20.01.22

ಮೊದಲನೇ ವಾಚನ: 1 ಸಮುವೇಲ 18:6-9; 19:1-7

ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು. ಅವರು: “ಸೌಲ ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತು ಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು. ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು. ಅಂದಿನಿಂದ ಸೌಲನು ದಾವೀದನ ಮೇಲೆ ಕಣ್ಣಿಟ್ಟನು. ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು. ನನ್ನ ತಂದೆಯ ಬಳಿಯಲ್ಲಿದ್ದು ನಿನ್ನ ಬಗ್ಗೆ ಅವರೊಡನೆ ಮಾತಾಡಿ ಗೊತ್ತಾದ ವಿಷಯವನ್ನು ನೀನು ಅವಿತುಕೊಂಡಿರುವ ಸ್ಥಳಕ್ಕೆ ಬಂದು ತಿಳಿಸುವೆನು,” ಎಂದು ಹೇಳಿದನು. ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ. ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು. ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು. ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.

ಕೀರ್ತನೆ: 56:2-3, 9-10, 10-11, 12-13
ಶ್ಲೋಕ: ದೇವರಲ್ಲಿ ನಿರ್ಭೀತ ನಂಬಿಕೆ ನನಗೆ

ಶುಭಸಂದೇಶ: ಮಾರ್ಕ 3:7-12

ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟು ಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು. ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದುಮೇಯ ಪ್ರಾಂತ್ಯದಿಂದ, ಜೋರ್ಡನ್ ನದಿಯ ಪೂರ್ವ ಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು. ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು. ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ,” ಎಂದು ಕಿರುಚುತ್ತಿದ್ದವು. ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.

19.01.22 - "ಸಬ್ಬತ್ ದಿನದಲ್ಲಿ, ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ"

ಮೊದಲನೇ ವಾಚನ: 1 ಸಮುವೇಲ 17:32-33, 37, 40-51

ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧ ಮಾಡುತ್ತೇನೆ,” ಎಂದು ಹೇಳಿದನು. ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧ ವೀರ,” ಎಂದು ಹೇಳಿದನು. ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು. ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟ ಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು. ಇತ್ತ ಫಿಲಿಷ್ಟಿಯನು ದಾವೀದನ ಕಡೆ ಧಾವಿಸಿ ಬಂದನು. ಗುರಾಣಿ ಹೊರುವವನು ಅವನ ಮುಂದೆ ಇದ್ದನು. ಫಿಲಿಷ್ಟಿಯನು ದಾವೀದನನ್ನು ಸವಿೂಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನನ್ನು ದಿಟ್ಟಿಸಿ ತಾತ್ಸಾರದಿಂದ, “ನೀನು ಕೋಲು ಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು. “ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು. ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯ ಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದು ಬರುವುದು. ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು. ಕೂಡಲೆ ಆ ಫಿಲಿಷ್ಟಿಯನು ದಾವೀದನ ಮೇಲೆ ಎರಗಲು ಮತ್ತೆ ಧಾವಿಸಿದನು. ದಾವೀದನೂ ಫಿಲಿಷ್ಟಿಯರ ಸೈನ್ಯದ ಕಡೆಗೆ ನುಗ್ಗಿ ಆ ಫಿಲಿಷ್ಟಿಯನನ್ನು ಎದುರುಗೊಳ್ಳಲು ಓಡಿದನು. ಕೈಯನ್ನು ಚೀಲದಲ್ಲಿ ಹಾಕಿ, ಒಂದು ಕಲ್ಲನ್ನು ತೆಗೆದು, ಅವನ ಕಣ್ಣಿಗೆ ಗುರಿಯಿಟ್ಟು, ಕವಣೆಯನ್ನು ಬೀಸಿ ಹೊಡೆದನು. ಆ ಕಲ್ಲು ಅವನ ಹಣೆಯನ್ನು ಹೊಕ್ಕಿತು. ಅವನು ಮುಖ ಕೆಳಗಾಗಿ ನೆಲಕ್ಕೆ ಉರುಳಿದನು. ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು. ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತು ಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿ ಹೋದರು.

ಕೀರ್ತನೆ: 144:1-2, 9-10
ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯ ದುರ್ಗಕೆ

ಶುಭಸಂದೇಶ: ಮಾರ್ಕ 3:1-6

ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು. ಅವನನ್ನು ಸಬ್ಬತ್‍ ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚು ಹಾಕುತ್ತಿದ್ದರು. ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ, “ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ. ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು. ಫರಿಸಾಯರು ಅಲ್ಲಿಂದ ಹೊರಗೆ ಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆ ಮಾಡಲು ಒಳಸಂಚು ಹೂಡಿದರು.

18.01.22 - “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ"

ಮೊದಲನೇ ವಾಚನ: 1 ಸಮುವೇಲ 16:1-13

ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು. ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದು ಹಾಕುವನಲ್ಲವೇ?” ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು. ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು. ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?” ಎಂದು ಕೇಳಿದರು. ಅವನು, “ಹೌದು ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು. ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು. ಆದರೆ ಸರ್ವೇಶ್ವರ ಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿ ಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು. ಜೆಸ್ಸೆಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರ ಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು. ತರುವಾಯ ಜೆಸ್ಸೆಯನು ಶಮ್ಮ ಎಂಬವನನ್ನು ಬರ ಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು. ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರ ಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು. ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆತರಿಸಿದನು. ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು. ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟು ಹೋದನು.

ಕೀರ್ತನೆ: 89:20, 21-22, 27-28
ಶ್ಲೋಕ: ನನ್ನ ದಾಸ ದಾವೀದನನು ಗುರುತಿಸಿರುವೆ

ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ|
ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ|
ಪ್ರಜೆಗಳಲೋರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕ್ಕೆ||

ನನ್ನ ದಾಸ ದಾವೀದನನು ಗುರುತಿಸಿರುವೆ|
ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ||
ನನ್ನ ಕೈಯ ಆಸರೆ ಅವನಿಗಿದೆ ಸತತ|
ನನ್ನ ಭುಜಬಲವು ಅವನಿಗೆ ಶಕ್ತಿಯುತ||

ನನಗೆ ಪಿತ, ದೈವ, ದುರ್ಗ, ಉದ್ದಾರಕ ನೀನು|
ಇಂತೆಂದೇ ನನ್ನನು ಸಂಬೋಧಿಸುವನವನು||
ಮಾಡುವೆನವನನು ಜೇಷ್ಠ ಪುತ್ರನನ್ನಾಗಿ|
ಭೂರಾಜರುಗಳೊಳು ಅತ್ಯುನ್ನತನನ್ನಾಗಿ||

ಅಲ್ಲೆಲೂಯ, ಅಲ್ಲೆಲೂಯ!
ಹೊಗಲಿರಿ ಆತನ ಮಹತ್ತಾದ ಏಕೈಕ ನಾಮವನು | ಕೋಡು ಮೂಡುಸಿಹನು ಪ್ರಭು ತನ್ನ ಪ್ರಜೆಗೆ ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 2:23-28


ಅದೊಂದು ಸಬ್ಬತ್ ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದು ಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಇದನ್ನು ಕಂಡ ಫರಿಸಾಯರು, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?” ಎಂದು ಅವರನ್ನು ಕೇಳಿದರು. ಬಳಿಕ ಯೇಸು ಅವರಿಗೆ, “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ. ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.

17.01.22

ಮೊದಲನೇ ವಾಚನ: 1 ಸಮುವೇಲ 15:16-23

ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು” ಎನ್ನಲು ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ. ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು. ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು. ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದುತಂದೆ. ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಗಿಲ್ಗಾಲಿನಲ್ಲಿ ಬಲಿಯರ್ಪಣೆ ಮಾಡುವುದಕ್ಕಾಗಿ ಉಳಿಸಿ ತಂದರು,” ಎಂದು ಉತ್ತರಕೊಟ್ಟನು. ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚು ತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ. ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು” ಎಂದು ನುಡಿದನು.

ಕೀರ್ತನೆ: 50:8-9, 16-17, 21, 23
ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ಪರಮ ಜೀವೋದ್ದಾರವನು

ಶುಭಸಂದೇಶ: ಮಾರ್ಕ 2:18-22

ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತವನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ, ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ?” ಎಂದು ಕೇಳಿದರು. ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು. ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು. “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.

16.01.22 - "ಆತ ಹೇಳಿದಂತೆ ಮಾಡಿ"

ಮೊದಲನೇ ವಾಚನ: ಯೆಶಾಯ 62:1-5 


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ, ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು. ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ. ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು, ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು. ಸರ್ವೇಶ್ವರನ ಕೈಯಲ್ಲಿ ನೀನು ಸಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ; "ಎನ್ನ ಮನದನ್ನೆ" ಎನಿಸಿಕೊಳ್ಳುವೆ ನೀನು "ಸುವಿವಾಹಿತೆ" ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ. ಯುವಕನು ಕನ್ಯೆ ಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನ್ನು, ವರನು ವಧುವಿನಲ್ಲಿ ಆನಂದಿಸುವಂತೆ ನಿನ್ನಲ್ಲಿ ಆನಂದಿಸುವನು ನಿನ್ನ ದೇವನು.

ಕೀರ್ತನೆ: 96:1-2, 2-3, 7-8, 9-10
ಶ್ಲೋಕ: ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ

ಎರಡನೇ ವಾಚನ: 1 ಕೊರಿಂಥಿಯರಿಗೆ 12:4-11

ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ. ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭು ಒಬ್ಬರೇ. ಶಕ್ತಿ ಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ. ಪ್ರತಿಯೊಬ್ಬನಲ್ಲಿ ಕಂಡು ಬರುವ ಪವಿತ್ರಾತ್ಮ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ. ಪವಿತ್ರಾತ್ಮರ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ: ಅದೇ ಪವಿತ್ರಾತ್ಮರಿಂದ ಒಬ್ಬನಿಗೆ ಅಗಾಧ ವಿಶ್ವಾಸವೂ ಇನ್ನೊಬ್ಬನಿಗೆ ಸ್ವಸ್ಥತೆಯನೀಯುವ ಶಕ್ತಿಯೂ ದೊರಕುತ್ತದೆ.  ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ  ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಪಿಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ. ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.

ಶುಭಸಂದೇಶ: ಯೊವಾನ್ನ  2:1-11

ಮಾರನೆಯ ದಿನ ಗಲಿಲೇಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು. ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆ ಹೋಯಿತು. ಆಗ ಯೇಸುವಿನ ತಾಯಿ, "ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ," ಎಂದು ಯೇಸುವಿಗೆ ಹೇಳಿದರು. ಅದಕ್ಕೆ ಯೇಸು, "ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ," ಎಂದು ಉತ್ತರಕೊಟ್ಟರು. ತಾಯಿ ಸೇವಕರಿಗೆ, "ಆತ ಹೇಳಿದಂತೆ ಮಾಡಿ," ಎಂದು ತಿಳಿಸಿದರು. ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು. 

ಯೇಸುಸ್ವಾಮಿ ಸೇವಕರಿಗೆ, "ಆ ಬಾನೆಗಳಲ್ಲಿ ನೀರು ತುಂಬಿರಿ," ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು. ಯೇಸು, "ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ," ಎಂದು ಹೇಳಲು ಅವರು ಹಾಗೆಯೇ  ಮಾಡಿದರು. ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು  ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕನಿಗೆ ಮಾತ್ರ ತಿಳಿದಿತ್ತು. ಆದುದರಿಂದ ಅವನು ಮದುಮಗನನ್ನು ಕರೆದು, "ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀವಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!" ಎಂದು ಹೇಳಿದನು. ಯೇಸು ಮಾಡಿದ ಮೊದಲನೆಯ ಸೂಚಕ ಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.

15.01.22

ಮೊದಲನೆಯ ವಾಚನ: ಸಮುವೇಲ 9:1-4, 17-19

ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋನನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ. ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲಾ ಅತಿ ಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು. ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು, ಎಂದು ಹೇಳಿದನು. ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗೂ ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ. ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು, ಎಂದು ಸೂಚಿಸಿದನು. ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ? ಎಂದನು. ಸಮುವೇಲನು, ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ, ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಗ್ಗೆ ನಿನ್ನನ್ನು ಕಳುಹಿಸಿಕೊಡುವೆನು, ಎಂದನು. ಆ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯವಾಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ. ಎಂದನು.

ಕೀರ್ತನೆ: 21:1-2, 5-6
ಶ್ಲೋಕ: ಅರಸನಿಗೆ ಹರ್ಷವಾಯಿತು ಪ್ರಭೂ, ನೀ ತೋರಿದ ಪರಾಕ್ರಮಕ್ಕಾಗಿ.


ಅರಸನಿಗೆ ಹರ್ಷವಾಯಿತು ಪ್ರಭೂ|
ನೀ ತೋರಿದ ಪರಾಕ್ರಮಕ್ಕಾಗಿ
ಆತನ ಮನದಾಸೆಯನು ನೀ ಪೂರೈಸಿದೆ|
ಆತನಧರ ಬಯಕೆಯನು ಅನುಗ್ರಹಿಸಿದೆ||
ನೀನಾತನನು ಸ್ವಾಗತಿಸಿದ ಶುಭಾಶಯದೊಂದಿಗೆ|
ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ||

ಕೋರಿದನಾತನು ಜೀವಮಾನ ಕಾಲವನು|
ನೀನಿತ್ತೆ ಯುಗಯುಗಾಂತರದ ಆಯುಷ್ಯವನು||

ನಿನ್ನ ನೆರವಿಂದೇರಿತು ಆತನ ಘನತೆ|
ಶೋಭೆ, ಪ್ರಭಾವಗಳ ನೀನವನಿಗಿತ್ತೆ||
ಅಮರ ಭಾಗ್ಯಗಳನು ನೀನನುಗ್ರಹಿಸಿದೆ|
ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ||

ಶುಭಸಂದೇಶ ವಾಚನ: ಮಾರ್ಕ 2: 13-17


ಆ ಕಾಲದಲ್ಲಿ ಯೇಸು ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು. ಅಲ್ಲಿಂದ ಹೊರಟುಹೋಗುತ್ತಿರುವಾಗ, ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು, ” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು. ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು. ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟ ಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕøತ ಜನರ ಜೊತೆಯಲ್ಲಿ ಊಟ ಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು, ” ಎಂದರು.

14.01.22 - “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!”

 ಮೊದಲನೇ ವಾಚನ: 1 ಸಮುವೇಲ 8:4-7, 10-22

ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು, “ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು. ‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿ ಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ. ಸಮುವೇಲನು ಅರಸಬೇಕೆಂದು ಕೋರಿದ ಜನರಿಗೆ, ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ: ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡಬೇಕಾಗುವುದು. ಕೆಲವರನ್ನು ಸಹ ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾ ಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು. ಇದಲ್ಲದೆ ಅವನು ನಿಮ್ಮ ಹೆಣ್ಣು ಮಕ್ಕಳನ್ನು ಪರಿಮಳ ದ್ರವ್ಯ ಮಾಡುವುದಕ್ಕೂ, ಅಡುಗೆ ಮಾಡುವುದಕ್ಕೂ, ರೊಟ್ಟಿ ಸುಡುವುದಕ್ಕೂ ನೇಮಿಸಿಕೊಳ್ಳುವನು. ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿ ತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು. ನಿಮ್ಮ ಧಾನ್ಯ ದ್ರಾಕ್ಷಿಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಪರಿವಾರದವರಿಗೂ ಕೊಡುವನು. ನಿಮ್ಮ ದಾಸ ದಾಸಿಯರನ್ನು ಹಾಗು ಉತ್ತಮವಾದ ಎತ್ತು ಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು. ಕುರಿ ಹಿಂಡುಗಳಲ್ಲೂ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವೂ ಅವನಿಗೆ ಗುಲಾಮರಾಗಿರಬೇಕು. ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು. ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ, ನಮಗೆ ಮುಂದಾಗಿ ಹೊರಟು, ನಮ್ಮ ಪರವಾಗಿ ಯುದ್ಧ ಮಾಡುವ ಒಬ್ಬ ಅರಸನು ಬೇಕು,” ಎಂದು ಹೇಳಿದರು. ಸಮುವೇಲನು ಜನರ ಈ ಎಲ್ಲ ಮಾತುಗಳನ್ನು ಸರ್ವೇಶ್ವರನಿಗೆ ತಿಳಿಸಿದನು. ಸರ್ವೇಶ್ವರ ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು,” ಎಂದರು. ಆಗ ಸಮುವೇಲನು ಇಸ್ರಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ,” ಎಂದು ಅಪ್ಪಣೆ ಕೊಟ್ಟನು.

ಕೀರ್ತನೆ: 89:16-17, 18-19
ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು.

ಶುಭಸಂದೇಶ: ಮಾರ್ಕ 2:1-12

ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು. ಜನರು ಗುಂಪು ಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು. ಆಗ ಒಬ್ಬ ಪಾಶ್ರ್ವ ವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು. ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು. ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ? ಈ ಪಾರ್ಶ್ವವಾಯು  ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು,” ಎಂದರು. ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು ನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟು ಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!”, ಎಂದು ದೇವರನ್ನು ಕೊಂಡಾಡಿದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...