29.07.23 - "ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ"

ಮೊದಲನೇ ವಾಚನ: ವಿಮೋಚನಾಕಾಂಡ 24:3-8

ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, "ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ," ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು. ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು. ಇಸ್ರಯೇಲರ ಯೌವನಸ್ಥರು ಸರ್ವೇಶ್ವರಸ್ವಾಮಿಗೆ ದಹನ ಬಲಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು. ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು. ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, "ಸರ್ವೇಶ್ವರಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ," ಎಂದರು. ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರಮೇಲೆ ಚಿಮುಕಿಸಿ, "ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ," ಎಂದನು.

ಕೀರ್ತನೆ: 50:1-2, 5-6, 14-15
ಶ್ಲೋಕ: ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ

ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ
ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ
ಸುರ ಸುಂದರವಾದ ಸಿಯೋನಿನಿಂದ
ಉದಯಸಿಹನು ದೇವನು ಶೋಭೆಯಿಂದ.

“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು
ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು
ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ
ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ.

ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ
ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ
ಕಷ್ಟದಲಿ ಮೊರೆಯಿಡೆ, ನೆರವಾಗುವೆ
ಆಗ ನೀ ನನ್ನನು ಕೊಂಡಾಡುವೆ.

ಶುಭಸಂದೇಶ: ಮತ್ತಾಯ 13:24-30



ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿಹೋದ. ಗೋದಿ ಬೆಳೆದು ತೆನೆ ಬಿಟ್ಟಾಗ ಕಳೆ ಬೆಳೆದಿರುವುದು ಗೋಚರವಾಯಿತು. ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, "ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯು ಕಾಣಿಸಿಕೊಂಡಿದೆಯಲ್ಲಾ, ಅದೆಲ್ಲಿಂದ ಬಂತು?" ಎಂದರು. ಯಜಮಾನ, "ಇದು ನನ್ನ ವೈರಿ ಮಾಡಿರುವ ಕೆಲಸ," ಎಂದ. 'ಹಾಗಾದರೆ, ಕಳೆಗಳನ್ನು ಕಿತ್ತು ಹಾಕೋಣವೇ?' ಎಂದರು ಆಳುಗಳು. ಅದಕ್ಕೆ ಯಜಮಾನ "ಬೇಡ, ಬೇಡ; ಕಳೆಗಳನ್ನು ಕೀಳುವಾಗ, ಗೋದಿಯನ್ನೂ ಕಿತ್ತು ಬಿಟ್ಟೀರಿ. ಸುಗ್ಗಿಯವರೆಗೆ  ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟು ಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,' ಎಂದ

28.07.23

ಮೊದಲನೇ ವಾಚನ: ವಿಮೋಚನಾಕಾಂಡ 20:1-17

ದೇವರು ಕೊಟ್ಟ ಆಜ್ಞೆಗಳು ಇವು: "ನಾನೇ ನಿನ್ನ ದೇವರಾದ ಸರ್ವೇಶ್ವರ ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು. ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ. ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ. ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ. ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಪಡಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು. ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು. ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯ ದೇಶದವರು ಯಾವ ಕೆಲಸವನ್ನು ಮಾಡಬಾರದು. ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು. ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ. ಕೊಲೆಮಾಡಬೇಡ, ವ್ಯಭಿಚಾರಮಾಡಬೇಡ, ಕದಿಯಬೇಡ, ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ,  ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ."

ಕೀರ್ತನೆ: 19:8, 9, 10, 11
ಶ್ಲೋಕ: ಪ್ರಭುವೇ, ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೆ

ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ
ನಂಬಲರ್ಹ; ಪ್ರಭುವಿನ ಶಾಸನ ಮುಗ್ಧರಿಗದು ಸುಜ್ಞಾನ.

ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ
ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ
ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ
ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ.

ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ
ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ.

ಶುಭಸಂದೇಶ: ಮತ್ತಾಯ 13:18-23


ಯೇಸು ತಮ್ಮ ಶಿಷ್ಯರನ್ನುದ್ದೇಶಿಸಿ, "ಈಗ  ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ: ಒಬ್ಬನು ಶ್ರೀ ಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆ ಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಬೇರೊಬ್ಬನು ಈ ಸಂದೇಶವನು ಕೇಳಿದಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ. ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟ ಕೋಟಲೆಗಳು ಬಂದೊದಗಿದ ಕೂಡಲೆ ಎಡವಿ ಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ: ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ,  ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲ ಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ," ಎಂದರು.

27.07.23 - ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ

ಮೊದಲನೇ ವಾಚನ: ವಿಮೋಚನಕಾಂಡ 19:1-2,9-11,16-20


ಇಸ್ರಯೇಲರು ಈಜಿಪ್ಟ್ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಮರುಭೂಮಿಗೆ ಬಂದರು. ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. ಸರ್ವೇಶ್ವರ ಮೋಶೆಗೆ, "ಇಗೋ, ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ, "ಎಂದು ಹೇಳಿದರು. ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: " ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ದಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ. ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು. " ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗೂ ತುತೂರಿಯ ಮಹಾದ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು. ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಬರಮಾಡಿದನು. ಅವರು ಬಂದು ಬೆಟ್ಟದ ಬುಡದಲ್ಲಿ ನಿಂತರು. ಸೀನಾಯಿ ಬೆಟ್ಟವೆಲ್ಲ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದು ಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು. ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು. ಸರ್ವೇಶ್ವರ ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದರು. ಅವರು, "ಬೆಟ್ಟದ ತುದಿಗೆ ಬಾ, " ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.

ಕೀರ್ತನೆ
ಅಜರ್ಯನ ಗೀತೆ 1:29,30,31,32-33,34, V.29
ಶ್ಲೋಕ: ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು |

ನಮ್ಮ ಪೂರ್ವಜರ ದೇವರಾದ ಸರ್ವೇಶ್ವರಾ, ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು.
ಮಹಿಮಾಯುತವಾದ ನಿಮ್ಮ ನಾಮ ಸ್ತುತ್ಯಾರ್ಹವಾದುದು,
ಪರಮಪೂಜ್ಯವಾದುದು ಎಂದೆಂದಿಗೂ ಮಹಾ ಘನತರವಾದುದು .

ಪರಮ ವೈಭವದಿಂದ ಕೂಡಿದ ಮಂದಿರದಲಿ ನೀವು ಸ್ತುತಿಸ್ತೋತ್ರಕ್ಕೆ ಪಾತ್ರರು;
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು||

ಸಾಗರಾದಿಗಳನು ಸಮೀಕ್ಷಿಸುವ ನಿಮಗೆ ಸ್ತೋತ್ರ
ನಿಮ್ಮ ಸಾಮ್ರಾಜ್ಯದ ಸಿಂಹಾಸನದ ಮೇಲೆ ಆಸೀನರಾಗಿರುವ ನಿಮಗೆ ಸ್ತೋತ್ರ
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು||

ಗಗನಮಂಡಲದಲ್ಲಿ ಸ್ತೋತ್ರಪಾತ್ರರು, ನೀವು ಸ್ತುತ್ಯರು
ಎಂದೆಂದಿಗೂ ಮಹಿಮಾನ್ವಿತರು||

ಘೋಷಣೆ ಕೀರ್ತನೆ 145:14
ಅಲ್ಲೆಲೂಯ, ಅಲ್ಲೆಲೂಯ!

ಜೆರುಸಲೇಮ್, ಕೀರ್ತಿಸು ಪ್ರಭುವಿನ ನಾಮವನು | ಕಳುಹಿಸುವನು ಧರೆಗೆ ತನ್ನ ಆಣತಿಯನು ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 13:10-17


ಆ ಕಾಲದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, "ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ? "ಎಂದು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಅವನು ಸಮೃದ್ದನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ ; ಗ್ರಹಿಸುವುದೂ ಇಲ್ಲ. ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರೀತ್ತದೆ: 
'ಕೇಳಿ ಕೇಳಿಯೂ ಗ್ರಹಿಸರು; ನೋಡಿ ನೋಡಿಯೂ ಕಾಣರು.  ಈ ಜನರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.' ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ. ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ, " ಎಂದರು.

26.07.23

ಮೊದಲನೆಯ ವಾಚನ: ವಿಮೋಚನಕಾಂಡ 16:1-5, 9-15


ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ' ಸೀನ್ ' ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು. ಮರುಭೂಮಿಯಲ್ಲಿ ಇಸ್ರಯೇಲರ ಸಮಾಜವೆಲ್ಲ ಮೋಶೆ ಮತ್ತು ಆರೋನರ ವಿರುದ್ಧ ಗೊಣಗುಟ್ಟಿತು. " ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದುತಂದಿದ್ದೀರಿ, ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೇ ಸತ್ತಿದ್ದರೆ ಎಷ್ಟೋ ಲೇಸಾಗಿತ್ತು. ಆಗ ಮಾಂಸಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇತುಂಬ ಊಟಮಾಡುತ್ತಿದ್ದೆವು, " ಎಂದು ಗೊಣಗಿದರು. ಆಗ ಸರ್ವೇಶ್ವರ ಮೋಶೆಗೆ, " ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ. ಆರನೆಯ ದಿನದಲ್ಲಿ ಮಾತ್ರ ಪ್ರತಿ ದಿನ ಕೂಡಿಸಿದ್ದಕ್ಕಿಂತಲೂ ಎರಡರಷ್ಟು ಕೂಡಿಸಿ ಸಿದ್ದಪಡಿಸಿಕೊಳ್ಳಬೇಕು, " ಎಂದು ಹೇಳಿದರು. ಆರೋನನಿಗೆ ಮೋಶೆ, ' ನೀನು ಇಸ್ರಯೇಲ್ ಸಮಾಜದ ಬಳಿಗೆ ಹೋಗಿ, ಅವರಿಗೆ, ' ಸರ್ವೇಶ್ವರ ನಿಮ್ಮ ಗೊಣಗಾಟವನ್ನು ಕೇಳಿದ್ದಾರೆ. ಆದ್ದರಿಂದ ನೀವೆಲ್ಲರು ಅವರ ಸನ್ನಿಧಿಗೆ ಕೂಡಿಬರಬೇಕು, ' ಎಂದು ಆಜ್ಞಾಪಿಸು, " ಎಂದು ಹೇಳಿದನು. ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು. ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: " ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ' ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ, ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು ' ಎಂದು ಹೇಳು, " ಎಂದರು. ಸಂಜೆಯಾಗುತ್ತಲೆ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಪಾಳೆಯದ ಸುತ್ತಲೂ ಮಂಜುಬಿದ್ದಿತು. ಆ ಮಂಜು ಆರಿಹೋದನಂತರ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು. ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ' ಮನ್ನ ' ಎಂದರೆ, ಇದೇನಿರಬಹುದೆಂದು ವಿಚಾರಿಸಿದರು. ಮೋಶೆ ಅವರಿಗೆ, " ಇದು ಸರ್ವೇಶ್ವರಸ್ಸಾಮಿ ನಿಮಗೋಸ್ಕರ ಕೊಟ್ಟ ಆಹಾರ, " ಎಂದನು.

ಕೀರ್ತನೆ: 78:18-19, 23-28
ಶ್ಲೋಕ: ಅನುಗ್ರಹಿಸಿದನು ಪ್ರಭು, ಸ್ವರ್ಗದ ದವಸಧಾನ್ಯವನು.

ಕೋರಿದರು ತಮಗಿಷ್ಟವಾದ ಆಹಾರವನೇ
ಪರೀಕ್ಷಿಸಿದರು ಮನದಲಿ ಆ ದೇವರನೇ
ಜರೆವ ಮಾತಿನಲಿ ಆಡಿಕೊಂಡರಿಂತು
ಅಡವಿಯಲಿ ದೇವನೂಟ ಬಡಿಸುವನೆಂತು

ಆದರೂ ಮೇಘಮಂಡಲಕೆ ಆಜ್ಞೆಯಿತ್ತನಾತ
ಅಂತರಿಕ್ಷದಾ ದ್ವಾರಗಳನು ತೆರೆದನಾತ
ಸುರಿಸಿದನು ಅವರ ಮೇಲೆ ಉಣಲು ಅನ್ನವನು
ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು

ನರರಿಗುಣಲು ಕೊಟ್ಟನು ದೇವದೂತರ ಆಹಾರವನು
ಇತ್ತನವರಿಗೆ ತೃಪ್ತಿಕರವಾದ ಔತಣವನು
ಆಕಾಶದಲ್ಲೆಬ್ಬಿಸಿದನು ಮೂಡಣ ಗಾಳಿಯನು
ಒಲುಮೆಯಿಂದ ಹೊರಡಿಸಿದನು ತೆಂಕಣಗಾಳಿಯನು

ಧೂಳಿನಷ್ಟು ಸುರಿಸಿದನು ಮಾಂಸವೃಷ್ಟಿಯನು
ಸಮುದ್ರದ ಮರಳಿನಷ್ಟು ರೆಕ್ಕೆ ಹಕ್ಕಿಗಳನು
ಬೀಳ್ವಂತೆ ಮಾಡಿದನು ಪಾಳೆಯದ ಮಧ್ಯದಲೂ
ಉದುರಿದವು ಅವರಿದ್ದ ಗುಡಾರಗಳ ಸುತ್ತಲೂ

ಶುಭಸಂದೇಶ: ಮತ್ತಾಯನು 13:1-9

ಆ ಕಾಲದಲ್ಲಿ ಯೇಸು ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು. ಜನರು ತಂಡೋಪತಂಡವಾಗಿ ಕೂಡಿ ಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು: " ಒಬ್ಬ ರೈತ ಬಿತ್ತುವುದಕ್ಕೆ ಹೋದ, ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜಗಳನ್ನು ತಿಂದುಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು. ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು. ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು. ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ, " ಎಂದು ಒತ್ತಿ ಹೇಳಿದರು.

25.07.23 - "ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?”

ಮೊದಲನೇ ವಾಚನ: 2 ಕೊರಿಂಥಿಯರಿಗೆ 4:7-15

ಸಹೋದರರೇ, ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ. ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ. ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ. “ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ. ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು. ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.

ಕೀರ್ತನೆ: 126:1-2, 2-3, 4-5, 6

ಶ್ಲೋಕ: ಅಳುತಳುತಾ ಬಿತ್ತುವವರು ನಲಿನಲಿಯುತಾ ಕೊಯ್ಯುವರು

ಶುಭಸಂದೇಶ: ಮತ್ತಾಯ: 20:20-28


ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು. ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.

24.07.23 - "ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ"

ಮೊದಲನೇ ವಾಚನ: ವಿಮೋಚನಾಕಾಂಡ 14:5-18



ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು. ಕೂಡಲೆ ಫರೋಹನು ತನ್ನ ರಥಬಲವನ್ನು ಸಜ್ಜುಗೊಳಿಸಿಕೊಂಡು ಸೈನ್ಯ ಸಮೇತನಾಗಿ ಹೊರಟನು. ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನೂ ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿ ಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು. ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸವಿೂಪಕ್ಕೆ ಬಂದರು. ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು. ಫರೋಹನು ಸವಿೂಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು. ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದು ತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ? ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,’ ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೆ?” ಎಂದು ದೂರಿದರು. ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ. ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ. ಸರ್ವೇಶ್ವರಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು. ಆಗ ಸರ್ವೇಶ್ವರ: “ನೀನೇಕೆ ನನಗೆ ಮೊರೆಯಿಡುತ್ತಿರುವೆ? ಮುಂದಕ್ಕೆ ಹೊರಡಬೇಕೆಂದು ಇಸ್ರಯೇಲರಿಗೆ ಹೇಳು. ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು. ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು; ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ ನಾನು ಫರೋಹನನ್ನು, ಅವನ ಸಮಸ್ತ ಸೈನ್ಯವನ್ನು, ರಥಗಳನ್ನು ಹಾಗು ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.

ಕೀರ್ತನೆ: 15:1, 2, 3-4, 5-6
ಶ್ಲೋಕ: ಮಾಡೋಣ ಸರ್ವೇಶ್ವರನ ಗುಣಗಾನ 

ಮಹೋನ್ನತ ಆತ ಗಳಿಸಿದ ವಿಜಯ!
ಕುದುರೆಗಳನು, ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು.
ಆತನನ್ನು ವರ್ಣಿಸುವೆನು, ಆತನೆನ್ನ ದೇವನು
ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.

ಸರ್ವೇಶ್ವರನು ಯುದ್ಧಶೂರನು
‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.
ಫರೋಹನ ವೀರ ಶ್ರೇಷ್ಟರನು
ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ.

ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು
ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.
ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ
ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ


ಶುಭಸಂದೇಶ: ಮತ್ತಾಯ 12:38-42


ಬಳಿಕ ಕೆಲವು ಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, "ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ," ಎಂದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: "ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಯೋನನು ಮೂರುದಿನ ಹಗಲುರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲುರಾತ್ರಿ ಭೂಗರ್ಭದಲ್ಲಿರುವನು. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

23.07.23 - “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು”

ಮೊದಲನೇ ವಾಚನ: ಸುಜ್ಞಾನಗ್ರಂಥ 12:13, 16-19

ಸರ್ವಜನರ ಸುಖ ಕೋರುವ ದೇವರು ನೀವಲ್ಲದೆ ಇನ್ನಾರೂ ಇಲ್ಲ. ನೀವು ವಿಧಿಸಿದ ದಂಡನೆ ಅನ್ಯಾಯವಲ್ಲ ಎಂದು ನೀವು ತೋರಿಸಬೇಕಾಗಿಲ್ಲ. ನಿಮ್ಮ ಶಕ್ತಿಯೇ ನ್ಯಾಯನೀತಿಗೆ ಆಧಾರ ನಿಮ್ಮ ಸಾರ್ವಭೌಮತ್ವವೇ ಎಲ್ಲ ಸಹನೆಗೆ ಮೂಲ ಕಾರಣ. ನೀವು ಸರ್ವಶಕ್ತರೆಂದು ಜನರು ನಂಬದಿರುವಾಗ ನೀವು ಶಕ್ತಿಯನ್ನು ತೋರಿಸುತ್ತೀರಿ; ಅದನು ಬಲ್ಲವರೊಂದಿಗೆ ವರ್ತಿಸುವಾಗ ಅವರ ಉದ್ಧಟತನವನ್ನು ಖಂಡಿಸುತ್ತೀರಿ. ಶಕ್ತಿಯಲ್ಲಿ ನೀವೇ ಸಾರ್ವಭೌಮ ಎಂದೇ, ತೀರ್ಪಿಡುತ್ತೀರಿ ಸಾಮ್ಯತೆಯಿಂದ ನಮ್ಮನ್ನಾಳುತ್ತೀರಿ ಬಹು ತಾಳ್ಮೆಯಿಂದ ನಿಮ್ಮ ಶಕ್ತಿ ನಿಮ್ಮಲ್ಲಿದೆ ಇಚ್ಛಿಸಿದಾಗಲೆಲ್ಲ ಇಂಥ ಕಾರ್ಯಗಳಿಂದ ಸಜ್ಜನನು ಜನಪ್ರಿಯ ನಾಗಿರಲು ಕಲಿಸಿಕೊಟ್ಟಿರುವಿರಿ ಪಾಪಗಳಿಗೆ ಪಶ್ಚಾತ್ತಾಪದ ಅವಕಾಶವಿತ್ತು ನಿಮ್ಮ ಮಕ್ಕಳನು ಭರವಸೆಯುಳ್ಳವರಾಗಿಸಿದಿರಿ.

ಕೀರ್ತನೆ: 86:5-6, 9-10, 15-16

ಶ್ಲೋಕ: ಪ್ರಭೂ, ನೀನು ದಯಾವಂತನು ಕ್ಷಮಿಸುವವನು

ಎರಡನೇ ವಾಚನ: ರೋಮನರಿಗೆ 8:26-2

ಸಹೋದರರೇ, ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.




ಶುಭಸಂದೇಶ: ಮತ್ತಾಯ13:24-43


ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ. ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು. ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು. ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು. ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ. 30ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.” ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.” ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.” ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು. ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು. ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು. ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು. ಸದ್ದರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!" ಎಂದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...