10.09.21 - "ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು"

 ಮೊದಲನೇ ವಾಚನ: 1 ತಿಮೊಥೇಯನಿಗೆ 1:1-2, 12-14


ಕ್ರೈಸ್ತ ವಿಶ್ವಾಸದಲ್ಲಿ ಸತ್ ಪುತ್ರನಾದ ತಿಮೊಥೇಯನಿಗೆ - ಪೌಲನು ಬರೆಯುವ ಪತ್ರ. ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತ ಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತ ಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ಶುಭ ಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಹಿಂದೆ ನಾನು ಅವರನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆ ತೋರಿದರು. ಕ್ರಿಸ್ತ ಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.

ಕೀರ್ತನೆ: 16:1-2, 5, 6-7, 8-9
ಶ್ಲೋಕ: ನನ್ನ ಸ್ವತ್ತೂ ಸ್ವಾಸ್ಥ್ಯವೂ ನೀನೇ ಪ್ರಭು

ನೀಡು ದೇವಾ ರಕ್ಷಣೆಯನು I
ನಾ ನಿನಗೆ ಶರಣಾಗತನು II
“ನೀನೇ ನನ್ನೊಡೆಯ"ನೆಂದು ನಾ ನುಡಿದೆ I
ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II

ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I
ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II
ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I
ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II

ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II
ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I
ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II

ಶುಭಸಂದೇಶ: ಲೂಕ 6:39-42


ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: "ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೇ? ಗುರುವಿಗಿಂತ ಶಿಷ್ಯನು ಶ್ರೇಷ್ಟನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, "ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ," ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು, ಆನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು,"

09.09.21 - "ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,"

 ಮೊದಲನೇ ವಾಚನ: ಕೊಲೊಸ್ಸೆಯರಿಗೆ 3:12-17


ಸಹೋದರರೇ, ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು, ದೇವರ ಸ್ವಂತ ಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣವಾಗಿರಲಿ. ಒಬ್ಬರನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪು ಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ. ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು  ಸಂಪೂರ್ಣಗೊಳಿಸುವ ಬಂಧನ. ನಿಮ್ಮ ಹೃನ್ಮನಗಳು ಕ್ರಿಸ್ತ ಯೇಸುವಿನ ಶಾಂತಿ ಸಮಾಧಾನದಿಂದ ತುಂಬಿರಲಿ. ನೀವು ಒಂದೇ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ;  ಕೃತಜ್ಞತೆಯುಳ್ಳವರಾಗಿ ಜೀವಿಸಿರಿ. ಕ್ರಿಸ್ತ ಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ರಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ. ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಕೀರ್ತನೆ: 150:1-2, 3-4, 5-6

ಶ್ಲೋಕ: ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ

ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I
ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II
ದುರ್ಜನರ ಆಲೋಚನೆಯಂತೆ ನಡೆಯದೆ I
ಪಾಪಾತ್ಮರ ಪಥದಲಿ ಕಾಲೂರದೆ I
ಧರ್ಮನಿಂದಕರ ಕೂಟದಲಿ ಕೂರದೆ II

ನದಿಯ ಬದಿಯಲೇ ಬೆಳೆದಿಹ ಮರದಂತೆ I
ಸಕಾಲಕೆ ಫಲವೀವ ವೃಕ್ಷದಂತೆ I
ಎಲೆಬಾಡದೆ ಪಸಿರಿರುವ ತರುವಂತೆ I
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II

ದುರುಳರಾದರೊ ತೂರಿ ಹೋಗುವರು I
ಬಿರುಗಾಳಿಗೆ ತರಗೆಲೆಯಾಗುವರು II
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II

ಶುಭಸಂದೇಶ: ಲೂಕ 6:27-38 



ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: "ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು. ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಟರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೇ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಟರು ಸಹ ಹಾಗೆಯೇ ಮಾಡುತ್ತಾರಲ್ಲವೇ? ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಟರು ಸಹ ಸಾಲ ಕೊಡುತ್ತಾರಲ್ಲವೆ? ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವರಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು. ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ, ಆಗ ದೇವರೂ ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು," ಎಂದರು.

08.09.21 - “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು”

ಮೊದಲನೇ ವಾಚನ: ಮೀಕ 5:1-4

ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 13:6, 6

ಶ್ಲೋಕ: ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ

ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I
ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II

ಪ್ರಭು ಮಾಡಿದ ಮಹೋಪಕಾರಗಳಿಗಾಗಿ I
ಹಾಡುವೆ ಗೀತವನು ಮನಃಪೂರ್ವಕವಾಗಿ II

ಶುಭಸಂದೇಶ: ಮತ್ತಾಯ 1:1-16, 18-23


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, 5ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,  ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,  ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.  ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,  ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು; ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.  ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.  ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು. “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.  “ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.

ಮರಿಯಮ್ಮನವರ ಗೀತೆಗಳು


                                            



 

07.09.2021 - ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

 ಮೊದಲನೇ ವಾಚನ: ಕೊಲೊಸ್ಸೆಯರಿಗೆ 2:6-15


ನೀವು ಯೇಸುಕ್ರಿಸ್ತರನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ  ಐಕ್ಯೆತೆಯಿಂದ ಬಾಳಿರಿ. ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ, ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ. ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ. ಸಕಲ ಅಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ. ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೇ ಯೋಜಿಸಿದ ‌ಸುನ್ನತಿ. ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತ ಯೇಸುವನ್ನು ಮೃತರ ಮಧ್ಯದಿಂದ ದೈವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು. ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದಿರಿ. ಆದರೆ ಈಗ ದೇವರು ಕ್ರಿಸ್ತ ಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ. ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂದಿಸಿದ್ದ ಧರ್ಮಶಾಸ್ತ್ರದ ವಿಧಿ ನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ. ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.

ಕೀರ್ತನೆ: 145:1-2, 8-9, 10-11
ಶ್ಲೋಕ: ಪ್ರಭುವಿನ ಕರುಣೆ ಎಲ್ಲರ ಮೇಲೆ

ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I
ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II
ಹೊಗಳುವೆನು ನಾ ದಿನದಿನವೂ ನಿನ್ನನು I
ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II

ಪ್ರಭು ದಯಾನಿಧಿ, ಕೃಪಾಸಾಗರನು I
ಸಹನಶೀಲನು, ಪ್ರೀತಿಪೂರ್ಣನು II
ಪ್ರಭುವಿನ ಕರುಣೆ ಎಲ್ಲರ ಮೇಲೆ I
ಆತನ ಕೃಪೆಯು ಸೃಷ್ಟಿಯ ಮೇಲೆ II

ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I
ಕೊಂಡಾಡುವುದು ನಿನ್ನನು ಭಕ್ತ ಸಮೂಹವು II
ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II

ಘೋಷಣೆ           ಯೊವಾನ್ನ  6:63,68
ಅಲ್ಲೆಲೂಯ, ಅಲ್ಲೆಲೂಯ!
ಸಜೀವವನ್ನು  ಕೊಡುವಂಥಾದ್ದು  ದೇವರ  ಆತ್ಮವೇ |  ನಿತ್ಯ  ಜೀವವನ್ನೀಯುವ  ನುಡಿ  ಇರುವುದು  ತಮ್ಮಲ್ಲೇ ||
ಅಲ್ಲೆಲೂಯ!

ಶುಭಸಂದೇಶ: ಲೂಕ 6:12-19


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡರು, ಅವರಿಗೆ "ಪ್ರೇಷಿತರು" ಎಂದು ಹೆಸರಿಟ್ಟರು. ಹೀಗೆ ಆಯ್ಕೆ ಆದವರು; ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಆಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೋಲೊಮಾಯ, ಮತ್ತಾಯ ಮತ್ತು ತೋಮ, ಆಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಆನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

06.09.21 -"ನಿನ್ನ ಕೈಯನ್ನು ಚಾಚು"

 ಮೊದಲನೇ ವಾಚನ: ಕೊಲೊಸ್ಸೆಯರಿಗೆ: 1:24-2:3


ಸಹೋದರರೇ, ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತ ಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ. ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ. ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯವನ್ನು, ಅಂದರೆ ತಮ್ಮ ವಾಕ್ಯವನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ. ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತ ಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ. ನಾವು ಸಾರುತ್ತಲಿರುವುದೂ  ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿ ಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತ ಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ. ನಿಮಗಾಗಿಯೂ ಲವೊದಿಕೀಯರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಯಬಯಸುತ್ತೇನೆ. ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತ ಯೇಸುವನ್ನು ಅರಿತುಕೊಳ್ಳಲು ಸಾಧ್ಯ. ಕ್ರಿಸ್ತ ಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.

ಕೀರ್ತನೆ: 62:6-7,9
ಶ್ಲೋಕ: ಭದ್ರವಾದ ಬಂಡೆ, ನನಗಾಶ್ರಯ ದೇವನೇ

ಆತನೆನಗೆ ದುರ್ಗ, ರಕ್ಷಕ, ಶರಣು I
ನಾನೆಂದಿಗೂ ಕದಲಿ ಬೀಳೆನು II
ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I
ಭದ್ರವಾದ ಬಂಡೆ, ನನಗಾಶ್ರಯ ಆತನೆ II

ನರಮಾನವರೆಲ್ಲರು ಬರೇ ಉಸಿರು I
ನರಾಧಿಪತಿಗಳು ತೀರಾ ಹುಸಿಯು I
ತ್ರಾಸಿನಲಿ ತೂಗಲು ಅವರೆಲ್ಲರು I
ಉಸಿರಿಗಿಂತಲೂ ಅತ್ಯಂತ ಹಗುರು II

ಶುಭಸಂದೇಶ: ಲೂಕ 6:6-11


ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶ ಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು  ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈಯುಳ್ಳವನಿಗೆ, "ಬಂದು ಇಲ್ಲಿ ನಿಲ್ಲು," ಎಂದರು. ಅವನು ಎದ್ದು ಬಂದು ನಿಂತನು. ಆಗ ಯೇಸು ಅವರಿಗೆ, "ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?" ಎಂದರು. ಆನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆ ತಿರುಗಿ, "ನಿನ್ನ ಕೈಯನ್ನು ಚಾಚು," ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.

05.09.2021

ಮೊದಲನೇ ವಾಚನ: ಯೆಶಾಯ 35: 4-7

ಚಂಚಲ ಹೃದಯರಿಗೆ ಹೀಗೆಂದು ಹೇಳಿ: “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.” ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ. ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ. ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.

ಕೀರ್ತನೆ: 146: 6-7, 8-10
ಶ್ಲೋಕ: ಮನವೇ, ವಂದಿಸು ಪ್ರಭುವನು. 

ದೊರಕಿಸುವನು ನ್ಯಾಯ ದಲಿತರಿಗೆ I
ಒದಗಿಸುವನು ಆಹಾರ ಹಸಿದವರಿಗೆ I
ನೀಡುವನು ಬಿಡುಗಡೆ ಬಂಧಿತರಿಗೆ II ಶ್ಲೋಕ

ಕಣ್ಣನ್ನೀಯುವನು ಪ್ರಭು ಕುರುಡರಿಗೆ I
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I
ಆತನ ಒಲವಿರುವುದು ಸಾಧು ಸಜ್ಜನರಿಗೆ II
ರಕ್ಷಿಸುವನು ಪ್ರಭು ಪರದೇಶಿಗಳನು I ಶ್ಲೋಕ

ಆದರಿಸುವನು ಅನಾಥರನು, ವಿಧವೆಯರನು I
ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II
ಪ್ರಭುವೇ ಅರಸನು ಸದಾಕಾಲಕು I
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು I ಶ್ಲೋಕ

ಎರಡನೇ ವಾಚನ: ಯಾಕೋಬ 2: 1-5

ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು. ಉದಾಹರಣೆಗೆ: ಇಬ್ಬರು ನಿಮ್ಮ ಪ್ರಾರ್ಥನಾಲಯಕ್ಕೆ ಬಂದರೆಂದು ಇಟ್ಟುಕೊಳ್ಳಿ. ಅವರಲ್ಲಿ ಒಬ್ಬನು ಚಿನ್ನದುಂಗುರವನ್ನು ತೊಟ್ಟು, ಸೊಗಸಾದ ಉಡುಪನ್ನು ಧರಿಸಿದವನು. ಮತ್ತೊಬ್ಬನು ಹರಕು ಬಟ್ಟೆಯನ್ನು ಉಟ್ಟ ಬಡವನು. ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾವಿೂ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನುತ್ತೀರಿ. ಹೀಗಿರಲು ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ. ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?

ಶುಭಸಂದೇಶ: ಮಾರ್ಕ 7: 31-37

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು. ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು. ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರ ಮಾಡಿದರು. ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.



04.09.2019 - "ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,"

 ಮೊದಲನೇ ವಾಚನ: ಕೊಲೊಸ್ಸೆಯರಿಗೆ 1:21-23


ಸಹೋದರರೇ, ಹಿಂದೆ ನೀವು ಆಚಾರವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದೀರಿ. ಈಗಲಾದರೋ ಯೇಸುಕ್ರಿಸ್ತರ ದೈಹಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ. ಇನ್ನು ನೀವು ವಿಶ್ವಾಸದಲ್ಲಿ ದೃಡವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ  ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವ ಸೃಷ್ಟಿಗೂ ಸಾರಲಾಗುತ್ತಿದೆ.

ಕೀರ್ತನೆ: 54:3-4, 6, 8  
ಶ್ಲೋಕ: ನನಗಿದೋ ದೇವನೇ ಸಹಾಯಕನು

ನನಗಿದೋ ದೇವನೆ ಸಹಾಯಕನು I
ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I
ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II
ನನ್ನ ಪ್ರಾರ್ಥನೆಯನು ಆಲಿಸಯ್ಯಾ I
ನನ್ನ ಮಾತುಗಳಿಗೆ ಕಿವಿಗೊಡು ದೇವಾ II ಶ್ಲೋಕ

ನನಗಿದೋ ದೇವನೆ ಸಹಾಯಕನು I
ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I
ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I
ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II

ಶುಭಸಂದೇಶ: ಲೂಕ 6:1-5

ಒಂದು ಸಬ್ಬತ್ ದಿನ ಯೇಸುಸ್ವಾಮಿ, ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾಂಭಿಸಿದರು.  ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, "ಸಬ್ಬತ್ ದಿನದಲ್ಲಿ ನಿಷಿದ್ದವಾದುದನ್ನು ನೀವು ಮಾಡುವುದೇಕೆ?" ಎಂದು ಅವರನ್ನು ಆಕ್ಷೇಪಿಸಿದರು. ಅದಕ್ಕೆ ಯೇಸು, "ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ? ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ? ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ," ಎಂದು ಉತ್ತರಕೊಟ್ಟರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...