02.02.23 - “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು"

ಮೊದಲನೆಯ ವಾಚನ - ಮಲಾಕಿ 3: 1-4

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.” “ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು? ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನು ಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”
ಪ್ರಭುವಿನ ವಾಕ್ಯ

ಕೀರ್ತನೆ: 24: 7-10
ಶ್ಲೋಕ: ಯಾರಿವನು ಮಹಿಮಾವಂತ ರಾಜಾಧಿರಾಜನು? ಇವನೇ ಪ್ರಭು.

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಸೇನಾಧೀಶ್ವರನು, ಮಹಿಮಾರಾಜನು II

ಎರಡನೆಯ ವಾಚನ - ಹಿಬ್ರಿಯರಿಗೆ 2: 14-18

ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.
ಪ್ರಭುವಿನ ವಾಕ್ಯ

ಶುಭಸಂದೇಶ - ಲೂಕ 2: 22-40 


ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮ ಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:
“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು
ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.
ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ
ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.
ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ
ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”
ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,” ಎಂದು ಹೇಳಿದನು. ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು. ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.

ಪ್ರಭುವಿನ ಶುಭಸಂದೇಶ

01.02.23

ಮೊದಲನೆಯ ವಾಚನ - ಹಿಬ್ರಿಯರಿಗೆ 12: 4-7, 11-15

ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ. ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; 
ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.” ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ? ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ. ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ. ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ. ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ. ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.
ಪ್ರಭುವಿನ ವಾಕ್ಯ

ಕೀರ್ತನೆ - 103: 1-2, 13-14, 17-18
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I

ನೆನೆ ಆತನ ಪರಮಪಾವನ ನಾಮವನು II
ಭಜಿಸು ನನ್ನ ಮನವೇ, ಭಜಿಸು ಪ್ರಭುವನು I

ಮರೆಯದಿರು ಆತನ ಉಪಕಾರಗಳೊಂದನು II
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I

ಕನಿಕರಿಸುವನಾತ ತನಗೆ ಅಂಜುವವರಿಗೆ II
ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I

ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I

ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II
ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I
ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II

ಶುಭಸಂದೇಶ - ಮಾರ್ಕ 6: 1-6

ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು. ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು. ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು
ಪ್ರಭುವಿನ ಶುಭಸಂದೇಶ

31.01.23

ಮೊದಲನೆಯ ವಾಚನ: ಹಿಬ್ರಿಯರಿಗೆ 12: 1-4

ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದು ಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರಚಿತ್ತದಿಂದ ಭಾಗವಹಿಸೋಣ. ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ. ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ

ಕೀರ್ತನೆ – 22:26-27, 28, 30, 31-32
ಶ್ಲೋಕ: ಹರಿದವು ಸ್ತುತಿ ಭಕ್ತರ ಬಾಯಿಂದ 

ಶುಭಸಂದೇಶ – ಮಾರ್ಕ 5:21-43

ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು. ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ. ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು. ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು. ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು. ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯ ಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು. “ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು. ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು. ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು. ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು?’ ಎಂದು ಕೇಳುತ್ತೀರಲ್ಲಾ” ಎಂದರು. ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು. ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು. ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು. ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯಿರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು. ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯಿರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು. ಅನಂತರ ಪೇತ್ರ, ಯಕೋಬ ಹಾಗೂ ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯಿರನ ಮನೆಯನ್ನು ತಲುಪಿದರು. ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು. ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು. ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್” ಎಂದರು. (‘ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ) ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯ ಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು. ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.

30.01.23 - “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?"

ಮೊದಲನೆಯ ವಾಚನ: ಹಿಬ್ರಿಯರಿಗೆ 11: 32-40

ಪ್ರಿಯ ಸಹೋದರರೇ, ಇನ್ನೂ ಹೇಳಬೇಕೇ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು. ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು. ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು. ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು. ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು; ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು. ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ. ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.
ಪ್ರಭುವಿನ ವಾಕ್ಯ

ಕೀರ್ತನೆ – 31: 19-23. V.24

ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I

ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I
ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II

ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I
ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II

ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ Iಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II
ದೇವರಿಂದ ದೂರನಾದೆಯೆಂಬ ದಿಗಿಲೇರಲು I

ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II
ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I

ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II
ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I
ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II

ಶುಭಸಂದೇಶ – ಮಾರ್ಕ 5:1-20


ಆ ಕಾಲದಲ್ಲಿ ಯೇಸು ಮತ್ತು ಶಿಷ್ಯರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು. ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ. ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ, “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು. ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು. “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು. ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು. ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು. ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು. ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.

ಪ್ರಭುವಿನ ಶುಭಸಂದೇಶ

29.01.23 - " ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು."

ಮೊದಲನೆಯ ವಾಚನ:  ಜೆಫನ್ಯನ 2:3, 3:12-13

ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ. ದೀನರೂ ನಮ್ರರೂ ಆದ ಜನರನ್ನು ನಿಮ್ಮಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿ ಹೊಂದಿದವರು. ಇಸ್ರಾಯೇಲಿನಲ್ಲಿ ಅಳಿದುಳಿದವರು ಅನ್ಯಾಯ ಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು, ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.

ಕೀರ್ತನೆ: 146:6-10 ಮತ್ತಾಯ 5:3
ಶ್ಲೋಕ: ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.

ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೇ|
ದೊರಕಿಸುವನು ನ್ಯಾಯ ಬಡಬಗ್ಗರಿಗೆ||
ಒದಗಿಸುವನು ಆಹಾರ ಹಸಿದವರಿಗೆ|
ನೀಡುವನು ಬಿಡುಗಡೆ ಬಂಧಿತರಿಗೆ||

ಕಣ್ಣನ್ನೀಯುವನು ಪ್ರಭು ಕುರುಡರಿಗೆ|
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ||
ರಕ್ಷಿಸುವನು ಪ್ರಭು ಪರದೇಶಿಗಳನು|
ಆದರಿಸುವನು ಅನಾಥರನು, ವಿಧವೆಯರನು||

ಆತನ ಒಲವಿರುವುದು ಸಾಧುಸಜ್ಜನರಿಗೆ|
ನಿರ್ಮೂಲಮಾಡುವನು ದುರ್ಜನರ ಮಾರ್ಗವನು||
ಪ್ರಭುವೇ ಆರಸನು ಸದಾಕಾಲಕು|
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು||

ಎರಡನೆಯ ವಾಚನ: 1 ಕೊರಿಂಥಿಯರಿಗೆ  1:26-31

ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ, ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ. ಜ್ಞಾನಿಗಳನ್ನು ನಾಚಿಕೆಗೀಡು ಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮುರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು. ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ. ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ' ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ '.

ಘೋಷಣೆ ಯೊವಾನ್ನ 1:12
ಅಲ್ಲೆಲೂಯ, ಅಲ್ಲೆಲೂಯ!
ಆ ದಿವ್ಯವಾಣಿ ಮನುಷ್ಯ ಆದರು; ಅವರಲ್ಲಿ ವಿಶ್ವಾಸ ಇಟ್ಟವರಿಗೆ ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು,,
ಅಲ್ಲೆಲೂಯ!

ಶುಭಸಂದೇಶ ವಾಚನ: ಮತ್ತಾಯ 5:1-12

ಆ ಕಾಲದಲ್ಲಿ ಜನರ ದೊಡ್ಡ ಗುಂಪನ್ನು ಕಂಡು ಯೇಸು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು. " ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು."

28.01.23 - "ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು"

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 11:1-2, 8-19

ಸಹೋದರರೇ, ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ. ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ; ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ. ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು. ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು. ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು. ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು. ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು. ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು. ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಬಿಟ್ಟುಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ. ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು. ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ. ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ. ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು. 
ಪ್ರಭುವಿನ ವಾಕ್ಯ


ಲೂಕ 1:69-70, 71-72, 73-75 
ಶ್ಲೋಕ: ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. 

ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I
ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II
ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I
ಅರುಹಿಸಿರುವನು ಇಂತೆಂದು ನಮಗೆ: II

‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ
ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II
ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I
ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II

ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ I
ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II
ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I
ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II

ಮಾರ್ಕನು ಬರೆದ ಶುಭಸ೦ದೇಶ 4:35-41 


ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆ ದಡಕ್ಕೆ ಹೋಗೋಣ,” ಎಂದರು. ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು. ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸ ತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿ ಹೋಗುವುದರಲ್ಲಿತ್ತು. ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು. ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು. ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು. ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.  
ಪ್ರಭು ಕ್ರಿಸ್ತರ ಶುಭಸ೦ದೇಶ.

27.01.23 - "ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು"

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 10:32-39

ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟ ಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ! ಕೆಲವೊಮ್ಮೆ ಬಹಿರಂಗವಾಗಿ ಹಿಂಸೆ ಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ; ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆ ಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ. ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು. ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನ ಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢ ಮನಸ್ಕರಾಗಿರಬೇಕು. ಏಕೆಂದರೆ: “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬ ಮಾಡನು.ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರುಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ. ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು. 
ಪ್ರಭುವಿನ ವಾಕ್ಯ

ಕೀರ್ತನೆ: 37:3-4, 5-6, 23-24, 39-40 
ಶ್ಲೋಕ: ಸಜ್ಜನರ ಜೀವೋದ್ದಾರಾ ಪ್ರಭುವಿನಿಂದ. 

ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I
ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II
ಪ್ರಭುವಿನಿಂದಲೆ ಬಯಸು ನಿನ್ನಾನಂದವನು I
ನೆರವೇರಿಸುವನಾತ ನಿನ್ನ ಮನದಾಸೆಯನು II

ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I
ಭರವಸೆಯಿಂದಿರು, ಆತನದನು ಸಾಗಿಸುವನು II
ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I
ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II

ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I
ಅವನ ನಡತೆಗೆ ಆತನೆ ಮಾರ್ಗದರ್ಶನ II
ಬಿದ್ದರೂ ಅವನೆದ್ದೇ ತೀರುವನು I
ಪ್ರಭು ಅವನಿಗೆ ಊರುಗೋಲಾಗಿಹನು II

ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I
ಆಪತ್ಕಾಲದಲಿ ಆಶ್ರಯ ಆತನಿಂದ II
ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I
ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II

ಮಾರ್ಕನು ಬರೆದ ಶುಭಸ೦ದೇಶ 4:26-34 

ಆ ಕಾಲದಲ್ಲಿ ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ. ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ. ಭೂಮಿ ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೆ ತಾನೇ ಉತ್ಪತ್ತಿಮಾಡುತ್ತದೆ. ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು. ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ? ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು. ಸಾಸಿವೆಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರೆಂಬೆಗಳನ್ನು ಅದು ತಳೆಯುತ್ತದೆ,” ಎಂದರು. ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ. ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು. 
ಪ್ರಭು ಕ್ರಿಸ್ತರ ಶುಭಸ೦ದೇಶ

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...