01.04.23 - “ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,”

ಮೊದಲನೇ ವಾಚನ: ಯೆಜೆಕಿಯೇಲ 37:21-28

ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು: "ನರಪುತ್ರನೇ, ಇದನ್ನು ಅವರಿಗೆ ನುಡಿ. ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು. ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು. ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು. ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು. ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು. ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು. ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ವಿೂಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು”.

ಯೆರೆಮೀಯ: 31:10, 11, 12, 13
ಶ್ಲೋಕ: ಕುರಿಮಂದೆಯನ್ನು ಕಾಯುವ ಕುರುಬನಂತೆ,
ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ

ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ
ನಿನ್ನ ಶರಣನಾದೆ ನನಗಾಗದಿರಲಿ ತಾತ್ಸಾರ
ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ |
ಸವೆದು ಹೋಗುತ್ತವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ ||

ಶತ್ರುಗಳ ದೂಷಣೆಗೆ ಗುರಿಯಾದೆ,
ನೆರೆಯವರಿಗೆ ನಿಂದಾಸ್ಪದನಾದೆ |
ಮಿತ್ರರೂ ಬೆದರುವಂತಾದೆ;
ದಾರಿಹೋಕರು ದೂರವಾಗುವಂತಾದೆ ||

ನುಚ್ಚು ನೂರಾದೆ, ಮಡಕೆಚಿಪ್ಪಿನಂತಾದೆ |
ಸತ್ತವರಂತಾದೆ : ನೆನಪಿಗೆ ಬಾರದಾದೆ ||
ನನಗೆ ವಿರುದ್ಧ ಜನರಾಡುವ ಗುಸುಗುಸು
ಮಾತು ಕೇಳಿ ಬರುತಿದೆ |
ಭಯಭೀತಿ ಎನ್ನನಾವರಿಸಿದೆ, ಒಳಸಂಚು,
ಪ್ರಾಣಹರಣ ನಡೆಯುತಿವೆ ||

ಶುಭಸಂದೇಶ: ಯೊವಾನ್ನ 11:45-57


ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು. ಕೆಲವರಾದರೋ ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದೆಲ್ಲವನ್ನೂ ತಿಳಿಸಿದರು. ಮುಖ್ಯ ಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ; ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು. ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮ ಮಾಡುವರು,” ಎಂದು ವಾದಿಸಿದರು. ಆ ವರ್ಷ ಪ್ರಧಾನ ಯಾಜಕನಾಗಿದ್ದ ಕಾಯಫನು, “ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು. ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನ ಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು. ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ. ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು. ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು. ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ದೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು. ಯೇಸುವನ್ನು ನೋಡಬೇಕೆಂಬ ಆಸೆ ಅವರಿಗಿತ್ತು. “ಆತ ಹಬ್ಬಕ್ಕೆ ಬರುತ್ತಾನೋ ಇಲ್ಲವೋ ನಿಮ್ಮ ಎಣಿಕೆ ಏನು?” ಎಂದು ಮಹಾದೇವಾಲಯದಲ್ಲಿ ತಮ್ಮತಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದರು. ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.

ಮನಸ್ಸಿಗೊಂದಿಷ್ಟು : ಯೇಸುವಿನ ಮರಣದ ಬಗ್ಗೆ ಶತ್ರು ಕಾಯಿಫನೇ ಪ್ರವಾದಿಸುವಂತೆ ದೇವರ ಚಿತ್ತವಾಗಿರುವುದನ್ನು ಕಾಣುತ್ತೇವೆ. ದೇವರ ಸಾಧನವಾಗುವುದು ಎಲ್ಲರಿಗೂ ಸಾಧ್ಯ. ನಾವೂ ಸಹ ದೇವರ ಸಾಧನಗಳಾಗುವ ಅವಕಾಶವಿದೆ. ಆ ಅವಕಾಶಕ್ಕಾಗಿ ಹಾತೊರೆಯೋಣ. "ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ" ಎಂಬ ಇಂದಿನ ಕೀರ್ತನೆ ನಮ್ಮ ಬಾಳಿನ ಧ್ಯೇಯವಾಗಲಿ.

ಪ್ರಶ್ನೆ : ಪ್ರಭುವಿನ ನೀತಿ ನಮ್ಮ ಬಾಳಿನ ರೀತಿಯಾಗಿದೆಯೇ?

ಪ್ರಭುವೇ,
ನಿನ್ನ ನೀತಿಗನುಸಾರ
ಬಾಳುವುದಾಗಲಿ
ನನ್ನ ಬಾಳ ಸಾರ
ನಿನ್ನ ರೀತಿಗನುಸಾರ
ನಡೆವುದಾಗಲಿ
ಗಮ್ಯ ಅದೆಷ್ಟೇ ಇದ್ದರು ದೂರ
ಕ್ಷಣ ಕ್ಷಣವೂ ಆಗುತ್ತಾ
ನಿನ್ನ ಸಾಧನ
ನಲಿಯಲಿ ಈ ಮನ
ನಿತ್ಯ ನೂತನ

31.03.23 - "ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ"

ಮೊದಲನೇ ವಾಚನ: ಯೆರೆಮಿಯ 20:10-13

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವರ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹು ಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿ ನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯ ಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.

ಕೀರ್ತನೆ: 18:2-3, 3-4, 5-6, 7
ಶ್ಲೋಕ: ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ
ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ |
ಆತನೇ ನನ್ನ ದೇವ, ನನ್ನಾಶ್ರಯ ದುರ್ಗ |
ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ ||
ಪ್ರಭು ಸ್ತುತ್ಯಾರ್ಹನು |
ಶತ್ರುಗಳಿಂದ ಕಾಪಾಡುವನು,
ನಾನವಗೆ ಮೊರೆಯಿಡಲು ||

ಪ್ರಭು ಸ್ತುತ್ಯಾರ್ಹನು |
ಶತ್ರುಗಳಿಂದ ಕಾಪಾಡುವನು,
ನಾನವಗೆ ಮೊರೆಯಿಡಲು ||
ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು |
ನಡುಕ ಹುಟ್ಟಿಸಿದ್ದವು
ವಿನಾಶಪ್ರವಾಹಗಳು ||
ಆವರಿಸಿಕೊಂಡವು ಪಾತಾಳ ಪಾಶಗಳು|
ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು||

ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ |
ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ |
ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ ||
ಆಗ ಕಂಪಿಸಿತು ಭೂಮಿ ಗಡಗಡನೆ |
ಕದಲಿದವು ಬೆಟ್ಟದ ಬುಡಗಳು
ಮಿಲಮಿಲನೆ |
ಏಕೆನೆ, ಸಿಟ್ಟೇರಿತ್ತು ಆತನಿಗೆ ||

ಶುಭಸಂದೇಶ: ಯೊವಾನ್ನ 10:31-42

ಆಗ ಯೆಹೂದ್ಯರು, ಯೇಸುವಿನತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು. ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು. ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದೀಯೇ,” ಎಂದು ಉತ್ತರಕೊಟ್ಟರು. ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ? ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರ ಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ. ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ? ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ. ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆ ಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು. ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು. ಬಳಿಕ ಯೇಸುಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತ ಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು. ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕ ಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು. ಅಲ್ಲಿ ಹಲವರಿಗೆ ಯೇಸುವಿನಲ್ಲಿ ವಿಶ್ವಾಸ ಹುಟ್ಟಿತು.

ಮನಸ್ಸಿಗೊಂದಿಷ್ಟು : ಇಂದಿನ ಶುಭಸಂದೇಶದದಲ್ಲಿನ ಯೆಹೂದ್ಯರ ತಿರಸ್ಕಾರ ನಿಜಕ್ಕೂ ದೌರ್ಭಾಗ್ಯಕರ . ' ತಾವು ದೇವರ ಪುತ್ರ' ಎಂದು ಯೇಸು ಸಾರಿ ಸಾರಿ ಹೇಳುತ್ತಿದ್ದರೂ ನಂಬದಂಥ ಕಲ್ಲು ಹೃದಯ ಅವರದಾಗಿತ್ತು. ನಮ್ಮ ಹೃದಯಗಳು ಪ್ರಭು ಕ್ರಿಸ್ತರನ್ನು ತಿರಸ್ಕರಿಸದಂತೆ ಎಚ್ಚರವಹಿಸೋಣ

ಪ್ರಶ್ನೆ : ನಮ್ಮ ಹೃದಯ ಯೇಸುವಿಗಾಗಿ ತೆರೆದಿದೆಯೇ?

30.03.23 - "ನನ್ನ ಘನತೆ ಗೌರವವನ್ನು ಸಾರುವವರಾದರೋ ನನ್ನ ಪಿತನು"

ಮೊದಲನೇ ವಾಚನ: ಆದಿಕಾಂಡ 17:3-9

ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲ ಪುರುಷನಾಗುವೆ. ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು. ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು. ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ. ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.” ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.

ಕೀರ್ತನೆ: 105:4-5, 6-7, 8-9

ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು

ಶುಭಸಂದೇಶ: ಯೊವಾನ್ನ 8:51-59


ಯೇಸುಸ್ವಾಮಿ ಯೆಹೂದ್ಯರಿಗೆ: "ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯ ಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು. “ನೀನು ದೆವ್ವ ಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ; ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಟನೋ? ಆತನೂ ಸಾವಿಗೀಡಾದನು, ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು. ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆ ಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆ ಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ. ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ. ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರ ಕೊಟ್ಟರು. ಯೆಹೂದ್ಯರು, “ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಎಂದರು. ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರು ನುಡಿದರು. ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟು ಹೋದರು.

ಮನಸ್ಸಿಗೊಂದಿಷ್ಟು : ಹಿಂದೆ ಇಂದು ಮುಂದೂ  ಇರುವ ಯೇಸುವಿನ ಮಾತಿಗೆ ಶರಣಾದರೆ ನಮಗೆ ಪ್ರವಾದಿಗಳೂ ಕಾಣದಂಥ ಭಾಗ್ಯ ಸಿಗುತ್ತದೆ ಎಂಬ ಭರವಸೆ ಇಂದಿನ ಶುಭಸಂದೇಶದಲ್ಲಿದೆ. ನಮಗೆ ಶರಣಾಗುವ ಮನಸ್ಸಿದೆಯೇ ಎಂಬುದು ಪ್ರಶ್ನೆ. ನಾವು ಇಂದು ದೇವರಿಗೆ ಬಿಟ್ಟು ಮತ್ತೆಲ್ಲದಕ್ಕೂ ಶರಣಾಗುತ್ತಿದ್ದೇವೆ. ಯಾವುದಕ್ಕೆ ನಮ್ಮ ಆದ್ಯತೆ ಎಂದು ಚಿಂತಿಸುವ ಕಾಲವಿದು. 

ಪ್ರಶ್ನೆ : ನಮ್ಮ ಬದುಕು ಯಾವುದಕ್ಕೆ ಶರಣಾಗಿದೆ?

ಪ್ರಭುವೇ,
ಎಲ್ಲವ ಸವಿದು ಅಲೆದು
ಏಕಾಂತಕ್ಕೆ ಮರಳಲು 
ಇರುವುದೊಂದೇ ಮಡಿಲು 
ಕಾರಿ ಹಗೆ ಕೋಪ ಮತ್ಸರ 
ಒಳಗೊಳಗೆ ಮನ ತತ್ತರ 
ನೆಮ್ಮದಿಯ ಅಲೆ ತರಲು  
ಇರುವುದೊಂದೇ ಕಡಲು 
ಶರಣೆನ್ನ ಮನವು ನಿನಗೆ 
ನಿನ್ನೆಡೆಗೆ ನನ್ನದೆಲ್ಲವು ಕೊನೆಗೆ 

29.03.23 - "ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ"


ಮೊದಲನೇ ವಾಚನ: ದಾನಿಯೇಲ 3:14-20, 24-25, 28

ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು. ನಂತರ ಅವನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ,ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ? ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು. ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಆಬೇದ್‍ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ. ನಾವು ಸೇವೆ ಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು. ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು. ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು. ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್‍ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರ ಕೊಟ್ಟರು. ಅದಕ್ಕೆ ಅವನು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ. ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು! ಎಂದು ಹೇಳಿದನು.

ಅಜರ್ಯನ ಗೀತೆ: 1:29-34
ಶ್ಲೋಕ: ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನ್ವಿತರು

ನಮ್ಮ ಪೂರ್ವಜರ ದೇವರಾದ ಸರ್ವೇಶ್ವರ,
ನೀವು ಪರಮ ಪೂಜ್ಯರು,ಎಂದೆಂದಿಗೂ ಮಹೋನ್ನತರು.
ಮಹಿಮೆಯುತವಾದ ನಿಮ್ಮ ನಾಮ‌ಸ್ತುತ್ಯರ್ಹವಾದುದು,
ಪರಮಪೂಜ್ಯವಾದುದು, ಎಂದೆಂದಿಗೂ ಮಹಾ‌ಘನತರವಾದುದು.

ಪರಮ ವೈಭವದಿಂದ ತುಂಬಿದ ಕೂಡಿದ ಮಂದಿರದ್ಲಲಿ
ನೀವು ಸ್ತುತಿ ಸ್ತೋತ್ರಕ್ಕೆ ಪಾತ್ರರು :
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು.‌‌

ಸಾಗರಾಧಿಗಳನ್ನು ಸಮೀಕ್ಷಿಸುವ ನಿಮಗೆ ಸ್ತೋತ್ರ !
ಕೆರೂಬಿಗಳ ಮೇಲೆ ಆಸೀನರಾಗಿರುವ ನಿಮಗೆ ಸ್ತೋತ್ರ !
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು.‌‌

ನಿಮ್ಮ ಸಾಮ್ರಾಜ್ಯದ ಸಿಂಹಾಸನದ ಮೇಲೆ ಮಂಡಿಸಿರುವ ನಿಮಗೆ ಸ್ತೋತ್ರ :
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು.‌‌
ಗಗನ ಮಂಡಲದಲ್ಲಿ ಸ್ತೋತ್ರ ಪಾತ್ರರು:
ನೀವು ಸ್ತುತ್ಯರು ಎಂದೆಂದಿಗೂ ಮಹಿಮಾನ್ವಿತರು.


ಶುಭಸಂದೇಶ: ಯೊವಾನ್ನ 8:31-42


ಯೇಸುಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು. ನೀವು ಸತ್ಯವನ್ನು ಅರಿತುಕೊಳ್ಳುವಿರಿ. ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.” ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ. ದಾಸನಾದವನು ಶಾಶ್ವತವಾಗಿ ಮನೆಯಲ್ಲಿ ಇರುವಂತಿಲ್ಲ. ಶಾಶ್ವತವಾಗಿ ಇರುವವನು ಪುತ್ರನೇ. ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು. ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ. ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು. ಆಗ ಆ ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ. ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ದೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ. ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು. ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.

ಮನಸ್ಸಿಗೊಂದಿಷ್ಟು : "ತನ್ನ ಆಸೆಗಳಿಗೆ ದಾಸನಾಗಿರುವ ಮನುಷ್ಯನನ್ನು ಸ್ವತಂತ್ರನು ಎಂದು ಹೇಗೆ ತಾನೇ ಕರೆಯಲು ಸಾಧ್ಯ" ಎನ್ನುತ್ತಾನೆ ಸಾಕ್ರಟಿಸ್. ಪಾಪಕ್ಕೆ ದಾಸರಾಗಿರುವ ನಮಗೆ ಅದರಿಂದ ಸ್ವಾತಂತ್ರ ದೊರಕಬೇಕಾದರೆ ಪ್ರಭು ಯೇಸುವೇ ನಮ್ಮ ಮೊದಲ ಆಯ್ಕೆಯಾಗಬೇಕು.
ಆಯ್ಕೆಗಳ ಲೋಕದಲ್ಲಿ ನಮ್ಮ ಆಯ್ಕೆ ಸ್ವಾತಂತ್ರದೆಡೆಗೆಯೇ ಅಥವಾ ದಾಸತ್ವದ ಕಡೆಗೆಯೇ ಎಂಬುದನ್ನು ನಾವೇ ನಿರ್ಧರಿಸಬೇಕು.

ಪ್ರಶ್ನೆ : ನಾವು ದಾಸರೇ? ಸ್ವತಂತ್ರರೇ?

ಪ್ರಭುವೇ,
ಆಸೆ ದುರಾಸೆ ನಿರಾಸೆಯ
ದಾಸರು ನಾವು
ಎಲ್ಲದರಿಂದ ಬಿಡಿಸಬಲ್ಲ
ದೇವರು ನೀವು
ಹಕ್ಕಿಯಂತೆ ನಿರಾಳ
ನೆಮ್ಮದಿಯಲ್ಲಿ ಧಾರಾಳ
ಆಗಲಿ ಈ ಮನವು
ತುಂಬಿಕೊಳ್ಳಲ್ಲಿ ಎದೆಗೂಡಲ್ಲಿ

ಅನುದಿನವು ನಿನ್ನೊಲವು

28.03.23 - “ನಾನು ಹೊರಟು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ"

ಮೊದಲನೇ ವಾಚನ: ಸಂಖ್ಯಾಕಾಂಡ 21:4-9


ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸ ದಿಂದ ಅವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡ ತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜೆಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು. ಅಂತೆಯೆ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಕೀರ್ತನೆ: 102:2-3, 16-18, 19-21
ಶ್ಲೋಕ: ಕಿವಿಗೊಡು ಪ್ರಭೂ, ನನ್ನ ಪ್ರಾರ್ಥನೆಗೆ ನನ್ನ ಕೂಗು ಸೇರಲಿ ನಿನ್ನ ಬಳಿಗೆ

ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I
ನನ್ನ ಕೂಗು ಸೇರಲಿ ನಿನ್ನ ಬಳಿಗೆ II
ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I
ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II

ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I
ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II
ಏಕೆನೆ ಪುನರುದ್ಧರಿಸುವನು ಸಿಯೋನನು I
ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II

ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I
ನೆರವೇರಿಸದೆ ಬಿಡನು ಅವರ ಕೋರಿಕೆಯನು II
ಮುಂದಣ ಸಂತತಿಗಿದು ಶಾಸನವಾಗಿರಲಿ I
ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II

ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I
ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II
ಆಲಿಸಿದಾತನು ಬಂಧಿತರ ಗೋಳಾಟವನು I
ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II

ಶುಭಸಂದೇಶ: ಯೊವಾನ್ನ 8:21-30

ಯೇಸುಸ್ವಾಮಿ ಯೆಹೂದ್ಯರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು. ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು. “ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ, ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆ ಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು. ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು. ಯೇಸುಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ. ಎಂದೇ ಯೇಸು ಮತ್ತೆ ಇಂತೆಂದರು: “ನರ ಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು. ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ.” ಯೇಸುಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.

ಮನಸ್ಸಿಗೊಂದಿಷ್ಟು : ಯೇಸು ಸ್ವಾಮಿ ಬಹಳ ಬೇಸರವಾಗಿ ಮಾತನಾಡುವುದನ್ನು ಕಾಣಬಹುದು. ಅಂತರಂಗದ ನಮ್ಮೆಲ್ಲ ಹುಳುಕುಗಳು ನಮಗೆ ತಿಳಿದಿದೆ , ಅದು ಯೇಸುವಿಗೂ ತಿಳಿದಿದೆ. ಅವೆಲ್ಲವನ್ನೂ ತಿಳಿಗೊಳಿಸಲು ನಮ್ಮ ಆಧ್ಯಾತ್ಮಿಕ ವೈದ್ಯನಾಗಿ, ರಕ್ಷಕನಾಗಿ ಬರುವ ಯೇಸುವನ್ನು ನಾವು ತಿರಸ್ಕರಿಸುತ್ತಾ ನಡೆದರೆ, ನಮ್ಮ ಬಗ್ಗೆಯೂ ಯೇಸು ಸ್ವಾಮಿ ಬೇಸರಗೊಳ್ಳಬಹುದು ಎಂಬ ಮುನ್ನೆಚ್ಚರಿಕೆ ನಮ್ಮದಾಗಲಿ.

ಪ್ರಶ್ನೆ : ಹಂಬಲಗಳ ನಮ್ಮ ಬಾಳಲ್ಲಿ ಯೇಸುವಿನ ಹಂಬಲಿಕೆ ಎಷ್ಟು?

27.03.23

ಮೊದಲನೇ ವಾಚನ: ಸುಸನ್ನಳ ಗ್ರಂಥ 

ಅವರು ಜನರ ಹಿರಿಯರು ಮಾತ್ರವಲ್ಲ ನ್ಯಾಯಾಧೀಶರೂ ಆಗಿದ್ದರಿಂದ ಕೂಡಿದ್ದ ಸಭಿಕರು ಅವರ ಮಾತನ್ನು ನಂಬಿ ಆಕೆಗೆ ಮರಣದಂಡನೆಯನ್ನು ವಿಧಿಸಿದರು. ಆಗ ಸುಸನ್ನಳು ಗಟ್ಟಿಯಾಗಿ ಕೂಗಿ, “ನಿತ್ಯರಾದ ದೇವರೇ ನೀವು ಎಲ್ಲ ಗುಟ್ಟನ್ನು ತಿಳಿದವರು. ಎಲ್ಲ ವಿಷಯಗಳನ್ನು , ಅವು ಹುಟ್ಟುವ ಮೊದಲೇ ಅರಿತವರೂ ಆಗಿದ್ದೀರಿ. ಇವರು ನನ್ನ ವಿರುದ್ಧ ಸುಳ್ಳುಸಾಕ್ಷಿ ಹೇಳಿದ್ದಾರೆಂಬುದು ನಿಮಗೆ ಗೊತ್ತಿದೆ. ಇವರು ನನ್ನ ವಿರುದ್ಧ ಹೊಟ್ಟೆಕಿಚ್ಚಿನಿಂದ ಹೇಳಿದ ಕಾರ್ಯಗಳನ್ನು ನಾನು ಮಾಡಿದ್ದೇ ಇಲ್ಲ. ಆದರೂ ಈಗ ನಾನು ಸಾಯಲೇಬೇಕು. ಎಂದು ಮೊರೆಯಿಟ್ಟಳು. ಸರ್ವೇಶ್ವರಸ್ವಾಮಿ ಆಕೆಯ ಮೊರೆಯನ್ನು ಆಲಿಸಿದರು. ಜನರು ಅವಳನ್ನು ಕೊಲ್ಲುವುದಕ್ಕೆ ಸಾಗಿಸಿಕೊಂಡು ಹೋಗುತ್ತಿರುವಾಗ ದೇವರು ದಾನಿಯೇಲನೆಂಬ ಯುವಕನಲ್ಲಿದ್ದ ಪವಿತ್ರಾತ್ಮನನ್ನು ಚೇತನಗೊಳಿಸಿದರು. ದಾನಿಯೇಲನು, “ಈ ಮಹಿಳೆಯ ರಕ್ತಪಾತಕ್ಕೆ ನಾನು ಹೊಣೆ ಅಲ್ಲ”, ಎಂದು ಕೂಗಿ ಹೇಳಿದನು. ಜನರೆಲ್ಲರು ಅವನ ಕಡೆಗೆ ತಿರುಗಿಕೊಂಡು, “ನೀನು ಆಡಿದ ಮಾತಿನ ಮರ್ಮವೇನು?” ಎಂದು ವಿಚಾರಿಸಿದರು. ಅವನು ಅವರ ಮಧ್ಯೆ ನಿಂತು, “ಇಸ್ರಯೇಲಿನ ಕುಲಪುತ್ರರೇ, ನೀವು ಇಷ್ಟು ಬುದ್ಧಿಹೀನರೋ? ಪರೀಕ್ಷೆಮಾಡದೆ, ಸತ್ಯವನ್ನು ಅರಿತುಕೊಳ್ಳದೆ. ಇಸ್ರಯೇಲಿನ ಕುಲಪುತ್ರಿಯೊಬ್ಬಳಿಗೆ ದಂಡನೆ ವಿಧಿಸಿದಿರೋ? ನ್ಯಾಯಸ್ಥಾನಕ್ಕೆ ಮರಳಿ ಬನ್ನಿ, ಏಕೆಂದರೆ ಇವಳ ಮೇಲೆ ಸುಳ್ಳುಸಾಕ್ಷಿ ಹೇಳಲಾಗಿದೆ,” ಎಂದು ಹೇಳಿದನು. ಜನರೆಲ್ಲರು ಕೂಡಲೆ ಹಿಂದಿರುಗಿ ಬಂದರು. ಜನನಾಯಕ್ತು ದಾನಿಯೇಲನಿಗೆ , “ಬಾ, ನಮ್ಮ ನಡುವೆ ಕುಳಿತುಕೊಂಡು ಆ ವಿಷಯವನ್ನು ನಮಗೆ ವಿವರಿಸು. ಹಿರಿಯರಿಗೆ ಕೊಟ್ಟಂಥ ಗೌರವವನ್ನು ದೇವರು ನಿನಗೆ ಕೊಟ್ಟಂತಿದೆ!” ಎಂದರು, ಆಗ ದಾನಿಯೇಲನು, “ಇವರಿಬ್ಬರನ್ನು ಬೇರ್ಪಡಿಸಿ ದೂರದೂರದಲ್ಲಿ ಇಡಿ. ನಾನು ಇವರನ್ನು ಪರೀಕ್ಷಿಸುತ್ತೇನೆ”, ಎಂದನು. ಅಂತೆಯೇ ಅವರನ್ನು ಬೇರ್ಪಡಿಸಲಾಯಿತು. ಆಮೇಲೆ ಅವರಿಬ್ಬರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಕೆಟ್ಟತನದಲ್ಲೆ ಬೆಳೆದು ಮುಪ್ಪಾಗಿರುವವನೇ, ನೀನು ಹಿಂದೆ ಮಾಡಿದ ಪಾಪಗಳು ಇಂದು ಬಯಲಿಗೆ ಬಂದಿವೆ. `ನಿರಪರಾಧಿಗೂ ನೀತಿವಂತನಿಗೂ ಮರಣದಂಡನೆ ವಿಧಿಸಲೇಕೂಡದು’ ಎಂದು ಸರ್ವೇಶ್ವರಸ್ವಾಮಿ ಹೇಳಿದ್ದರೂ ಅನ್ಯಾಯವಾದ ತೀರ್ಪುಕೊಟ್ಟು, ನಿರಪರಾಧಿಯನ್ನು ದಂಡಿಸಿ, ಅಪರಾಧಿಗಳನ್ನು ಬಿಡುಗಡೆಮಾಡುತ್ತಾ ಬಂದಿರುವೆ. ಈಗ ಹೇಳು, ಇವಳನ್ನು ನೀನು ನೋಡಿದ್ದೇ ಆದರೆ, ಇವರು ಯಾವ ಗಿಡದ ಅಡಿಯಲ್ಲಿ ಕೂಡಿದ್ದರು. ನನಗೆ ತಿಳಿಸು,” ಎಂದನು. ಅದಕ್ಕೆ ಅವನು, “ಬಗಿನಿ ಮರದ ಅಡಿಯಲ್ಲಿ,” ಎಂದು ಉತ್ತರವಿತ್ತನು. ಅದಕ್ಕೆ ದಾನಿಯೇಲನು, “ನಿನ್ನ ಪ್ರಾಣಕ್ಕೆ ವಿರುದ್ಧ ಚೆನ್ನಾಗಿ ಸುಳ್ಳಾಡಿದೆ. ದೇವದೂತನು ಈಗಲೆ ದೇವರಿಂದ ತೀರ್ಮಾನ ಪಡೆದು ನಿನ್ನನ್ನು ಬಗೆದುಹಾಕಿ, ಎರಡು ತುಂಡಾಗಿ ಮಾಡಲಿದ್ದಾನೆ”, ಎಂದು ಹೇಳಿ ಅವನನ್ನು ಪಕ್ಕಕ್ಕೆ ಸರಿಸಿದನು. ಬಳಿಕ ಎರಡನೆಯವನನ್ನು ಕರೆತರಲು ಆಜ್ಞಾಪಿಸಿದನು. ಅವನನ್ನು ನೋಡಿ, “ಯೆಹೂದ ವಂಶಕ್ಕೆ ಅಯೋಗ್ಯನಾದ ಎಲೈ ಕಾನಾನ್ ವಂಶಜನೇ, ಸೌಂದರ್ಯವು ನಿನ್ನನ್ನು ಮೋಸಗೊಳಿಸಿತು. ಕಾಮವು ನಿನ್ನ ಮನಸ್ಸನ್ನು ಕೆಡಿಸಿತು. ಇಸ್ರಯೇಲಿನ ಕುಲಪುತ್ರಿಯರೊಂದಿಗೆ ನೀವು ಇದೇ ರೀತಿ ವರ್ತಿಸುತ್ತಾ ಬಂದಿರಿ. ಅವರು ಅಂಜಿಕೆಯಿಂದ ನಿಮಗೆ ವಶವಾಗುತ್ತಿದ್ದರು. ಆದರೆ ಜುದೇಯದ ಈ ಕುಲಪುತ್ರಿ ಮಾತ್ರ ನಿಮ್ಮ ಅಧರ್ಮಕ್ಕೆ ಇಂಬುಕೊಡಲಿಲ್ಲ. ಈಗ ಹೇಳು, `ಯಾವ ಮರದ ಕೆಳಗೆ ಇವರು ಕೂಡಿದ್ದನ್ನು ನೀನು ಕಂಡುಹಿಡಿದೆ?” ಎಂದನು. ಅವನು, `ಕಡವಾಲ ಮರದ ಕೆಳಗೆ’ ಎಂದು ಉತ್ತರಕೊಟ್ಟ , ಆಗ ದಾನಿಯೇಲನು “ನೀನು ಸಹ ನಿನ್ನ ಕುತ್ತಿಗೆಗೆ ವಿರುದ್ಧ ಚೆನ್ನಾಗಿ ಸುಳ್ಳಾಡಿದೆ, ನಿನ್ನನ್ನು ಕಡಿದು ಎರಡು ಹೋಳಾಗಿ ಮಾಡಿ ನಿಮ್ಮಿಬ್ಬರನ್ನೂ ನಾಶಮಾಡಲು ದೇವದೂತನು ಕೈಯಲ್ಲಿ ಕತ್ತಿಹಿಡಿದು ಕಾದಿದ್ದಾನೆ”, ಎಂದು ನುಡಿದನು, ಕೂಡಿದ್ದ ಸಭಿಕರೆಲ್ಲರು ಆಗ ಗಟ್ಟಿಯಾಗಿ ಕೂಗುತ್ತಾ, ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸಿ ಕಾಪಾಡುವ ದೇವರನ್ನು ಕೊಂಡಾಡಿದರು. ಅಲ್ಲದೆ, ದಾನಿಯೇಲನು ಆ ಇಬ್ಬರು ಹಿರಿಯರನ್ನು ಸುಳ್ಳುಸಾಕ್ಷಿಗಳೆಂದು ತೋರಿಸಿಕೊಟ್ಟ ಕಾರಣ, ಸಭಿಕರು ಅವರ ವಿರುದ್ಧ ಎದ್ದುನಿಂತು ಪ್ರತಿಭಟಿಸಿದರು. ಹೊಟ್ಟೆಕಿಚ್ಚಿನಿಂದ ನೆರೆಯವರ ಮೇಲೆ ಏನು ದಂಡನೆ ತೆರಬೇಕೆಂದಿದ್ದರೋ ಅದನ್ನೇ ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಮೇಲೆ ತಂದು, ಅವರನ್ನು ಕೊಲ್ಲಿಸಿದರು. ಹೀಗೆ ನಿರ್ದೋಷಿಯ ರಕ್ತ. ಅಂದು ಸುರಕ್ಷಿತವಾಯಿತು.

ಕೀರ್ತನೆ: 23:1-6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ? II


ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II

ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I

ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I

ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ಶುಭಸಂದೇಶ: ಯೊವಾನ್ನ 8:1-11

ಯೇಸುಸ್ವಾಮಿ ಓಲಿವ್ ಗುಡ್ಡಕ್ಕೆ ಹೋದರು. ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು. ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು. ಅವಳನ್ನು ಎಲ್ಲರ ಮುಂದೆ ನಿಲ್ಲಿಸಿ, “ಬೋಧಕರೇ, ಈ ಹೆಂಗಸು ವ್ಯಭಿಚಾರ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಳು. ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯೇ ಧರ್ಮಶಾಸ್ತ್ರದಲ್ಲಿ ವಿಧಿಸಿದ್ದಾನೆ. ಈ ಕುರಿತು ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು. ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು. ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪ ಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ, ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು. ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು. ಆಗ ಯೇಸು ತಲೆಯೆತ್ತಿ, “ತಾಯಿ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು. ಅವಳು “ಇಲ್ಲ, ಸ್ವಾವಿೂ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.



ಮನಸ್ಸಿಗೊಂದಿಷ್ಟು : “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ" ಎಂದು ಯೇಸು ಹೇಳಿದ ಮಾತು ಇಷ್ಟು ಸಾವಿರ ವರ್ಷಗಳಾದ ಮೇಲೂ ಇನ್ನೂ ಪ್ರತಿಧ್ವನಿಸುತ್ತಿದೆ. ಆ ಮಹಿಳೆಗೆ ಅಂದು ತೋರಿದ ಕರುಣೆ, ಅನುಕಂಪ ನಮಗೆಲ್ಲಾ ಸ್ಪೂರ್ತಿಯಾಗಬೇಕು. ಮತ್ತೊಬ್ಬರ ಬಗ್ಗೆ ತೀರ್ಪು ಕೊಡಲು ನಮಗೆ ಯಾವುದೇ ಅಧಿಕಾವಿಲ್ಲ, ಅದು ದೇವರ ಹಕ್ಕು ಮಾತ್ರ ಎನ್ನುವುದು ಯೇಸು ತಿಳಿಸಿದ, ಬರೆದ ಸಂದೇಶ. 

ಪ್ರಶ್ನೆ : ಮತ್ತೊಬ್ಬರ ತಪ್ಪು ಕಂಡು ಹಿಡಿಯುತ್ತಲೇ ಇರುವ ನಾವೆಷ್ಟು ಶುದ್ಧ?

26.03.23 - "ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು"

ಮೊದಲನೇ ವಾಚನ: ಯಜೆಕಿಯೇಲ 37:12-14


ಸರ್ವೇಶ್ವರ ನನಗೆ ಹೀಗೆಂದರು: "ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು. ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು. ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಕೀರ್ತನೆ: 130:1-2, 3-4, 5-6, 7-8

ಶ್ಲೋಕ: ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭೂ, ನಿನ್ನ ಮುಂದೆ ಯಾರು ತಾನೆ ನಿಲ್ಲಬಲ್ಲರು ವಿಭೂ?

"ಶ್ಲೋಕ:  ಆತನಲ್ಲಿದೆ ಕರುಣೆ, ಪೂರ್ಣ ವಿಮೋಚನೆ

1.  ಅಂತರಾಳದಿಂದ ಪ್ರಭೂ, ಮೊರೆಯಿಡುತ್ತಿರುವೆ ನಿನಗೆ|
ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ಥ ವಿಜ್ಞಾಪನೆಗೆ||
ಶ್ಲೋಕ

2.  ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು|
ನಿನ್ನ ಮುಂದೆ ಯಾರು ತಾನೇ ನಿಲ್ಲಬಲ್ಲರು ವಿಭು?||
ಪಾಪವನು ಕ್ಷಮಿಸುವವನು ನೀನು|
ಎಂತಲೇ ಭಯಭಕ್ತಿಗೆ ಪಾತ್ರನು||
ಶ್ಲೋಕ

3.  ಪ್ರಭುವಿಗಾಗಿ ಎನ್ನ ಮನ ಕಾದಿದೆ|
ಆತನ ವಾಕ್ಯದಲಿ ನಂಬಿಕೆ ನನಗಿದೆ||
ಸೊರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ|
ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ|
ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ||
ಶ್ಲೋಕ

4.  ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ|
ಆತನಲ್ಲಿದೆ ಕರುಣೆ, ಪೂರ್ಣ ವಿಮೋಚನೆ||
ಇಸ್ರಯೇಲನು ಉದ್ಧರಿಸುವನಾತ|
ಅದು ಗೈದ ಸಕಲ ದೋಷಗಳಿಂದ||
ಶ್ಲೋಕ


ಎರಡನೇ ವಾಚನ: ರೋಮನರಿಗೆ 8:8-11



ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು ಮೆಚ್ಚಿಸಲು ಸಾಧ್ಯವೇ ಇಲ್ಲ. ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ. ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮ ಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ. ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.

ಶುಭಸಂದೇಶ: ಯೊವಾನ್ನ 11:1-45


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.) ಈ ಸಹೋದರಿಯರು, ಯೇಸುಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು. ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು. ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು. ಲಾಸರನ ಕಾಯಿಲೆಯ ಸುದ್ದಿಯನ್ನು ಕೇಳಿದ ಮೇಲೂ ಯೇಸು ತಾವಿದ್ದಲ್ಲಿಯೇ ಇನ್ನೂ ಎರಡು ದಿನ ಉಳಿದುಕೊಂಡರು. ಅನಂತರ ತಮ್ಮ ಶಿಷ್ಯರಿಗೆ, “ಬನ್ನಿ, ಜುದೇಯಕ್ಕೆ ಮರಳಿ ಹೋಗೋಣ,” ಎಂದರು. ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು. ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿ ಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ. ಆದರೆ ರಾತ್ರಿಯಲ್ಲಿ ನಡೆಯುವವನು ಎಡವಿ ಬೀಳುತ್ತಾನೆ. ಕಾರಣ, ಅವನಲ್ಲಿ ಬೆಳಕು ಇಲ್ಲ,” ಎಂದರು. ಬಳಿಕ ಯೇಸು, “ನಮ್ಮ ಮಿತ್ರನಾದ ಲಾಸರನು ನಿದ್ರೆ ಮಾಡುತ್ತಿದ್ದಾನೆ, ಅವನನ್ನು ಎಬ್ಬಿಸಲು ನಾನು ಹೋಗಬೇಕು,” ಎಂದು ನುಡಿದರು. ಶಿಷ್ಯರು, “ಪ್ರಭುವೇ, ಅವನು ನಿದ್ರೆ ಮಾಡುತ್ತಿರುವನಾದರೆ ಚೇತರಿಸಿಕೊಳ್ಳುತ್ತಾನೆ,” ಎಂದರು. ಯೇಸು ಹೇಳಿದ್ದು ಅವನ ಮರಣವನ್ನು ಕುರಿತು. ಶಿಷ್ಯರಾದರೋ ಅದು ಸಾಮಾನ್ಯ ನಿದ್ರೆಯೆಂದು ತಿಳಿದುಕೊಂಡರು. ಆದುದರಿಂದ ಯೇಸು ಅವರಿಗೆ ಸ್ಪಷ್ಟವಾಗಿ, “ಲಾಸರನು ಸತ್ತು ಹೋಗಿದ್ದಾನೆ; ನಾನು ಅಲ್ಲಿ ಇಲ್ಲದೆ ಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು. ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು. ‘ನಾನೇ ಪುನರುತ್ಥಾನ; ನಾನೇ ಜೀವ!’ ಯೇಸುಸ್ವಾಮಿ ಅಲ್ಲಿಗೆ ಬಂದಾಗ ಲಾಸರನನ್ನು ಸಮಾಧಿಯಲ್ಲಿ ಹೂಳಿಟ್ಟು ಆಗಾಗಲೇ ನಾಲ್ಕು ದಿನಗಳಾಗಿದ್ದುವೆಂದು ತಿಳಿಯಿತು. ಬೆಥಾನಿಯ ಜೆರುಸಲೇಮಿನಿಂದ ಸುಮಾರು ಮೂರು ಕಿಲೊವಿೂಟರು ದೂರದಲ್ಲಿದೆ. ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು ಮಾರ್ತ ಯೇಸುವನ್ನು ಕಂಡು, ‘ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ. ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ,” ಎಂದಳು. ಯೇಸು, “ನಿನ್ನ ಸಹೋದರನು ಜೀವಂತವಾಗಿ ಏಳುವನು,” ಎಂದರು. “ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತವಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ. ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು. ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀನು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು, ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು. ಕಂಬನಿಗರೆದ ಯೇಸು ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು. ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು. ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ; ಮಾರ್ತ ತಮ್ಮನ್ನು ಎದುರುಗೊಂಡ ಸ್ಥಳದಲ್ಲಿಯೇ ಇದ್ದರು. ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿಯೇ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು. ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು. ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿ ಬಂದಿತು. ಯೇಸು ಅವರಿಗೆ, “ಆತನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು, “ಬಂದು ನೋಡಿ ಸ್ವಾವಿೂ,” ಎಂದರು. ಯೇಸು ಕಣ್ಣೀರಿಟ್ಟರು. ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು. ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಡಬಾರದಿತ್ತೆ?” ಎಂದರು. ಲಾಸರನ ಪುನರುಜ್ಜೀವನ ಯೇಸುಸ್ವಾಮಿ ಮತ್ತೊಮ್ಮೆ ಮನಮರುಗಿ ಸಮಾಧಿಯ ಬಳಿಗೆ ಬಂದರು.


ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು. ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು. ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು. “ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೆ?” ಎಂದು ಮರುನುಡಿದರು ಯೇಸು. ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ, ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು. ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು. ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು. ಯೇಸುವಿನ ವಿರುದ್ಧ ಹಂಚಿಕೆ ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು.

ಮನಸ್ಸಿಗೊಂದಿಷ್ಟು : ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿದ ಯೇಸು, ದೇವರ ಮಹಿಮೆಯನ್ನು ಎಲ್ಲರೂ ಅರಿಯುವಂತಾಗಲು ಲಾಜರನನ್ನು ಜೀವದಿಂದ ಎಬ್ಬಿಸುವ ಘಟನೆಯನ್ನು ಬಳಸಿಕೊಳ್ಳುತ್ತಾರೆ.  ನಮ್ಮದಾದರೂ ಇದಕ್ಕೆ ತದ್ವಿರುದ್ಧವಾದ ಮನೋಭಾವ. ನಮ್ಮನ್ನೇ ಇತರರ ಮುಂದೆ ಹೆಚ್ಚಿಸಕೊಳ್ಳಲು ಆದಷ್ಟು ಪ್ರಯತ್ನಿಸುತ್ತೇವೆ, ಅವಕಾಶಕ್ಕಾಗಿ ಪ್ರಯತ್ನಿಸುತ್ತೇವೆ. ದೇವರ ಮಹಿಮೆಗಾಗಿ ಬಾಳೋಣ, ದೇವರ ಮಹಿಮೆಯು ನಮ್ಮ ಮೂಲಕ ನೆರವೇರಲು ಸಾಧನವಾಗೋಣ, ಅಮರ ಜೀವದತ್ತ ಮನಸ್ಸನ್ನು ಹರಿಸೋಣ.    

ಪ್ರಶ್ನೆ :  ದೇವರ ಮಹಿಮೆಯು ಪ್ರಕಟಗೊಳ್ಳುವ ಸಾಧನ ನಾವಾಗಿದ್ದೇವೆಯೇ?

ಪ್ರಭುವೇ,
ನವ ಜೀವನ ಲಾಜರನದು
ನೀ ಹೊರಗೆ ಬಾ ಎನಲು  
ಪಡೆಯಲಿ ಎನ್ನ ಆತ್ಮ
ಹೊಸ ಜೀವ ಭಾವ 
ನಿನ್ನ ಕರೆಯೊಳು
ಸಾಕಾರಗೊಳ್ಳಲಿ ಚಿತ್ತ 
ನಿನ್ನಯ ಎನ್ನಲಿ 
ಸಾಧನವಾಗಲಿ ಬದಕು 
ನನ್ನದು ನಿನ್ನ 
ಮಹಿಮೆಯಲಿ  

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...