗೇ ಮಾತ್ರವೇ ಕೊನೆಯಾಗಲಿಲ್ಲ, ನಮ್ಮಲ್ಲೂ ಅದನ್ನೇ ಯೇಸು ಬಯಸುತ್ತಿದ್ದಾರೆ.   
          

20.04.22

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 3:1-10

ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು. ' ಸುಂದರ ದ್ವಾರ ' ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಬಿಕ್ಷೆ ಬೇಡುತ್ತಿದ್ದನು. ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆಕೊಡಬೇಕೆಂದು ಬೇಡಿದನು. ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು, " ಎಲ್ಲಿ, ನಮ್ಮನ್ನು ನೋಡು, " ಎಂದನು. ಕುಂಟನು ಅವರಿಂದ ಬಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು. ಆದರೆ ಪೇತ್ರನು, " ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ, ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ " ಎನ್ನುತ್ತಾ, ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯ ಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು. ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು. ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು. ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆ ಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.

ಕೀರ್ತನೆ 105:1-5, 7-9.
ಶ್ಲೋಕ: ಹೆಮ್ಮೆಪಡಿ, ನೆನೆದಾತನ ಶ್ರೀನಾಮ, ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ.

ಸಲ್ಲಿಸಿ ಪ್ರಭುವಿಗೆ ಕೃತಜ್ಞತಾ ಸ್ತೋತ್ರವನು|
ಮಾಡಿರಿ ಆತನ ನಾಮಸ್ಮರಣೆಯನು ||
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು ||
ಹಾಡಿ ಪಾಡಿ ಹೊಗಲಿರಿ ಪ್ರಭುವನು |
ಧ್ಯಾನಿಸಿ ನೀವು ಆತನ ಪವಾಡಗಳನು ||

ಹೆಮ್ಮೆಪಡಿ, ನೆನೆದಾತನ ಶ್ರೀನಾಮ |
ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ ||
ಅರಸಿರಿ ಪ್ರಭುವನೂ ಆತನ ಶಕ್ತಿಯನೂ |
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು ||

ಆತನ ದಾಸ ಅಬ್ರಹಾಮನ ಸಂತತಿಯವರೇ |
ಆತನಾರಿಸಿಕೊಂಡ ಯಕೋಬನ ವಂಶದವರೇ ||
ಪ್ರಭು ನಮ್ಮ ದೇವನೆಂಬುದು ಶ್ರುತ |
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ ||

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು |
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು ||
ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು |
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು||

ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ !
ಪ್ರಭುವೇ ನಿಯೋಜಿಸಿದ ದಿನವಿದು, ಹರ್ಷಿಸಿ ಆನಂದಿಸೋಣ ಇಂದು|| ಅಲ್ಲೆಲೂಯ!

ಶುಭಸಂದೇಶ: ಲೂಕ 24:13-35

ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು. ಇತ್ತಿಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆಮಾಡುತ್ತಾ ನಡೆಯುತ್ತಿದ್ದರು. ಹೀಗೆ ಮಾತನಾಡಿಕೊಂಡು ಚರ್ಚೆ ಮಾಡುತ್ತಾ ಹೋಗುತ್ತಿರುವಾಗ, ಯೇಸುವೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು. ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ, ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು. " ನೀವು ತರ್ಕ ಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ? " ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು. ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, " ಇತ್ತಿಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ, ನಿನಗೊಬ್ಬನಿಗೇ ಅವು ತಿಳಿಯದೆ ? " ಎಂದನು. " ಏನು ನಡೆಯಿತು ? " ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, " ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು. ನಮ್ಮ ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿ ಶಿಲುಬೆಗೆ ಜಡಿಸಿದರು. ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟು ಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರುದಿನಗಳಾಗಿವೆ. ಆದರೂ ಆದರೂ ನಮ್ಮಲ್ಲಿ ಕೆಲವು ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು. ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದುರಿಗಿ ಬಂದು, ' ನಮಗೆ ದೇವದೂತರು ಪ್ರತ್ಯಕ್ಷರಾದರು, ಇವರು ಯೇಸು ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು, ' ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು. ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಒಳಗೆ ನೋಡಿದರು, ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುವನ್ನು ಮಾತ್ರ ಕಾಣಲಿಲ್ಲ " ಎಂದರು. ಆಗ ಯೇಸು " ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು! ಕಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತಲ್ಲವೇ? " ಎಂದರು. ಆನಂತರ ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು. ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸು ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು. ಆಗ ಶಿಷ್ಯರು, " ಸಂಜೆಯಾಯಿತು, ಕತ್ತಲಾಗುತ್ತ ಬಂದಿತು, ಬಂದು ನಮ್ಮೊಡನೆ ತಂಗಿರಿ, " ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು. ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು. ಆಗಲೇ ಶಿಷ್ಯರ ಕಣ್ಣುಗಳು ತೆರೆದವು, ಯೇಸುವನ್ನು ಗುರುತು ಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಶಿಷ್ಯರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ಪವಿತ್ರಗ್ರಂಥದ ಅರ್ಥವನ್ನು. ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಿತ್ತಲ್ಲವೇ? ಎಂದುಕೋಂಡರು. ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು. " ಪ್ರಭು ಜೀವಂತರಾಗಿ ಎದ್ದಿರುವುದು ನಿಜ! ಅವರು ಸಿಮೋನನಿಗೆ ಕಾಣಿಸಿಕೊಂಡರು, " ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು. ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದುಕೊಡುವಾಗ ಯೇಸುವನ್ನು ತಾವು ಗುರುತು ಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿ ಮಾಡಿದರು.

19.04.22

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ 2:36-41

ಪೇತ್ರನು ಜನಸಮೂಹವನ್ನು ಉದ್ದೇಶಿಸಿ ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: " ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಪ್ರಭುವನ್ನಾಗಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸೀದ್ದಾರೆ. " ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, " ಸಹೋದರರೇ, ಈಗ ನಾವು ಮಾಡಬೇಕಾದುದು ಏನು? " ಎಂದು ಕೇಳಿದರು. ಅದಕ್ಕೆ ಪೇತ್ರನು, " ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ, ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ, ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ, " ಎಂದನು. ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. 'ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ, ' ಎಂದು ಎಚ್ಚರಿಸಿದನು. ಅವನ ಬೋಧನೆಯನ್ನು ಅಂಗಿಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೋಂಡರು.

ಕೀರ್ತನೆ 33:4-5, 18-20,22.
ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು.

ಸತ್ಯವಾದುದು ಆತನ ಪವಿತ್ರ ವಾಕ್ಯ |
ಸ್ತುತ್ಯವಾದುದು ಆತನ ಪುನೀತ ಕಾರ್ಯ ||
ಸತ್ಯಸಂಧನು ನ್ಯಾಯಪ್ರಿಯನು ಆತನು |
ಅಚಲ ಪ್ರೀತಿಯಿಂದ ಜಗವನು ತುಂಬಿಹನು||

ಪ್ರಭುವಾದರೋ ಕಟಾಕ್ಷಿಸುವನು ತನಗಂಜಿನಡೆದವರನು|
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು ||
ತಪ್ಪಿಸುವನವರ ಪ್ರಾಣವನು ಮರಣದಿಂದ |
ಉಳಿಸುವನು ಜೀವವನು ಕ್ಷಾಮಡಾಮರದಿಂದ ||

ಕಾದಿದೆ ಎನ್ನ ಮನ ಪ್ರಭುವಿಗಾಗಿ |
ಆತನಿಹನು ಎನಗೆ ಗುರಾಣಿಯಾಗಿ ||
ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ |
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ ||

ಘೋಷಣೆ ಕೀರ್ತನೆ 118:24

ಅಲ್ಲೆಲೂಯ, ಅಲ್ಲೆಲೂಯ !
ಪ್ರಭುವೇ ನಿಯೋಜಿಸಿದ ದಿನವಿದು | ಹರ್ಷಿಸಿ ಆನಂದಿಸೋಣ ಇಂದು ||
ಅಲ್ಲೆಲೂಯ ಅಲ್ಲೆಲೂಯ!

ಶುಭಸಂದೇಶ: ಯೊವಾನ್ನ 20:11-18

ಆ ಕಾಲದಲ್ಲಿ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು. ಅವರು ಆಕೆಯನ್ನು, " ಏಕಮ್ಮಾ ಅಳುತ್ತಿರುವೇ ? " ಎಂದು ಕೇಳಿದರು. " ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿಟ್ಟಿದ್ದಾರೋ ತಿಳಿಯದು, " ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, " ಏಕಮ್ಮಾ ಅಳುತ್ತಿರುವೇ ? ಏನನ್ನು ಹುಡುಕುತಿರುವೇ ? " ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ, ನಾನು ತೆಗೆದುಕೊಂಡು ಹೋಗುತ್ತೇನೆ, " ಎಂದು ಹೇಳಿದಳು. ಆಗ ಯೇಸು, " ಮರಿಯಾ " ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, " ರಬ್ಬೂನಿ " ಎಂದಳು. ( ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ " ಗುರುದೇವಾ " ಎಂದರ್ಥ ). ಯೇಸು ಆಕೆಗೆ " ನನ್ನನ್ನು ಹಿಡಿದುಕೊಂಡಿರಬೇಡ. ನಾನು ಇನ್ನೂ ಪಿತನ ಬಳಿಗೆ ಏರಿಹೋಗುವುದಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ' ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆ ಎಂದು ತಿಳಿಸು, " ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, " ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲ ಹೇಳಿದರು, " ಎಂದು ತಿಳಿಸಿದಳು.

18.04.22 - "ನಿಮಗೆ ಶುಭವಾಗಲಿ!"

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 2:14, 22-33


ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: "ಯೆಹೂದ್ಯ ಸ್ವಜನರೇ, ಜೆರಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. ಇಸ್ರಯೇಲ್ ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸು ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಬುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ. ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ,  ಕೊಲ್ಲಿಸೀದಿರಿ. ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ-ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು. ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ:
'ಪ್ರಭು ಇಹನು ಎನ್ನ
ಕಣ್ಮುಂದೆ ಸತತ,
ನಾ ಹೆದರದಂತೆ ಆತನಿಹನು
ಎನ್ನ ಹತ್ತಿರ.
ಇದಕಾರಣ ಹರ್ಷಿಸಿತು
ಎನ್ನ ಹೃದಯ,
ತುಳುಕಿತು ಸಂತಸ ಎನ್ನ
ನಾಲಗೆಯಿಂದ,
ನಂಬಿ ನಿರೀಕ್ಷೆಯಿಂದಿರು
ವುದು ಎನ್ನ ಮರ್ತ್ಯದೇಹ.
ಏಕೆನೆ, ದೂಡಲಾರೆ
ಪಾತಾಳಕೆ ನೀನೆನ್ನ
ಜೀವಾತ್ಮವನು.
ಕೊಳೆಯಬಿಡಲಾರೆ
ನೀನೊಲಿದಾತನನು.
ಅಮರ ಜೀವಮಾರ್ಗವನೆನಗೆ
ತೋರ್ಪಡಿಸಿದೆ,
ನಿನ್ನ ಶ್ರೀ ಸಾನ್ನಿಧ್ಯ
ಸಂತಸದಿಂದೆನ್ನ
ಭರಿತನಾಗಿಸುವೆ.'
"ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಥಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು, ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ. ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ. ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: 'ಆತನನ್ನು ಪಾತಾಳಕ್ಕೆ ದೂಡಲಿಲ್ಲ, ದೇಹ ಕೊಳೆತುಹೋಗಲು ಬಿಡಲಿಲ್ಲ. ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸೀದ್ದಾರೆ, ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಯೇಸು ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು."

ಕೀರ್ತನೆ 16:1-2, 5, 7-11
ಶ್ಲೋಕ: ನೀಡು ದೇವಾ ರಕ್ಷಣೆಯನು, ನಾ ನಿನಗೆ ಶರಣಾಗತನು.


ನೀಡು ದೇವಾ ರಕ್ಷಣೆಯನು|
ನಾ ನಿನಗೆ ಶರಣಾಗತನು||
"ನೀನೇ ನನ್ನೊಡೆಯ" ಎಂದು ನಾ ನುಡಿದೆ|
ನಿನ್ನ ಹೊರತು ನನಗಿಲ್ಲ ಒಳಿತು ಎಂದೆ||
ನನ್ನ ಸ್ವತ್ತೂ ಸ್ವಾಸ್ಥ್ಯವೂ ನೀನೇ|
ನಿನ್ನ ಕೈಯಲ್ಲಿದೆ ಪ್ರಭೂ, ನನ್ನ ವಿಮೆ||

ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ|
ಅಂದಕಾರದೊಳೂ ನನ್ನ ಮನಸ್ಸಾಕ್ಷಿಯೇ ನನಗೆ ಬೋಧಕ||
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ|
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ?||

ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ|
ಆನಂದಗೊಂಡಿದೆ ಮನ ಸುರಕ್ಷಿತವಿದೆ ಕಾಯ||
ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ|
ಬಿಟ್ಟುಕೊಡುವುದಿಲ್ಲ ನಿನ್ನ ಈ ಭಕ್ತನನು ಪಾತಾಳಕೆ||

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು|
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು|
ನಿನ್ನ ಬಲಗೈ ನೀಡುವುದು ಭಾಗ್ಯವನು||

ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ ! ಪ್ರಭುವೇ ನಿಯೋಜಿಸಿದ ದಿನವಿದು | ಷರ್ಷಿಸಿ ಆನಂದಿಸೋಣ ಇಂದು || ಅಲ್ಲೆಲೂಯ !

ಶುಭಸಂದೇಶ: ಮತ್ತಾಯ 28:8-15



ಆ ಕಾಲದಲ್ಲಿ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು. ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, "ನಿಮಗೆ ಶುಭವಾಗಲಿ! ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು. ಆಗ ಯೇಸು ಅವರಿಗೆ, "ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ, " ಎಂದು ಹೇಳಿದರು. ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲಕಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯ ಯಾಜಕರಿಗೆ ವರದಿ ಮಾಡಿದರು. ಇವರು ಪ್ರಮುಖರೊಂದಿಗೆ ಸಭೆ ಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚ ಕೊಟ್ಟು, " ಅವನ ಶಿಷ್ಯರು ರಾತ್ರಿ ವೇಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದ ಕೊಂಡು ಹೋದರೆಂದು ಜನರಿಗೆ ಹೇಳಿರಿ, ಈ ಸುದ್ದಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನ ಪಡಿಸುತ್ತೇವೆ, ನಿಮಗೇನೂ ಆಗದಂತೆ ನೋಡಿಕೊಳ್ಳುತ್ತೇವೆ, "ಎಂದು ಹೇಳಿದರು. ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿ ಕೋಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...