14.02.25

ಮೊದಲನೆಯ ವಾಚನ - ಆದಿಕಾಂಡ 3: 1-8

ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು. ಅದಕ್ಕೆ ಆ ಮಹಿಳೆ, “ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು; ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು. ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು. ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು. ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು. ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.
ಪ್ರಭುವಿನ ವಾಕ್ಯ

ಕೀರ್ತನೆ - 32: 1-2, 5, 6-7
ಶ್ಲೋಕ: ಯಾರ ದ್ರೋಹ ವಿಮೋಚನೆಯಾಗಿದೆಯೋ ಅವರೇ ಧನ್ಯರು II

ಯಾರಪರಾಧವನು ಪ್ರಭು ಎಣಿಸಿಲ್ಲವೋ I
ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II

ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I
ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II

“ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I
ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II

ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I
ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II

ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I
ನನ್ನನು ಆವರಿಸುವ ಉದ್ಧಾರಕ ನಾದವು II

ಶುಭಸಂದೇಶ - ಮಾರ್ಕ 7: 31-37

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು. ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು. ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು. ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.
ಪ್ರಭುವಿನ ಶುಭಸಂದೇಶ

13.02.25 - "ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?”

ಮೊದಲನೆಯ ವಾಚನ - ಆದಿಕಾಂಡ 2: 18-25


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು. ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. 23ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು. ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು. ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.  
ಪ್ರಭುವಿನ ವಾಕ್ಯ

ಕೀರ್ತನೆ - 128: 1, 2-3, 4-5
ಶ್ಲೋಕ: ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I

ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I

ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II
ಇರುವಳು ನಿನ್ನ ಪತ್ನಿ ಮನೆಯಲ್ಲಿ 
ಫಲಭರಿತ ದ್ರಾಕ್ಷಾಲತೆಯಂತೆ I

ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II
ಹೊಂದುವನು ಅಂತಹ ಆಶೀರ್ವಾದವನು I

ಪ್ರಭುವಿನಲಿ ಭಯಭಕ್ತಿಯುಳ್ಳವನು II
ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I
ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II

ಶುಭಸಂದೇಶ - ಮಾರ್ಕ 7: 24-30


ಆ ಕಾಲದಲ್ಲಿ ಯೇಸು ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.
ಪ್ರಭುವಿನ ಶುಭಸಂದೇಶ

12.02.25 - "ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)”

ಮೊದಲನೆಯ ವಾಚನ - ಅದಿಕಾಂಡ 2: 4-9, 15-17



ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ. ಆದರೂ ಭೂಮಿಯಿಂದ ನೀರು ಉಕ್ಕಿ ಬಂದು ನೆಲಕ್ಕೆ ನೀರೆರೆಯುತ್ತಿತ್ತು. ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು. ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವ ದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು. “ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು. ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು. ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.
ಪ್ರಭುವಿನ ವಾಕ್ಯ

ಕೀರ್ತನೆ - 104, 1-2, 27-30
ಶ್ಲೋಕ: ಭಜಿಸು ನನ್ನ ಮನವೇ, ಭಜಿಸು, ಪ್ರಭುವನು

ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I
ಮಹಿಮೆ ಪ್ರತಾಪಗಳಿಂದ ಭೂಷಿತನು II

ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I
ಹರಡಿಸಿರುವೆ ಆಗಸವನು ಗುಡಾರದಂತೆ II

ಸಕಾಲದಲೊದಗಿಸುವೆ ಆಹಾರವನು I
ನಂಬಿಕೊಂಡಿವೆ ಆ ಜೀವಿಗಳು ನಿನ್ನನು II

ನೀ ಉಸಿರನ್ನೂದಲು ಹೊಸದಾಗುವುವು I
ಪುನಶ್ಚೇತನಗೊಳ್ಳುವುದು ಜಗವೆಲ್ಲವು II

ಶುಭಸಂದೇಶ - ಮಾರ್ಕ 7: 14-23

ಆ ಕಾಲದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು. 
ಪ್ರಭುವಿನ ಶುಭಸಂದೇಶ

11.02.25 - "ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!"

ಮೊದಲನೆಯ ವಾಚನ - ಅದಿಕಾಂಡ 1: 20-2:4

ಆ ಬಳಿಕ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು. ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು. ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು. ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು. ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. ಪರಲೋಕ-ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.
ಪ್ರಭುವಿನ ವಾಕ್ಯ

ಕೀರ್ತನೆ - 8: 3-4, 5-6, 7-8
ಹರಡಿದೆ ಪ್ರಭೂ, ನಿನ್ನ ಸಿರಿನಾಮ ಜಗದಾದ್ಯಂತ I

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I
ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II

ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I
ಏತರದವನು ನರಮಾನವನು ನೀನವನನು ಪರಾಮರಿಸಲು? II

ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I
ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I
ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

ಕುರಿಗಳನು, ಕರುಗಳನು, ಕಾಡುಮೃಗಗಳನು I
ಗರಿಗಳನು, ಮೀನುಗಳನು, ಜಲಚರಗಳನು I
ಕರಗತ ಮಾಡಿದೆ ನೀ ಅವನಿಗೆಲ್ಲವನು II

ಘೋಷಣೆ                  ಕೀರ್ತನೆ 145:14

ಅಲ್ಲೆಲೂಯ, ಅಲ್ಲೆಲೂಯ!
ನುಡಿಯಲಿ  ಪ್ರಭು  ಸದಾ  ಪ್ರಾಮಾಣಿಕನು,  ನಡೆಯಲಿ  ಆತನು  ಸದಾ  ಪ್ರೀತಿಮಯನು,,
ಅಲ್ಲೆಲೂಯ!

ಶುಭಸಂದೇಶ - ಮಾರ್ಕ 7: 1-13


ಆ ಕಾಲದಲ್ಲಿ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟ ಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ “ನೀವು ದೇವರ ಆಜ್ಞೆಯನ್ನು ತೊರೆದು ಮಾನವ ನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿ ಬಿಟ್ಟರೆ ಸಾಕು, ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.
ಪ್ರಭುವಿನ ಶುಭಸಂದೇಶ

10.02.25

ಮೊದಲನೆಯ ವಾಚನ - ಅದಿಕಾಂಡ 1: 1-19

ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು. ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು. ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು. ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು. ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು. ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು. ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು. ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು. ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು. ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು. ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು. ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು. ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು. ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು. 
ಪ್ರಭುವಿನ ವಾಕ್ಯ

ಕೀರ್ತನೆ – 104:1-2, 5-6, 10, 12, 24, 34. V.31
ಪ್ರಭು ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II

ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I
ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I

ಮಹಿಮೆ ಪ್ರತಾಪಗಳಿಂದ ಭೂಷಿತನು II
ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I

ಹರಡಿಸಿರುವೆ ಆಗಸವನು ಗುಡಾರದಂತೆ II
ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I

ಅದೆಂದಿಗೂ ಕದಲದಂತೆ ಮಾಡಿರುವೆ II
ಅದಕ್ಕೆ ಹೊದಿಸಿರುವೆ ಸಾಗರವೆಂಬ ವಸ್ತ್ರವನು I

ಆ ಜಲರಾಶಿಗಳು ಮುಳುಗಿಸಿವೆ ಬೆಟ್ಟಗಳನು II
ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I

ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II
ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I

ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು I
ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I

ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II
ಆತನಿಗೊಲಿಯಲಿ ನನ್ನ ಧ್ಯಾನ I
ಆತನಲೇ ಹರ್ಷಿಸಲಿ ನನ್ನ ಮನ II

ಶುಭಸಂದೇಶ - ಮಾರ್ಕ 6: 53-56

ಆ ಕಾಲದಲ್ಲಿ ಯೇಸು ಮತ್ತು ಶಿಷ್ಯರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು. 
ಪ್ರಭುವಿನ ಶುಭಸಂದೇಶ

09.02.25 - "ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು"

 ಮೊದಲನೇ ವಾಚನ: ಯೆಶಾಯ 6:1-8


ರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ  ದರ್ಶನವಾಯಿತು. ಉನ್ನತೋನ್ನತ ಸಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲ ಸೋಕದಂತೆ ನಿಂತಿದ್ದರು. ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ: "ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ; ಜಗವೆಲ್ಲ ಆತನ ಪ್ರಭಾವಭರಿತ" ಎಂದು ಕೂಗಿ ಹೇಳಿದನು. ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು  ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!" ಎಂದು ಕೂಗಿ ಕೊಂಡೆನು. ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದಕೊಂಡು ನನ್ನತ್ತ ಹಾರಿ ಬಂದನು. ಆ ಉರಿ ಕೆಂಡವನ್ನುನನ್ನ ಬಾಯಿಗೆ ಮುಟ್ಟಿಸಿ: "ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು", ಎಂದನು. ಆಗ, "ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?" ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು," ಇಗೋ, ನಾನು ಸಿದ್ದ, ನನ್ನನ್ನು ಕಳುಹಿಸಿ" ಎಂದೆನು.

ಕೀರ್ತನೆ: 138:1-3, 4-5, 7-8,
ಶ್ಲೋಕ: ಪ್ರಭೂ, ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ

ಎರಡನೇ ವಾಚನ: 1 ಕೊರಿಂಥಿಯರಿಗೆ  15:1-11


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನ ನೆನಪಿಗೆ ತಂದುಕೊಳ್ಳಿರಿ.  ನೀವು ಅದನ್ನು ಸ್ವೀಕರಿಸಿದ್ಧೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ಧೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತ ಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ, ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ. ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ. ಅದನ್ನು ನೀವು ನಂಬಿದ್ದೀರಿ.

 ಶುಭಸಂದೇಶ: ಲೂಕ 5:1-11

ಮ್ಮೆ ಯೇಸುಸ್ವಾಮಿ ಗೆನಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕು ನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು ಬೋಧನೆ ಮುಗಿದದ್ದೇ ಸಿಮೋನನಿಗೆ, "ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನು ಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ," ಎಂದರು. ಅದಕ್ಕೆ ಸಿಮೋನನು "ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆಕೊಟ್ಟು ಬಲೆಗಳನ್ನು ಹಾಕುತ್ತೇವೆ," ಎಂದನು. ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದು ಹೋಗುವುದರಲ್ಲಿದ್ದವು. ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆ ಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, "ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!" ಎಂದನು. ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು ಆಗ ಯೇಸು ಸಿಮೋನನಿಗೆ, "ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ," ಎಂದರು. ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಮನಸಿಗೊಂದಿಷ್ಟು : ರಾತ್ರಿಯೆಲ್ಲಾ ಬಲೆ ಹಾಕಿ ಮೀನು ಸಿಗದಿದ್ದರೂ ಯೇಸುವಿನ ಒಂದು ಮಾತಿಗೆ ಮತ್ತೆ ಬಲೆ ಹಾಕಿ ರಾಶಿ ಮಾಡಿಕೊಂಡ ಪೇತ್ರ. ನಂತರ ಯೇಸುವಿನ ಒಂದೇ ಒಂದು ಕರೆಗೆ ಎಲ್ಲವನ್ನು ಬಿಟ್ಟು ಪೇತ್ರ ತೋರಿದ ಬದ್ಧತೆ ಅಸಮಾನ್ಯ. ಶ್ರೀಮಂತರಾಗಿದ್ದ ಯಕೋಬ ಯೊವಾನ್ನ ಸಹೋದರರೂ ಇದೇ ಕತೆ. ಆದರಿಂದಲೇ ಆ ಪ್ರೇಷಿತರ ಹೆಸರು, ಕಾರ್ಯಗಳು 2000 ವರ್ಷಗಳ ನಂತರವೂ ಅಮರರಾಗಿ ಉಳಿದಿವೆ.

ಪ್ರಶ್ನೆ:  ಪೇತ್ರ, ಯೊವಾನ್ನ, ಯಕೋಬರ ಸ್ಥಾನದಲ್ಲಿ ನಾನಿದಿದ್ದರೆ ಯೇಸುವಿನ ಕರೆಗೆ ನನ್ನ ಪ್ರತಿಕ್ರಿಯೆ ಏನಿರುತಿತ್ತು?

08.02.25 - "ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ"

ಮೊದಲನೆಯ ವಾಚನ - ಹಿಬ್ರಿ 13: 15-17, 20-21


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ. ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.

ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು. ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು. ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.
ಪ್ರಭುವಿನ ವಾಕ್ಯ


ಕೀರ್ತನೆ - 23: 1-4, 5, 6
ಪ್ರಭು ಕುರಿಗಾಹಿಯಾಗಿರಲು ನನಗೆ I
ಕುಂದುಕೊರತೆಗಳೆಲ್ಲಿಯವು ಎನಗೆ? II

ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I

ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II

ಶುಭಸಂದೇಶ - ಮಾರ್ಕ 6: 30-34


ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
ಪ್ರಭುವಿನ ಶುಭಸಂದೇಶ

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...