05.09.22 - “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು.

ಮೊದಲನೇ ವಾಚನ: 1 ಕೊರಿಂಥಿಯರಿಗೆ 5:1-8 

ಸಹೋದರರೇ,  ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ. ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ? ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ. ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ. ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು. ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ. ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ. ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.

ಕೀರ್ತನೆ: 5:5-6, 7, 12

ಶ್ಲೋಕ: ಸತ್ಯಪಥದಲಿ ನಡೆಸೆನ್ನನು ದೇವಾ

ಶುಭಸಂದೇಶ: ಲೂಕ 6:6-11

ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು ಸಬ್ಬತ್ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು. ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು. ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಸಂತ ಮರಿಯಮ್ಮನವರ ಗೀತೆಗಳು - ಚಿಗುರು ಬಳಗ 




04.09.22 - "ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ":

ಮೊದಲನೇ ವಾಚನ: ಸುಜ್ಞಾನ ಗ್ರಂಥ 9:13-18

ದೇವರ ಸಂಕಲ್ಪವನ್ನು ಅರಿಯಬಲ್ಲವನಾರು? ಸರ್ವೇಶ್ವರನ ಚಿತ್ತವೇನೆಂದು ಗ್ರಹಿಸಬಲ್ಲವನಾರು? ಮರ್ತ್ಯ ಮಾನವರ ವಿವೇಚನೆ ಅಸಮರ್ಪಕವಾದುದೇ ನಮ್ಮ ಯೋಜನೆಗಳೆಲ್ಲ ಕೈಗೂಡದೆ ಹೋಗುವಂಥವೇ. ಈ ನಶ್ವರ ದೇಹ ಅಂತರಾತ್ಮವನ್ನು ಕುಗ್ಗಿಸುತ್ತದೆ ಈ ಮಣ್ಣಿನ ಗುಡಾರ, ಚಿಂತಾಭರಿತ ಮನಕ್ಕೊಂದು ಭಾರವೇ. ಧರೆಯ ಮೇಲಿನ ವಿಷಯಗಳನ್ನು ತಿಳಿಯುವುದೆಷ್ಟೋ ಕಷ್ಟಕರ  ಕೈಗೆಟಕುವುಗಳನ್ನೇ ಕಂಡರಿತುಕೊಳ್ಳುವುದು ಎಷ್ಟೋ ಪ್ರಯಾಸಕರ. ಇಂತಿರಲು, ಸ್ವರ್ಗದಲ್ಲಿರುವುದನು ಬದಲಿಗೆ ತರಲು ಯಾರು ಸಮರ್ಥ? ನೀವು ನಿಮ್ಮ ಸುಜ್ಞಾನವನ್ನು ಅನುಗ್ರಹಿಸದೆ ಹೋಗಿದ್ದರೆ ನಿಮ್ಮ ಪವಿತ್ರಾತ್ಮನನ್ನು ಸ್ವರ್ಗದಿಂದ ಕಳುಹಿಸದೆ ಹೋಗಿದ್ದರೆ ನಿಮ್ಮ ಸಂಕಲ್ಪವನ್ನು ಯಾರಾದರು ಅರಿಯುತ್ತಿದ್ದರೇ? ಹೀಗೆ ಲೋಕದ ಮಾರ್ಗಗಳನ್ನು ತಿದ್ದಲಾಯಿತು, ನಿಮಗೆ ಮೆಚ್ಚುಗೆಯಾದುದನು ಜನರಿಗೆ ಕಲಿಸಲಾಯಿತು, ಸುಜ್ಞಾನದಿಂದಲೇ ಅವರಿಗೆ ರಕ್ಷಣೆ ಲಭಿಸುವಂತಾಯಿತು.

ಕೀರ್ತನೆ: 90:3-6, 12-13, 14, 17

ಶ್ಲೋಕ: ಪ್ರಭು, ತಲತಲಾಂತರಕ್ಕೆ ಶ್ರೀನಿವಾಸ ನೀನೆಮಗೆ

ಎರಡನೇ ವಾಚನ: ಫಿಲೆಮೋನನಿಗೆ 1:9-10, 12-17

ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿಮ್ಮಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲಿ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯ ಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಕಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನಿನಗಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ. ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ. ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ, ಅದಕ್ಕಿಂತಲೂ ಬಹಳ  ಮೇಲಾದವನಂತೆ, ಕ್ರಿಸ್ತ ಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ? ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನೂ ಸ್ವಾಗತಿಸು.

ಶುಭಸಂದೇಶ: ಲೂಕ 14:25-33


ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: "ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ- ಮಕ್ಕಳು, ಸೋದರ- ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನುನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, "ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!" ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.

03.09.22 - "ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,”

ಮೊದಲನೇ ವಾಚನ: 1 ಕೊರಿಂಥಿಯರಿಗೆ  4: 6-15

ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ವಿೂರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು. ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ? ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು! ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ. ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ದಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು! ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ. ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ. ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು! ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು. ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.

ಕೀರ್ತನೆ:  145:17-18, 19-20, 21

ಶ್ಲೋಕ: ಹತ್ತಿರ ಇಹನು ಪ್ರಭು ಕರೆಯುವಾವರೆಲ್ಲರಿಗೆ

ಶುಭಸಂದೇಶ: ಲೂಕ 6:1-5

ಒಂದು ಸಬ್ಬತ್ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು. ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್ತಿನ ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು. ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ? ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ? ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.


02.09.22 - “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ?"

ಮೊದಲನೇ ವಾಚನ: 1 ಕೊರಿಂಥಿಯರಿಗೆ 4:1-5

ಸಹೋದರರೇ, ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ. ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ. ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ. ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ. ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.

ಕೀರ್ತನೆ: 37:3-4, 5-6, 27-28, 39-40

ಶ್ಲೋಕ: ಸಜ್ಜನರ ಜೀವೋದ್ಧಾರ ಪ್ರಭುವಿನಿಂದ 

ಶುಭಸಂದೇಶ: ಲೂಕ 5:33-39


ಕೆಲವರು ಯೇಸುಸ್ವಾಮಿ ಬಳಿಗೆ ಬಂದು, “ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.  ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು. ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.  ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.  ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.  ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.

01.09.22 - ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ

ಮೊದಲನೆಯ ವಾಚನ: 1 ಕೊರಿಂಥಿಯರಿಗೆ  3:18-23


ಸಹೋದರರೇ, ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ. ಇಹಲೋಕದ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. " ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು " ಎಂದೂ " ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ " ಎಂದೂ ಲಿಖಿತವಾಗಿದೆಯಲ್ಲವೆ? ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ. ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ -- ಇವರಾಗಲಿ; ಜಗತ್ತು, ಜೀವ, ಮರಣ -- ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ. ಆದರೆ ನೀವು ಕ್ರಿಸ್ತ ಯೇಸುವಿಗೆ ಸೇರಿದವರು; ಕ್ರಿಸ್ತ ಯೇಸು ದೇವರಿಗೆ ಸೇರಿದವರು.

ಕೀರ್ತನೆ 24:1-6

ಶ್ಲೋಕ: ಜಗವೂ ಅದರ ಜೀವಜಂತುಗಳೆಲ್ಲವೂ ಪ್ರಭುವಿನದೇ.

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಪ್ರಭುವಿನ ಶಿಖರವನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||
ಅಂಥವನಿರಬೇಕು ಶುದ್ಧ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||

ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಫಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶುಭಸಂದೇಶ: ಲೂಕ 5:1-11


ಆ ಕಾಲದಲ್ಲಿ ಯೇಸು ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. ಬೋಧನೆ ಮುಗಿದದ್ದೇ ಸಿಮೋನನಿಗೆ, " ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ, " ಎಂದರು, ಅದಕ್ಕೆ ಸಿಮೋನನು, " ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದು ಹೋಗುವುದರಲ್ಲಿದ್ದವು. ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆ ಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಇದನ್ನು ಕಂಡ ಸಿಮೋನ್ ಪ್ರೇತ್ರನು ಯೇಸುವಿನ ಕಾಲಿಗೆ ಬಿದ್ದು, " ಪ್ರಭೂ, ನಾನು ಪಾಪಾತ್ಮ; ನನ್ನಿಂದ ದೂರವಿರಿ! " ಎಂದನು. ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು -- ಯಕೋಬ ಮತ್ತು ಯೊವಾನ್ನರು -- ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, " ಹೀದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ, " ಎಂದರು. ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನೂ ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.

18.08.22 ಸಂತ ಸ್ಮರಣೆ - ಸಂತ ಹೆಲೆನಾ

ಸಂತ ಸ್ಮರಣೆ  - ಸಂತ ಹೆಲೆನಾ St.Helen


 ಕ್ರೈಸ್ತ ಧರ್ಮಕ್ಕೆ ಒಂದು ಅದ್ಭುತ ತಿರುವನ್ನು ಕೊಟ್ಟು ಅದು ಒಂದು ರಾಷ್ಟ್ರದ ಧರ್ಮವಷ್ಟೇ ಆಗದೇ ವಿಶ್ವಕ್ಕೆ ವ್ಯಾಪಿಸಿದ ಕೀರ್ತಿ ಹೇಗೆ ಪ್ರೇಷಿತರಿಗೆ ಸಲ್ಲಬೇಕೋ ಹಾಗೆಯೇ ಅರಸ ಕಾನ್ ಸ್ಟಾಂಟೈನ್ ಗೂ ಸಲ್ಲಬೇಕು. ಈ ಕಾನ್ ಸ್ಟಾಂಟೈನ್ ಮಹಾರಾಜನ ತಾಯಿಯೇ ಹೆಲೆನಾ. ಏಷ್ಯಾದ ಬಡ ಕುಟುಂಬ ಒಂದರಿಂದ ಬಂದ ಹೆಲೆನಾ ಕಾನ್ ಸ್ಟಾಂಟಿಯುಸ್ ಕ್ಲೋರುಸ್ ಎಂಬ ಸೈನ್ಯಾಧಿಕಾರಿಯನ್ನು ಮದುವೆ ಯಾದಳು. 21 ವರ್ಷಗಳ ನಂತರ ಅವಳ ಅದೃಷ್ಟವೋ ದುರಾದೃಷ್ಟವೋ ಸೈನ್ಯಾಧಿಕಾರಿ ಕ್ಲೋರೋಸ್ ಅರಸನಾದ. ಇದರ ಬೆನ್ನಲ್ಲೇ ರಾಜತಾಂತ್ರಿಕ ಕಾರಣಗಳಿಗಾಗಿ ಹೆಲೆನಾ ಗೆ ವಿಚ್ಛೇದನ ನೀಡಿದ. ಒಬ್ಬನೇ ಮಗ ಕಾನ್ ಸ್ಟಾಂಟೈನ್ ತನ್ನ ತಾಯಿಗೆ ನಿಷ್ಠನಾಗಿದ್ದ ಅವಳನ್ನು ಗಾಢವಾಗಿ ಪ್ರೀತಿಸುತ್ತಿದ್ದ. ತನ್ನ ತಂದೆಯ ನಂತರ ಸಿಂಹಾಸನ ಏರಿದಾಗ ಕಾನ್ ಸ್ಟಾಂಟೈನ್  ತನ್ನ ತಾಯಿಗೆ ಮಹಾರಾಣಿಯ ಪಟ್ಟ ಕಟ್ಟಿದ. 

313 ರಲ್ಲಿ ಮಾಕ್ಸೆಂತಿಯುಸ್ ವಿರುದ್ಧ ಕಾನ್ ಸ್ಟಾಂಟೈನ್ ಜಯಶಾಲಿಯಾದ ನಂತರ ಹೆಲೆನಾ ಕೂಡ ಕ್ರೈಸ್ತ ಧರ್ಮದ ದೀಕ್ಷೆ ಸ್ವೀಕರಿಸಿದರು. ಮಹಾರಾಣಿ ಪಟ್ಟ, ಆಕೆಯ ಧಾರ್ಮಿಕ ಕಾಳಜಿ ಮತ್ತು ವಿಶ್ವಾಸದ ಕಾರಣ ಕ್ರೈಸ್ತ ಧರ್ಮ ವ್ಯಾಪಕವಾಗಿ ಹಬ್ಬಲು ಆಕೆ ಕಾರಣಳಾದಳು. ಯುರೋಪ್ ನಲ್ಲಿ ಅನೇಕ ಚರ್ಚುಗಳನ್ನು ಸ್ಥಾಪಿಸಿ, ತನ್ನ 75ನೇ ವಯಸ್ಸಿನಲ್ಲಿ ಆಕೆಯ ಪವಿತ್ರ ನಾಡಿಗೆ ಪ್ರಯಾಣಿಸಿ ಬೆತ್ಲೆಹೆಮಿನಲ್ಲಿ ಯೇಸು ಹುಟ್ಟಿದ ಸ್ಥಳದ ಪಕ್ಕ ಮತ್ತು ಜೆರುಸಲೇಮಿನಲ್ಲಿ ಯೇಸು ಸ್ವರ್ಗಾರೋಹಣವಾದ ಸ್ಥಳದ ಹತ್ತಿರ ದೇವಾಲಯಗಳನ್ನು ಕಟ್ಟಿಸಿದರು.

 ತನ್ನ ಮಗ ಕಂಡದ್ದಲ್ಲ, ತಾನೇ 'ನಿಜವಾದ ಶಿಲುಬೆ'ಯನ್ನು ಕಂಡ ನಂತರ ಹೆಲೆನಾ ತನ್ನ ರೋಮ್ ನ ಅರಮನೆಯನ್ನು ಸಾಂತಾ ಕ್ರೂಸ್ ದೇವಾಲಯವನ್ನಾಗಿ ಪರಿವರ್ತಿಸಿದಳು. ಸಂತ ಹೆಲೆನಾ ಮರಣಶಯ್ಯೆಯಲ್ಲಿರು ವವರ ಮತ್ತು ಸೂಜಿ ಮತ್ತು ಮೊಳೆಗಳನ್ನು ತಯಾರಿಸುವವರ ಪಾಲಕಿ ಎಂದು ವಿಶ್ವಾಸಿಸಲಾಗಿದೆ

08.08.22 - ಸಂತ ಸ್ಮರಣೆ - ಸಂತ ಡೊಮಿನಿಕ್ - St.Dominic

 ಸಂತ ಡೊಮಿನಿಕ್ St.Dominic🙏


ಒಂದು ಕನಸು ಮತ್ತು ಒಂದು ದೃಶ್ಯ. ಪಾಪದಿಂದ ಉರಿಯುತ್ತಿದ್ದ ಈ ಲೋಕದ ಮೇಲೆ ದೇವರ ಮಹಾನ್ ಕೋಪ. ಆದರೆ ಮಾತೆ ಮರಿಯ ದೇವರಲ್ಲಿ ಪ್ರಾರ್ಥಿಸಿ ಭೂಮಿಯ ಮೇಲಿನ ಇಬ್ಬರು ವ್ಯಕ್ತಿಗಳ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ. ಮಾರನೆಯ ದಿನ ಈ ವ್ಯಕ್ತಿ ದೇವಾಲಯದಲ್ಲಿ ಚಿಂದಿಬಟ್ಟೆ ಹುಟ್ಟಿದ ಇನ್ನೊಬ್ಬ ವ್ಯಕ್ತಿಯನ್ನು ಕಾಣುತ್ತಾನೆ. 

ತಾನು ಕನಸಿನಲ್ಲಿ ಕಂಡಿದ್ದು ಇದೇ ವ್ಯಕ್ತಿ. ಆತನ ಬಳಿಗೆ ಹೋಗಿದ್ದೇ ಆ ವ್ಯಕ್ತಿಯನ್ನು ಅಪ್ಪಿಕೊಂಡು ಹೇಳುತ್ತಾನೆ:"ನೀನು ನನ್ನ ಸಂಗಾತಿ, ನನ್ನ ಜೊತೆ ನಡೆಯಬೇಕು. ನಾವಿಬ್ಬರೂ ಒಟ್ಟಿಗಿದ್ದರೆ ಜಗತ್ತಿನ ಯಾವ ಶಕ್ತಿಯೂ ನಮ್ಮನ್ನು ಎದುರಿಸಲಾರದು." ಹೀಗೆ ಹೇಳಿದ ವ್ಯಕ್ತಿಯೇ ಸಂತ ಡೊಮಿನಿಕ್. ಚಿಂದಿ ಬಟ್ಟೆಲ್ಲಿದ್ದವರು ಅಸಿಸ್ಸಿಯ ಸಂತ ಫ್ರಾನ್ಸಿಸ್. ಸಮಕಾಲೀನ ಸಂಗಾತಿಗಳಾದ ಈ ಇಬ್ಬರು ಸಂತರು ವಿಶ್ವದಲ್ಲೇ ಪ್ರಖ್ಯಾತವಾದ 'ಡೊಮಿನಿಕನ್ಸ್' ಮತ್ತು 'ಫ್ರಾನ್ಸಿಸ್ಕನ್ಸ್' ಎಂಬ ಪ್ರಸಿದ್ಧ ಧಾರ್ಮಿಕ ಸಭೆಗಳ ಸ್ಥಾಪಕರಾಗಿ ವಿಶ್ವವಿಖ್ಯಾತರಾದರು.

ಸ್ಪಾನಿಷ್ ಭಾಷೆಯಲ್ಲಿ 'ಡೊಮಿಂಗೊ' ಎಂದರೆ 'ನಾನು ದೇವರಿಗೆ ಸೇರಿದವನು' ಎಂದರ್ಥ. ಈ 'ಡೊಮಿಂಗೋ ಮತ್ತಾರೂ ಅಲ್ಲ, ಶ್ರೀಮಂತ ಕುಲಿನ ಪೆಲಿಕ್ಸ್ ದೆ ಗುಸ್ ಮಾನ್ ಮತ್ತು ಜೋವಾನ್ ಆಫ್ ಆಜಾ ಇವರ ಪುತ್ರ ಡೊಮಿನಿಕ್. 1170 ರಲ್ಲಿ ಸ್ಪೇನ್ ದೇಶದ ಕಾಸ್ಟಿಲ್ಲೆ ಎಂಬಲ್ಲಿ ಹುಟ್ಟಿದ ಡೊಮಿನಿಕ್ ಅಗಸ್ಟಿನಿಯನ್ ನ ಫ್ರೈಯರ್ಸ ಎಂಬ ಸಭೆ ಸೇರಿ ಧರ್ಮಗುರುವಾಗುತ್ತಾರೆ.

ಇಷ್ಟಾದರೂ ಅವರಿಗೆ ನಿಜವಾದ ಆಧ್ಯಾತ್ಮ ಸೆಳೆತ ಬಂದದ್ದು 1203ರಲ್ಲಿ. ಒಮ್ಮೆ ತನ್ನ ಧರ್ಮಾಧ್ಯಕ್ಷ ಡಿಯೇಗೋ ಇವರ ಜೊತೆ ಡೆನ್ ಮಾರ್ಕ್ ಗೆ ಪ್ರಯಾಣ ಮಾಡುತ್ತಿದ್ದಾಗ 'ಆಲ್ಬಿಜೆನ್ಸಸ್' ಎಂಬ ಒಂದು ಪಾಷಂಡಿ ಸಂಪ್ರದಾಯ ವಿರೋಧಿ ಪಂಥದ ಪರಿಚಯವಾಗುತ್ತದೆ. ಈ ಆಲ್ಬಿಜೆನ್ಸ್ ಎರಡು ತತ್ವಗಳನ್ನು ನಂಬಿದ್ದರು. ಅದು ಒಳಿತು ಮತ್ತು ಕೆಡುಕು. ಆತ್ಮ ಒಳಿತು ಮತ್ತು ದೇಹ ಕೆಡುಕಾದ್ದರಿಂದ ದೇಹಕ್ಕೆ ಸಂಬಂಧಪಟ್ಟ ಎಲ್ಲವನ್ನೂ ಅವರು ತಿರಸ್ಕರಿಸುತ್ತಿದ್ದರು, ಇಲ್ಲವೇ ನಿರ್ಲಕ್ಷಿಸುತ್ತಿದ್ದಾರು. ದೇಹ ಕೆಡುಕು ಎನಿಸಿಬಿಟ್ಟಿದ್ದರಿಂದ ಅವರು ಸಂತಾನವೃದ್ಧಿಗೆ ಮುಂದಾಗುತ್ತಿರಲಿಲ್ಲ. 

ಜೊತೆಗೆ ಆದಷ್ಟು ಕಡಿಮೆ ಅನ್ನ ಪಾನೀಯಗಳನ್ನು ಸ್ವೀಕರಿಸುತ್ತಿದ್ದರು. ಈ ತತ್ವದ ಆಧಾರದ ಮೇಲೆ ದೇಹ ಮತ್ತು ಆತ್ಮದ ನಡುವೆ ನಿರಂತರ ಸಂಘರ್ಷವಿರುತ್ತಿತ್ತು. ಈ ಕಾರಣದಿಂದ ಅವರು ದೇವರು ಮನುಷ್ಯರಾದದ್ದುನ್ನು ಮತ್ತು ಧರ್ಮಸಭೆಯ ಸಂಸ್ಕಾರಗಳನ್ನು ನಂಬುತ್ತಿರಲಿಲ್ಲ. ಇದೆಲ್ಲದರ ಪರಿಣಾಮವಾಗಿ, ಈ ಆಲ್ಬಿಜೆನ್ಸ್ ಪಂಥದವರು ಕಠಿಣ ವೃತ ಮತ್ತು ತಪಸ್ಸಿನ ಜೀವನ ಶೈಲಿ ಅಳವಡಿಸಿಕೊಂಡಿದ್ದರಿಂದ ಬಹಳಷ್ಟು ಸಾಮಾನ್ಯ ಜನ ಇವೆರೆಡೆಗೆ ಆಕರ್ಷಿತರಾಗಿದ್ದರು. ಈ ಪಂಥ ಪ್ರಸಿದ್ಧ ವಾಗುತ್ತಾ ಬಂತು.

ಈ ಪಂಥದ ತತ್ವ ಮತ್ತು ಸಿದ್ಧಾಂತಗಳ ವಿರುದ್ಧ ಜನರಿಗೆ ತಿಳುವಳಿಕೆ ನೀಡಿ ಹೊರಹೋದವರನ್ನು ಮತ್ತೆ ಧರ್ಮಕ್ಕೆ ಸೆಳೆಯಲು ಜಗದ್ಗುರು ಮೂರನೇ ಇನ್ನೊಸೆಂಟ್ ಒಂದು ವಿಶೇಷ ಬೋಧಕ ಮಾರ್ಗವನ್ನು ಸ್ಥಾಪಿಸುತ್ತಾರೆ. ಜಗದ್ಗುರುಗಳ ಈ ಆದೇಶವನ್ನು ಗಂಭೀರವಾಗಿ ತೆಗೆದುಕೊಂಡ ಡೊಮಿನಿಕ್ ಮತ್ತು ಅವರ ಧರ್ಮಾಧ್ಯಕ್ಷರು ಈ ಪಾಷಂಡಿ ಪಂಥವನ್ನು ಎದುರಿಸಲು ಅವರದೇ ತತ್ವ ಅನುಸರಿಸಿ ಕಠಿಣ ತಪಸ್ಸಿನ ಜೀವನ ನಡೆಸುವುದರಿಂದ ಮಾತ್ರ ಸಾಧ್ಯ ಎಂಬ ನಿಲುವಿಗೆ ಬರುತ್ತಾರೆ. ಕಾರಣ ಈ ಪಂಥದ ಗುರುಗಳು ಕಠಿಣ ಜೀವನ ನಡೆಸುತ್ತಿದ್ದರೆ ಕಥೋಲಿಕ ಗುರುಗಳನ್ನು ಐಷಾರಾಮ ಜೀವನವಾಗಿತ್ತು. ಬೋಧನೆ ಮತ್ತು ಪಾಲನಾ ಕಾರ್ಯಕ್ಕೆ ಕುದುರೆಗಳ ಮೇಲೆ ಸಾಗುತ್ತಿದ್ದುದಲ್ಲದೆ, ಸಾಕಷ್ಟು ಸೇವಕರು ಮತ್ತು ನೌಕರವರ್ಗ ಹೊಂದಿದ್ದು, ಅತಿಥಿ ಗೃಹಗಳಲ್ಲೇ ಅವರು ಬಿಡಾರ ಹೂಡುತ್ತಿದ್ದರು.

ಹೀಗೆ ಕಥೋಲಿಕ ಗುರುಗಳಿಗೆ ಹೊಸ ಜೀವನ ಶೈಲಿ ಅಳವಡಿಸಿ ಹಿನ್ನಲೆಯಲ್ಲಿ ಸ್ವತಃ ತಾವೇ ಬೋಧನೆ ಮಾಡಲು ಪ್ರಾರಂಭಿಸುತ್ತಾರೆ ಡೊಮಿನಿಕ್. ತಮ್ಮ ಹೊಸತನದ ಬೋಧನೆ ಪರಿಣಾಮಕಾರಿಯಾಗಿ ಅನೇಕರು ಮತ್ತೆ ಕಥೋಲಿಕ ಧರ್ಮಕ್ಕೆ ಬರುತ್ತಾರೆ. ಹೀಗೆ ಆ ಪಂಥದಿಂದ ಹೊರಬಂದ ಮಹಿಳೆಯರಿಗಾಗಿ ಡೊಮಿನಿಕ್ ಒಂದು ಕನ್ಯಾ ಸ್ತ್ರೀ ಮಠವನ್ನು ಸ್ಥಾಪಿಸುತ್ತಾರೆ. 1215 ರಲ್ಲಿ ಟೂಲೌಸ್ ಎಂಬ ಊರಿನಲ್ಲಿ ಧರ್ಮಕ್ಷೇತ್ರಗಳ ಬೋಧಕರು(Diocesan Preachers) ಎಂಬ ಬೋಧಕ ಗುರುಗಳ ಸಭೆಯನ್ನು ಪ್ರಾರಂಭಿಸುತ್ತಾರೆ. ಈ ಗುರುಗಳಿಗೆ ತಪಸ್ಸು, ದೈವ ಶಾಸ್ತ್ರದಲ್ಲಿ ನೈಪುಣ್ಯತೆ ಮತ್ತು ನೈತಿಕ ಜೀವನ ಮಾದರಿಯನ್ನಾಗಿಡುತ್ತಾರೆ. ಮುಂದೆ ಈ ಸಭೆ 'ಡೊಮಿನಿಕನ್ ಧಾರ್ಮಿಕ ಸಭೆ' ಎಂದು ಹೊಸದಾಗಿ ನಾಮಕರಣ ಗೊಳ್ಳುತ್ತದೆ.

1221, ಆಗಸ್ಟ್ 6ರಂದು ಸಂತ ಡೊಮಿನಿಕ್ ತಮ್ಮ ಅಂತಿಮ ಯಾತ್ರೆ ಕೈಗೊಳ್ಳುವ ಸಂದರ್ಭದಲ್ಲಿ ಡೊಮಿನಿಕನ್ ಸಭೆ ಬಹಳಷ್ಟು ಪ್ರಸಿದ್ಧಿ ಪಡೆದು ಇಟಲಿ, ಫ್ರಾನ್ಸ್, ಇಂಗ್ಲೆಂಡ್, ಪೋಲೆಂಡ್, ಸ್ಪೇನ್ ಮುಂತಾದ ರಾಷ್ಟ್ರಗಳಲ್ಲಿ ಪ್ರಬಲವಾಗಿ ಹಬ್ಬಿತ್ತು. ಸಂತ ಡೊಮಿನಿಕ್ ರ ಆಕರ್ಷಕ ವ್ಯಕ್ತಿತ್ವ, ಸತ್ಯದ ಪ್ರೇಮ, ಕರ್ತವ್ಯಪ್ರಜ್ಞೆ, ಜಪಸರದ ಬಗೆಗಿನ ವಿಶೇಷ ಭಕ್ತಿ, ಪಾಪಿಯೆನಿಸಿಕೊಂಡವನ ಮೇಲೆ ಆದರದ ಪ್ರೀತಿ, ಅವರ ಪರಿಶುದ್ಧತೆಗೆ ಮತ್ತು ಬೋಧನೆಗೆ ಸೂಕ್ಷ್ಮ ವೇದಿಕೆಯನ್ನು ಒದಗಿಸಿತ್ತು.

1234,ಜುಲೈ 3ರಂದು ಸಂತ ಡೊಮಿನಿಕ್ ರ ಕಾರ್ಯವನ್ನು ಹತ್ತಿರದಿಂದ ಕಂಡಿದ್ದ ಜಗದ್ಗುರು 9ನೇ ಗ್ರೆಗೊರಿ ಇವರನ್ನು ಸಂತ ಪದವಿಗೆ ಏರಿದರು. ಈ ಸಮಯದಲ್ಲಿ ಉದ್ಘೋಷ ಮಾಡಿದ ಜಗದ್ಗುರು "ಸಂತ ಪೇತ್ರ ಮತ್ತು ಪೌಲರಿಗಿಂತ ಕಡಿಮೆ ಪರಿಶುದ್ಧತೆಯನ್ನು ಇವರಲ್ಲಿ ನಾನು ಕಂಡಿಲ್ಲ" ಎಂದರು. ಡೊಮಿನಿಕ್ ಕರಿಗೋ ಫ್ರಾನ್ಸಿಸ್ಕರಿಗೂ ಇಂದಿಗೂ ವಿಶೇಷ ನಂಟಿದೆ. ಇಬ್ಬರೂ ಸಂತರ ಹಬ್ಬಗಳಲ್ಲಿ ಒಟ್ಟಿಗೆ ಸೇರಿ ಪೂಜೆ ಅರ್ಪಿಸುವ ರೂಢಿ ಹಲವು ಕಡೆಯಿದೆ.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...